Home / ಕವನ / ಕವಿತೆ / ಮಣ್ಣು

ಮಣ್ಣು

ನಾನು ಭಾವ ನೀನು ಗೀತ
ನಾನು ರಾಮ ನೀನು ಸೀತ
ಹೀಗೆಲ್ಲ ಹಾಡಿದ ಕವಿಗಳು ಒಂದು ದಿನ
ನಾನು ಶವ ನೀನು ಪ್ರೇತ
ಎಂದು ಸಾಯುತ್ತಾರೆ

ನಾನು ದೇವರ ಪುತ್ರ ಬನ್ನಿ ನನ್ನಡಿಯಲ್ಲಿ
ಮೋಕ್ಷದ ಹಾದಿ ಸುರಳೀತ
ಎಂದು ಸಾರಿದ ಸಾಧಕರೆಲ್ಲ
ಗೊತ್ತಿದ್ದೋ ಗೊತ್ತಿಲ್ಲದೆಯೋ
ಇನ್ನೂ ಏಳದ ಹಾಗೆ ಮಲಗಿದ್ದಾರೆ

ಅಣು ಅರಸಿದವನು, ಕೃತಕ
ಮಳೆ ಸುರಿಸಿದವನು, ವಿದ್ಯುತ್
ಒಲೆ ಉರಿಸಿದವನು
ಒಂದು ಸಲ ಅರಸಿ ಹೋಗಿದ್ದಾರೆ ಏನನ್ನೋ
ತಿರುಗಿ ಬಂದಿಲ್ಲ

ಎಲ್ಲರೂ ಕಂಡದ್ದು ಒಂದೇ ಕೊನೆ
ಹೊಡೆದವನದೊಂದೇ ಬೆಣೆ

ನಾನಿಂತ ಮಣ್ಣಲ್ಲೆಲ್ಲ ಕರಗಿದವರ ಕತೆ
ಒಂದು ನರಿಯಂತೆ ಮತ್ತೊಂದು ಹುಲಿಯಂತೆ
ಇನ್ನೊಂದು ಬೀದಿ ನಾಯಿಯಂತೆ
ಎಲ್ಲಾ ಕೂಡಿ
ನಮ್ಮ ಮನೆಯಂಗಳಕ್ಕೆ ಮಣ್ಣಾದವಂತೆ

ಒಬ್ಬ ಮಾಸ್ತರನಂತೆ
ಉಣ್ಣದೇ ಸತ್ತವನು
ಒಬ್ಬ ಕಾರಕೂನನಂತೆ
ಹೊಟ್ಟೆ ತುಂಬಿಯೇ ಸತ್ತವನು

ಇದ್ದಾಗ ಒಬ್ಬರ ಮುಖ
ಇನ್ನೊಬ್ಬರಿಗಾಗದು
ಅವನ ಬಯ್ಯದೇ ಇವಗೆ
ಹೊತ್ತೇ ಹೋಗದು

ಇಬ್ಬರೂ ಸೇರಿ
ಚೌತಿಯ ಗಣಪತಿಗೆ
ಆಕಾರವಾದರು

ಮಣ್ಣ ಹಣತೆಯದೊಂದು ಕತೆ
ಮಡಕೆಯದೊಂದು ನೀಳ್ಗತೆ
ಹೊಸ ಮನೆಯ ಗೋಡೆಯದೊಂದು
ಕಾದಂಬರಿಯೇ ಇದೆ

ಕೇಳುತ್ತ ದಂಗಾದೆ
ಬೆರಳು ಕಚ್ಚಿದೆ ಆಶ್ಚರ್ಯಕ್ಕೆ
ಥೂ ! ಥೂ !
ಉಗಿದೆನು ಬರೀ ಮಣ್ಣು !
ಇಡೀ ಮೈ ನಕ್ಕಿತು ಒಳಗಿನವನನ್ನು ನೋಡಿ
“ನಾನು ನಿನಗಿಂತ ಹಿಂದೆ
ಸತ್ತವರ ಬೂದಿ”

ತಾಳಲಾರದೇ ಮನಸ್ಸಿನ
ಸ್ವಾಸ್ಥ್ಯಕ್ಕೆಂದು
ಮೆಲ್ಲಗೆ ಪಕ್ಕದ ಮನೆಯ
ಹುಡುಗಿಯನ್ನೆತ್ತಿಕೊಂಡೆ
ಎತ್ತಿಕೊಂಡರೆ ಪೂರಾ ಮಣ್ಣಿನದೆ ವಾಸನೆ
ಮೂಗೊತ್ತಿಕೊಂಡೆ

ಪೇಟೆಯಲ್ಲೆಲ್ಲ ಮಣ್ಣಿನದೆ ಮೆರವಣಿಗೆ
ಕ್ಲಾಸಿನಲ್ಲೆಲ್ಲ ಮಣ್ಣಿನದೆ ಬರವಣಿಗೆ
ಮಣ್ಣಿಗೆ ಮಣ್ಣು ಗೋಪುರ ಕಟ್ಟುತ್ತ

ಚೌತಿಯ ಗಣಪತಿ
ಈಶ್ವರ ಕೆರೆಯ ನೀರಲ್ಲಿ
ಹಗು-ಹಗೂರ
ಕರಗುವ ಹಾಗೆ

ನನ್ನೊಳಗೆ ಕರಗುತ್ತಿದ್ದೆ
ಮಣ್ಣಿನ ಮುದ್ದೆ

ಸತ್ತವರ ನೆರಳುಗಳಲ್ಲಿ
ಇದ್ದವರ ಕೊರಳು
ಕೊರೆಯುವ ಗೆದ್ದಲಗಳಲ್ಲಿ
ಬೀಳುತ್ತೆ ಉರುಳು

ಬಜಾರಿನ ತರಕಾರಿ, ಬಜಾರಿಯ ಚಿನ್ನಾಭರಣ
ಈ ಪ್ರಯೋಗಾಲಯದ ಗಾಜಿನುಪಕರಣ
ಜೊತೆಯಲ್ಲಿ ನಾನೂ, ನೀವೂ
ಮಾನವ ಕುಲದ
ಇತಿಹಾಸದಶ್ವತ್ಥ ಮರದಡಿಗೆ
ಮಣ್ಣಲ್ಲಿ ಮಣ್ಣಾಗಿ ಕರಗುವ ಕತೆಯೇ
ಇಂದಿನೀ ಉಸಿರು
*****

 

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...