Home / ಕವನ / ಕವಿತೆ / ಭಲಭಲರೆ, ಶಕುನಿ!

ಭಲಭಲರೆ, ಶಕುನಿ!

ಕೌರವರ ಮಂತಣಗಾರನಾದ ಶಕುನಿ ಮಾಡಿದ ಕಾರ್ಯ ಅಕಾರ್ಯವೆಂದ ನಿಂದಿಸುವುದು, ಅಜ್ಞಾನದ ಪರಿಣಾಮವೆಂದು ಭಾವಿಸಬಹುದಲ್ಲವೆ?


ಧೀರುರೇ, ಭಲಭಲರೆ! ಶಕುನಿಯೇ ನಾ ನಿನಗೆ
ತಲೆವಾಗಿ ವಂದಿಸುವೆನೈ!
ಭಾರತೀಯರ ಮೇಲೆ ನೀ ಮಾಡಿದುಪಕಾರ
ಭಾರವಾಗಿಹುದು ಕಾಣೈ!


ನಿನ್ನ ಕೈ ಚಳಕದಾ ಹೊಲಬನರಿಯದೆ ನಿನಗೆ
ಹಳಿವನ್ನು ಹೊದ್ದಿಸುವರು-
ಬಣ್ಣವನೆ ನೋಡಿ ಕೋಗಿಲಿಗೆ ಕರಿಗಾಗೆಯೆಂ-
ದೆನುವ ಮತಿಮಂದಜನರು!


ಮುಳ್ಳ ಮಳೆಯಲ್ಲಿರುವ ಹೊಸಜೇನುಹುಟ್ಟಿನಲಿ
ಇನಿರಸವು ತುಂಬಿರುವೊಲು-
ಸುಳ್ಳಲ್ಲ, ನಿನ್ನ ಪ್ರತಿಯೊಂದು ಕೃತಿಯೊಳಗೊಳಗೆ
ಹುರುಳು ಹುದುಗಿಹುದು ಕೇಳು!


ನೀನಿಲ್ಲದಿರಲು ಭಾರತದ ಹಿರಿಹೊತ್ತಗೆಯು
ತಿರುಳಿಲ್ಲದಾಗಿರುವುದು-
ತನಿರಸವನೆಲ್ಲವನು ಹಿಂಡಿ ಹೊರದೆಗೆದ ಕ-
ಬ್ಬಿನ ಕೋಲಿನಂತಿರುವುದು.


ಸುಜನರನು ದುರ್ಜನರು ಯುಗ-ಯುಗಗಳಲ್ಲಿಯೂ
ಪೀಡಿಸುವರೆಂಬುದನ್ನು
ತ್ರಿಜಗಕ್ಕೆ ತಿಳುಹಲಿಕೆ ಭಾರತದ ನಾಟಕದಿ
ಸೂತ್ರಧರನಾದೆ ನೀನು !


ಧರ್ಮರಾಯನ ಧರ್ಮನಿಷ್ಠೆ, ಭೀಮನ ಬಲುಹು,
ಅರ್ಜುನನ ಅಸ್ತ್ರದರಿವು,
ನಮ್ಮೆಲ್ಲರಾ ಕಂಗಳೆದುರಿನಲ್ಲಿ ಕುಣಿಯುವುದು
ನಿನ್ನ ಗೈಮಯ ಫಲಿತವು !


ದುರ್ಯೋಧನನ ಧೈರ್ಯ-ಚಲದಂಕತನವ, ವಿದು-
ರನ ವಿಷ್ಣುಭಕ್ತಿಯನ್ನು,
ಸೂರ್‍ಯಾತ್ಮಜನ ದಾತೃಗುಣವ ಡಂಗುರ ಹೊಯ್ದು
ಜಗದಿ ಸಾರಿದೆಯೊ ನೀನು!


ಪಾಂಚಾಲಿನಿಯ ಪಾವನತೆಯು ಪಸರಿಸುವುದಕೆ
ನೆರವು ನೀ ನೀಡಿದೆಯಲ್ಲಾ?
ಚಂಚಲಾಕ್ಷಿಯ ಹೆಸರನಾರು ತಿಳಿಯುತ್ತಿರ್ದ-
ರೈ, ಪೇಳು ನೀ ಸೌಬಲಾ!


ಕುರುವಂಶಜಾತರನು ಹುರಿಗೊಳಿಸಿ ಸಂಗರಕೆ
ಪರಮಾತ್ಮ ಕೃಷ್ಣನಿಂದೆ-
ಪರಮಗೀತೆಯನು ಹಾಡಿಸಿದೆ ಜಗಕೆಲ್ಲ ಉಪ-
ಕೃತಿಯ ಹೊರೆಯನು ಹೊರಿಸಿದೆ!

೧೦
ಇನ್ನೆಂದು ಬಂದು ನೀ ಭರತಖಂಡದಲಿ ಹೂ-
ಡುವೆ ನಿನ್ನ ನಾಟಕವನು ?
ಮನ್ನೆಯನೆ ತಿಳುಹುವುದು ಜನಕೆ ‘ಸತ್ಯಕ್ಕೆ ಜಯ
ವುಂಟೆ’ಂಬ ತತ್ತ್ವವನ್ನು !

೧೧
ಧೀರುರೇ, ಭಲಭಲರೆ ! ಶಕುನಿಯೇ ನಿನಗೆ ನಾ
ತಲೆವಾಗಿ ವಂದಿಸುವೆನು.
ಭಾರತೀಯರಿಗೆಲ್ಲ ಜೀವನದ ಸಾರವನು
ಕಲಿಸಲಿಕೆ ಬೇಕು ನೀನು!
*****

Tagged:

Leave a Reply

Your email address will not be published. Required fields are marked *

ಹೆರಿಗೆ ನೋವಿನಿಂದ ಸಂಕಟಪಡುತ್ತಿದ್ದ ಹೆಂಡತಿ ಗಂಗಾಳನ್ನು ಆಸ್ಪತ್ರೆಗೆ ಚಿಕ್ಕಣ್ಣ ಕರೆದುಕೊಂಡು ಬಂದಾಗ ಔಟ್ ಪೇಶಂಟ್ ವಿಭಾಗ ಗಿಜಿಗುಟ್ಟುತ್ತಿತ್ತು. ಗುಂಪುಕಟ್ಟಿ ನಿಂತಿದ್ದ ಮಹಿಳೆಯರ ಸಾಲನ್ನು ಛೇಧಿಸಿಕೊಂಡು ವೈದ್ಯರ ಮೇಜಿನ ಬಳಿ ಬಂದು ನಿಂತ ಅವನ ತೋಳುಗಳಲ್ಲಿ ಎರಡೂವರೆ ವರ್ಷದ ಮಗುವ...

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...