ಚಂದ್ರಗ್ರಹಣ

(ಜೀವನದಲ್ಲಿಯ ಒಂದು ಅನುಭವದ ಅನ್ಯೋಕ್ತಿಯಿದು.)


‘ಇರುಳೆಲ್ಲವೂ ತಿರುಗಿ ತಿರೆಗೆ ಚೆಲುವನು ಬೀರಿ,
ನರರ ಕಣ್‌ಮನ ತಣಿವ ತೆರದಿ ಒಲವನು ತೂರಿ,
ಚರಿತಾರ್ಥನಾಗಲಿಕೆ ಸರಿಯಿದೇದಿನ’ ಎಂದು,
ಹುಣ್ಣಿಮಯ ತಣ್‌ಗದಿರ ತುಂಬುಮೊಗದಲಿ ಬಂದು,
ಅಳತೆಯಿಲ್ಲದ ಪಳುಕು-
ಸೆಳೆಯಂತಿರುವ ತನ್ನ
ಹೊಳೆವ ಕೈ ಕೆಳಗಿಳುಹಿ,
ಹೊನ್ನ ಹುಡಿಯನ್ನು ಹಸನೆಣ್ಣೆಯಲ್ಲಿ ಹೊರೆದು,
ಬಣ್ಣ ಬರೆದನು ಇಳೆಗೆ ಕಲೆಯ ನೆಲೆಯರಿದು.


ಬೆಳಕಿನೊಂದಿಗೆ ರವಿಯು ಬಿರುಬಿಸಿಲ ಪಸರಿಸಿರೆ
ಝಳತಾಗಿ ಜೀವ ಕುಲ ತಳಮಳಿಸುತಿರಲು, ಪೆರೆ
ಬೆಳಕಿನೊಡವೆರಸಿ ತನ್ನೊಡಲಿನಮೃತವ ಸುರಿಸಿ,
ಎಳನಗೆಯ ಮಲ್ಲಿಗೆಯ ಅರಳುಗಳ ಮಳೆಗರಿಸಿ
ನೆಲಕೆ ತಂಪನು ನೀಡಿ,
ಜೀವಿಗಳ ಮೈ ತೀಡಿ,
ಸುಖ-ಶಾಂತಿಗಳನೂಡಿ,
ಜಗವನೆಲ್ಲವ ನಗಿಸಿ ಸೊಗಸನೊಂದಿರುವ-
ನಗುನಗುತ ಬಾನ ತೊರೆಯೊಳು ತೇಲುತಿರುವ.


ಏನಿದೇನಿದು ಚಿತ್ರ? ಬಾನೊಳಾಡುವ ಪೆರೆಯು
ಹೀನಕಳೆಯವನಾಗುತಿಹನೇಕೆ? ಅಚ್ಚರಿಯು!
ನೋಡು ನೋಡುವುದರೊಳೆ ಎನಿತು ಇದು ಮಾರ್‍ಪಾಡು?
ಮೋಡ ನಸುವೂ ಇಲ್ಲ, ಆದರೆಯು ಈ ಪಾಡು!
ಚೆಲುವು ಜಾರುತ್ತಲಿದೆ,
ಹೊಳಪು ಹಾರುತ್ತಲಿದೆ,
ಕೊಳೆಯು ಹೇರುತ್ತಲಿದೆ-
ಬಾಡಿರುವ ಹೊನ್ನರಳ ತೆರ ತೋರುತಿಹನು-
ನೋಡುಗರ ಕಣ್- ಮನದ ತಣಿವ ಕಳೆದಿಹನು.


ಅರಿವು ಮಿರುಗುವ ಎದೆಯು ಮುನಿಯ ಮನವಲ್ಲಾಡೆ,
ಮರೆವು ಅವನನು ಮುಸುಕುವಂತೆ-ಪೆರೆಮೊಗ ಬಾಡೆ,
ಎದ್ದು ಹೊರಟಿದೆ ನೆಲದೊಳಿದ್ದ ಹೊಂಬಣ್ಣವದು;
ಇದ್ದಲಿನ ಹುಡಿಯೆರಚಿದಂತೆ ಕತ್ತಲೆ ಕವಿದು
ಎತ್ತಲೂ ಹರಡಿಹುದು,
ಗೊತ್ತಾಗದೇನೊಂದು,
ಹೊತ್ತು ಎಂತಹದಿಂದು?
ಹೀಗೇತಕಾಗಿದೆಯೊ! ಹಾಂ! ತಿಳಿದೆ, ಅಹುದು!
ಈಗ ಚಂದ್ರನಿಗೆ ಗ್ರಹಣದ ಸಮಯವಿಹುದು!


ಗ್ರಹಣಸಮಯವು ಇಹುದು; ಕುಹಕಿ ಯಹ ಗರವೊಂದು
ಗುಹೆಯಂತೆ ಬಾಯ್ದೆರೆದು ನೊಣೆಯಲಿಕ ನಿಂದಿಹುದು.
ಎಂತಲೇ ತಿಂಗಳಿನ ಕಾಂತಿ ಕುಂದುತಲಿಹುದು-
ಇಂತಹನ ಹಿಂಸಿಸುವುದೆಂಥ ಗರವಿರಬಹುದು?
ಚೆಲುವಿಕೆಗೆ ನೆಲೆಯಿವನೆ,
ಒಲವಿನಾ ಸೆಲೆಯಿವನೆ,
ಕಳೆಯ ಹಿರಿಹೊಳೆಯಿವನೆ!
ಅಯ್ಯೋ, ಏನನ್ಯಾಯ! ಈತಗೂ ಹಗೆಯೆ?
ಅಯ್ಯ! ಜಗದೊಡೆಯ! ನಿನಗೆಲ್ಲವಿದು ನಗೆಯೆ?


ಕೇಡು- ಹಗೆ- ಪೀಡೆ-ಗರ ಕಾಡಬಹುದಾರನ್ನು?
ಖೋಡಿ-ಕೇಡಿಗ-ಕವಡಿಯಾದ ನಾಡಾಡಿಯನು!
ಜಗದಾಪ್ತನೀತ, ಇವನಿಗು ಹಗೆಗಳಿಹರೇನು?
ಜಗವನೇ ಸೊಗದೊಳಿಡೆ ಹಗಲಿರುಳು ಹವಣಿಪನು.
ಎಳೆಯರೆಲ್ಲರು ಇವನ
ಕಳೆಗಳಿಗೆ ಮನಸೋತು,
ಒಲವಿನೊಲವಾಗಿರುವ
ತಮ್ಮ ತಾಯಿಗೆ ತಮ್ಮನೆಂದು ತಿಳಿಯುವರು-
‘ನಮ್ಮ ಚಂದಮಾಮ’ ಎನುತ ಹಿಗ್ಗುವರು.


ಕೊಡುಗೂಸುಗಳು ಇವನ ಬೆಡಗು-ಗಾಡಿಗೆ ಬೆರೆತು,
ಪಡೆಯಲಿಹ ಒಡನಾಡಿ ಸೆರೆಯಂತೆ ಇರಲೆಂದು,
ಮನದೆರಕದಿಂದ ಮೈ ಮರೆದು ಲಜ್ಜೆ ಯನುಳಿದು
‘ಇನಿಯ ಚಂದ್ರಮರಾಯ!’ ಎಂದು ಒಕ್ಕಣಿಸುವರು.
ನಲ್ಲ-ನಲ್ಲೆಯರೊಂದಿ
ಚೆಲ್ಲಾಟಗಳನಾಡೆ-
ಉಲ್ಲಸದೊಳೋಲಾಡೆ-
ಎಲ್ಲರೀ ಚೆಲ್ಲಿಗನ ಕೆಳೆಯ ಬಯಸುವರು-
‘ಇಲ್ಲ ಸರಿ ಇದಕೆ’ನುವ ಸೊಗವ ಸಾರುವರು.


ಬಾಳುವೆಯ ತಿರುಳೆಂದು ತಿಳಿದ ಹಸುಮಕ್ಕಳನು
ಹೇಳಲಾಗದ ಹೃದಯದೊಲವಿಂದೆ ತಾಯದಿರು
ಬಲು ಮುದ್ದು ಮಾಡಿ ಕರೆಯುವರಾವ ಹೆಸರಿಂದೆ?
‘ಚೆಲುವ ಚೆಂದಿರ!’ ಎಂದೆ-ಬೇರೆ ಇನ್ನಾವುದಿದೆ?
ಎಲ್ಲರೊಲವಿನ ಸರಿಗೆ
ಸಲ್ಲುವಂತೆಯೆ ತೂಗೆ
ಇಲ್ಲವೀತನ ಹಾಗೆ!
ಮಾತಿನಾಚೆಯ ಬಗೆಯ ಮೌನಗೀತವ ಹಾಡಿ,
ಈತ ಜಡಗಳನು ಸಹ ನಲಿಸುವನುಸಿರ ನೀಡಿ.


‘ಸುರರ ಗರುವಿಕೆಯೇನು? ನರರ ಕಿರುಕುಳವೇನು?
ಸರಿಯೆ ಎಲ್ಲರು!’ ಎಂಬ ಸಮದರ್ಶಿ ಚಂದಿರನು-
ಸುರಿಸುತಿರುವನು ನಿರುತ ಧರೆಗೆ ಸವಿಸೊದೆಯನ್ನು ;
ಸರಿಹೋಲುವರಾರು ಈ ಯೋಗಿರಾಜನನು?
ಇವನೊಡನೆಯೂ ಹಗೆಯೆ?
ಇವನಲಿಯು ಕೀಳ್‌ಬಗೆಯೆ?
ಇವನಿಗೂ ತಗುಬಗಿಯೆ?
ರವಿಯ ರಾಜ್ಯದೊಳು ಕಾವಳದ ಹಾವಳಿಯೆ ?
ಸುವಿಮುಕ್ತ ಜೀವರಿಗು ಭವದ ಬಳಲಿಕೆಯೆ ?

೧೦
ಭಂಗಕೊಳಗಾಗಿಸಲು ತಿಂಗಳಿನ ತಪ್ಪೇನು ?
ಕೊಂಗಿಗಳು ಒಪ್ಪು-ತಪ್ಪುಗಳ ನೋಡುವರೇನು ?
ಬಹುಜನಕೆ ಬೇಕಾದ ಮಹಿಮನನು ಕಂಡೊಂದು
ಕುಹಕಿ ತಾ ಸಹಿಸದೆಯೆ ಬರಿದೆ ವೈರವ ತಳೆದು
ಖೋಡಿಗಳೆಯುತೆ ಹಳಿದು,
ಕಾಡಿ ಪೀಡಿಸುವುದಿದು
ರೂಢಿನಿಯಮವೆ ಇಹುದು.
ಹಾಲಗಡಿಗೆಯಲಿ ಹುಳಿಬೆರಸಿ ಹಿಗ್ಗುವುದು,
ಕೀಳುಜೀವದ ಹುಟ್ಟು ಗುಣವೆ ಆಗಿಹುದು.

ನೊಣೆಯಲಿಗೆ ಬಂದಿರುವ ಹಗೆಯನ್ನು ಹಣಿದು,
ಮಿನುಗದಿಹನೇ ಮುನ್ನಿನಂತೆ ಪೂರ್ಣೇಂದು?
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಏಕೆ ಹುಟ್ಟಿಸಿದೆ ನನ್ನನು?
Next post ಮಹಾಲಕ್ಷ್ಮಿ

ಸಣ್ಣ ಕತೆ

  • ಮಾದಿತನ

    ಮುಂಗೋಳಿ... ಕೂಗಿದ್ದೆ ತಡ, ಪೆರ್‍ಲಜ್ಜ ದಿಡಿಗ್ಗನೆದ್ದ. ರಾತ್ರಿಯೆಲ್ಲ... ವಂದೇ ಸಮ್ನೆ ಅಳುತ್ತಾ, ವುರೀಲೋ... ಬ್ಯಾಡೋ... ಯಂಬಂತೆ, ದೀಪದ ಬುಡ್ಡಿ, ನಡ್ಮುನೆ ಕಂಬ್ಕಂಟಿ, ಸಣ್ಗೆ ವುರಿತಿತ್ತು. ಯದೆವಳ್ಗೆ ಮಜ್ಗೆ… Read more…

  • ಗುಲ್ಬಾಯಿ

    ನಮ್ಮ ಪರಮಮಿತ್ರರಾದ ಗುಂಡೇರಾವ ಇವರ ನೇತ್ರರೋಗದ ಚಿಕಿತ್ಸೆ ಗಾಗಿ ನಾವು ಮೂವರು ಮಿರ್ಜಿಯಲ್ಲಿರುವ ಡಾಕ್ಟರ ವಾಲ್ನೆಸ್ ಇವರ ಔಷಧಾಲಯಕ್ಕೆ ಬಂದಿದ್ದೆವು. ಗುಂಡೇರಾಯರು ಹಗಲಿರುಳು ಔಷಧಾಲಯದಲ್ಲಿಯೇ ಇರಬೇಕಾಗಿರುವದರಿಂದ ಆ… Read more…

  • ಸ್ನೇಹಲತಾ

    ೧೫-೯-೧೯.. ಈಗ ಮನಸ್ಸಿಗೆ ನೆಮ್ಮದಿಯೆನಿಸುತ್ತಿದೆ. ಇಂದಿನಿಂದ ಮತ್ತೆ ನನ್ನ ದಿನಚರಿ ಬರೆಯುವ ಕಾರ್ಯಕ್ರಮವನ್ನು ಆರಂಭಿಸಬೇಕು. ದಿನಚರಿಯೆ ನನ್ನ ಸಹಧರ್ಮಿಣಿ; ನನ್ನ ಸಹ-ಸಂಚಾರಿ; ಅದೆ ನನಗೆ ಸಂತಸ ಕೊಡುವುದು.… Read more…

  • ವ್ಯವಸ್ಥೆ

    ಮಗಳ ಮದುವೆ ಪಿಕ್ಸ್ ಆಗಿದ್ದರಿಂದ ದೊಡ್ಡ ತಲೆ ಭಾರ ಇಳಿದಂತಾಗಿತ್ತು. ಮದುವೆ ಮುಂದಿನ ತಿಂಗಳ ಕೊನೆಯ ವಾರವೆಂದು ದಿನಾಂಕವನ್ನೂ ನಿಗದಿಪಡಿಸಲಾಗಿತ್ತು. ಗಂಡಿನವರ ತರಾತುರಿಗೆ ಒಪ್ಪಲೇಬೇಕಾದ ಪರಿಸ್ಥಿತಿ ನನ್ನದು.… Read more…

  • ಮಿಂಚು

    "ಸಾವಿತ್ರಿ, ಇದು ಏನು? ನನ್ನಾಣೆಯಾಗಿದೆ. ಹೀಗೆ ಮಾಡಬೇಡ! ಇದು ಒಳ್ಳೆಯದಲ್ಲ. ಬಿಡು, ಬಿಡು...! ನಾಲ್ಕು ಜನ ನೋಡಿದರೆ ಏನು ಅಂದಾರು?" ಅನ್ನಲಿ ಏನೇ ಅನ್ನಲಿ ನಾನು ಯಾವ… Read more…

cheap jordans|wholesale air max|wholesale jordans|wholesale jewelry|wholesale jerseys