Home / ಕವನ / ಕವಿತೆ / ಭಲಭಲರೆ, ಶಕುನಿ!

ಭಲಭಲರೆ, ಶಕುನಿ!

ಕೌರವರ ಮಂತಣಗಾರನಾದ ಶಕುನಿ ಮಾಡಿದ ಕಾರ್ಯ ಅಕಾರ್ಯವೆಂದ ನಿಂದಿಸುವುದು, ಅಜ್ಞಾನದ ಪರಿಣಾಮವೆಂದು ಭಾವಿಸಬಹುದಲ್ಲವೆ?


ಧೀರುರೇ, ಭಲಭಲರೆ! ಶಕುನಿಯೇ ನಾ ನಿನಗೆ
ತಲೆವಾಗಿ ವಂದಿಸುವೆನೈ!
ಭಾರತೀಯರ ಮೇಲೆ ನೀ ಮಾಡಿದುಪಕಾರ
ಭಾರವಾಗಿಹುದು ಕಾಣೈ!


ನಿನ್ನ ಕೈ ಚಳಕದಾ ಹೊಲಬನರಿಯದೆ ನಿನಗೆ
ಹಳಿವನ್ನು ಹೊದ್ದಿಸುವರು-
ಬಣ್ಣವನೆ ನೋಡಿ ಕೋಗಿಲಿಗೆ ಕರಿಗಾಗೆಯೆಂ-
ದೆನುವ ಮತಿಮಂದಜನರು!


ಮುಳ್ಳ ಮಳೆಯಲ್ಲಿರುವ ಹೊಸಜೇನುಹುಟ್ಟಿನಲಿ
ಇನಿರಸವು ತುಂಬಿರುವೊಲು-
ಸುಳ್ಳಲ್ಲ, ನಿನ್ನ ಪ್ರತಿಯೊಂದು ಕೃತಿಯೊಳಗೊಳಗೆ
ಹುರುಳು ಹುದುಗಿಹುದು ಕೇಳು!


ನೀನಿಲ್ಲದಿರಲು ಭಾರತದ ಹಿರಿಹೊತ್ತಗೆಯು
ತಿರುಳಿಲ್ಲದಾಗಿರುವುದು-
ತನಿರಸವನೆಲ್ಲವನು ಹಿಂಡಿ ಹೊರದೆಗೆದ ಕ-
ಬ್ಬಿನ ಕೋಲಿನಂತಿರುವುದು.


ಸುಜನರನು ದುರ್ಜನರು ಯುಗ-ಯುಗಗಳಲ್ಲಿಯೂ
ಪೀಡಿಸುವರೆಂಬುದನ್ನು
ತ್ರಿಜಗಕ್ಕೆ ತಿಳುಹಲಿಕೆ ಭಾರತದ ನಾಟಕದಿ
ಸೂತ್ರಧರನಾದೆ ನೀನು !


ಧರ್ಮರಾಯನ ಧರ್ಮನಿಷ್ಠೆ, ಭೀಮನ ಬಲುಹು,
ಅರ್ಜುನನ ಅಸ್ತ್ರದರಿವು,
ನಮ್ಮೆಲ್ಲರಾ ಕಂಗಳೆದುರಿನಲ್ಲಿ ಕುಣಿಯುವುದು
ನಿನ್ನ ಗೈಮಯ ಫಲಿತವು !


ದುರ್ಯೋಧನನ ಧೈರ್ಯ-ಚಲದಂಕತನವ, ವಿದು-
ರನ ವಿಷ್ಣುಭಕ್ತಿಯನ್ನು,
ಸೂರ್‍ಯಾತ್ಮಜನ ದಾತೃಗುಣವ ಡಂಗುರ ಹೊಯ್ದು
ಜಗದಿ ಸಾರಿದೆಯೊ ನೀನು!


ಪಾಂಚಾಲಿನಿಯ ಪಾವನತೆಯು ಪಸರಿಸುವುದಕೆ
ನೆರವು ನೀ ನೀಡಿದೆಯಲ್ಲಾ?
ಚಂಚಲಾಕ್ಷಿಯ ಹೆಸರನಾರು ತಿಳಿಯುತ್ತಿರ್ದ-
ರೈ, ಪೇಳು ನೀ ಸೌಬಲಾ!


ಕುರುವಂಶಜಾತರನು ಹುರಿಗೊಳಿಸಿ ಸಂಗರಕೆ
ಪರಮಾತ್ಮ ಕೃಷ್ಣನಿಂದೆ-
ಪರಮಗೀತೆಯನು ಹಾಡಿಸಿದೆ ಜಗಕೆಲ್ಲ ಉಪ-
ಕೃತಿಯ ಹೊರೆಯನು ಹೊರಿಸಿದೆ!

೧೦
ಇನ್ನೆಂದು ಬಂದು ನೀ ಭರತಖಂಡದಲಿ ಹೂ-
ಡುವೆ ನಿನ್ನ ನಾಟಕವನು ?
ಮನ್ನೆಯನೆ ತಿಳುಹುವುದು ಜನಕೆ ‘ಸತ್ಯಕ್ಕೆ ಜಯ
ವುಂಟೆ’ಂಬ ತತ್ತ್ವವನ್ನು !

೧೧
ಧೀರುರೇ, ಭಲಭಲರೆ ! ಶಕುನಿಯೇ ನಿನಗೆ ನಾ
ತಲೆವಾಗಿ ವಂದಿಸುವೆನು.
ಭಾರತೀಯರಿಗೆಲ್ಲ ಜೀವನದ ಸಾರವನು
ಕಲಿಸಲಿಕೆ ಬೇಕು ನೀನು!
*****

Tagged:

Leave a Reply

Your email address will not be published. Required fields are marked *

ಬೆಳಕಿನಿಂದ ಜಗಜಗಿಸುವ ಸಂಜೆ ರಾವು ಬಡಿದಂತೆ ಮಬ್ಬಾಗಿತ್ತು. ಈ ಮಬ್ಬು ಹಿಂದೆಂದೂ ಇದಿಲ್ಲ. ದೇಶದ ಹದಿನೇಳು ವರ್ಷದ ಸ್ವಾತಂತ್ರದಲ್ಲಿ, ಮಧ್ಯಮ ತರಗತಿಯ ಜೀವನ ಕೈ ಬಾಯಿಯಾಗಿದ್ದರೂ ದೂರದ ಆಶಯ ಹೊಂಗಿರಣವೊಂದು ಸದಾ ಹೊಳೆದು ಭಾವೀ ಪೀಳಿಗೆಯ ಮನೋಲ್ಲಾಸ ಮಾಡುತ್ತಿತ್ತು. ಆದರೆ ಈ ಮಬ್ಬುಗತ್ತ...

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...