Home / ಕವನ / ಕವಿತೆ / ಮಣ್ಣು

ಮಣ್ಣು

ನಾನು ಭಾವ ನೀನು ಗೀತ
ನಾನು ರಾಮ ನೀನು ಸೀತ
ಹೀಗೆಲ್ಲ ಹಾಡಿದ ಕವಿಗಳು ಒಂದು ದಿನ
ನಾನು ಶವ ನೀನು ಪ್ರೇತ
ಎಂದು ಸಾಯುತ್ತಾರೆ

ನಾನು ದೇವರ ಪುತ್ರ ಬನ್ನಿ ನನ್ನಡಿಯಲ್ಲಿ
ಮೋಕ್ಷದ ಹಾದಿ ಸುರಳೀತ
ಎಂದು ಸಾರಿದ ಸಾಧಕರೆಲ್ಲ
ಗೊತ್ತಿದ್ದೋ ಗೊತ್ತಿಲ್ಲದೆಯೋ
ಇನ್ನೂ ಏಳದ ಹಾಗೆ ಮಲಗಿದ್ದಾರೆ

ಅಣು ಅರಸಿದವನು, ಕೃತಕ
ಮಳೆ ಸುರಿಸಿದವನು, ವಿದ್ಯುತ್
ಒಲೆ ಉರಿಸಿದವನು
ಒಂದು ಸಲ ಅರಸಿ ಹೋಗಿದ್ದಾರೆ ಏನನ್ನೋ
ತಿರುಗಿ ಬಂದಿಲ್ಲ

ಎಲ್ಲರೂ ಕಂಡದ್ದು ಒಂದೇ ಕೊನೆ
ಹೊಡೆದವನದೊಂದೇ ಬೆಣೆ

ನಾನಿಂತ ಮಣ್ಣಲ್ಲೆಲ್ಲ ಕರಗಿದವರ ಕತೆ
ಒಂದು ನರಿಯಂತೆ ಮತ್ತೊಂದು ಹುಲಿಯಂತೆ
ಇನ್ನೊಂದು ಬೀದಿ ನಾಯಿಯಂತೆ
ಎಲ್ಲಾ ಕೂಡಿ
ನಮ್ಮ ಮನೆಯಂಗಳಕ್ಕೆ ಮಣ್ಣಾದವಂತೆ

ಒಬ್ಬ ಮಾಸ್ತರನಂತೆ
ಉಣ್ಣದೇ ಸತ್ತವನು
ಒಬ್ಬ ಕಾರಕೂನನಂತೆ
ಹೊಟ್ಟೆ ತುಂಬಿಯೇ ಸತ್ತವನು

ಇದ್ದಾಗ ಒಬ್ಬರ ಮುಖ
ಇನ್ನೊಬ್ಬರಿಗಾಗದು
ಅವನ ಬಯ್ಯದೇ ಇವಗೆ
ಹೊತ್ತೇ ಹೋಗದು

ಇಬ್ಬರೂ ಸೇರಿ
ಚೌತಿಯ ಗಣಪತಿಗೆ
ಆಕಾರವಾದರು

ಮಣ್ಣ ಹಣತೆಯದೊಂದು ಕತೆ
ಮಡಕೆಯದೊಂದು ನೀಳ್ಗತೆ
ಹೊಸ ಮನೆಯ ಗೋಡೆಯದೊಂದು
ಕಾದಂಬರಿಯೇ ಇದೆ

ಕೇಳುತ್ತ ದಂಗಾದೆ
ಬೆರಳು ಕಚ್ಚಿದೆ ಆಶ್ಚರ್ಯಕ್ಕೆ
ಥೂ ! ಥೂ !
ಉಗಿದೆನು ಬರೀ ಮಣ್ಣು !
ಇಡೀ ಮೈ ನಕ್ಕಿತು ಒಳಗಿನವನನ್ನು ನೋಡಿ
“ನಾನು ನಿನಗಿಂತ ಹಿಂದೆ
ಸತ್ತವರ ಬೂದಿ”

ತಾಳಲಾರದೇ ಮನಸ್ಸಿನ
ಸ್ವಾಸ್ಥ್ಯಕ್ಕೆಂದು
ಮೆಲ್ಲಗೆ ಪಕ್ಕದ ಮನೆಯ
ಹುಡುಗಿಯನ್ನೆತ್ತಿಕೊಂಡೆ
ಎತ್ತಿಕೊಂಡರೆ ಪೂರಾ ಮಣ್ಣಿನದೆ ವಾಸನೆ
ಮೂಗೊತ್ತಿಕೊಂಡೆ

ಪೇಟೆಯಲ್ಲೆಲ್ಲ ಮಣ್ಣಿನದೆ ಮೆರವಣಿಗೆ
ಕ್ಲಾಸಿನಲ್ಲೆಲ್ಲ ಮಣ್ಣಿನದೆ ಬರವಣಿಗೆ
ಮಣ್ಣಿಗೆ ಮಣ್ಣು ಗೋಪುರ ಕಟ್ಟುತ್ತ

ಚೌತಿಯ ಗಣಪತಿ
ಈಶ್ವರ ಕೆರೆಯ ನೀರಲ್ಲಿ
ಹಗು-ಹಗೂರ
ಕರಗುವ ಹಾಗೆ

ನನ್ನೊಳಗೆ ಕರಗುತ್ತಿದ್ದೆ
ಮಣ್ಣಿನ ಮುದ್ದೆ

ಸತ್ತವರ ನೆರಳುಗಳಲ್ಲಿ
ಇದ್ದವರ ಕೊರಳು
ಕೊರೆಯುವ ಗೆದ್ದಲಗಳಲ್ಲಿ
ಬೀಳುತ್ತೆ ಉರುಳು

ಬಜಾರಿನ ತರಕಾರಿ, ಬಜಾರಿಯ ಚಿನ್ನಾಭರಣ
ಈ ಪ್ರಯೋಗಾಲಯದ ಗಾಜಿನುಪಕರಣ
ಜೊತೆಯಲ್ಲಿ ನಾನೂ, ನೀವೂ
ಮಾನವ ಕುಲದ
ಇತಿಹಾಸದಶ್ವತ್ಥ ಮರದಡಿಗೆ
ಮಣ್ಣಲ್ಲಿ ಮಣ್ಣಾಗಿ ಕರಗುವ ಕತೆಯೇ
ಇಂದಿನೀ ಉಸಿರು
*****

 

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...