Home / ಕವನ / ಕವಿತೆ / ನೆನಪಿಸಿಕೊಳ್ಳಬೇಕವರನ್ನೊಮ್ಮೆ

ನೆನಪಿಸಿಕೊಳ್ಳಬೇಕವರನ್ನೊಮ್ಮೆ


ಸುತ್ತಿ ಸುರುಳಿಗಟ್ಟಿ ಮದೋನ್ಮತ್ತದೊಳು
ಸೊಕ್ಕಿ ಹೆಣೆದು ಬಿಗಿದಪ್ಪಿ
ನಿರ್ಭಯದೊಳು ಆಕಾಶಕ್ಕೇರಿ
ಸೂರ್ಯನನ್ನೊಳಗೆ ಬಿಟ್ಟುಕೊಳ್ಳದ
ಪಚ್ಚೆ ಹಸಿರಿನ ಛತ್ರ ಚಾಮರಗಳ
ಪಿಸುನುಡಿಗೆ ಮೈ ಬೆವೆತರೂ
ಮೆರೆಯುವ ದಟ್ಟ ಕಾನನ

ಸುರಿಸುರಿವ ಮಳೆ
ಸೊಲ್ಲಿಲ್ಲ ಸೂರಿಲ್ಲ ಜೀವಕೆ
ಮೈ ಮುಚ್ಚಿಕೊಳ್ಳುವ ಪರಿಯಿಲ್ಲ
ಜೀವಭೀತಿಗೆ ಇದ್ದರಿಲ್ಲಿ ವಿಷಪೂರಿತ
ಬಾಣಿನ ಬೆತ್ತಲೆ ತಿರುಗುವ ಕಾಡು ಕರಿಯರು;
ಭೂರಮೆಯ ಜಾರವಾ ಜೇಂಗೊಡಗಳು.

ಸಾವಿಗೆ ಹುಳಹುಪ್ಪಡಿ ಕ್ರಿಮಿಕೀಟಗಳ
ವಿಷಾರಿ ರೋಗಾಣುಗಳು
ಭಯಾನಕ ಭಯಂಕರ ಕಾಡುವ ಕಾಡು.

ಸುತ್ತೆಲ್ಲ ಚಿತ್ತ ಹರಿಸಿದತ್ತೆಲ್ಲ
ಆಕಾಶಕೆ ತಬ್ಬಿ ಮಗದೊಮ್ಮೆ ಸೆಳೆದು
ಧುಮ್ಮನೆ ಧುಮುಕಿ ರೌದ್ರಾವತಾರದ
ಬಾಯಿಬಿಚ್ಚಿ ಗಡಚಿಕ್ಕಿ ಮುನ್ನುಗ್ಗಿ
ನೆರೆತೊರೆಯ ಸುನಾಮಿಗಳಬ್ಬರಿಸಿ
ಎದೆನಡುಗಿಸಿ ಉಸಿರು ಹಿಡಿದಾವರಿಸಿದ
ಕರಿನೀರಿನಾರಣ್ಯ.

ಕಂಡದ್ದೇ ಕರಿನೀರು ದಟ್ಟಕಾಡು
ಕನಸು ಬಿತ್ತಿದವು ಬಿಳಿಯ ಸರ್ವಾಧಿಕಾರಿಗಳು
ಬಂದೂಕು ಹೆಗಲಿಗೇರಿಸಿ ಚರ್ಮದಪಟ್ಟಿ ಹಿಡಿದು
ಸ್ವಾತಂತ್ರ್ಯ ಚಳುವಳಿಕಾರರ ಹಿಡಿದೆಳೆದು
ಕೈದಿ ಹಣೆಪಟ್ಟಿ ಹೊಡೆದು ಕೈಕಾಲಿಗೆ ಸರಪಳಿ ಬಿಗಿದು
ಹಡಗೇರಿಸಿ ಅಟ್ಟಹಾಸ ಮೆರೆದದ್ದು.

ಅರೆಬೆಂದ ಊಟ ಮಾತಿಲ್ಲ ಕತೆಯಿಲ್ಲ ಮೌನ
ಮೇಲೆ ಸೂರ್‍ಯ ಚಂದ್ರರೊಡನೆ ಮೂಕ ಸಂವಾದ
ಎದುರಿನ ಸಮುದ್ರದಬ್ಬರದ ತೆರೆಗಳೊಡನೆ
ರೋಷತುಂಬಿದೆದೆಯ ಉಸಿರು
ಸಮುದ್ರಕ್ಕಾದರೂ ಬಿದ್ದು ಸಾಯಬೇಕೆಂದರವರು
ಉಪವಾಸ ಬಿದ್ದಾದರೂ ಜೀವ ಬಿಡಬೇಕೆಂದರವರು
ತಪ್ಪಿಸಿಕೊಂಡು ದಂಡಕಾರಣ್ಯದಲ್ಲಾದರೂ ಓಡಬೇಕೆಂದರವರು
ಕಾವಲು ಕಾವಲು ಎಲ್ಲೆಲ್ಲೂ ಕಾವಲು
ಸರಳುಗಳ ಹಿಂದೆ ನಿಂತ ಅಸಹಾಯಕ ದೇಶಪ್ರೇಮಿಗಳು.

ಗಸ್ತಿನವರ ಚಾಟಿ ಸರಪಳಿ ಏಟುಗಳಿಗೆ
ಮೈಯೆಲ್ಲಾ ಬೆಂಕಿ
ಎದುರು ಮಾತನಾಡಿದ್ದಾದರೆ
ಎದುರಿಗೆ ತೂಗುವ ನೇಣು ಕುಣಿಕೆಗಳು
ಆದರೂ ತಗ್ಗದೆ ಕುಗ್ಗದೆ ಬಗ್ಗದೆ
ಜೀವದ ಹಂಗುತೊರೆದು ಜೈ ಘೋಷ ಕೂಗಿ
ಗವೆನ್ನುವ ಕತ್ತಲು ನೆಲಮಾಳಿಗೆಗೆ
ಹರಿದೋಡುವ ಬಿಸಿನೆತ್ತರಕೆ ಹೆದರದೆ
ಕುಣಿಕೆಗೆ ಕತ್ತೊಡ್ಡಿ ಬಲಿಯಾದರು.

ಅದರಾಚೆ ಹೆಣಗಳು ನುಂಗಲು ಸ್ಪರ್ಧಿಸುವ
ಕಪ್ಪು ಕರಿನೀರ ಹೆದ್ದೆರೆಗಳ ಹಲಗೆ ನಗಾರಿಗಳ ಹೊಡೆತ
ಬಿರುಗಾಳಿ ಮಳೆಯ
ಕಣ್ಣೀರಪ್ಪಳಿಸುವಿಕೆಯ ಅಲ್ಲೋಲ ಕಲ್ಲೋಲ
ಅಯ್ಯೋ! ಅದೆಷ್ಟು ಛಲ ಹೋರಾಟ
ಈ ತಾಯಿನೆಲದ ಪ್ರೀತಿಯ ಋಣಕ್ಕೆ
ಕ್ಷೋಭೆ ಹೋರಾಟ ಹತಾಶೆ ಅಸಹಾಯಕತೆಗೇ
ಇರಬೇಕು; ಗುಂಡಿನೇಟುಗಳಿಗುರುಳಿ ಕಠಿಣ ಶಿಕ್ಷೆಗೇ
ಇರಬೇಕು; ಗಲ್ಲಿಗೆ ಕತ್ತೊಡ್ಡಿ ಕೆಂಪುರಕ್ತ ಕಪ್ಪಾಗಿ ನಂಜೇರಿದ್ದು..
‘ಕಾಳಾಪಾಣಿ’ ಭಯಾನಕ ಶಬ್ದ ಹೊರಹೊಮ್ಮಿದ್ದು.

ಲಕ್ಷಾಂತರ ಚಳುವಳಿಕಾರರ ಕೂಗಿಗೆ
ಜೀವತೆತ್ತ ಆತ್ಮಗಳುಸುರಿಗೆ
ಸಿಕ್ಕಿತು ಸ್ವಾತಂತ್ರ್ಯ ಹೊರಟುಹೋದವು ಪರಂಗಿ
ಪರದೇಶದವುಗಳು


ಕುರ್ಚಿಗಾಗಿ

ಸ್ವಾರ್‍ಥಿಗಳ ಕಚ್ಚಾಟ ಹುನ್ನಾರ ವಿರೋಧ
ಗಾಂಧೀ ತಾತ ನೋಡಿಲ್ಲಿ ನಿನ್ನ ಆದರ್ಶದೇಶದ
ರೆಸಾರ್‍ಟ್ ರಾಜಕೀಯ
ಅವು ಬರಬೇಕೀ ಪುಣ್ಯಕ್ಷೇತ್ರಕೆ
ನಾಚಿಕೆ ಪಟ್ಟುಕೊಳ್ಳಬೇಕೊಮ್ಮೆ ತಮ್ಮ ಐಶಾರಾಮಿಗೆ-
ಕ್ಲಬ್ಬು ಮೋಜು ಮಜ ಕುಣಿತ ಕುಡಿತ
ಬಿಟ್ಟೊಮ್ಮೆ ಬರಬೇಕಿಲ್ಲಿ
ಯುವ ಪೀಳಿಗೆಯ ಅರೆಬರೆಯವು-

ದ್ವೀಪಗಳ ತುಂಬ ತುಂಬಿ ನಿಂತ
ಸಂಗ್ರಾಮದ ಧ್ವನಿ, ಅಸಹಾಯಕತೆ, ಕಿರುಚಾಟ
ನೋವು ಆಲಿಸಬೇಕೊಮ್ಮೆ
ನೋಡಬೇಕವರನ್ನೊಮ್ಮೆ ಮೇಲೆ ಹೊಳೆವ ತಾರೆಗಳಲ್ಲಿ
ಮಾತಾಡಬೇಕೊಮ್ಮೆ ಅವರ ಕಂಡ ಚಂದ್ರನೊಡನೆ
ಫಳಫಳಿಸಿ ಕರಿನೀರ ಕಥೆಹೇಳುವ ಸೂರ್ಯನೊಡನೊಮ್ಮೆ
ಸ್ಪರ್ಶಿಸಬೇಕೊಮ್ಮೆ ಅವರು ಇಟ್ಟ ಹೆಜ್ಜೆಯ ಮಣ್ಣು

ಎದೆ ತುಂಬ ದುಃಖ ಮೈ ತುಂಬ ನಡುಕ
ಕಣ್ಣುಗಳು ಹನಿಗೂಡುತ
ಪಾಪಪ್ರಜ್ಞೆ ಮೂಡುವ ಎಚ್ಚರಿಕೆಯ ಗಂಟೆ.
*****
(ಅಂಡಮಾನಿನ ಸೆಲ್ಯುಲಾರ್ ಜೈಲು ನೋಡಿದಾಗ)

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...