Home / ಲೇಖನ / ಇತರೆ / ಸಂತೋಷ

ಸಂತೋಷ

ಸಂತೋಷ – ಹೆಪಿನೆಸ್ – ಎನ್ನುವುದು ಒಂದು ಮರೀಚಿಕೆ. ಹಿಡಿಯಲು ಹೋದರೆ ಜಾರಿಕೊಳ್ಳುತ್ತದೆ. ಹುಡುಕಲು ಹೋದರೆ ಸಿಗುವುದಿಲ್ಲ. ಯಾವುದನ್ನೋ ಗುರಿ ಇಟ್ಟುಕೊಂಡು ಹುಡುಕುತ್ತಾ ಹತ್ತಿರ ಹೋದರೆ ದೂರದೂರ ಓಡುತ್ತದೆ. ಇದರಲ್ಲೇ ನಮ್ಮ ಸಂತೋಷ ಇದೆ ಎಂದು ಯಾವುದಾದರೂ ಒಂದನ್ನು ಹಿಡಿದುಕೊಂಡರೆ ಮುಂದೊಂದು ದಿನ ಇದೇ ದುಃಖಕ್ಕೆ ನಾಂದಿಯಾಯಿತಲ್ಲ ಎನ್ನುವ ಕೊರಗು ಹುಟ್ಟಿಕೊಳ್ಳುತ್ತದೆ. ಸಂತೋಷ ಸಿಗುತ್ತದೆ ಎಂದು ಎಣಿಸಿದಲ್ಲಿ ಸಿಗುವುದಿಲ್ಲ. ಕೆಲವೊಮ್ಮೆ ಇಲ್ಲ ಎಂದು ಎಣಿಸಿದಲ್ಲಿ ಸಿಗುತ್ತದೆ. ಹಾಗಾಗಿ ಸಂತೋಷಕ್ಕೊಂದು ಇಕ್ವೆಶನ್ ಹಾಕುವುದೂ ಸಾಧ್ಯವಿಲ್ಲ. ಸಂತೋಷ ಎನ್ನುವುದು ನಮ್ಮ ಮನದ ಒಂದು ಭಾವನೆ.

ನಮ್ಮ ಮನೋಭೂಮಿಕೆ ಮಿತಿಯಿಲ್ಲದಷ್ಟು ವಿಶಾಲವಾಗಿದೆ. ಹಲವಾರು ಭಾವನೆಗಳ ಆಗರವಾಗಿದೆ. ಮನದಂಗಳದಲ್ಲಿ ಆಸೆಗಳ ಮೂಟೆಮೂಟೆಗಳೇ ರಾಶಿ ಬಿದ್ದಿರುತ್ತವೆ. ಎಡೆಬಿಡದ ಬೇಕು ಬೇಡಗಳು ಕಾಡಿಸುತ್ತಲೇ ಇರುತ್ತವೆ. ಅಳೆಯಲಾಗದ ಆಳದಿಂದ ಆಸೆಗಳು, ಅಗತ್ಯಗಳು, ನಿರೀಕ್ಷೆಗಳು ಉದ್ಭವವಾಗುತ್ತಲೇ ಇರುತ್ತವೆ. ಇವುಗಳಿಗೆ ತಕ್ಕ ಹಾಗೆ ಸಂತೋಷದ ಇಕ್ವೇಷನ್ ಬದಲಾಗುತ್ತಾ ಹೋಗುತ್ತದೆ.

ಹಾಗಾದರೆ ಸಂತೋಷ ಅಂದರೆ ಏನು? ಅದು ಎಲ್ಲಿ ಹೇಗೆ ಸಿಗುತ್ತದೆ? ಅದನ್ನು ನಮ್ಮದಾಗಿಸಿಕೊಳ್ಳುವುದು ಹೇಗೆ? ಸಂತೋಷದ ಹುಡುಕಾಟ ಎನ್ನುವುದು ಒಂದು ಭ್ರಮೆಯೇ? ಧರ್ಮಗ್ರಂಥಗಳಲ್ಲಿ ಇದಕ್ಕೆ ಉತ್ತರಗಳಿವೆ. ಸಂತರು, ಚಿಂತಕರು ಇದಕ್ಕೆ ಬೇರೆ ಬೇರೆ ರೀತಿಯಲ್ಲಿ ಉತ್ತರ ಹೇಳಿದ್ದಾರೆ. ಹೇಳುತ್ತಿದ್ದಾರೆ. ಆದರೆ ಒಬ್ಬ ಸಾಮಾನ್ಯ ಮನುಷ್ಯಳಾಗಿ ನನಗನಿಸುವುದು ಸಂತೋಷ ಎನ್ನುವುದು ಒಂದು ಭ್ರಮೆಯಲ್ಲದೆ ಬೇರೆ ಏನೂ ಅಲ್ಲ ಎಂದು. ನಾವು ಎಣಿಸಿದುದರಲ್ಲಿ ಸಂತೋಷ ಸಿಗುವುದಿಲ್ಲ ಎನ್ನುವುದು ಗೊತ್ತಿದ್ದರೂ ಅದನ್ನು ಹುಡುಕಿಕೊಂಡು ಹೋಗುತ್ತೇವೆಯಲ್ಲ ಅಲ್ಲೇ ಸಂತೋಷದ ಅವಸಾನವಾಗಿರುತ್ತದೆ. ಸಂತೋಷದ ಹುಡುಕಾಟವೇ ದುಃಖದ ಮೂಲ.

ಆದರೂ ಎಲ್ಲರಿಗೂ ಬೇಕಾಗಿರುವುದು ಸುಖ, ಸಂತೋಷ, ಸರಿಯಾಗಿ ಆಲೋಚಿಸಿದರೆ, ಸಂತೋಷ ಸಿಗುವುದು ಹೊರಗಿನ ಸುಖಗಳಿಂದಲ್ಲ. ನಮ್ಮೊಳಗಿನ ಭಾವನೆಗಳಿಂದ. ನಮ್ಮ ಭಾವನೆಗಳನ್ನು ನಿಯಂತ್ರಿಸುವುದರಿಂದ ಅದನ್ನು ಪಡೆದುಕೊಳ್ಳುವುದು ಸಾಧ್ಯ. ನಾವು ಏನನ್ನಾದರೂ ಗೆದ್ದರೆ, ನಮಗೆ ಬೇಕಾದ್ದು ಏನಾದರೂ ಸಿಕ್ಕಿದರೆ, ನಮಗೆ ಬೇಕಾದಂತೆ ಎಲ್ಲವೂ ನಡೆದರೆ ಸಂತೋಷ ಸಿಗುತ್ತದೆ ಎನ್ನುವುದು ಒಂದು ಭ್ರಮೆ. ಇದರಕ್ಕಿಂತ ಏನಾದರೂ ಒಳ್ಳೆಯದನ್ನು ಯೋಚಿಸಿದರೆ ಯಾರಿಗಾದರೂ ಒಳ್ಳೆಯದನ್ನು ಮಾಡಿದರೆ ಸಂತೋಷ ಸಿಗುತ್ತದೆ. ಸಂತೋಷ ಎನ್ನುವುದು ನಮ್ಮೊಳಗೇ ಇದೆ. ನಮ್ಮ ಮನಸ್ಸಿನಲ್ಲಿ, ನಮ್ಮ ಹೃದಯದಲ್ಲಿ, ನಮ್ಮ ಅರಿವಿನಲ್ಲಿ, ನಮ್ಮ ಆಯ್ಕೆಯಲ್ಲಿ, ನಮ್ಮ ಗುರುತಿಸುವಿಕೆಯಲ್ಲಿ, ನಾವು ಜೀವನವನ್ನು ನೋಡುವ ದೃಷ್ಟಿಯಲ್ಲಿ, ನಾವು ಜೀವಿಸುವ ರೀತಿಯಲ್ಲಿ ಸಂತೋಷದ ಒಸರಿದೆ. ನಾವು ಅನುಭವಿಸುವ ದುಃಖದಲ್ಲಿ ಸಂತೋಷದ ಅಂಶವಿದೆ. ಅನುಭವಿಸುವ ಸಂತೋಷದಲ್ಲಿ ದುಃಖದ ಒಳಹರಿವಿದೆ. ಇದನ್ನು ಗುರುತಿಸುವ ದಾರಿಯನ್ನು ಕಂಡುಕೊಂಡರೆ ಸಂತೋಷ ಎನ್ನುವುದು ನಮ್ಮ ಹತ್ತಿರದಲ್ಲೇ ಎಲ್ಲೋ ಸುಳಿಯುತ್ತಿದೆ ಎನ್ನುವ ಅರಿವಾಗುತ್ತದೆ. ಉದಾಹರಣೆಗೆ ನಮ್ಮ ಅತ್ಯಂತ ಪ್ರೀತಿ ಪಾತ್ರರಿಂದ ದೂರವಾಗುವ ದುಃಖವನ್ನೇ ತೆಗೆದುಕೊಂಡರೆ ಆ ದುಃಖದಲ್ಲಿ ನಮಗೆ ಅವರೆಷ್ಟು ಪ್ರೀತಿಯವರು ಎನ್ನುವ ಸಂತೋಷದ ಅರಿವಿದೆ. ಈ ಪ್ರೀತಿಯೆನ್ನುವ ಸಂತೋಷದ ಅರಿವಿನಿಂದಲೇ ಅವರ ಅಗಲಿಕೆ ನಮಗೆ ನೋವನ್ನು ತರುತ್ತದೆ. ಸಂತೋಷ ಮತ್ತು ದುಃಖ ಒಂದರೊಳಗೊಂದು ಸೇರಿಕೊಂಡೇ ಇದೆ. ಸ್ವಲ್ಪ ಆಳವಾಗಿ ಯೋಚಿಸಿದರೆ ಇದಕ್ಕೆ ಉದಾಹರಣೆಗಳನ್ನು ನಾವೇ ಕಂಡುಕೊಳ್ಳಬಹುದು.

ಸಂತೋಷವನ್ನು ಹುಡುಕಿಕೊಂಡು ಅಲೆಯುವವನಿಗಿಂತ ಏನು ಲಭ್ಯವಾಗಿದೆಯೋ ಆದರಲ್ಲಿಯೇ ಸಂತೋಷವನ್ನು ಕಂಡುಕೊಳ್ಳುವವನಿಗೆ ನಿಜವಾದ ಸಂತೋಷ ಯಾವಾಗಲೂ ಸಿಗುತ್ತದೆ. ಇದ್ದುದರಲ್ಲಿಯೇ ಸಂತೋಷವನ್ನು ಹುಡುಕಿಕೊಳ್ಳುವ ಮನೋಭಾವ ಜೀವನದ ರೀತಿಯೇ ಆದಾಗ ಸಂತೋಷವನ್ನು ಹುಡುಕುವ, ಹುಡುಕಿಕೊಂಡು ಹೋಗಿ ಸಿಗದಾಗ ನಿರಾಶರಾಗುವ ಪ್ರಮೇಯವೇ ಎದುರಾಗುವುದಿಲ್ಲ. ಸಂತೋಷ ಯಾವಾಗಲೂ ನಮ್ಮ ಜೊತೆಗೇ ಇರುತ್ತದೆ. ನಮ್ಮ ಒಳಗೇ ಇರುತ್ತದೆ.

ಒಂದು ಸುಂದರವಾದ ಮಾತಿದೆ. ಸಂತೋಷವೆನ್ನುವುದು ಕೈಗೆಟಕುವ ಹೂಗಳಿಂದಲೇ ತಯಾರಿಸಿದ ಒಂದು ಸುಂದರವಾದ ಹೂಗೊಂಚಲಿನ ಹಾಗೆ. ಸುಂದರವಾದ ಹೂಗೊಂಚಲಿಗೆ ಇದೇ ಹೂವಾಗಬೇಕೆನ್ನುವ ಚೌಕಟ್ಟು ಇಲ್ಲ. ಯಾವ ಹೂ ಕೈಗೆ ಸಿಗುವುದೋ ಅದರಿಂದಲೇ ಹೂ ಗೊಂಚಲನ್ನು ತಯಾರಿಸಬಹುದು. ಮನಸೆಳೆಯುವ ಅಂತಹ ಹೂಗೊಂಚಲೊಂದನ್ನು ತಯಾರಿಸುವ ಕಲೆಯಂತಹ ಕಲೆ ಸಂತೋಷ. ಜೀವನದಲ್ಲಿಯೂ ಹಾಗೆ, ನಮಗೆ ಸಿಕ್ಕಿದುದರಲ್ಲಿಯೇ ಸಂತೋಷವನ್ನು ಕಂಡು ಹುಡುಕುವ ಮನೋಭೂಮಿಕೆಯನ್ನು ನಮ್ಮದಾಗಿಸಿಕೊಂಡರೆ ಸಂತೋಷ ನಮ್ಮ ಹತ್ತಿರವೇ ಇದೆ, ನಮ್ಮ ಒಳಗೇ ಇದೆ ಎನ್ನುವ ಅರಿವಾಗುತ್ತದೆ. ಅರಿಯುವ ಕಲೆಯನ್ನು ಸಿದ್ಧಿಸಿಕೊಂಡರೆ ಈ ಸಂತೋಷಕ್ಕಾಗಿ ಪರದಾಡುವ ಕಷ್ಟವಿಲ್ಲ. ಸಂತೋಷ ಭ್ರಮನಿರಸನವಿಲ್ಲ. ಸಿಗದಾಗ ಸಂತೋಷವನ್ನು ಹುಡುಕಿಕೊಂಡು ಹೋಗುವ ಜಂಜಾಟವಿಲ್ಲ.
*****
(ಚಿಂತನ – ಆಕಾಶವಾಣಿ, ಮಂತಣಿ)

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...