Home / ಕವನ / ಕವಿತೆ / ತಾಯಿಯ ಒಲವು

ತಾಯಿಯ ಒಲವು

ಜಗದ ತೇಜಮಿದೆಂದು ಇದ ಸಲಹಬೇಕೆಂದು
ಜನನಿಯಾದಳು ತಾಯಿ ನೋವು ಹಲವನು ತಿಂದು
ಹೊಸ ಜೀವವವಳಿಂದ ಕಳೆಗೂಡಿ ಮೈದುಂಬಿ
ಧರೆಗಿಳಿದು ಬಂದಿಹುದು ಅವಳ ಕರುಣೆಯ ನಂಬಿ.

ಗೇಣುದ್ದ ದೇಹದಿಂ ಬಂದ ಶಿಶುವಂ ಹಾಡಿ
ಬೇನೆಗಳ ಲೆಕ್ಕಿಸದೆ ಬೆಳೆಸಿದಳು ಮೊಲೆಯೂಡಿ
ಕುಲಕೋಟಿಯನು ಕಾಯ್ವ ದಿನಮಣಿಯು ನೀನೆಂದು
ತಾಯಾಗಿ ನೋಡಿದಳು ತನಗೆ ಮಗು ಬೇಕೆಂದು.

ಶಿಶುವಿರುವ ತಾಯಿಯೇ ಧನ್ಯೆ ಲೋಕದೊಳೆಂದು
ಹಲವು ಜನ್ಮಾಂತರದ ಸುಕೃತಫಲ ಮಗುವೆಂದು
ಹೊಳೆ ಹೊಳೆವ ಬೆಳ್ಜಸದ ಕೊಡೆಯೊಳಗೆ ಬಾಳೆಂದು
ನಲವಿಂದ ಹರಸುವಳು ಇರದಿರದೆ ತಾ ಬಂದು.

ತಾಯ ಕಣ್ಣಿನ ಮುತ್ತು-ಹೃದಯ ಕಮಲದ ಮುತ್ತು
ಅವಳ ನಲ್ಮೆಯ ಸ್ವತ್ತು-ಸುಖದ ಸೊಬಗಿನ ಸ್ವತ್ತು
ಅಳುವ ಬಾಯಿಯ ಬಿತ್ತು-ಹವಳ ತುಟಿಗಳ ಮುತ್ತು
ತನ್ನೆದೆಯ ಸವಿಯಿತ್ತು-ನೋಡುವಳು ಮನಮಿತ್ತು.

ಈ ಶಕ್ತಿ ಈ ಬುದ್ದಿ ಈ ತನುವು ಈ ಮನವು
ಅವಳ ಹರಕೆಯ ಹಾಲು ಈ ಕೀರ್ತಿ ಸದ್ಗುಣವು
ಅವಳ ರಕ್ತದ ಪಾಲು, ತಾಯ್ನಿಂದ ನೆಲದೊಲವು
ಭಾರತ ತಪಸ್ವಿನಿಯ ಕಣ್ಣಂಗಳದ ನಲವು.

ನುಂಗುವಳು ತಪ್ಪುಗಳ – ತಿದ್ದುವಳು ತೋರುವಳು
ತೊದಲು ಮಾತುಗಳಿಂದ ಹಿಗ್ಗಿ ಹಿರಿದಾಗುವಳು
ಪೂಗಾಯಿ ಹಣ್ಣಾಗಿ ಸವಿಗೂಡಿತೆನ್ನುವಳು
ಸಿಂಗರಿಸಿ ಮನದಣಿಯೆ ಹಾಡುವಳು ನೋಡುವಳು.

ಈ ಹೂವು ನಿನದೆಂದು ದೇವರಡಿಯೊಳು ನಿಂದು
ಬೆಳಕಿತ್ತು ಬಾಳಿತ್ತು ಇದ ನಿತ್ಯ ನೋಡೆಂದು
ಈ ಜೀವ ಹಸನೆನಿಸಿ ಆತ್ಮದೊಳು ಮೂಡೆಂದು
ಒಂದು ಮನದಲಿ ಬೇಡಿ ಕಾಪಿಡುವಳೆಂದೆಂದು.

ಆರರಿವರೀ ಪ್ರೇಮ ನೇಮ ಧರ್ಮದ ಗುಟ್ಟು
ನಾರಿಯರ ಹೃದಯವೇ ತಾಯಿಯೊಲವಿನ ಮಟ್ಟು
ಒಂದು ಬೀಜವನಿಟ್ಟು ಬೆಳಸುವಳು ಉಸಿರಿಟ್ಟು
ಹಸುರನೆರಚುವಳೆಲ್ಲ ಲೋಕದೊಳು ಕೈಬಿಟ್ಟು.

ಹಲವು ದೇವರನೇಕೆ ಪೂಜಿಸುತ ಅಳಬೇಕು
ನಲಿವ ಮಾತೆಯ ನೋಡಿ ಅವಳ ಪೂಜಿಸಬೇಕು
ಸತ್ಯ ಭೂಮಿಯ ಪುತ್ರಿ ನಮ್ಮ ಬದುಕಿನ ಬೆಳಕು
ಪದಸರೋಜದೊಳೊಂದು ಹೂವನಿರಿಸಲಿಬೇಕು.
*****

Tagged:

Leave a Reply

Your email address will not be published. Required fields are marked *

ಬೆಳಕಿನಿಂದ ಜಗಜಗಿಸುವ ಸಂಜೆ ರಾವು ಬಡಿದಂತೆ ಮಬ್ಬಾಗಿತ್ತು. ಈ ಮಬ್ಬು ಹಿಂದೆಂದೂ ಇದಿಲ್ಲ. ದೇಶದ ಹದಿನೇಳು ವರ್ಷದ ಸ್ವಾತಂತ್ರದಲ್ಲಿ, ಮಧ್ಯಮ ತರಗತಿಯ ಜೀವನ ಕೈ ಬಾಯಿಯಾಗಿದ್ದರೂ ದೂರದ ಆಶಯ ಹೊಂಗಿರಣವೊಂದು ಸದಾ ಹೊಳೆದು ಭಾವೀ ಪೀಳಿಗೆಯ ಮನೋಲ್ಲಾಸ ಮಾಡುತ್ತಿತ್ತು. ಆದರೆ ಈ ಮಬ್ಬುಗತ್ತ...

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...