Home / ಕವನ / ಕವಿತೆ / ಸಾವಲ್ಲದ ಸಾವು!

ಸಾವಲ್ಲದ ಸಾವು!


ಇದ್ದರೂ ಸತ್ತಂತ ಇರುವವರೆ ಬಹುಜನರು,
ಇದ್ದವರಿಗೆಲ್ಲ ಸಾವಾಗಿ ಇರುವರು ಕೆಲರು,
ಮೊದ್ದುತನದಲಿ ಸಾವಿಗಂಜಿ, ಬದುಕನೆ ಸಾವು-
ಮಾಡಿಕೊಂಡವರು ಹಲರು!

ಇದ್ದಾಗ ನಿನ್ನಂತೆ ಇದ್ದವರು ಯಾರಿಹರು?
ಬಿದ್ದವರ ಬಾಳಲ್ಲಿ ಜೀವಕಳೆಯನ್ನೂದಿ
ಸಿದ್ದಿ ತುಂಬಿದರಾರು, ನಿನ್ನವೊಲು ಗಾಂಧೀಜಿ
ಸಾವಿರದ ಶೂರರಾರು?


ನೀನು ಮಾನವನೇನು? ಮರುಳಿದು
ಮಾನವನು ನೀನೆಂಬುದು ;
ಮಾನವತಯಾದರ್ಶವೇ ಮೈ-
ಗೊಳುತ ಬಂದಿಲ್ಲಿರ್ದ್ದುದು

ಕುದಿವ ಮಾನವಲೋಕವನು ಕಂ-
ಡದನು ತಣಿಸಲು ಪ್ರಕೃತಿಯು,
ಹದದಿ ನಿನ್ನನು ರೂಪಿಸುತ ಕಳು-
ಹಿದುದು ನಮ್ಮಯ ಸುಕೃತಿಯು!

ಪಂಚಭೂತಶರೀರಿಯೇ ನೀ
ಪಂಚಭಾವಶರೀರ!
ಕರುಣೆ ಮೈತ್ರಿಯು ಹರುಷ ನಿರ್ಭಯ
ಶಾಂತಿಗಳ ಸಾಕಾರ!


ಹೂವಿನರಳುವ ಗುಣವೆ ನಿನ್ನ ನಗೆಯಾಯ್ತೊ,
ಜೇನ ಸವಿ ನಿನಗೆ ಮೆಲುಮಾತನೊದವಿಸಿತೊ!
ಆಗಸದ ಕೇಂದ್ರವೇ ಎದೆಯು ನಿನಗಾಯ್ತೊ,
ಸಾಗರದ ಆಳ ಗಾಂಭೀರ್ಯ ಹವಣಿಸಿತೋ!


ನಿನ್ನ ಕಣ್ಗೆ ರವಿಯ ಪ್ರಭೆಯು ಹಿಂಗದ ಬೆಳಕೂಡಿತೊ!
ನಿನ್ನ ಭಾವಗಳಲಿ ಅಮರಗಣವು ಅಮೃತ ನೀಡಿತೊ!
ನೀನು ನುಡಿದುದೆಲ್ಲ ಋಷಿಯ ದಿವ್ಯಕಾವ್ಯವಾಯಿತೊ,
ನೀನು ನಡೆದುದೆಲ್ಲ ಜನಕೆ ಬಾಳ ತಿರುಳ ತಿಳುಹಿತೊ!


ನೂರಾರು ವರ್ಷಗಳ ಪಾರತಂತ್ರದಿ ಸಿಲುಕಿ-
ಭಾರತೀಯರು ಬಾಯಿ ಬಾಯಿ ಬಿಡುತಿರುವಾಗ
ಪಾರುಗಾಣಿಸಲೆಂದು ಹೋರಾಡಿದರು ಹಲರು !
ದೊರೆಯಲಿಲ್ಲಾರಿಗಾ ಕೀರ್ತಿ;

ನಿಜವು ನೀ ನಿಜ ಯಶೋಮೂರ್ತಿ !
ದಾರಿಯರಿತವ ನೀನು ತೋರಿ ಅವರಿಗೆ ಯುಕ್ತಿ
ಹೂಡಿದೆಯೊ ಗೆಲುವ ಶಕ್ತಿ…
ಮಾಡಿದೆಯೊ ಬಂಧಮುಕ್ತಿ!


ನಿನ್ನ ಮಾತೇ ಮಾತು ತುಂಬಿದೆ
ದಿಕ್ಕು-ದಿಕ್ಕುಗಳಲ್ಲಿ….
ನಿನ್ನ ರೂಪವೆ ನೆಲಸಿ ನಿಂತಿದೆ
ಜಗದ ಜನಮನದಲ್ಲಿ !

ನಿನ್ನ ಉನ್ನತ ಭಾವ ಹರಡಿದೆ
ಗಾಳಿಯಲೆಯಲೆಯಲ್ಲಿ….
ನಿನ್ನ ಕೀರ್ತಿಯ ಕಳಸ ಸಾರಿದೆ
ಬಾನತುತ್ತುದಿಯಲ್ಲಿ !

ಎಲ್ಲೆಡೆಯು ಗಾಂಧೀಜಿಯಾಗಿರೆ
ನಿನಗೆ ಕೊನೆಯಿನ್ನೆಲ್ಲಿ ?
ನಿನ್ನ ನೊಯ್ಯುವ ಬಲವು ಎಲ್ಲಿದೆ
ಮೃತ್ಯುವಿನ ಮೈಯಲ್ಲಿ ?


ಶಕ್ತಿಯಿಲ್ಲದ ಮೃತ್ಯು ಯುಕ್ತಿಯೇನನೊ ಹೂಡಿ,
ತನ್ನ ಬಲೆಯೊಳು ಬಿಗಿದು ನಿನ್ನ ಕಟ್ಟಿಹೆನೆಂದು
ಹುಸಿಬಿಂಕದಲ್ಲಿಹುದು,
ಹುರುಪಿನಲ್ಲಿಹುದು….
ಹುಸಿಬಿಂಕದಲ್ಲಿಹುದು, ಹುರುಪಿನಲ್ಲಿಹುದು-
ವ್ಯಕ್ತಿಗಿರುವುದು ಸಾವು, ಶಕ್ತಿಗೆಲ್ಲಿಹುದು ?
ಗಾಂಧೀಜಿಯನು ಕೊಂದೆನೆಂದು ಸಾರುವ ಸಾವು,
ಲೌಕಿಕರ ಹೃದಯದಲಿ ಕೆರಳಿಸಿದ ನೋವು!


ವ್ಯಕ್ತಿಯೇನೊ ಸಾಯಬಹುದು
ಶಕ್ತಿಗೆಲ್ಲಿ ಸಾವು ?
ಗರುಡನನ್ನು ಕೆಣಕಿ ಮಾಡ-
ಬಲ್ಲದೇನು ಹಾವು ?

ಗಾಂಧಿಯವರ ಮರೆಮಾಡಿದ
ಸಾವಲ್ಲದ ಸಾವು….
ಮೃತ್ಯುವಿಗಿತ್ತಿಹುದು ಟೊಳ್ಳು
ಅಮರತ್ವದ ಠಾವು!


ಇದ್ದರೂ ಸತ್ತಂತೆ ಇರುವವರೆ ಬಹುಜನರು,
ಇದ್ದವರಿಗೆಲ್ಲ ಸಾವಾಗಿ ಇರುವರು ಕೆಲರು,
ಮೊದ್ದುತನದಲಿ ಸಾವಿಗಂಜಿ, ಬದುಕನೆ ಸಾವ
ಮಾಡಿಕೊಂಡವರು ಹಲರು.

ಇದ್ದಾಗ ನಿನ್ನಂತೆ ಇದ್ದವರು ಯಾರಿಹರು?
ಬಿದ್ದವರ ಬಾಳಲ್ಲಿ ಜೀವಕಳೆಯನ್ನೂದಿ
ತಿದ್ದಿ ನಡೆಸಿದರಾರು ನಿನ್ನವೊಲು ಬಾಪೂಜಿ,
ಸಾವಿರದ ಶೂರರಾರು?
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...