Home / ಕವನ / ಕವಿತೆ / ನವಯುಗಾರಂಭ

ನವಯುಗಾರಂಭ

(ಭಾರತ ಸ್ವಾತಂತ್ರ ದಿನದಂದಿನ ಉಲ್ಲಸಿತಭಾವನೆಯ ಉತ್ಸಾಹ ಪ್ರಗಾಥ)


ಇಂದಿನುದಯ ರವಿ ತಂದಿಹನೈ, ತ-
ನ್ನೊಂದಿಗೆ ನವಯುಗವ,
ಇಂದಿನ ಮಧುರಸಮೀರ ಹರಡುತಿಹ
ಸ್ವಾತಂತ್ರ್ಯದ ಸೊಗವ!

ಇಂದಿನ ಉಸಿರಾಟಕೆ ತಡೆಯಿಲ್ಲವು
ಕಳಚಿ ಕೊರಳ ನೊಗವ-
ಹೊಂದಿಹವೈ ಮನ-ಮನವು ರೆಕ್ಕೆಗಳ,
ಮೀರಿಸಿಹವು ಖಗವ!

ಪ್ರಳಯದಿಳೆಯ ತಮ ಮರೆಯಾಯ್ತೋ-ಕಡ-
ಲೊಳಗಿನ ನೌಕೆಯು ಕರೆಗಾಯ್ತೋ-ಮನು-
ಕುಲದ ಬಾಳ ಗೋಳದು ಹೋಯ್ತೊ….!

ಉಳಿದಿವೆ ಶಕ್ತಿಯ ಬೀಜಗಳೆಲ್ಲವು ;
ಕಂಡೆವು ನವಯುಗವ….
ಬೆಳೆಯ ಕೊಂಡು ನಾವಿನ್ನು ಬಲಿಯ ಬೇ-
ಕಾಗಿದೆ ಹೊಸಜಗವ !

ಇಂದಿನುದಯರವಿ ತಂದಿಹನೈ, ತ-
ನ್ನೊಂದಿಗೆ ನವೆಯುಗವ-
ಮಂದಿ ಕಾಣುತಿದೆ ಭಾರತಮಾತೆಯ
ಚೆಂದದ ನಗೆಮೊಗವ !


ಇಂದು ಹುಟ್ಟಿದಣುಗನಿಗೆ ಇಲ್ಲವೈ,
ಪರದಾಸ್ಯದ ಹೊಲೆಯು !
ಬೆಂದುಹೋಯ್ತು ದೆಸೆದೆಸೆಗಳಲ್ಲಿಯೂ
ಹಗೆಯು ಹೆಣೆದ ಬಲೆಯು !

ಹಿಂದೆ ತಿಂದ ಕೂಳೇನ ಕೊಟ್ಟಿ ತೋ-
ಬರಿಯೆ ಹಂದೆತನವ;
ಇಂದು ಉಂಡ ಊಟವಿದು ತುಂಬುತಿದೆ
ಮನದಿ ಮನುಜಗುಣವ.

ತುಂಡುಗೊಂಡ ಎದೆ ಬೆಸೆದಿಹುವೋ-ಜನ-
ಮಂಡಲದಸುಗಳ ಹೊಸೆದಿಹವೋ-ರಣ-
ಚಂಡಿಯ ಕಂಗಳ ಕೊಸೆದಿಹವೊ….!

ಯಾವ ಭಾವ ಕಂಡಿರುವ ಕನಸು ಮೈ-
ಗೊಳುತಲಿಂದು ಬಂತೋ…
ಯಾವ ಯೋಗ ಸಾಧನವು ನಮಗೆ ಸಂ-
ಸಿದ್ಧಿಯನ್ನು ತಂತೋ !

ಇಂದಿನುದಯರವಿ ತಂದಿಹನೈ ತ-
ನ್ನೊಂದಿಗೆ ನವಯುಗವ-
ಕುಂದದಿರುವ ಪ್ರಭೆಯಿಂದ ಬೆಳಗುವನು
ಭಾಗ್ಯೋದಯನಗವ.


ದೇವನು ಮೀನಿನ ಮಾನಕಿಳಿದು ಆ
ಪ್ರಳಯ ಕಳೆದನಂದು ;
ಮಾನವ ದೇವನ ಸ್ಥಾನಕೇರಿ ಈ
ಪ್ರಳಯವಳಿದನಿಂದು !

ದೇವನೊಬ್ಬನೇ ತಂದ ಯುಗಗಳವು
ವೈಷಮ್ಯದ ಒಡಲು,
ಮಾನವನೇ ಮೂಡಿಸಿದೀ ನವಯುಗ
ಸಮತೆಯ ಸವಿಗಡಲು !

ಭಾರತಶಕ್ತಿಯು ದುಡಿ-ದುಡಿದು,-ಕರೆ-
ತಂದಿದೆ ಕಾಲದ ಕೈಹಿಡಿದು-ಇದೆ
ಲೋಕದ ಕಂಗಳ ತೆರೆಸುವುದು….!

ದಾನವತೆಯ ಮೂಲವನೇ ಮುರಿಯುವೆ-
ನೆನ್ನುವುದೀಯುಗವು ;
ಮಾನವರೆದೆಯೊಳೆ ದೇವನಿರುವುದನು
ಕಾಂಬುದಿನ್ನು ಜಗವು !

ಇಂದಿನುದಯರವಿ ತಂದಿಹನೈ ತ-
ನ್ನೊಂದಿಗೆ ನವಯುಗವ-
ಇಂದಿನ ಗಾಳಿಯು ಗೀತಿಸುತಿರುವುದು
ಸ್ವಾತಂತ್ರ್ಯದ ಸೊಗವ !


ತಾರಾಲೋಕದ ಮೇಗಣಿಂದ ಋಷಿ-
ವೃಂದವು ಹರಸುತಿದೆ;
ಭಾರತಕುಲಪಿತೃಗಣವು ಸ್ವರ್ಗದಿಂ
ಹೂಮಳೆಯೆರಚುತಿದೆ.

ಬೆಳ್ಳಿಯ ಬೆಟ್ಟದ ಮೇಲೆ ತ್ರಿಶೂಲಿಯು
ತಾಂಡವ ತೊಡಗಿರುವ-
ಯಕ್ಷ-ರಕ್ಷ ಗಂಧರ್ವ ಕಿನ್ನರರ
ಮೇಳ ಕೂಡಿಸಿರುವ.

ಪೂರ್ವ-ಪಶ್ಚಿಮದ ಕಡಲುಗಳು-ಉ-
ಬ್ಬೇರಿ ಕುಣಿಯುತಿವೆ ಲಹರಿಗಳು-ದನಿ
ಬೀರುತಿಹವು ದಿಗ್‌ಭೇರಿಗಳು….!

ಕೃತ-ತ್ರೇತಾ-ದ್ವಾಪರದ ಯುಗಂಗಳು
ಕಾಣಿಕೆ ತಂದಿಹವೋ!
ನವಯುಗಪುರುಷನ ಭವ್ಯಭವಿಷ್ಯವ-
ನುದ್ಘೋಷಿಸುತಿಹವೋ !

ಇಂದಿನುದಯರವಿ ತಂದಿಹನೈ ತ-
ನ್ನೊಂದಿಗೆ ನವಯುಗವ-
ಇಂದಿನ ಪಾವನ ಪವನ ಹರಡುತಿಹ
ಸ್ವಾತಂತ್ರ್ಯದ ಸೊಗವ!
*****

Tagged:

Leave a Reply

Your email address will not be published. Required fields are marked *

ಬೆಳಕಿನಿಂದ ಜಗಜಗಿಸುವ ಸಂಜೆ ರಾವು ಬಡಿದಂತೆ ಮಬ್ಬಾಗಿತ್ತು. ಈ ಮಬ್ಬು ಹಿಂದೆಂದೂ ಇದಿಲ್ಲ. ದೇಶದ ಹದಿನೇಳು ವರ್ಷದ ಸ್ವಾತಂತ್ರದಲ್ಲಿ, ಮಧ್ಯಮ ತರಗತಿಯ ಜೀವನ ಕೈ ಬಾಯಿಯಾಗಿದ್ದರೂ ದೂರದ ಆಶಯ ಹೊಂಗಿರಣವೊಂದು ಸದಾ ಹೊಳೆದು ಭಾವೀ ಪೀಳಿಗೆಯ ಮನೋಲ್ಲಾಸ ಮಾಡುತ್ತಿತ್ತು. ಆದರೆ ಈ ಮಬ್ಬುಗತ್ತ...

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...