Home / ಕವನ / ಕವಿತೆ / ದೇವರು ನಗುವುದಾ ಕಂಡೆ

ದೇವರು ನಗುವುದಾ ಕಂಡೆ

ಪೇಪರಿನ ಬಾಣಬತ್ತಳಿಕೆಗಳ ಹಿಡಿದು
ಒಬ್ಬರನ್ನೊಬ್ಬರು ಗುರಿಯಿಟ್ಟು ಕೊಲ್ಲಲು
ಪುರಾವೆ ಪತ್ರಗಳ ಹಿಡಿದು
ದೇವರಿಗೆ ಹೊರಟಿವೆ ರಾಜಕೀಯ ಪಾತ್ರಧಾರಿಗಳು*
ಬಣ್ಣಬಣ್ಣದ ಹುಲಿವೇಷದವುಗಳು.

ಆಣೆ ಪ್ರಮಾಣ ಪ್ರತಿಜ್ಞೆಗಳಿಗೆ
ಎಚ್ಚರಿದ್ದಂತೆಯೇ ಇದ್ದ ದೇವರು
ಇಬ್ಬದಿಯ ಗಂಟುಮುಖಗಳ ನಡುವೆ
ಗುಮ್ಮಾಗಿ ನಗುವುದಾ ಕಂಡೆ.

ಕಂಡೆಕಂಡೆ ತುಕ್ಕುಹಿಡಿದ ಖಾಲಿಕೊಡಗಳ
ಬುಡಬುಡಿಕೆ ಭರ್‍ಚಿ ಗುರಾಣಿ ಎಸೆದಾಟ
ದೇವರು ಕಾಣಿಸಿಯೇ ಕಾಣುವನೆಂಬ
ಭರವಸೆ ಹೊತ್ತು ಕಣ್ಣುಮುಚ್ಚಿ ತುಟಿಬಿಚ್ಚಿ
ಪಿಟಿಪಿಟಿಸುವ ಸಮಯಸಾಧಕರ.

ತಣ್ಣನೆಯ ಬೆಳಕಿನಾ ನಡುವೆ
ಕಿವುಡ ಮೂಕ ಹೆಳವನಾಗಿ ಕಲ್ಲಿನೊಳಗೆ
ಕಣ್ಣು ಪಿಳಿಕಿಸದೆ ಕತ್ತಲೆ ಕೋಣೆಯಲಿ
ಇವರಂಥವರೇ ತೊಡಿಸಿದ ಮುಖವಾಡದೊಳಗೆ
ಉಸಿರು ಬಿಗಿಹಿಡಿದು ಇವರಂತೆಯೇ
ಮೇಲೆ ನಗುಮುಖ ಹೊಂದಿರುವ ದೇವರು ನಗುವುದಾ ಕಂಡೆ.

ಜರತಾರಿ ಪಂಚೆ ಉಟ್ಟ ಪಾತ್ರಧಾರಿಗಳು
ಹತ್ತೂ ಬೆರಳ ಹರಳಿನ ನಕ್ಷತ್ರಕರು
ಕುಂಕುಮ ಶ್ರೀಗಂಧ ಪೂಸಿತರು
ದೇವರನು ಮಾತನಾಡಿಸಿಯೇ ಬಂದಂತೆ
ಕಚ್ಚಾಡಿದ್ದೇ ಕಚ್ಚಾಡಿ ನಂಜೇರಿಸಿಕೊಂಡು
ಸುರಿವ ಮಳೆಯೊಳಗೆ ಭಾಷಣ ಬಿಗಿದದ್ದು ನೋಡಿ
ದೇವರು ನಕ್ಕ.
ಮಂತ್ರಿಗಳಂತೆ ಇವು ಅಲ್ಲಲ್ಲ ತಂತ್ರಿಗಳು.
ಕಂಡೆ ಕಂಡೆ ಮತ್ತೊಮ್ಮೆ ಇನ್ನೊಮ್ಮೆ
ದೇವರು ನಗುವುದಾ ಕಂಡೆ.

ರಾತ್ರಿಗೆ ಸುಸ್ತಾದ ದೇವನ ಹೂಹಾರ
ಮುಖವಾಡ ತೆಗೆದಿಟ್ಟು ಪೂಜಾರಿ
ಹಗುರಾಗಿ ಹಣ್ಣು ಹಂಪಲ ಹೊತ್ತುಕೊಂಡು ಹೋದದ್ದೇ-
ಬೆತ್ತಲೆ ದೇವರು ಸುಸ್ತಾಗಿ
ಗಡದ್ದಾಗಿ ನಿದ್ದೆಗೆ ಜಾರಿದಾಗಲೂ
ಈ ಯಂತ್ರ ಮಂತ್ರ ತಂತ್ರದವರ
ಕಂಬಿ ಕಟಕಟೆಯ ಶಿಕ್ಷೆ ನೋಡಿ
ಕೈಯಲೊಂದು ಏಕತಾರಿ ಕೊಡಬೇಕಿವಕೆನ್ನುತ
ದೇವರು ಗಹಗಹಿಸಿ ನಗುವುದಾ ಕಂಡೆ
ದೇವರು ಬಿದ್ದು ಬಿದ್ದು ನಗುವುದ ಕಂಡೆ.

* [ಮಾಜಿ ಮಂತ್ರಿಗಳು ಯಡಿಯೂರಪ್ಪ ಮತ್ತು ಕುಮಾರಸ್ವಾಮಿ – ಧರ್ಮಸ್ಥಳದ ಮಂಜುನಾಥನ ಎದುರು. ಮಂತ್ರಿ ಕಿಮ್ಮನೆ ರತ್ನಾಕರ – ಮಾರಿಕಾಂಬ ದೇವಸ್ಥಾನದಲ್ಲಿ.]
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...