Home / ಕವನ / ಕವಿತೆ / ಸಾವಲ್ಲದ ಸಾವು!

ಸಾವಲ್ಲದ ಸಾವು!


ಇದ್ದರೂ ಸತ್ತಂತ ಇರುವವರೆ ಬಹುಜನರು,
ಇದ್ದವರಿಗೆಲ್ಲ ಸಾವಾಗಿ ಇರುವರು ಕೆಲರು,
ಮೊದ್ದುತನದಲಿ ಸಾವಿಗಂಜಿ, ಬದುಕನೆ ಸಾವು-
ಮಾಡಿಕೊಂಡವರು ಹಲರು!

ಇದ್ದಾಗ ನಿನ್ನಂತೆ ಇದ್ದವರು ಯಾರಿಹರು?
ಬಿದ್ದವರ ಬಾಳಲ್ಲಿ ಜೀವಕಳೆಯನ್ನೂದಿ
ಸಿದ್ದಿ ತುಂಬಿದರಾರು, ನಿನ್ನವೊಲು ಗಾಂಧೀಜಿ
ಸಾವಿರದ ಶೂರರಾರು?


ನೀನು ಮಾನವನೇನು? ಮರುಳಿದು
ಮಾನವನು ನೀನೆಂಬುದು ;
ಮಾನವತಯಾದರ್ಶವೇ ಮೈ-
ಗೊಳುತ ಬಂದಿಲ್ಲಿರ್ದ್ದುದು

ಕುದಿವ ಮಾನವಲೋಕವನು ಕಂ-
ಡದನು ತಣಿಸಲು ಪ್ರಕೃತಿಯು,
ಹದದಿ ನಿನ್ನನು ರೂಪಿಸುತ ಕಳು-
ಹಿದುದು ನಮ್ಮಯ ಸುಕೃತಿಯು!

ಪಂಚಭೂತಶರೀರಿಯೇ ನೀ
ಪಂಚಭಾವಶರೀರ!
ಕರುಣೆ ಮೈತ್ರಿಯು ಹರುಷ ನಿರ್ಭಯ
ಶಾಂತಿಗಳ ಸಾಕಾರ!


ಹೂವಿನರಳುವ ಗುಣವೆ ನಿನ್ನ ನಗೆಯಾಯ್ತೊ,
ಜೇನ ಸವಿ ನಿನಗೆ ಮೆಲುಮಾತನೊದವಿಸಿತೊ!
ಆಗಸದ ಕೇಂದ್ರವೇ ಎದೆಯು ನಿನಗಾಯ್ತೊ,
ಸಾಗರದ ಆಳ ಗಾಂಭೀರ್ಯ ಹವಣಿಸಿತೋ!


ನಿನ್ನ ಕಣ್ಗೆ ರವಿಯ ಪ್ರಭೆಯು ಹಿಂಗದ ಬೆಳಕೂಡಿತೊ!
ನಿನ್ನ ಭಾವಗಳಲಿ ಅಮರಗಣವು ಅಮೃತ ನೀಡಿತೊ!
ನೀನು ನುಡಿದುದೆಲ್ಲ ಋಷಿಯ ದಿವ್ಯಕಾವ್ಯವಾಯಿತೊ,
ನೀನು ನಡೆದುದೆಲ್ಲ ಜನಕೆ ಬಾಳ ತಿರುಳ ತಿಳುಹಿತೊ!


ನೂರಾರು ವರ್ಷಗಳ ಪಾರತಂತ್ರದಿ ಸಿಲುಕಿ-
ಭಾರತೀಯರು ಬಾಯಿ ಬಾಯಿ ಬಿಡುತಿರುವಾಗ
ಪಾರುಗಾಣಿಸಲೆಂದು ಹೋರಾಡಿದರು ಹಲರು !
ದೊರೆಯಲಿಲ್ಲಾರಿಗಾ ಕೀರ್ತಿ;

ನಿಜವು ನೀ ನಿಜ ಯಶೋಮೂರ್ತಿ !
ದಾರಿಯರಿತವ ನೀನು ತೋರಿ ಅವರಿಗೆ ಯುಕ್ತಿ
ಹೂಡಿದೆಯೊ ಗೆಲುವ ಶಕ್ತಿ…
ಮಾಡಿದೆಯೊ ಬಂಧಮುಕ್ತಿ!


ನಿನ್ನ ಮಾತೇ ಮಾತು ತುಂಬಿದೆ
ದಿಕ್ಕು-ದಿಕ್ಕುಗಳಲ್ಲಿ….
ನಿನ್ನ ರೂಪವೆ ನೆಲಸಿ ನಿಂತಿದೆ
ಜಗದ ಜನಮನದಲ್ಲಿ !

ನಿನ್ನ ಉನ್ನತ ಭಾವ ಹರಡಿದೆ
ಗಾಳಿಯಲೆಯಲೆಯಲ್ಲಿ….
ನಿನ್ನ ಕೀರ್ತಿಯ ಕಳಸ ಸಾರಿದೆ
ಬಾನತುತ್ತುದಿಯಲ್ಲಿ !

ಎಲ್ಲೆಡೆಯು ಗಾಂಧೀಜಿಯಾಗಿರೆ
ನಿನಗೆ ಕೊನೆಯಿನ್ನೆಲ್ಲಿ ?
ನಿನ್ನ ನೊಯ್ಯುವ ಬಲವು ಎಲ್ಲಿದೆ
ಮೃತ್ಯುವಿನ ಮೈಯಲ್ಲಿ ?


ಶಕ್ತಿಯಿಲ್ಲದ ಮೃತ್ಯು ಯುಕ್ತಿಯೇನನೊ ಹೂಡಿ,
ತನ್ನ ಬಲೆಯೊಳು ಬಿಗಿದು ನಿನ್ನ ಕಟ್ಟಿಹೆನೆಂದು
ಹುಸಿಬಿಂಕದಲ್ಲಿಹುದು,
ಹುರುಪಿನಲ್ಲಿಹುದು….
ಹುಸಿಬಿಂಕದಲ್ಲಿಹುದು, ಹುರುಪಿನಲ್ಲಿಹುದು-
ವ್ಯಕ್ತಿಗಿರುವುದು ಸಾವು, ಶಕ್ತಿಗೆಲ್ಲಿಹುದು ?
ಗಾಂಧೀಜಿಯನು ಕೊಂದೆನೆಂದು ಸಾರುವ ಸಾವು,
ಲೌಕಿಕರ ಹೃದಯದಲಿ ಕೆರಳಿಸಿದ ನೋವು!


ವ್ಯಕ್ತಿಯೇನೊ ಸಾಯಬಹುದು
ಶಕ್ತಿಗೆಲ್ಲಿ ಸಾವು ?
ಗರುಡನನ್ನು ಕೆಣಕಿ ಮಾಡ-
ಬಲ್ಲದೇನು ಹಾವು ?

ಗಾಂಧಿಯವರ ಮರೆಮಾಡಿದ
ಸಾವಲ್ಲದ ಸಾವು….
ಮೃತ್ಯುವಿಗಿತ್ತಿಹುದು ಟೊಳ್ಳು
ಅಮರತ್ವದ ಠಾವು!


ಇದ್ದರೂ ಸತ್ತಂತೆ ಇರುವವರೆ ಬಹುಜನರು,
ಇದ್ದವರಿಗೆಲ್ಲ ಸಾವಾಗಿ ಇರುವರು ಕೆಲರು,
ಮೊದ್ದುತನದಲಿ ಸಾವಿಗಂಜಿ, ಬದುಕನೆ ಸಾವ
ಮಾಡಿಕೊಂಡವರು ಹಲರು.

ಇದ್ದಾಗ ನಿನ್ನಂತೆ ಇದ್ದವರು ಯಾರಿಹರು?
ಬಿದ್ದವರ ಬಾಳಲ್ಲಿ ಜೀವಕಳೆಯನ್ನೂದಿ
ತಿದ್ದಿ ನಡೆಸಿದರಾರು ನಿನ್ನವೊಲು ಬಾಪೂಜಿ,
ಸಾವಿರದ ಶೂರರಾರು?
*****

Tagged:

Leave a Reply

Your email address will not be published. Required fields are marked *

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...

ಬೆಳಿಗ್ಗೆಯಿಂದ ಕತ್ತಲೆಯವರೆಗೂ ಬಸ್ ಸ್ಟಾಂಡಿನಲ್ಲಿ ಬಸ್ಸುಗಳಿಗೆ ಹತ್ತಿ ಇಳಿದುಕೊಂಡು ಎಷ್ಟು ಗೋಗರೆದು ಬಿಕ್ಷೆ ಬೇಡಿದರೂ ಆ ಹುಡುಗನಿಗೆ ಮಧ್ಯಾಹ್ನದ ಊಟ ಮಾಡುವಷ್ಟು ಹಣ ಸಂಗ್ರಹವಾಗುತ್ತಿರಲಿಲ್ಲ. ಮಧ್ಯಾಹ್ನ ಬಿಸ್ಕಿಟು ಮತ್ತು ನಲ್ಲಿ ನೀರು ಕುಡಿದು ಹಸಿವು ತಣಿಸಿದರೂ ರಾತ್ರಿಯ ಊಟಕ್ಕ...