Home / ಕವನ / ಕವಿತೆ / ಭೂಮಿ

ಭೂಮಿ

ಗುಂಡಗುರುಳಿ ದುಂಡಾಗಿ ಹೊಗೆ ಬೆಂಕಿ
ಒಳಗೇ ಅಮುಕಿ ಹಸಿರು ಚೆಲ್ಲುತ ನಿಂತ ತಾಯೇ
ನಮ್ಮಮ್ಮ ಮಹತಾಯಿ ಭೂಮಿತಾಯೇ
ಹಸಿರಿನ ಪಸೆ ಎಷ್ಟು ಹೊತ್ತೇ ನಿನಗೆ?
ಬೆಂಕಿಯುಗುಳಿ ಒಳಗಿನ ಕಿಚ್ಚ ಹೊರ ಚೆಲ್ಲಿ
ಕಾರಿಕೊಳ್ಳುವ ಬಾಯೇ ನಿನ್ನ ಒಣಗಿದ
ಮೈಯ ಮಡಿಕೆ ಮಡಕೆಯ ಚಾಚಿ
ಶತಶತಮಾನದ ದಾಹ ಇಂಗದ ಬಾಯೇ
ಎಷ್ಟಾಯ್ತೆ ಮಳೆ ನಿನಗೆ ವರ್‍ಷಕೆಷ್ಟಾಯ್ತೆ!
ಮುಂಗಾರ ಮಿಂಚಿನಲಿ ಮಿಂಚುತ್ತ ನಡೆದವಳೇ
ಸ್ವಾತಿ ಚಿತ್ತಾ ಉತ್ತರಾ ಧನಿಷ್ಠಾ….
ಕೊನೆಗೊಮ್ಮೆ ಫಸಲಾಗಿ ಕೊಯ್ಲಾಗಿ
ಹಸಿರ ಚೆಲ್ಲಾಡಿ ಮೆರೆದವಳೇ
ಮತ್ತೇಕೆ ಬಾಯ್ ಬಾಯ್ ಬಿಡುವೆಯೇ?
ಮಾರ್‍ಗಶಿರಕೆಲೆಯುದುರಿಸಿ ಕೋಪ ತೋರುವೆಯೆ?
ವಸಂತನಾಗಮನಕೆಂದೇ ಕೋಗಿಲೆಯ
ಬಡಿದೆಬ್ಬಿಸಿ ಚೀರಿಸುವೆಯೆ?
ಮಲ್ಲಿಗೆ ಮಾವು
ಬದನೆ ಹೂವು ಎಲ್ಲ ಎಲ್ಲರಳಿ ನಗುತಿರಲು
ನೀ ಮಾತ್ರ ಬಾಯಾರಿ ಆಗಸಕೆ ಕಣ್ಣಾಗಿ ನಿಂತೆಯೇಕೆ?
ಮುಂಗಾರಿನ ಚಪಲ ನಿರೀಕ್ಷೆಯಲಿ
ಇಂದಾಗುವುತ್ಸವವ ಕೊಂದೆಯೇಕೆ?
ಬೆವರೊರೆಸಿಕೊಳ್ಳುತ್ತ ಶಪಿಸುತ್ತ ಚೀರುತ್ತ
ಬಿಸಿಲ ಬೇಗೆಯನಿಸಿ ದಣಿದೆಯೇಕೆ?


ಮಳೆಗಾಗಿ ಕಾಯುವ ಸೂಳೆ ಇಳೆ
ಎಷ್ಟು ಮಂದಿ ಇನಿಯರೇ ನಿನಗೆ
ಗೆದ್ದಾಳುವವರು? ಕೊಂದು ಬೆಂದು
ಮಡಿದು ಸ್ವರ್ಗ ಸೇರುವವರು?
ನಿನಗಾಗಿ ಹೊಡೆದಾಡುವವರು?
ಗೆದ್ದವರ ತೊತ್ತು ನೀನು ಸೆರಗ ಹಾಸಿ
ಕರೆವೆ ರಮಿಸಿ ರಮಣ ಎನುವೆ
ಯುಗಯುಗವುರುಳಿದರೂ ಕನ್ಯತ್ವ ಹರಿಯದವಳೇ
ಹಲವು ರಾಜರನು ನುಂಗಿ ನೀರು ಕುಡಿದವಳೇ
ರಕ್ತ ಸ್ನಾನದಲಿ ತೊಯ್ದವಳೇ ನವ ನವೋ
ನ್ಮೇಶ ಶಾಲಿನಿ ನವನವೋಲ್ಲೇಖನ ಶಾಲಿನೀ ಎಷ್ಟು
ಜನ ನಿನ್ನ ಬಗ್ಗೆ ಬರೆದರು ಮತ್ತೆ ಮತ್ತೆ ಬರೆದರು
ಎಷ್ಟು ಕೈ ಕತ್ತಿ ಹಿರಿದವು ಮತ್ತೆಷ್ಟು ಮಡಿದವು.|
ಸಿಂಹಾಸನ ಕೆತ್ತಿ ಕೂರಿಸಿ ಮೆರೆಸುವ
ಮುನಿಸು ತಿರುಗಿತೋ ಕಾಲಡಿಗೆ ಹಾಕಿ
ಹೊಸಕುವೆ ಮತ್ತೆ ಹೊಸ ಗಂಡನ
ಹುಡುಕುವೆ ವಲ್ಲಭಾ ಎನ್ನುವೆ
ಚಿರಯೌವನೀ ಚಿರ ಪ್ರಸವಿನೀ
ಮಾತಾ ನಮೋ ನಮಃ
ಎನೆಂದು ಹಾಡಲಿ ಎಷ್ಟೆಂದು ಹಾಡಲಿ
ನಿನ್ನ ಕಥನ?|


ಮಳೆಗಾಗಿ ಇಳೆಯೋ ಇಳೆಗಾಗಿ ಮಳೆಯೋ
ಬೀಜವೃಕ್ಷ ನ್ಯಾಯದ ಪರಿಧಿ ಬಲ್ಲ ಬ್ರಹ್ಮನಿಗೇ
ಸವಾಲು ಮುಗಿದೂ ಮುಗಿಯದ ಈ ಅವಿನಾಭಾವ
ಸಂಬಂಧ “ನನಗೂ ನಿನಗೂ ಅಂಟಿದ ನಂಟಿನ ಕೊನೆ
ಬಲ್ಲವರಾರು ಕಾಮಾಕ್ಷಿಯೇ” ಬೆದೆ ಬಂದಾಗೊಮ್ಮೆ
ಬೆರೆವೆ ಉಗಿ ಪೊರೆಯಾಗಿ ತೇಲುವ ಈ ನೆಲದ
ಧೂಳಿಗೇ ಗಟ್ಟಿಗೊಳುವೆ ಉಗಿ‌ಉಗಿ ಕೆಂಡವಾಗಿ ಉರಿದ
ಈ ಇಳೆಯ ಮೇಲೇ ತಂಪಾಗಿ ಸುರಿವೆ ಕಾದು ಕಾದು
ಕಾಯದಿದ್ದರೆ ಈ ಇಳೆ ಅಲ್ಲೇ ಇರುವೆ ಹಾಯಾಗಿ
ಬಿಳಿ ಮೋಡವಾಗಿ ತೇಲುವ ಮಳೆ ಕಾಯುವ ನೋಂಪಿ
ಹೊತ್ತ ನದಿಗಳೆಲ್ಲಾ ಕಾದು ಕಾದು ಈ ಇಳೆಯ
ಜನರನು ಸಾಯದಂತೆ ಕಾದು ಕಾದು ಅವರ
ನಾಗರಿಕತೆ ಸಂಸ್ಕೃತಿಗಳನ್ನು ಕಾದು ಕಾದು
ತಾವು ಮಾತ್ರ ಹರಿದು ಸಾಗರ ಸೇರಿವೆ ಅಲ್ಲಿಂದಲೇ
ಉಗಿಯಾಗಿ ಮೋಡವಾಗಿ ಮತ್ತೆ ಮಳೆಯಾಗಿ
ಇಳೆಗೇ ಸುರಿದಿವೆ|


ಅದ್ಯಾಕೇ ಹಾಗೆ ಗಡಗಡ ನಡುಗಿದೆ?
ಒಡಲೆಲ್ಲಾ ಬೇನೆ ಬೆಂಕಿಯೆ ನಿನಗೆ?
ಅಲ್ಲಲ್ಲಿ ಆಗಾಗ ಗಡಗಡನೆ ನಡುಗುತ್ತಿರುವ
ನಿನಗೆ ಮಾಘ ಮಾಸದ ಚಳಿಯೇನೇ
ಮಕ್ಕಳ ಮೇಲೆ ಕೋಪವೇನೇ
ಅಗೆದಗೆದು ನಿನ್ನೆಲ್ಲಾ ಚಿನ್ನ ಬೆಳ್ಳಿ ತೆಗೆ
ದರೆಂದು ಅತ್ತತ್ತು ನೀನು ಹಿಡಿದಿಟ್ಟ ಕಣ್ಣೀರನ್ನು
ತಣ್ಣೀರಾಗಿ ಕುಡಿದರೆಂದು ಬಾವಿಗಳ ತೋಡಿ
ತೋಡಿ ಗೋರಿದರೆಂದು ಕೋಪವ ಕಾರಲು ಬಾಯಿ
ಲ್ಲವೇ ನಿನಗೆ? ಹಕ್ಕಿಲ್ಲವೇ ನಿನ್ನ ಮಕ್ಕಳ ಮೇಲೆ
ಹೀಗೆ ನಂಬಿ ನಿಂತಿದ್ದ ಎಲ್ಲರನು ಎಲ್ಲವನು ಎತ್ತಿ
ಅಲ್ಲಾಡಿಸಿ ಬಿಸಾಡುವುದು? ಕಾಂಕ್ರೀಟಿನ
ಹುಡಿಯಡಿ ಕಿತ್ತ ಕೈಕಾಲು ಸಿಕ್ಕಿಸಿ ಎತ್ತಾ
ಕಿಸುವುದು? ಇದು ತರವೇ ನಿನಗೆ?
ಈ ಮಾರಣ ಹೋಮ?
ಸ್ವಂತ ಮಕ್ಕಳ ರಕ್ತ ಕಾಮ?
*****
ಶೂದ್ರ

Tagged:

Leave a Reply

Your email address will not be published. Required fields are marked *

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...

ಬೆಳಿಗ್ಗೆಯಿಂದ ಕತ್ತಲೆಯವರೆಗೂ ಬಸ್ ಸ್ಟಾಂಡಿನಲ್ಲಿ ಬಸ್ಸುಗಳಿಗೆ ಹತ್ತಿ ಇಳಿದುಕೊಂಡು ಎಷ್ಟು ಗೋಗರೆದು ಬಿಕ್ಷೆ ಬೇಡಿದರೂ ಆ ಹುಡುಗನಿಗೆ ಮಧ್ಯಾಹ್ನದ ಊಟ ಮಾಡುವಷ್ಟು ಹಣ ಸಂಗ್ರಹವಾಗುತ್ತಿರಲಿಲ್ಲ. ಮಧ್ಯಾಹ್ನ ಬಿಸ್ಕಿಟು ಮತ್ತು ನಲ್ಲಿ ನೀರು ಕುಡಿದು ಹಸಿವು ತಣಿಸಿದರೂ ರಾತ್ರಿಯ ಊಟಕ್ಕ...