Home / ಕವನ / ಕವಿತೆ / ಮರೆತು ಗೂಡನು ಹಕ್ಕಿ ಮನೆಯೊಳಗೆ ಬಂದಿಹುದು

ಮರೆತು ಗೂಡನು ಹಕ್ಕಿ ಮನೆಯೊಳಗೆ ಬಂದಿಹುದು

ಮರೆತು ಗೂಡನು ಹಕ್ಕಿ ಮನೆಯೊಳಗೆ ಬಂದಿಹುದು
ಇರುಳಿನಲಿ ಭಯವೆರಸಿ ದಾರಿ ಮರೆದಿಹುದು
ಹೊರಗೆ ಚಳಿ ಮಳೆ ಗಾಳಿ ಜಗವ ಭಯಗೊಳಿಸುವುದು
ಸೊರಗಿ ಮೌನದಿ ನಡುಗಿ ಭೀತಿಗೊಳುತಿಹುದು.

ಒಳ ದನಿಯು ಅಡಗಿಹುದು ಎದೆಯೊಳಗೆ ಉಸಿರಿಲ್ಲ
ಕಳೆದೊಗೆದ ಸಿಪ್ಪೆಯೊಲು ಬಾಳಲರಿವಿಲ್ಲ
ಏನಪಾಯವು ಬಹುದೊ ಸೆರೆಯಲ್ಲದಿನ್ನಿಲ್ಲ
ಕಾಣದಿಹ ದಿಕ್ಕುಗಳ ನೋಡುತಿಹುದಲ್ಲ.

ಎಲ್ಲಿಂದ ಬಂದೆನೋ ಇಲ್ಲೆನಿತು ಸಮಯವೋ
ಎಲ್ಲಿಗೆಯ್ವುದೊ ಮುಂದೆ – ಮುಂದಾವ ನೋವೊ?
ಬಲ್ಲವರ ಸುಳಿವಿಲ್ಲ ಬಲ್ಲಿದರ ನೆರೆಯಿಲ್ಲ
ಇಲ್ಲಿ ಪರಮಡಿಲಿನಲಿ ತನಗಿನ್ನು ಸಾವೊ?

ದೀನ ದಿಟ್ಟಿಯು ಮೂಡಿ ಎದ್ದರೇನೋ ಎಂದು
ಮಾನಕೇ ಚ್ಯುತಿಯಾಯ್ತು ಇಲ್ಲಿ ತಾಂ ಬಂದು
ಹೀನತನದಿಂ ತನ್ನ ತಿನ್ನುವರು ಇವರೆಂದು
ಮ್ಲಾನಮುಖದಿಂ ಸೊರಗಿ ಕರಗುತಿದೆ ನೊಂದು.

ಹಳೆಯುಗದ ನೆನಪಿಲ್ಲ ಹೊಸ ಜಗದ ಅರಿವಿಲ್ಲ
ಕಳೆದುಳಿದ ದಿನಮಾನದಳತೆ ಗೊತ್ತಿಲ್ಲ
ಎಲ್ಲರೂ ತನ್ನಂತೆ ಕೊಳೆವ ಜೀವಿಗಳೆಲ್ಲ
ಹೊಲ್ಲದೀ ಬಾಳಿನ್ನು ಮೋಕ್ಷಕ್ಕೆ ಸಲ್ಲ.

ಇರವರಿಯದಿರುತಿಹರು ಅದಕ್ಕಾಗಿ ದುಃಖಿಸರು
ಹೊರಹೊಮ್ಮಿ ಸಾಗುತಿದೆ- ಅದ ಕಾಣರಿವರು
ಸರುವ ಸುಖವಿದು ಎಂಬ ಭ್ರಾಂತಿಯಿಂ ತುಂಬಿಹರು
ಜರೆ ಬಾಯ ತೆರೆದಿಹುದು ಅದ ನೋಡದಿಹರು.

ರೆಕ್ಕೆ ಮುರಿದಿಕ್ಕಿದರು ಕಾಲಲಡಿ ತುಳಿಯುವರು
ಹಕ್ಕನೊರೆಯುವವರಿಂಗೆ ಬುದ್ಧಿ ಹೇಳುವರು
ಅಕ್ಕರೆನರಿಯದರು ಸತ್ಯವನೆ ಕಾಣದರು
ಫಕ್ಕನೇ ಮುನಿಸಾಳ್ದು ಸೊಕ್ಕ ಬೀರುವ.

ಇದ ಕಂಡು ಭಯಗೊಂಡು ಕನಿಕರಿಸಿ ಉದ್ಧರಿಸಿ
ಬದುಕಿಸುವೆನಿವರನ್ನು ಎಂದು ನಿಜವರಸಿ
ಹದುಳ ನುಡಿಯಾಡಿದರೆ ಜಗ್ಗಿದರು ಸಿಂಡರಿಸಿ
ಹದನರಿತು ಬೇಡಿದುದು ಮಂಗಳವ ಹರಸಿ.

ಲೋಕ ಬದುಕಿದೊಡಾನು ಮುಕ್ತನಪ್ಪೆನು ಎಂದು
ಸಾಕಲ್ಯದಿಂ ಬೇಡುತಿರೆ ಬೆಳಕ ಕಂಡು
ಆ ಕಡೆಗೆ ಹಾರಿದುದು ನವಚೇತನವ ತಂದು
ನೂಕಿ ತಮ ಬೆಳಕಿತ್ತು ಸಂತಸದೊಳಂದು.
*****

Tagged:

Leave a Reply

Your email address will not be published. Required fields are marked *

ಬೆಳಕಿನಿಂದ ಜಗಜಗಿಸುವ ಸಂಜೆ ರಾವು ಬಡಿದಂತೆ ಮಬ್ಬಾಗಿತ್ತು. ಈ ಮಬ್ಬು ಹಿಂದೆಂದೂ ಇದಿಲ್ಲ. ದೇಶದ ಹದಿನೇಳು ವರ್ಷದ ಸ್ವಾತಂತ್ರದಲ್ಲಿ, ಮಧ್ಯಮ ತರಗತಿಯ ಜೀವನ ಕೈ ಬಾಯಿಯಾಗಿದ್ದರೂ ದೂರದ ಆಶಯ ಹೊಂಗಿರಣವೊಂದು ಸದಾ ಹೊಳೆದು ಭಾವೀ ಪೀಳಿಗೆಯ ಮನೋಲ್ಲಾಸ ಮಾಡುತ್ತಿತ್ತು. ಆದರೆ ಈ ಮಬ್ಬುಗತ್ತ...

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...