Home / ಕವನ / ಕವಿತೆ / ಮಾಯದ ನೋವು

ಮಾಯದ ನೋವು

(ಶೋಕಗೀತ)


ಶಕ್ತಿದೈವತದ ಬಲಗೈಯ ಕರವಾಲವೇ,
ಯುಕ್ತಿಯಲಿ ಹಗೆಯ ಬಂಧಿಸುವಿಂದ್ರಜಾಲವೇ,
ದಿಕ್ಕು-ದಿಕ್ಕುಗಳ ರಕ್ಷಿಸಿದೇಕ ದಿಗ್ಗಜವೆ,
ಭರತರಾಷ್ಟ್ರದ ಧೈರ್ಯಪುರುಷ ಕೀರ್ತಿಧ್ವಜವೆ!
ಭಾಯಿ, ವಲ್ಲಭಭಾಯಿ ಭಾರತಿಯ ಕಣ್ಮಣಿ-
ನಿನ್ನನೂ ಕಬಳಿಸಿದಳೇ ಮೃತ್ಯುರಾಣಿ ?


ಓ, ಮೃತ್ಯು ದೇವತೆಯೆ ನಿರ್ದಯೇ, ನಿನ್ನನೂ
ದೇವಿಯರ ಶ್ರೇಣಿಯಲ್ಲಿ ಸೇರಿಸಿದನಾವನು ?
ನಿನಗೆ ಕಣ್ಣಿವೆಯೇನು ? ನಿನಗೆ ಕರುಳಿದೆಯೇನು ?
ಕನಸೊಳಾದರು ಲೋಕಹಿತವ ಬಗೆದಿಹೆಯೇನು ?
ಲೋಕಹಿತಕಿರದವಳು ನೀನೆಂತು ದೇವತೆಯು ?
ಲೌಕಿಕರ ದುಃಖದಲಿ ನೂಕುವುದೆ ಸತ್ಕೃತಿಯು ?


ಓ! ಮೃತ್ಯುರಾಣೇಽಽ! ಬಾ, ನೋಡು ಬಾರಿಲ್ಲಿ,
ನೀನಿಂದು ಗೆಯ್ದ ತಾಂಡವದ ಪರಿಣಾಮವನು !
ಎಂಥ ಜೀವದ ಹೂವ ತುಳಿ-ತುಳಿದು ಬಳಲಿಸಿದೆ?
ಆ ಹೂವ ಬಯಸುವರ ಎದೆಯೆದೆಯನಳಲಿಸಿದೆ!
ನಾಡಿನಲಿ ಹರಿಯುತಿದೆ ಕಂಬನಿಯ ಹೊನಲು
ಚಳಿಗಾಳಿಯೂ ಚೆಲ್ಲುತಿದೆ ಬಿಸಿಯ ಸುಯಿಲು!


ಉಕ್ಕಿನೆದೆಯವನೆಂದು ಹೆಸರಾಂತ ಧೀರಾ !
ಉಕ್ಕಿನೆದೆಯನ್ನು ಕಾಯಲಿಕೆಂದು ಮೈಯನೂ
ಉಕ್ಕಿನದೆ ಪಡೆದುಕೊಂಡಿರ್ದ್ದೆಯೆಂದಿರ್ದ್ದೆವೈ !
ನಿನ್ನ ಉಕ್ಕಿನ ಜೀವ ಭಾರತದ ರಕ್ಷಣೆಗೆ
ಬನ್ನವಿಲ್ಲದ ಕವಚವೆಂದು ಬಗೆದಿರ್ದ್ದೆವೈ !
ಬಂಧು, ವಲ್ಲಭರಾಜ, ನಿನ್ನ ಮರಣವಿದು-
ನಮ್ಮ ನಂಬುಗೆಗೆಂಥ ಹಾರೆಯಿಕ್ಕಿದುದು !


ನಿರ್ಜೀವದಲ್ಲಿ ಜೀವವನೂದಿದವ ನೀನು,
ಬೆಂಡುಗಳಲೂ ಬಲದ ಸಾರವರೆದವನು ;
ಬಯಲಲ್ಲಿ ಧೈರ್ಯಮೇರುವ ಮೆರಸಿದವ ನೀನು
ಭಯವನ್ನು ಶೌರ್ಯದಲಿ ಮಾರ್ಪಡಿಸಿದವನು!
ಓ, ಅಣ್ಣ ವಲ್ಲಭಾ, ನೀನು ಸಾಹಸಮಲ್ಲ,
ನಿನಗೆ ಸಾವೇ ? ಸುಳ್ಳು ಸುಳ್ಳು! ಹುಸಿಮಾತೆಲ್ಲ!


ಅಯ್ಯೋ, ಏನಿದು ಭ್ರಮೆಯು! ದುಃಖದುನ್ಮಾದ!
ಭಾರತದಿ ತುಂಬಿರುವ ಈ ಆರ್ತನಾದ….
ಕಿವಿಗೆ ಕೇಳುತಲಿಹುದು, ಮನಕೆ ಕಾಣುತಲಿಹುದು,
ಸುಳ್ಳು ಎಂತಾಗುವುದು ವಲ್ಲಭನ ಮರಣವದು !
ನಿಜವೆ, ಅಂತಾದೊಡಾ ಧೀರನಾ ಸಾವು ?
ಅಯ್ಯೊ, ನಾಡಿನ ಜನಕೆ ಮಾಯದಾ ನೋವು!


ಅಕ್ಕಟಾ!
ಭಾರತದ ಕಾಪಿಂಗೆ ಕೋಟೆಯಿನ್ನಾರು ?
ಹಗೆಯ ಗುಂಡಿಗೆಯೊಡೆವ ಗುಡುಗು ಇನ್ನಾರು ?
ಕಂಗೆಟ್ಟ ಜನಕುಲಕೆ ಕಣ್ಣು ಇನ್ನಾರು ?
ಸಿಡಿಲುನುಡಿಯಿಂದ ಭಯವನು ಜಡಿವರಾರು ?
ಯಾರಿಹರು ? ಯಾರಿಹರು ? ಯಾರು, ಇನ್ನಾರು ?
ಈ ಕೇಳ್ಕೆಗುತ್ತರವ ಕೊಡುವರಾರಿಹರು ?


ಶಕ್ತಿದೈವತದ ಬಲಗೈಯ ಕರವಾಲವೆ ?
ಯುಕ್ತಿಯಲಿ ಹಗೆಯ ಬಂಧಿಸುವಿಂದ್ರಜಾಲವೆ?
ದಿಕ್ಕು-ದಿಕ್ಕುಗಳ ರಕ್ಷಿಸಿದೇಕ ದಿಗ್ಗಜವೆ!
ಭರತರಾಷ್ಟ್ರದ ಧೈರ್ಯಪುರುಷ ಕೀರ್ತಿಧ್ವಜವೆ?
ಭಾಯಿ, ವಲ್ಲಭಭಾಯಿ, ಭಾರತದ ಕಣ್ಮಣಿ,
ನಿನ್ನನೂ ಕಬಳಿಸಿದಳೇ ಮೃತ್ಯರಾಣಿ ?
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...