Home / ಕವನ / ಕವಿತೆ / ನಿತ್ಯ ಪೂಜೆ

ನಿತ್ಯ ಪೂಜೆ

ಗುಡಿಯಲ್ಲಿ ನಡೆದಿರ್ದ್ದ ಪೂಜೆಯೇ ಸಿರಿಯಿಂದು
ಮರೆಯಾಗಿದೆ-ಎಲ್ಲ-ಮರೆಯಾಗಿದೆ!


ಅಳತೆಯಿರದನಿತು ದೀವಿಗೆಯೋಳಿ ತೊಳತೊಳಗಿ,
ಬೆಳಗಿಸಿದುವಂದು ದೇವಿಯ ವರದ ಮೂರುತಿಯ ;
ಕಳೆದುಕೊಂಡಿಂದು ತಿಳಿನೇಯವನು ದೀವಿಗೆಗ-
ಳಿಳಿದು ಕರ್ಗತ್ತಲೆಯು ಕವಿದು ಮುಸುಕಿದೆ ಗುಡಿಯ.
ದೇವಿಯಾ ವರದಮೂರುತಿ ಕಾಣದಿಹುದು;
ಭಾವುಕರ ಬಳಗವದು ಬೆದರಿ ಚೆದರಿಹುದು!


ಅರಳುಗಳ ಕರ್ಪುರಾರತಿಯ ಧೂಪದ ಕಂಪು
ಬೆರೆತು ಸುಳಿಗಾಳಿಯೋಳು ಹರಿದು, ದೂರದ ಜನರ
ಕರೆದೊಯ್ಯುತ್ತಿರಲಿಲ್ಲವೇ ಬಳಿಗೆ ? ಇಂದೇನು ?
ಸರಿದಿರುವ ಸೊಡರುಗಳ ಸೊವಡುಗಂಪದು ಹರಡಿ,
ಹೊರ- ಹೊರಟು ಮೂಗುಸೆಲೆ ಕೊರೆಯುತಿಹುದು,
ನೆರೆಯವರನೂ ದೂರ ಸರಿಸುತಿಹುದು !


ಅಂದಿನಾ ಪೂಜೆಯವಸರದ ಮಂತ್ರಗಳೇನು !
ಒಂದೆ ದನಿಯೊಳೆ ಮೊರೆವ ಭಾವಗೀತಗಳೇನು !
ದುಂದುಭಿಯ ಡೋಳು-ಜಾಗಟೆಗಳಬ್ಬರವೇನು !
ಇಂದದೊಂದೂ ಇಲ್ಲ, ಎಲ್ಲೆಲ್ಲಿಯೂ ಮೌನ !
ನುಡಿಯುತಿಹ ಹಲ್ಲಿಗಳ ಲೊಟಲೊಟೆಂಬುಲುಹು,
ಅಡಿಗಡಿಗೆ ಮೌನತೆಯ ಸೀಳಿ ಹೊರಡುವುವು!


ಹಾಲಕ್ಕಿಯೊಂದು ಹುಮ್ಮಸದಿ ಕಿಲಬಿಲಿಸುತಿದೆ ;
ಮೂಳನಾಯೊಂದು ಮನಬಂದಂತೆ ಬೊಗಳುತಿದೆ ;
ಕೇಳುತಿದೆ ಅತ್ತಿತ್ತ ನರಿಗಳೂಳಾಟ; ಬಿರುಗಾಳಿ ಬಿರು-
ಗಾಳಿ ಬಿರು-ಬಿರ್ರೆಂದು ಮೊರೆಮೊರೆದು ಬೀಸುತಿದೆ !
ಪೂಜೆಯವಸರದ ಮಂತ್ರ ಸ್ವನಗಳಿಲ್ಲ….
ಓಜೆಯಲಿ ಮೆರೆವ ವಾದ್ಯಧ್ವನಿಗಳಿಲ್ಲ!


ಓ! ಅರಿದಿದೇನಿದು?… ದೇವಿಯಿರುವ ದೆಸೆಯಿಂದಿತ್ತ,
ಬರುವ ಗಾಳಿಯೊಳು ಬೆರೆತಿರುವ ಬಿಸಿಯುಸಿರೇನು ?
ಬಿಸಿಯುಸಿರ ಬೆಂಬಳಿಸಿ ಬರುವ ದನಿ ಯಾರದಿದು ?
ಬರಿಯೆ ದನಿಯಲ್ಲ; ಹುರುಳಿನ ನುಡಿಯ ಕೂಡಿಹುದು!
ಗಾಳಿ ತರುತಿಹ ನುಡಿಯಿದೇನೆಂಬಿರೇನು?
ಕೇಳಿ-ಕೇಳಿರಿ, ನಸುವೆ ಕೊಟ್ಟು ಕಿವಿಗಳನು !


“ನಿತ್ಯ ಪೂಜೆಯು ಬೇಕು ! ನಿತ್ಯ ಪೂಜೆಯು ನನಗೆ !
ಕುತ್ತಗಳ ಕಳೆದುಕೊಳುವಾಶೆಯಲ್ಲವೆ ನಿಮಗೆ?
ನಿತ್ಯ ಪೂಜಿಸಲು ಬೇಸತ್ತರಾಗುವುದೇನು?
ನಿತ್ಯ ಪೂಜೆಯು ಬೇಕು; ನಿತ್ಯ ಪೂಜ್ಯಳು ನಾನು!
ಕತ್ತಲೆಗೆ ಹೆದರದಿರಿ ಕಾಲಿಡಿ ಮುಂದೆ,
ಒತ್ತರದಿ ಬನ್ನಿರೆಲ್ಲರು ಇಲ್ಲಿಗಿಂದೆ!
ಮರ-ಮರಳಿ ಸಲ್ಲಿಸಿರಿ ವೀರಪೂಜೆಯನೆನಗೆ,
ವರವಾವುದನು ಕೇಳಿ ಕೊಡುವೆ ನಾ ನಿಮಗೆ!”
*****

Tagged:

Leave a Reply

Your email address will not be published. Required fields are marked *

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...

ಬೆಳಿಗ್ಗೆಯಿಂದ ಕತ್ತಲೆಯವರೆಗೂ ಬಸ್ ಸ್ಟಾಂಡಿನಲ್ಲಿ ಬಸ್ಸುಗಳಿಗೆ ಹತ್ತಿ ಇಳಿದುಕೊಂಡು ಎಷ್ಟು ಗೋಗರೆದು ಬಿಕ್ಷೆ ಬೇಡಿದರೂ ಆ ಹುಡುಗನಿಗೆ ಮಧ್ಯಾಹ್ನದ ಊಟ ಮಾಡುವಷ್ಟು ಹಣ ಸಂಗ್ರಹವಾಗುತ್ತಿರಲಿಲ್ಲ. ಮಧ್ಯಾಹ್ನ ಬಿಸ್ಕಿಟು ಮತ್ತು ನಲ್ಲಿ ನೀರು ಕುಡಿದು ಹಸಿವು ತಣಿಸಿದರೂ ರಾತ್ರಿಯ ಊಟಕ್ಕ...