Home / ಕವನ / ಕವಿತೆ / ಯಾವ ದಾರಿಯೊ!

ಯಾವ ದಾರಿಯೊ!

ನಾದನಾಮಕ್ರಿಯಾ


ಯಾವ ದಾರಿಯೊ ಕಾಣೆ ನನ್ನಯ
ದೇವನಿರುವೆಡೆ ಸಾರಲು!

ಭಾವಿಸುತ ಬಾಯ್ದೆರೆದು ಕುಳಿತರೆ
ಸಾವೆ ಸರಿ! ಎಂಬಾ ವಿಚಾರದಿ
ಜೀವದರಸನದಲ್ಲಿರುವನಾ
ಠಾವನರಸುತ ತೆರಳಲಿರುವೆ;

ಯಾವ ದಾರಿಯೊ ಕಾಣೆ ನನ್ನಯ
ದೇವನಿರುವೆಡೆ ಸಾರಲು.


ದೇಶವಲೆದವನೆಂದು ನಾ ಸಂ-
ನ್ಯಾಸಿಯೊಬ್ಬನನಿಂದು

ಹಾರಯಿಸಿ ಕೇಳಿದರೆ ಆತನು
ತೋರಿಸುತ ತೆಂಕಣವ ಬೆರಳಲಿ:
`ಸಾರು ಈ ದಾರಿಯೊಳು ನಿನ್ನವ-
ನೂರ ಸೇರುವೆ ನೇರ’ ಎಂದನು.

ಯಾವ ದಾರಿಯೊ ಕಾಣೆ ನನ್ನಯ
ದೇವನಿರುವೆಡೆ ಸಾರಲು!


ಕೇಳಿದರೆ ಯಾಜಿಗಳನಾಗಲೆ
ಹೇಳಿದರು ಬಲಿ ಕೊಡುತಲೆ:

“ಬೋಳುಮರಗಳ ಸಾಲುದಾರಿಯ
ಕೇಳಿ ಬಲ್ಲೆಯೆ? ಹಾಗೆ ಹೋದರೆ
ನಾಳೆಯೇ ನೋಡುವೆಯೆ ನಿನ್ನ –
ನ್ನಾಳುವವನಾಳಿಯನು” ಎಂದರು.

ಯಾವ ದಾರಿಯೊ ಕಾಣೆ ನನ್ನಯ
ದೇವನಿರುವೆಡೆ ಸಾರಲು!


ಯೋಗಿರಾಜಯ್ಯನಿಗೆ ನಾ ತಲೆ-
ಬಾಗಿ ವಿನಯದಿ ಕೇಳಿದೆ.

ಮುಗಿದ ಕಂಗಳನಗಲಿಸದೆ, ತುಟಿ-
ಬಿಗಿದ ಬಾಯನು ಬಿಚ್ಚದೆಯೆ, ಕೈ-
ಮುಗಿಲ ಕಡೆ ನೀಡಿದನು; ತಿಳಿಯದೆ
ವಿಗಡತನವದು ನಗುತ ಮರಳಿದೆ.

ಯಾವದಾರಿಯೊ ಕಾಣೆ ನನ್ನಯ
ದೇವನಿರುವೆಡೆ ಸಾರಲು !


ಭಾಗವತದಾ ದಾಸರಲ್ಲಿಗೆ
ಹೋಗಿ ಕೇಳಿದೆ ಮೆಲ್ಲಗೆ.

‘ವಿಟ್ಠಲನ ಗುಡಿಯೆದುರ ಬೀದಿಯೊ-
‘ಳಿಟ್ಟು ಅಡಿಯನು ಮುಂದೆ ಸಾಗಲು
‘ನೆಟ್ಟನೆಯದಾ ಬಟ್ಟೆ, ಸೇರುವೆ
‘ತಟ್ಟನೆಯೆ ನಿನ್ನವನ’ ನೆಂದರು.

ಯಾವದಾರಿಯೊ ಕಾಣೆ ನನ್ನಯ
ದೇವನಿರುವೆಡೆ ಸಾರಲು!


ಬುದ್ದಿಶಾಲಿಗಳೆನಿಸಿ ಕೊಂಬರ
ಹೊದ್ದಿ ಹಾದಿಯ ಕೇಳಿದೆ;

ಇದ್ದ ಊರನ್ನುಳಿದು ಬೇರೆಯ
ಸುದ್ದಿಯನೆ ನಾವರಿಯೆವೆಂದರು;
ಮೊದ್ದುತನವೇನೆಯ್ದ ಬೇಕವ-
ನಿದ್ದೆಡೆಯ ನಾನೆಂಬುದಿದುವೇ!

ಯಾವದಾರಿಯೊ ಕಾಣೆ ನನ್ನಯ
ದೇವನಿರುವೆಡೆ ಸಾರಲು!


ಜೋಯಿಸರ ಕೇಳಿದೆನು ಬಗೆಬಗೆ-
ಕಾಯಕಿಗಳನ್ನು ಕೇಳಿದೆ.

ಬೇರೆ ಬೇರೊಂದೊಂದು ದಾರಿಯ
ತೋರಿಸಿದರೊಬ್ಬೊಬ್ಬರೂ ಎನೆ
ಗಾರುಗೊಂಡಿತು ಮನವು; ಯಾವುದು
ತೋರದೆಯೆ ತೊಳಲುತ್ತಲಿಹೆನು.

ಯಾವದಾರಿಯೊ ಕಾಣೆ ನನ್ನಯ
ದೇವನಿರುವೆಡೆ ಸಾರಲು!


ಎಲ್ಲರೂ ಅರಿತಿರಲು ಬಹುದೇ
ನಲ್ಲನೆಡೆಯನು….! ಅಲ್ಲದೆ-

ಎಲ್ಲರೂ ಬಳಸಿರಲು ಬಹುದೇ-
ಸುಳ್ಳನೇ ಬರಿ..! ತಿಳಿಯದೊಂದೂ,
ನಲ್ಲನೊಡನಿದ್ದೆನ್ನ ನೆನಹದೆ
ಟೊಳ್ಳು ಕನಸಾಗಿರಲು ಬಹುದೇ…!

ಯಾವ ದಾರಿಯೊ ಕಾಣೆ ನನ್ನಯ
ದೇವನಿರುವೆಡೆ ಸಾರಲು !
*****

Tagged:

Leave a Reply

Your email address will not be published. Required fields are marked *

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...

ನನ್ನ ಜನ್ಮ ಗ್ರಾಮಕ್ಕೆ ಹೋಗದೆ ನಾಲ್ಕಾರು ವರುಷಗಳಾಗಿದ್ದವು. ಮೇ ತಿಂಗಳ ಬೆವರನ್ನು ತೋಟದ ಅಬ್ಬಿಯಲ್ಲಿ ತೊಳೆದು ತಂಪಾಗಿ ಒಂದು ಮಾಸ ಕಳೆದು ಬರುವ ಎಂದು ಹಳ್ಳಿಗೆ ಹೋಗಿದ್ದೆ. ಮನೆಗೆ ತಲುಪಿದ ಮರುದಿನವೇ ತಂಗಿಯ ಮನೆಗೆ ಹೋಗುವದು ನನ್ನ ಪದ್ಧತಿ. ನಮ್ಮ ಕೇರಿಯ ಎದುರಿನ ಗುಡ್ಡೆಯನ್ನು ಹತ್...