Home / ಕವನ / ಕವಿತೆ / ನಾನು

ನಾನು

ಒಂದು ದಿನ ಬೆಳಿಗ್ಗೆ ನಾನು ಕಾಣೆಯಾದೆ
ಎಷ್ಟು ಹುಡುಕಿದರೂ ಸಿಕ್ಕಲಿಲ್ಲ
ಕಂಗಾಲಾಗಿ ಪತ್ರಿಕೆಯಲ್ಲಿ ಪ್ರಕಟಣೆ ಕೊಟ್ಟೆ
“ನಾನು ಕಾಣೆಯಾಗಿದ್ದೇನೆ ಓ ನಾನೇ
ನೀನಿಲ್ಲದೇ ನಾನು ಇರಲಾರೆ ಅದಕ್ಕಾಗಿ
ಬೇಗನೇ ಬಾ”

ನಾನು ಸಿಗಲಿಲ್ಲ
ಮನೆಯಲ್ಲಷ್ಟೇ ಹುಡುಕಿದ್ದನಷ್ಟೆ
ಬೇರೆ ಕಡೆಗೂ ಹುಡುಕೋಣ ಹುಡುಕಿದರೆ
ನಾನು ಸಿಕ್ಕಬಹುದು ಎಂದು ಹುಡುಕಿದೆ
ಜೂನು ತಿಂಗಳ ಮಳೆಯೂ ರಣರಣ ಹಗಲು
ನಾನು ಆಲೆ-ಅಲೆದಾಡಿದೆ ನನ್ನನ್ನು ಸಿಗಲು

ಕಾಲೇಜು ಲೈಬ್ರರಿಯ ಪುಸ್ತಕದಲ್ಲಿ ಎಲ್ಲಾದರೂ
ನಾನು ಬಿದ್ದಿರಬಹುದೇ?
ಅಥವ ಯಾರಾದರೂ ನನ್ನ ಕದ್ದಿರಬಹುದೇ ?
ಇಲ್ಲ-ಹೀಗೂ ಇದ್ದಿರಬಹುದೇ ?
ಒಂದು ದಿನ ಮಳೆಯಲ್ಲಿ ತೋಯುತ್ತ ಬಂದಾಗ
ಜಾರಿ ಹೋಗಿರಬಹುದೇ ?
ಕಿಸೆಯೊಳಗೆ ಐಡೆಂಟಿಟೀ ಕಾರ್ಡು
ಅಲ್ಲಾದರೂ ನಾನು ಸಿಕ್ಕಬಹುದೇ ?

ಹ್ಞಾಂ-
ಅಂದಂತೆ
ಯಾವಾಗಲಾದರೂ ಈ ಮನೆಯಲ್ಲಿ ನಾನು ಇದ್ದೆನೇ
ಇದ್ದದ್ದು ಹೋದದ್ದೆಲ್ಲಿಗೆ ? ಹೋದದ್ದು ಬಂದೀತು ಯಾವಾಗ ?
ಓ ನಾನೇ ನಾನೇ ನನ್ನ ಜೀನೇ
ನೀನು ಸತ್ತೇ ಹೋದೆಯೇನೇ
ಶಂಕರಾಚಾರ್ಯರಿಗೆ ನಾನು ಯಾರು ಎಂಬುದು ಪ್ರಶ್ನೆ

ನಾನು ಶಂಕೆಯಾಚಾಯ೯
ನನಗೋ-ನಾನು ಎಲ್ಲಿದ್ದೇನೆ
ಎಂಬ ಹುಡುಕಾಟ
ಈ ಹುಡುಕಾಟವೆಲ್ಲ ಹುಡುಗಾಟವಾದೀತೇ ?
ಅಯ್ಯೋ-ನಾನು ಸಿಕ್ಕದೇ ಹೋದರೆ
ನಾನು ಹೇಗೆ ಉಳಿದೇನು ?

ಇಷ್ಟಾದರೂ ನನ್ನ ಹುಡುಕಿ ಫಲವೇನು ?
ನಾನು ಇದ್ದರೂ ಇರದೆ
ಇದ್ದರೂ ಬಿದ್ದರೂ
ಬೇರೆ ಯಾರೂ ನನ್ನ ಹುಡುಕಾಡಲೊಲ್ಲರು
ಹಾಗೆಂದು ನನಗೆ ನಾನು ಬೇಡವೇ
ಏನಿದು ಅನರ್ಥ ?

ಕನ್ನಡಿಯ ಎದುರುಗಡೆ ನಾನಿಲ್ಲ
ಅಂಗಿ ಪ್ಯಾಂಟಿನ ಒಳಗೆ ನಾನಿಲ್ಲ
ಸಭೆಯೊಳಗೆ ನಿಂತವನು ನಾನಲ್ಲ
ಈ ಪದ್ಯ ಬರೆದವನೂ ನಾನಲ್ಲ
ನಾನು ಉಂಟು ನಾನು ಇಲ್ಲ
ನಾನು ಕಾಣೆ ನಾನು ಹುಡುಕುವವ
ನನ್ನನ್ನ ನಾನೇ ಹುಡುಕಿ
ನಾನು ಸಿಗಲಿಲ್ಲ
ಎಂದರೆ ಸರಿ ಅಲ್ಲ
ಅಂದರೂ ಸಿಗದೆ ಇದ್ದದ್ದು ಸುಳ್ಳಲ್ಲ

ಈ ಮಣ್ಣಿನಾಳ ಪಾತಾಳದೊಳಗಡೆಗೆ
ನಾನು ಹೂತಿರಬಹುದೇ
ಇರಲಾರೆ-ಇರಲಾರೆ
ನಿನ್ನೆ ಕಂಡಿದ್ದ ಆ ಸುಮದ ನಗೆಯರಳಲ್ಲಿ
ನಾನು ಚೆಲ್ಲಿ ಹೋಗಿರಬಹುದೇ ?
ಇರಲಾರೆ-ಇರಲಾರೆ
ದೇವರೆದರುಗಡೆ ಕಣ್ಮುಚ್ಚಿ ಕುಳಿತಾಗ
ಹರಿದ ಭಕ್ತಿಯ ಕಡಲ
ನೀರಾಗಿ ಸಾಯುಜ್ಯ ಹೊಂದಿರಲುಬಹುದೇ ?
ಇರಲಾರೆ-ಇರಲಾರೆ
ಹಾಗಿದ್ದಲ್ಲಿ
ನಾನೆಂದೂ ತಿರುಗಿ ಬರಲಾರೆ

ಒಂದು ದಿನ ನಡುರಾತ್ರಿ
ಹೆಂಡತಿ ಮಕ್ಕಳು ರಾಜ್ಯ
ಎಲ್ಲವನ್ನೂ ತೊರೆದು
ಬುದ್ಧ ಓಡಿದ ಹಾಗೆ
ನನ್ನೊಳಗಿನಿಂದ ಈ ನಾನು ಓಡಿರಬಹುದೇ ?
ಒಂದು ಹುಣ್ಣಿಮೆ ರಾತ್ರಿ
ಕಾವಿ ಬಟ್ಟೆಯನುಟ್ಟು
ನಾನು ನನ್ನೊಳಗಡೆಗೆ ಹಿಂತಿರುಗಬಹುದೇ ?

ಹೌದಲ್ಲ
ನನ್ನದಾಗಿದ್ದಲ್ಲಿ ನನಗೆ ಸಿಗಲೇಬೇಕು
ಆದರೂ ಅಲ್ಲಿಯವರೆಗೆ ಹುಡುಕಾಡಬೇಕು
ಹುಡುಕೀ ಹುಡುಕೀ ನಾನು
ನನ್ನನ್ನು ಪಡೆದು
ನನ್ನಲ್ಲಿ ನನ್ನನ್ನು ನನ್ನ ಜಾಗದ ಮೇಲೆ
ಕೂರಿಸಿದರೆ ಮಾತ್ರ ಉಳಿದೀತು
ನನ್ನ ನನ್ನತನ
ಇಲ್ಲ-ಇದೇ ಸಣ್ಣತನ.
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...