Home / ಕವನ / ಕವಿತೆ / ಸಾವಲ್ಲದ ಸಾವು!

ಸಾವಲ್ಲದ ಸಾವು!


ಇದ್ದರೂ ಸತ್ತಂತ ಇರುವವರೆ ಬಹುಜನರು,
ಇದ್ದವರಿಗೆಲ್ಲ ಸಾವಾಗಿ ಇರುವರು ಕೆಲರು,
ಮೊದ್ದುತನದಲಿ ಸಾವಿಗಂಜಿ, ಬದುಕನೆ ಸಾವು-
ಮಾಡಿಕೊಂಡವರು ಹಲರು!

ಇದ್ದಾಗ ನಿನ್ನಂತೆ ಇದ್ದವರು ಯಾರಿಹರು?
ಬಿದ್ದವರ ಬಾಳಲ್ಲಿ ಜೀವಕಳೆಯನ್ನೂದಿ
ಸಿದ್ದಿ ತುಂಬಿದರಾರು, ನಿನ್ನವೊಲು ಗಾಂಧೀಜಿ
ಸಾವಿರದ ಶೂರರಾರು?


ನೀನು ಮಾನವನೇನು? ಮರುಳಿದು
ಮಾನವನು ನೀನೆಂಬುದು ;
ಮಾನವತಯಾದರ್ಶವೇ ಮೈ-
ಗೊಳುತ ಬಂದಿಲ್ಲಿರ್ದ್ದುದು

ಕುದಿವ ಮಾನವಲೋಕವನು ಕಂ-
ಡದನು ತಣಿಸಲು ಪ್ರಕೃತಿಯು,
ಹದದಿ ನಿನ್ನನು ರೂಪಿಸುತ ಕಳು-
ಹಿದುದು ನಮ್ಮಯ ಸುಕೃತಿಯು!

ಪಂಚಭೂತಶರೀರಿಯೇ ನೀ
ಪಂಚಭಾವಶರೀರ!
ಕರುಣೆ ಮೈತ್ರಿಯು ಹರುಷ ನಿರ್ಭಯ
ಶಾಂತಿಗಳ ಸಾಕಾರ!


ಹೂವಿನರಳುವ ಗುಣವೆ ನಿನ್ನ ನಗೆಯಾಯ್ತೊ,
ಜೇನ ಸವಿ ನಿನಗೆ ಮೆಲುಮಾತನೊದವಿಸಿತೊ!
ಆಗಸದ ಕೇಂದ್ರವೇ ಎದೆಯು ನಿನಗಾಯ್ತೊ,
ಸಾಗರದ ಆಳ ಗಾಂಭೀರ್ಯ ಹವಣಿಸಿತೋ!


ನಿನ್ನ ಕಣ್ಗೆ ರವಿಯ ಪ್ರಭೆಯು ಹಿಂಗದ ಬೆಳಕೂಡಿತೊ!
ನಿನ್ನ ಭಾವಗಳಲಿ ಅಮರಗಣವು ಅಮೃತ ನೀಡಿತೊ!
ನೀನು ನುಡಿದುದೆಲ್ಲ ಋಷಿಯ ದಿವ್ಯಕಾವ್ಯವಾಯಿತೊ,
ನೀನು ನಡೆದುದೆಲ್ಲ ಜನಕೆ ಬಾಳ ತಿರುಳ ತಿಳುಹಿತೊ!


ನೂರಾರು ವರ್ಷಗಳ ಪಾರತಂತ್ರದಿ ಸಿಲುಕಿ-
ಭಾರತೀಯರು ಬಾಯಿ ಬಾಯಿ ಬಿಡುತಿರುವಾಗ
ಪಾರುಗಾಣಿಸಲೆಂದು ಹೋರಾಡಿದರು ಹಲರು !
ದೊರೆಯಲಿಲ್ಲಾರಿಗಾ ಕೀರ್ತಿ;

ನಿಜವು ನೀ ನಿಜ ಯಶೋಮೂರ್ತಿ !
ದಾರಿಯರಿತವ ನೀನು ತೋರಿ ಅವರಿಗೆ ಯುಕ್ತಿ
ಹೂಡಿದೆಯೊ ಗೆಲುವ ಶಕ್ತಿ…
ಮಾಡಿದೆಯೊ ಬಂಧಮುಕ್ತಿ!


ನಿನ್ನ ಮಾತೇ ಮಾತು ತುಂಬಿದೆ
ದಿಕ್ಕು-ದಿಕ್ಕುಗಳಲ್ಲಿ….
ನಿನ್ನ ರೂಪವೆ ನೆಲಸಿ ನಿಂತಿದೆ
ಜಗದ ಜನಮನದಲ್ಲಿ !

ನಿನ್ನ ಉನ್ನತ ಭಾವ ಹರಡಿದೆ
ಗಾಳಿಯಲೆಯಲೆಯಲ್ಲಿ….
ನಿನ್ನ ಕೀರ್ತಿಯ ಕಳಸ ಸಾರಿದೆ
ಬಾನತುತ್ತುದಿಯಲ್ಲಿ !

ಎಲ್ಲೆಡೆಯು ಗಾಂಧೀಜಿಯಾಗಿರೆ
ನಿನಗೆ ಕೊನೆಯಿನ್ನೆಲ್ಲಿ ?
ನಿನ್ನ ನೊಯ್ಯುವ ಬಲವು ಎಲ್ಲಿದೆ
ಮೃತ್ಯುವಿನ ಮೈಯಲ್ಲಿ ?


ಶಕ್ತಿಯಿಲ್ಲದ ಮೃತ್ಯು ಯುಕ್ತಿಯೇನನೊ ಹೂಡಿ,
ತನ್ನ ಬಲೆಯೊಳು ಬಿಗಿದು ನಿನ್ನ ಕಟ್ಟಿಹೆನೆಂದು
ಹುಸಿಬಿಂಕದಲ್ಲಿಹುದು,
ಹುರುಪಿನಲ್ಲಿಹುದು….
ಹುಸಿಬಿಂಕದಲ್ಲಿಹುದು, ಹುರುಪಿನಲ್ಲಿಹುದು-
ವ್ಯಕ್ತಿಗಿರುವುದು ಸಾವು, ಶಕ್ತಿಗೆಲ್ಲಿಹುದು ?
ಗಾಂಧೀಜಿಯನು ಕೊಂದೆನೆಂದು ಸಾರುವ ಸಾವು,
ಲೌಕಿಕರ ಹೃದಯದಲಿ ಕೆರಳಿಸಿದ ನೋವು!


ವ್ಯಕ್ತಿಯೇನೊ ಸಾಯಬಹುದು
ಶಕ್ತಿಗೆಲ್ಲಿ ಸಾವು ?
ಗರುಡನನ್ನು ಕೆಣಕಿ ಮಾಡ-
ಬಲ್ಲದೇನು ಹಾವು ?

ಗಾಂಧಿಯವರ ಮರೆಮಾಡಿದ
ಸಾವಲ್ಲದ ಸಾವು….
ಮೃತ್ಯುವಿಗಿತ್ತಿಹುದು ಟೊಳ್ಳು
ಅಮರತ್ವದ ಠಾವು!


ಇದ್ದರೂ ಸತ್ತಂತೆ ಇರುವವರೆ ಬಹುಜನರು,
ಇದ್ದವರಿಗೆಲ್ಲ ಸಾವಾಗಿ ಇರುವರು ಕೆಲರು,
ಮೊದ್ದುತನದಲಿ ಸಾವಿಗಂಜಿ, ಬದುಕನೆ ಸಾವ
ಮಾಡಿಕೊಂಡವರು ಹಲರು.

ಇದ್ದಾಗ ನಿನ್ನಂತೆ ಇದ್ದವರು ಯಾರಿಹರು?
ಬಿದ್ದವರ ಬಾಳಲ್ಲಿ ಜೀವಕಳೆಯನ್ನೂದಿ
ತಿದ್ದಿ ನಡೆಸಿದರಾರು ನಿನ್ನವೊಲು ಬಾಪೂಜಿ,
ಸಾವಿರದ ಶೂರರಾರು?
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...