ಭೂಮಿ

ಗುಂಡಗುರುಳಿ ದುಂಡಾಗಿ ಹೊಗೆ ಬೆಂಕಿ
ಒಳಗೇ ಅಮುಕಿ ಹಸಿರು ಚೆಲ್ಲುತ ನಿಂತ ತಾಯೇ
ನಮ್ಮಮ್ಮ ಮಹತಾಯಿ ಭೂಮಿತಾಯೇ
ಹಸಿರಿನ ಪಸೆ ಎಷ್ಟು ಹೊತ್ತೇ ನಿನಗೆ?
ಬೆಂಕಿಯುಗುಳಿ ಒಳಗಿನ ಕಿಚ್ಚ ಹೊರ ಚೆಲ್ಲಿ
ಕಾರಿಕೊಳ್ಳುವ ಬಾಯೇ ನಿನ್ನ ಒಣಗಿದ
ಮೈಯ ಮಡಿಕೆ ಮಡಕೆಯ ಚಾಚಿ
ಶತಶತಮಾನದ ದಾಹ ಇಂಗದ ಬಾಯೇ
ಎಷ್ಟಾಯ್ತೆ ಮಳೆ ನಿನಗೆ ವರ್‍ಷಕೆಷ್ಟಾಯ್ತೆ!
ಮುಂಗಾರ ಮಿಂಚಿನಲಿ ಮಿಂಚುತ್ತ ನಡೆದವಳೇ
ಸ್ವಾತಿ ಚಿತ್ತಾ ಉತ್ತರಾ ಧನಿಷ್ಠಾ….
ಕೊನೆಗೊಮ್ಮೆ ಫಸಲಾಗಿ ಕೊಯ್ಲಾಗಿ
ಹಸಿರ ಚೆಲ್ಲಾಡಿ ಮೆರೆದವಳೇ
ಮತ್ತೇಕೆ ಬಾಯ್ ಬಾಯ್ ಬಿಡುವೆಯೇ?
ಮಾರ್‍ಗಶಿರಕೆಲೆಯುದುರಿಸಿ ಕೋಪ ತೋರುವೆಯೆ?
ವಸಂತನಾಗಮನಕೆಂದೇ ಕೋಗಿಲೆಯ
ಬಡಿದೆಬ್ಬಿಸಿ ಚೀರಿಸುವೆಯೆ?
ಮಲ್ಲಿಗೆ ಮಾವು
ಬದನೆ ಹೂವು ಎಲ್ಲ ಎಲ್ಲರಳಿ ನಗುತಿರಲು
ನೀ ಮಾತ್ರ ಬಾಯಾರಿ ಆಗಸಕೆ ಕಣ್ಣಾಗಿ ನಿಂತೆಯೇಕೆ?
ಮುಂಗಾರಿನ ಚಪಲ ನಿರೀಕ್ಷೆಯಲಿ
ಇಂದಾಗುವುತ್ಸವವ ಕೊಂದೆಯೇಕೆ?
ಬೆವರೊರೆಸಿಕೊಳ್ಳುತ್ತ ಶಪಿಸುತ್ತ ಚೀರುತ್ತ
ಬಿಸಿಲ ಬೇಗೆಯನಿಸಿ ದಣಿದೆಯೇಕೆ?


ಮಳೆಗಾಗಿ ಕಾಯುವ ಸೂಳೆ ಇಳೆ
ಎಷ್ಟು ಮಂದಿ ಇನಿಯರೇ ನಿನಗೆ
ಗೆದ್ದಾಳುವವರು? ಕೊಂದು ಬೆಂದು
ಮಡಿದು ಸ್ವರ್ಗ ಸೇರುವವರು?
ನಿನಗಾಗಿ ಹೊಡೆದಾಡುವವರು?
ಗೆದ್ದವರ ತೊತ್ತು ನೀನು ಸೆರಗ ಹಾಸಿ
ಕರೆವೆ ರಮಿಸಿ ರಮಣ ಎನುವೆ
ಯುಗಯುಗವುರುಳಿದರೂ ಕನ್ಯತ್ವ ಹರಿಯದವಳೇ
ಹಲವು ರಾಜರನು ನುಂಗಿ ನೀರು ಕುಡಿದವಳೇ
ರಕ್ತ ಸ್ನಾನದಲಿ ತೊಯ್ದವಳೇ ನವ ನವೋ
ನ್ಮೇಶ ಶಾಲಿನಿ ನವನವೋಲ್ಲೇಖನ ಶಾಲಿನೀ ಎಷ್ಟು
ಜನ ನಿನ್ನ ಬಗ್ಗೆ ಬರೆದರು ಮತ್ತೆ ಮತ್ತೆ ಬರೆದರು
ಎಷ್ಟು ಕೈ ಕತ್ತಿ ಹಿರಿದವು ಮತ್ತೆಷ್ಟು ಮಡಿದವು.|
ಸಿಂಹಾಸನ ಕೆತ್ತಿ ಕೂರಿಸಿ ಮೆರೆಸುವ
ಮುನಿಸು ತಿರುಗಿತೋ ಕಾಲಡಿಗೆ ಹಾಕಿ
ಹೊಸಕುವೆ ಮತ್ತೆ ಹೊಸ ಗಂಡನ
ಹುಡುಕುವೆ ವಲ್ಲಭಾ ಎನ್ನುವೆ
ಚಿರಯೌವನೀ ಚಿರ ಪ್ರಸವಿನೀ
ಮಾತಾ ನಮೋ ನಮಃ
ಎನೆಂದು ಹಾಡಲಿ ಎಷ್ಟೆಂದು ಹಾಡಲಿ
ನಿನ್ನ ಕಥನ?|


ಮಳೆಗಾಗಿ ಇಳೆಯೋ ಇಳೆಗಾಗಿ ಮಳೆಯೋ
ಬೀಜವೃಕ್ಷ ನ್ಯಾಯದ ಪರಿಧಿ ಬಲ್ಲ ಬ್ರಹ್ಮನಿಗೇ
ಸವಾಲು ಮುಗಿದೂ ಮುಗಿಯದ ಈ ಅವಿನಾಭಾವ
ಸಂಬಂಧ “ನನಗೂ ನಿನಗೂ ಅಂಟಿದ ನಂಟಿನ ಕೊನೆ
ಬಲ್ಲವರಾರು ಕಾಮಾಕ್ಷಿಯೇ” ಬೆದೆ ಬಂದಾಗೊಮ್ಮೆ
ಬೆರೆವೆ ಉಗಿ ಪೊರೆಯಾಗಿ ತೇಲುವ ಈ ನೆಲದ
ಧೂಳಿಗೇ ಗಟ್ಟಿಗೊಳುವೆ ಉಗಿ‌ಉಗಿ ಕೆಂಡವಾಗಿ ಉರಿದ
ಈ ಇಳೆಯ ಮೇಲೇ ತಂಪಾಗಿ ಸುರಿವೆ ಕಾದು ಕಾದು
ಕಾಯದಿದ್ದರೆ ಈ ಇಳೆ ಅಲ್ಲೇ ಇರುವೆ ಹಾಯಾಗಿ
ಬಿಳಿ ಮೋಡವಾಗಿ ತೇಲುವ ಮಳೆ ಕಾಯುವ ನೋಂಪಿ
ಹೊತ್ತ ನದಿಗಳೆಲ್ಲಾ ಕಾದು ಕಾದು ಈ ಇಳೆಯ
ಜನರನು ಸಾಯದಂತೆ ಕಾದು ಕಾದು ಅವರ
ನಾಗರಿಕತೆ ಸಂಸ್ಕೃತಿಗಳನ್ನು ಕಾದು ಕಾದು
ತಾವು ಮಾತ್ರ ಹರಿದು ಸಾಗರ ಸೇರಿವೆ ಅಲ್ಲಿಂದಲೇ
ಉಗಿಯಾಗಿ ಮೋಡವಾಗಿ ಮತ್ತೆ ಮಳೆಯಾಗಿ
ಇಳೆಗೇ ಸುರಿದಿವೆ|


ಅದ್ಯಾಕೇ ಹಾಗೆ ಗಡಗಡ ನಡುಗಿದೆ?
ಒಡಲೆಲ್ಲಾ ಬೇನೆ ಬೆಂಕಿಯೆ ನಿನಗೆ?
ಅಲ್ಲಲ್ಲಿ ಆಗಾಗ ಗಡಗಡನೆ ನಡುಗುತ್ತಿರುವ
ನಿನಗೆ ಮಾಘ ಮಾಸದ ಚಳಿಯೇನೇ
ಮಕ್ಕಳ ಮೇಲೆ ಕೋಪವೇನೇ
ಅಗೆದಗೆದು ನಿನ್ನೆಲ್ಲಾ ಚಿನ್ನ ಬೆಳ್ಳಿ ತೆಗೆ
ದರೆಂದು ಅತ್ತತ್ತು ನೀನು ಹಿಡಿದಿಟ್ಟ ಕಣ್ಣೀರನ್ನು
ತಣ್ಣೀರಾಗಿ ಕುಡಿದರೆಂದು ಬಾವಿಗಳ ತೋಡಿ
ತೋಡಿ ಗೋರಿದರೆಂದು ಕೋಪವ ಕಾರಲು ಬಾಯಿ
ಲ್ಲವೇ ನಿನಗೆ? ಹಕ್ಕಿಲ್ಲವೇ ನಿನ್ನ ಮಕ್ಕಳ ಮೇಲೆ
ಹೀಗೆ ನಂಬಿ ನಿಂತಿದ್ದ ಎಲ್ಲರನು ಎಲ್ಲವನು ಎತ್ತಿ
ಅಲ್ಲಾಡಿಸಿ ಬಿಸಾಡುವುದು? ಕಾಂಕ್ರೀಟಿನ
ಹುಡಿಯಡಿ ಕಿತ್ತ ಕೈಕಾಲು ಸಿಕ್ಕಿಸಿ ಎತ್ತಾ
ಕಿಸುವುದು? ಇದು ತರವೇ ನಿನಗೆ?
ಈ ಮಾರಣ ಹೋಮ?
ಸ್ವಂತ ಮಕ್ಕಳ ರಕ್ತ ಕಾಮ?
*****
ಶೂದ್ರ

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಆಹಾ!
Next post ನನಗೂ ಆಸೆ ಕವಿತೆ ಬರೆಯಲು

ಸಣ್ಣ ಕತೆ

  • ಇಬ್ಬರು ಹುಚ್ಚರು

    ಸದಾಶಿವನಿಗೆ ಹೀಗೆ ಹುಚ್ಚನಾಗಿ ಅಲೆಯುವ ಅಗತ್ಯ ಖಂಡಿತಕ್ಕೂ ಇರಲಿಲ್ಲ. ಅವನಿಗೊಂದು ಹಿತ್ತಿಲು ಮನೆಯೂ, ಹಿತ್ತಿಲಲ್ಲಿ ಸಾಕಷ್ಟು ಫಲ ಕೊಡುವ ಗೇರು ಮರಗಳೂ ಇದ್ದವು. ದಿನಕ್ಕೆ ಸಾವಿರ ಬೀಡಿ… Read more…

  • ಕಳ್ಳನ ಹೃದಯಸ್ಪಂದನ

    ಅದು ಅಪರಾತ್ರಿ ೨ ಘಂಟೆ ಸಮಯ. ಎಲ್ಲರೂ ಗಾಢ ನಿದ್ರೆಯಲ್ಲಿದ್ದರು. ಊರಿನಿಂದ ಸ್ವಲ್ಪ ದೂರವಾಗಿದ್ದ ಕಲ್ಯಾಣ ನಗರದ ಬಡಾವಣೆ, ಅಷ್ಟಾಗಿ ಹತ್ತಿರ ಹತ್ತಿರವಲ್ಲದ ಮನೆಗಳು, ಒಂದು ವರ್ಷದ… Read more…

  • ಮೌನವು ಮುದ್ದಿಗಾಗಿ!

    ಮೋಹನರಾಯರು ರಗ್ಗಿನ ಮಸಕು ತೆಗೆದು ಸುತ್ತಲೂ ನೋಡಲು ಇನ್ನೂ ಎಲ್ಲವೂ ಶಾಂತವಾಗಿಯೇ ಇದ್ದಿತು. ಬೆಳಗಿನ ಜಾವವು ಜಾರಿ, ಸೂರ್ಯನು ಮೇಲಕ್ಕೇರಿದುದು ಅವರಿಗೆ ಅರಿವೇ ಇರಲಿಲ್ಲ. ಅಷ್ಟು ಗಾಢ… Read more…

  • ಕತೆಗಾಗಿ ಜತೆ

    ರಾಜರ ಮನಿಲಿ ವಂದ್ ಮಡವಾಳವ ಬಟ್ಟೆ ಶೆಳೀಲಿಕ್ಕಿದಿದ್ದ. ಅವನಿಗೆ ನೆಂಟ್ರ ಮನಿಗೆ ವಂದಿವ್ಸ ಹೋಗಬೇಕು ಹೇಳಿರೆ ಸೌಡಾಗುದಿಲ್ಲ. ನಿತ್ಯೆ ಬಟ್ಟೆ ಶೆಳುದ್ ವಂದೇಯ. ವಂದಾನೊಂದ ದಿವಸ ಇವತ್… Read more…

  • ಸಾವಿಗೊಂದು ಸ್ಮಾರಕ

    ಶಾಲೆಯ ಮಾಸ್ತರ್ ಆಗಿ ಗಜರಾಜ ಸಿಂಗ್ ಅವರು ಪ್ರೈಮರಿ ಶಾಲೆಯ ಮಕ್ಕಳಿಗೆ ಹೇಳಿಕೊಡುತ್ತಿದ್ದ ಮೊದಲ ಪಾಠವೆಂದರೆ "ತಂದೆ ತಾಯಿಯನ್ನು ಗೌರವಿಸಿ, ಅವರೇ ನಿಮ್ಮ ಪಾಲಿನ ದೈವ" ಎಂದು.… Read more…

cheap jordans|wholesale air max|wholesale jordans|wholesale jewelry|wholesale jerseys