Home / ಕವನ / ಕವಿತೆ / ನೆನಪಿಸಿಕೊಳ್ಳಬೇಕವರನ್ನೊಮ್ಮೆ

ನೆನಪಿಸಿಕೊಳ್ಳಬೇಕವರನ್ನೊಮ್ಮೆ


ಸುತ್ತಿ ಸುರುಳಿಗಟ್ಟಿ ಮದೋನ್ಮತ್ತದೊಳು
ಸೊಕ್ಕಿ ಹೆಣೆದು ಬಿಗಿದಪ್ಪಿ
ನಿರ್ಭಯದೊಳು ಆಕಾಶಕ್ಕೇರಿ
ಸೂರ್ಯನನ್ನೊಳಗೆ ಬಿಟ್ಟುಕೊಳ್ಳದ
ಪಚ್ಚೆ ಹಸಿರಿನ ಛತ್ರ ಚಾಮರಗಳ
ಪಿಸುನುಡಿಗೆ ಮೈ ಬೆವೆತರೂ
ಮೆರೆಯುವ ದಟ್ಟ ಕಾನನ

ಸುರಿಸುರಿವ ಮಳೆ
ಸೊಲ್ಲಿಲ್ಲ ಸೂರಿಲ್ಲ ಜೀವಕೆ
ಮೈ ಮುಚ್ಚಿಕೊಳ್ಳುವ ಪರಿಯಿಲ್ಲ
ಜೀವಭೀತಿಗೆ ಇದ್ದರಿಲ್ಲಿ ವಿಷಪೂರಿತ
ಬಾಣಿನ ಬೆತ್ತಲೆ ತಿರುಗುವ ಕಾಡು ಕರಿಯರು;
ಭೂರಮೆಯ ಜಾರವಾ ಜೇಂಗೊಡಗಳು.

ಸಾವಿಗೆ ಹುಳಹುಪ್ಪಡಿ ಕ್ರಿಮಿಕೀಟಗಳ
ವಿಷಾರಿ ರೋಗಾಣುಗಳು
ಭಯಾನಕ ಭಯಂಕರ ಕಾಡುವ ಕಾಡು.

ಸುತ್ತೆಲ್ಲ ಚಿತ್ತ ಹರಿಸಿದತ್ತೆಲ್ಲ
ಆಕಾಶಕೆ ತಬ್ಬಿ ಮಗದೊಮ್ಮೆ ಸೆಳೆದು
ಧುಮ್ಮನೆ ಧುಮುಕಿ ರೌದ್ರಾವತಾರದ
ಬಾಯಿಬಿಚ್ಚಿ ಗಡಚಿಕ್ಕಿ ಮುನ್ನುಗ್ಗಿ
ನೆರೆತೊರೆಯ ಸುನಾಮಿಗಳಬ್ಬರಿಸಿ
ಎದೆನಡುಗಿಸಿ ಉಸಿರು ಹಿಡಿದಾವರಿಸಿದ
ಕರಿನೀರಿನಾರಣ್ಯ.

ಕಂಡದ್ದೇ ಕರಿನೀರು ದಟ್ಟಕಾಡು
ಕನಸು ಬಿತ್ತಿದವು ಬಿಳಿಯ ಸರ್ವಾಧಿಕಾರಿಗಳು
ಬಂದೂಕು ಹೆಗಲಿಗೇರಿಸಿ ಚರ್ಮದಪಟ್ಟಿ ಹಿಡಿದು
ಸ್ವಾತಂತ್ರ್ಯ ಚಳುವಳಿಕಾರರ ಹಿಡಿದೆಳೆದು
ಕೈದಿ ಹಣೆಪಟ್ಟಿ ಹೊಡೆದು ಕೈಕಾಲಿಗೆ ಸರಪಳಿ ಬಿಗಿದು
ಹಡಗೇರಿಸಿ ಅಟ್ಟಹಾಸ ಮೆರೆದದ್ದು.

ಅರೆಬೆಂದ ಊಟ ಮಾತಿಲ್ಲ ಕತೆಯಿಲ್ಲ ಮೌನ
ಮೇಲೆ ಸೂರ್‍ಯ ಚಂದ್ರರೊಡನೆ ಮೂಕ ಸಂವಾದ
ಎದುರಿನ ಸಮುದ್ರದಬ್ಬರದ ತೆರೆಗಳೊಡನೆ
ರೋಷತುಂಬಿದೆದೆಯ ಉಸಿರು
ಸಮುದ್ರಕ್ಕಾದರೂ ಬಿದ್ದು ಸಾಯಬೇಕೆಂದರವರು
ಉಪವಾಸ ಬಿದ್ದಾದರೂ ಜೀವ ಬಿಡಬೇಕೆಂದರವರು
ತಪ್ಪಿಸಿಕೊಂಡು ದಂಡಕಾರಣ್ಯದಲ್ಲಾದರೂ ಓಡಬೇಕೆಂದರವರು
ಕಾವಲು ಕಾವಲು ಎಲ್ಲೆಲ್ಲೂ ಕಾವಲು
ಸರಳುಗಳ ಹಿಂದೆ ನಿಂತ ಅಸಹಾಯಕ ದೇಶಪ್ರೇಮಿಗಳು.

ಗಸ್ತಿನವರ ಚಾಟಿ ಸರಪಳಿ ಏಟುಗಳಿಗೆ
ಮೈಯೆಲ್ಲಾ ಬೆಂಕಿ
ಎದುರು ಮಾತನಾಡಿದ್ದಾದರೆ
ಎದುರಿಗೆ ತೂಗುವ ನೇಣು ಕುಣಿಕೆಗಳು
ಆದರೂ ತಗ್ಗದೆ ಕುಗ್ಗದೆ ಬಗ್ಗದೆ
ಜೀವದ ಹಂಗುತೊರೆದು ಜೈ ಘೋಷ ಕೂಗಿ
ಗವೆನ್ನುವ ಕತ್ತಲು ನೆಲಮಾಳಿಗೆಗೆ
ಹರಿದೋಡುವ ಬಿಸಿನೆತ್ತರಕೆ ಹೆದರದೆ
ಕುಣಿಕೆಗೆ ಕತ್ತೊಡ್ಡಿ ಬಲಿಯಾದರು.

ಅದರಾಚೆ ಹೆಣಗಳು ನುಂಗಲು ಸ್ಪರ್ಧಿಸುವ
ಕಪ್ಪು ಕರಿನೀರ ಹೆದ್ದೆರೆಗಳ ಹಲಗೆ ನಗಾರಿಗಳ ಹೊಡೆತ
ಬಿರುಗಾಳಿ ಮಳೆಯ
ಕಣ್ಣೀರಪ್ಪಳಿಸುವಿಕೆಯ ಅಲ್ಲೋಲ ಕಲ್ಲೋಲ
ಅಯ್ಯೋ! ಅದೆಷ್ಟು ಛಲ ಹೋರಾಟ
ಈ ತಾಯಿನೆಲದ ಪ್ರೀತಿಯ ಋಣಕ್ಕೆ
ಕ್ಷೋಭೆ ಹೋರಾಟ ಹತಾಶೆ ಅಸಹಾಯಕತೆಗೇ
ಇರಬೇಕು; ಗುಂಡಿನೇಟುಗಳಿಗುರುಳಿ ಕಠಿಣ ಶಿಕ್ಷೆಗೇ
ಇರಬೇಕು; ಗಲ್ಲಿಗೆ ಕತ್ತೊಡ್ಡಿ ಕೆಂಪುರಕ್ತ ಕಪ್ಪಾಗಿ ನಂಜೇರಿದ್ದು..
‘ಕಾಳಾಪಾಣಿ’ ಭಯಾನಕ ಶಬ್ದ ಹೊರಹೊಮ್ಮಿದ್ದು.

ಲಕ್ಷಾಂತರ ಚಳುವಳಿಕಾರರ ಕೂಗಿಗೆ
ಜೀವತೆತ್ತ ಆತ್ಮಗಳುಸುರಿಗೆ
ಸಿಕ್ಕಿತು ಸ್ವಾತಂತ್ರ್ಯ ಹೊರಟುಹೋದವು ಪರಂಗಿ
ಪರದೇಶದವುಗಳು


ಕುರ್ಚಿಗಾಗಿ

ಸ್ವಾರ್‍ಥಿಗಳ ಕಚ್ಚಾಟ ಹುನ್ನಾರ ವಿರೋಧ
ಗಾಂಧೀ ತಾತ ನೋಡಿಲ್ಲಿ ನಿನ್ನ ಆದರ್ಶದೇಶದ
ರೆಸಾರ್‍ಟ್ ರಾಜಕೀಯ
ಅವು ಬರಬೇಕೀ ಪುಣ್ಯಕ್ಷೇತ್ರಕೆ
ನಾಚಿಕೆ ಪಟ್ಟುಕೊಳ್ಳಬೇಕೊಮ್ಮೆ ತಮ್ಮ ಐಶಾರಾಮಿಗೆ-
ಕ್ಲಬ್ಬು ಮೋಜು ಮಜ ಕುಣಿತ ಕುಡಿತ
ಬಿಟ್ಟೊಮ್ಮೆ ಬರಬೇಕಿಲ್ಲಿ
ಯುವ ಪೀಳಿಗೆಯ ಅರೆಬರೆಯವು-

ದ್ವೀಪಗಳ ತುಂಬ ತುಂಬಿ ನಿಂತ
ಸಂಗ್ರಾಮದ ಧ್ವನಿ, ಅಸಹಾಯಕತೆ, ಕಿರುಚಾಟ
ನೋವು ಆಲಿಸಬೇಕೊಮ್ಮೆ
ನೋಡಬೇಕವರನ್ನೊಮ್ಮೆ ಮೇಲೆ ಹೊಳೆವ ತಾರೆಗಳಲ್ಲಿ
ಮಾತಾಡಬೇಕೊಮ್ಮೆ ಅವರ ಕಂಡ ಚಂದ್ರನೊಡನೆ
ಫಳಫಳಿಸಿ ಕರಿನೀರ ಕಥೆಹೇಳುವ ಸೂರ್ಯನೊಡನೊಮ್ಮೆ
ಸ್ಪರ್ಶಿಸಬೇಕೊಮ್ಮೆ ಅವರು ಇಟ್ಟ ಹೆಜ್ಜೆಯ ಮಣ್ಣು

ಎದೆ ತುಂಬ ದುಃಖ ಮೈ ತುಂಬ ನಡುಕ
ಕಣ್ಣುಗಳು ಹನಿಗೂಡುತ
ಪಾಪಪ್ರಜ್ಞೆ ಮೂಡುವ ಎಚ್ಚರಿಕೆಯ ಗಂಟೆ.
*****
(ಅಂಡಮಾನಿನ ಸೆಲ್ಯುಲಾರ್ ಜೈಲು ನೋಡಿದಾಗ)

Tagged:

Leave a Reply

Your email address will not be published. Required fields are marked *

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...

ಮಧ್ಯಾಹ್ನದ ಆರು ತಾಸಿನ ಸಮಯ. ಬಿಸಿಲು ರಣಗುಟ್ಟುತ್ತಿತ್ತು. ಕಲ್ಲವನು ಉರುವಲ ಹೊರೆಯೊಂದನ್ನು ಹೊತ್ತು ತಂದು, ಗುಡಿಸಲಿನ ಮುಂದೆ ಒಗೆದು ಬೇವಿನ ಗಿಡದ ನೆರಳಿನಲ್ಲಿ ಕುಳಿತು ಉಸ್ಸೆಂದು ಉಸುರುಗರೆದಳು. ಗುಡಿಸಲಿನೊಳಗಿಂದ ನಾಲ್ಕಾರು ಚಿಕ್ಕ ಮಕ್ಕಳು ಹೊರಗೆ ಹಾತೊರೆದು ಬಂದು, “ಅವ್...

ಬೀರ ಹಾಸಿಗೆಯಲ್ಲಿ ಹೊರಳುತ್ತಿದ್ದಾನೆ, ಕಣ್ಣಿಗೆ ನಿದ್ರೆಯಿಲ್ಲ; ಮನಸ್ಸಿಗೆ ಶಾ೦ತಿಯಿಲ್ಲ. ಸಾಯಂಕಾಲ ಊರ ಚಾವಡಿಯಲ್ಲಿ “ಹೆಚ್ಚು ಆಹಾರ ಧಾನ್ಯ ಬೆಳೆಯಿರಿ!” ಎಂಬ ವಿಷಯದ ಮೇಲೆ ಅಧಿಕಾರಿಗಳ ವ್ಯಾಖ್ಯಾನ ಕೇಳಿದ್ದನಾತ. ಆಗಿನಿಂದಲೂ ಅವನಿಗೆ ತಾನೊಂದು ಬಾವಿಯನ್ನೇಕೆ ತೋಡಬಾರದು ಎನ್ನ...

ಹೆರಿಗೆ ನೋವಿನಿಂದ ಸಂಕಟಪಡುತ್ತಿದ್ದ ಹೆಂಡತಿ ಗಂಗಾಳನ್ನು ಆಸ್ಪತ್ರೆಗೆ ಚಿಕ್ಕಣ್ಣ ಕರೆದುಕೊಂಡು ಬಂದಾಗ ಔಟ್ ಪೇಶಂಟ್ ವಿಭಾಗ ಗಿಜಿಗುಟ್ಟುತ್ತಿತ್ತು. ಗುಂಪುಕಟ್ಟಿ ನಿಂತಿದ್ದ ಮಹಿಳೆಯರ ಸಾಲನ್ನು ಛೇಧಿಸಿಕೊಂಡು ವೈದ್ಯರ ಮೇಜಿನ ಬಳಿ ಬಂದು ನಿಂತ ಅವನ ತೋಳುಗಳಲ್ಲಿ ಎರಡೂವರೆ ವರ್ಷದ ಮಗುವ...

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...