Home / ಕವನ / ಕವಿತೆ / ಬದುಕು ಬೇಡ ಅನ್ನಿಸಲಿಲ್ಲ

ಬದುಕು ಬೇಡ ಅನ್ನಿಸಲಿಲ್ಲ

ಜ್ವರ ನೂರಾನಾಲ್ಕು ಡಿಗ್ರಿಗೆ ಏರಿ ಎದೆ ಹಾರಿ
ಹೋದಾಗಲೂ ಈ ಡಿಗ್ರಿಗಳ ಕೋಟೆಗಳ ಮೀರಿ
ಪ್ರಾಣಪಕ್ಷಿ ಎನ್ನುತ್ತಾರಲ್ಲ ಅದು ರೆಕ್ಕೆ ಬಿಚ್ಚಿ
ಪುರ್ರಂತ ದಿಗಂತ ಸೇರಿ ಅಂಥದೇ ಪಕ್ಷಗಳ ಪ್ರಭಾತಫೇರಿ
ಕೂಡಿಕೊಳ್ಳಲಿ ಈ ಜೀವ ಗರಂ ಇದ್ದುದು ನರಂ ಆಗಲಿ
ಅನ್ನಲಿಲ್ಲ ಆ ಹೊತ್ತಿನಲ್ಲೂ ಸಾವು ಬೇಕೆನಿಸಲಿಲ್ಲ

ಈ ಕೆಂಪು ಬಿಳಿ ಪಂಚ ಪಂಚ ಪ್ರಾತಃಕಾಲ
ಹೇಗೆ ಹೋಗಲಿ ಬದುಕಿನ ಬಟ್ಟೆಗಳ ಕಳಚಿ-
ಜೀವದ ತುಂಬ ವ್ಯಥೆ ತುಂಬಿ ಒಂದು ಥರಾ
ಹೊಟ್ಟೆ ತೊಳೆಸಿ ಬಂತು ಉಸಿರು ಅಲ್ಲೂ ಇಲ್ಲೂ
ತೇಕುತ್ತಿದ್ದಾಗಲೂ ಬದುಕು ಎಷ್ಟು ಸಿಹಿ ಎಷ್ಟು ಸಹ್ಯ
ಅನುಪಾನ ಉಪಚಾರ ತಣ್ಣೀರು ಪಟ್ಟಿಗಳ ಸಶ್ರಮ ಶಿಕ್ಷೆಯ ನಡುವೆ
ನನ್ನ ಚೈತನ್ಯ
ಗೋಕರ್ಣದ ಬೇಲೆ ದೇವಸ್ಥಾನಗಳನ್ನು ಸುತ್ತಾಡಿ
ಹಿರೇಗುತ್ತಿಯನ್ನು ಮೂಸುತ್ತ ಹೊರಟಿತು

ನನ್ನ ಹಳೆಯ ಕನ್ನಡ ಶಾಲೆಯ ಹತ್ತಿರ ಕಾರು ನಿಂತಿತು
ಇಲ್ಲಿಯ ಕ್ಲಾಸುಗಳಲ್ಲಿ ಅಂಗಿ ಚಡ್ಡಿಯ ನಾನು ಇದ್ದೆ
ಒಂದು ದಿನ ಮನೆಗೋಡಿ ಬರುವಾಗ ಇದೇ ಕಂಪೌಂಡಿನಲ್ಲೊಮ್ಮೆ ಬಿದ್ದೆ
ಮಣ್ಣು ಬಾಯೊಳಹೊಕ್ಕಿತು ಥೂಥೂ ಉಗಿದೆ ಎಲ್ಲ ನಗಬೇಕಿತ್ತು
ನಗಲಿಲ್ಲ ನಾ ಇದ್ದಾಗಲೇ ಅಲ್ಲಿದ್ದ ಧ್ವಜದ ಕಂಬ ಕಿತ್ತು ಇಲ್ಲಿ ಹುಗಿದರು
ನನ್ನ ಜೊತೆ ಇದ್ದವರೆಲ್ಲ ಈಗ ಎಲ್ಲೆಲ್ಲಿದ್ದಾರೆ ಮತ್ತೆ
ಹಾಗೆ ಒಟ್ಟಿಗೆ ಸೇರಲಾರೆವು ಇವೆಲ್ಲ ಒಮ್ಮುಖದ ಓಟ
ಯಾವುದೋ ಗುರಿ ಮುಟ್ಟಲಿಕ್ಕಿರುವ ಒಂದೇ ಉಸಿರಿನ ಆಟ
ಇಲ್ಲಿಯ ಕಬಡ್ಡಿ ಮೂಲೋದ್ಯೋಗ ವ್ಯಾಯಾಮ ಪ್ರಾರ್ಥನೆ
ಪಂಚಾಂಗ ಅಮೃತವಾಣಿ ವಾರದ ಚರ್ಚಾಕೂಟ ಬೆಳಗಿನ ಉಪ್ಪಿಟ್ಟು
ನನ್ನ ಮಾಸ್ತರರು ಅಕ್ಕವರು ಗೆಳೆಯರು ಚಾಡಿ ಮಾತು….
ಜ್ವರ ತೊಂಬತ್ತೊಂಬತ್ತಕ್ಕೆ ಇಳಿಯಿತು

ಕಿವಿಯಲ್ಲಿ ಅಘನಾಶಿನಿ ಮೊರೆದಳು
ಅಘನಾಶಿನೀ ನನಗೆ ಹಾದಿ ಬಿಡು
ಅಲ್ಲಿ ತಾರೀಕಟ್ಟೆಯಲ್ಲಿ ಒಂದರೆಗಳಿಗೆ ಕೂತು
ನಿನ್ನ ನೋಡಿ ಮೈ ಮರೆಯುವೆ ಹೇಳು
ಈ ಚಂದ್ರನ್ನ ನಕ್ಷತ್ರಗಳ ತೊಟ್ಟಿಲು ಕಟ್ಟಿ ತೂಗಿದರಾರು
ನಿನ್ನ ಗರ್ಭದ ಪಾತಾಳದೊಳಗೆ ಸೇರಿದ ಜೀವಗಳೆಷ್ಟು
ಈ ದಡವನ್ನು ಕಾಲುಗಳು ತುಳಿದವು
ನಕ್ಷತ್ರಗಳು ಮೈ ತೊಳೆಯಲು ನಿನ್ನಲ್ಲಿಗೇ ಬಂದಿದ್ದವೇ
ಈ ತಾರಿಕಟ್ಟಿ ಕಟ್ಟಿದವರಾರು ಸಭಾಹಿತರ ಮನೆಯವರು
ಯಾವಾಗ ಬಂದರು ನಿನಗೆಷ್ಟು ವರ್ಷ ಇಲ್ಲಿ ರಾಮಸೀತೆ
ಬಂದಿದ್ದು ನಿಜವೇ ಆ ನಾಯಿಯನ್ನು ಆ ಜನರು ಗುಂಡಿಟ್ಟು
ಕೊಂದರೇ ಈ ತೆಂಗಿನ ಮರದ ಕಾಯಿಗಳನ್ನು ಕದ್ದವರಾರು
ದಿವಸದ ಮೊದಲಿನ ದೋಣಿ ಎಷ್ಟಕ್ಕೆ ಹೊರಡುತ್ತದೆ
ಇವರೆಲ್ಲ ಎಲ್ಲಿಯವರು ಏನಾಗಲಿರುವರು ನೀನು ಎಲ್ಲಿಂದ ಬಂದೆ
ಹೋಗುವೆ ಎಲ್ಲಿಗೆ ಈ ನೈಟ್ ಹಾಲ್ಟ್ ಬಸ್ಸು ಇವತ್ತು ರಾತ್ರಿ
ಎಷ್ಟಕ್ಕೆ ಬಂತು ಈ ಹಾದಿ ದೀಪದ ಮಂದ ಬೆಳಕಲ್ಲಿ
ಹೊಳೆವ ಕಲ್ಲು ಬೂದಿ ಮಣ್ಣು ಬೀದಿನಾಯಿ ಪಾಗಾರ ಕೆಂಪುಬಸ್ಸು
ಇವುಗಳ ಅರ್ಥ ಹೇಳು ಅಘನಾಶಿನೀ ನಿನ್ನ ಸುದೀರ್ಘ ಮೌನ
ಕಳೆದು ಏನೇನೆಂದು ಉಸುರು ಈ ನಿನ್ನ ಗಂಡನ ಹೆಸರು
ಹೇಳು ಇಲ್ಲದಿದ್ದರೆ ನನ್ನ ತಲೆ ಹಾಳಾಗಿ ಹೋಳಾಗಿ ಹೋಗುವುದು
ತಾಯೀ ಅದಕ್ಕಾಗಿಯಾದರೂ ಮಾತಾಡು ನನ್ನ ಚೈತನ್ಯ
ನಿನ್ನ ಮಾತುಗಳಿಂದ ಶಾಂತವಾಗಲಿ
*****

 

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...