Home / ಕವನ / ಕವಿತೆ / ಮಾಯದ ನೋವು

ಮಾಯದ ನೋವು

(ಶೋಕಗೀತ)


ಶಕ್ತಿದೈವತದ ಬಲಗೈಯ ಕರವಾಲವೇ,
ಯುಕ್ತಿಯಲಿ ಹಗೆಯ ಬಂಧಿಸುವಿಂದ್ರಜಾಲವೇ,
ದಿಕ್ಕು-ದಿಕ್ಕುಗಳ ರಕ್ಷಿಸಿದೇಕ ದಿಗ್ಗಜವೆ,
ಭರತರಾಷ್ಟ್ರದ ಧೈರ್ಯಪುರುಷ ಕೀರ್ತಿಧ್ವಜವೆ!
ಭಾಯಿ, ವಲ್ಲಭಭಾಯಿ ಭಾರತಿಯ ಕಣ್ಮಣಿ-
ನಿನ್ನನೂ ಕಬಳಿಸಿದಳೇ ಮೃತ್ಯುರಾಣಿ ?


ಓ, ಮೃತ್ಯು ದೇವತೆಯೆ ನಿರ್ದಯೇ, ನಿನ್ನನೂ
ದೇವಿಯರ ಶ್ರೇಣಿಯಲ್ಲಿ ಸೇರಿಸಿದನಾವನು ?
ನಿನಗೆ ಕಣ್ಣಿವೆಯೇನು ? ನಿನಗೆ ಕರುಳಿದೆಯೇನು ?
ಕನಸೊಳಾದರು ಲೋಕಹಿತವ ಬಗೆದಿಹೆಯೇನು ?
ಲೋಕಹಿತಕಿರದವಳು ನೀನೆಂತು ದೇವತೆಯು ?
ಲೌಕಿಕರ ದುಃಖದಲಿ ನೂಕುವುದೆ ಸತ್ಕೃತಿಯು ?


ಓ! ಮೃತ್ಯುರಾಣೇಽಽ! ಬಾ, ನೋಡು ಬಾರಿಲ್ಲಿ,
ನೀನಿಂದು ಗೆಯ್ದ ತಾಂಡವದ ಪರಿಣಾಮವನು !
ಎಂಥ ಜೀವದ ಹೂವ ತುಳಿ-ತುಳಿದು ಬಳಲಿಸಿದೆ?
ಆ ಹೂವ ಬಯಸುವರ ಎದೆಯೆದೆಯನಳಲಿಸಿದೆ!
ನಾಡಿನಲಿ ಹರಿಯುತಿದೆ ಕಂಬನಿಯ ಹೊನಲು
ಚಳಿಗಾಳಿಯೂ ಚೆಲ್ಲುತಿದೆ ಬಿಸಿಯ ಸುಯಿಲು!


ಉಕ್ಕಿನೆದೆಯವನೆಂದು ಹೆಸರಾಂತ ಧೀರಾ !
ಉಕ್ಕಿನೆದೆಯನ್ನು ಕಾಯಲಿಕೆಂದು ಮೈಯನೂ
ಉಕ್ಕಿನದೆ ಪಡೆದುಕೊಂಡಿರ್ದ್ದೆಯೆಂದಿರ್ದ್ದೆವೈ !
ನಿನ್ನ ಉಕ್ಕಿನ ಜೀವ ಭಾರತದ ರಕ್ಷಣೆಗೆ
ಬನ್ನವಿಲ್ಲದ ಕವಚವೆಂದು ಬಗೆದಿರ್ದ್ದೆವೈ !
ಬಂಧು, ವಲ್ಲಭರಾಜ, ನಿನ್ನ ಮರಣವಿದು-
ನಮ್ಮ ನಂಬುಗೆಗೆಂಥ ಹಾರೆಯಿಕ್ಕಿದುದು !


ನಿರ್ಜೀವದಲ್ಲಿ ಜೀವವನೂದಿದವ ನೀನು,
ಬೆಂಡುಗಳಲೂ ಬಲದ ಸಾರವರೆದವನು ;
ಬಯಲಲ್ಲಿ ಧೈರ್ಯಮೇರುವ ಮೆರಸಿದವ ನೀನು
ಭಯವನ್ನು ಶೌರ್ಯದಲಿ ಮಾರ್ಪಡಿಸಿದವನು!
ಓ, ಅಣ್ಣ ವಲ್ಲಭಾ, ನೀನು ಸಾಹಸಮಲ್ಲ,
ನಿನಗೆ ಸಾವೇ ? ಸುಳ್ಳು ಸುಳ್ಳು! ಹುಸಿಮಾತೆಲ್ಲ!


ಅಯ್ಯೋ, ಏನಿದು ಭ್ರಮೆಯು! ದುಃಖದುನ್ಮಾದ!
ಭಾರತದಿ ತುಂಬಿರುವ ಈ ಆರ್ತನಾದ….
ಕಿವಿಗೆ ಕೇಳುತಲಿಹುದು, ಮನಕೆ ಕಾಣುತಲಿಹುದು,
ಸುಳ್ಳು ಎಂತಾಗುವುದು ವಲ್ಲಭನ ಮರಣವದು !
ನಿಜವೆ, ಅಂತಾದೊಡಾ ಧೀರನಾ ಸಾವು ?
ಅಯ್ಯೊ, ನಾಡಿನ ಜನಕೆ ಮಾಯದಾ ನೋವು!


ಅಕ್ಕಟಾ!
ಭಾರತದ ಕಾಪಿಂಗೆ ಕೋಟೆಯಿನ್ನಾರು ?
ಹಗೆಯ ಗುಂಡಿಗೆಯೊಡೆವ ಗುಡುಗು ಇನ್ನಾರು ?
ಕಂಗೆಟ್ಟ ಜನಕುಲಕೆ ಕಣ್ಣು ಇನ್ನಾರು ?
ಸಿಡಿಲುನುಡಿಯಿಂದ ಭಯವನು ಜಡಿವರಾರು ?
ಯಾರಿಹರು ? ಯಾರಿಹರು ? ಯಾರು, ಇನ್ನಾರು ?
ಈ ಕೇಳ್ಕೆಗುತ್ತರವ ಕೊಡುವರಾರಿಹರು ?


ಶಕ್ತಿದೈವತದ ಬಲಗೈಯ ಕರವಾಲವೆ ?
ಯುಕ್ತಿಯಲಿ ಹಗೆಯ ಬಂಧಿಸುವಿಂದ್ರಜಾಲವೆ?
ದಿಕ್ಕು-ದಿಕ್ಕುಗಳ ರಕ್ಷಿಸಿದೇಕ ದಿಗ್ಗಜವೆ!
ಭರತರಾಷ್ಟ್ರದ ಧೈರ್ಯಪುರುಷ ಕೀರ್ತಿಧ್ವಜವೆ?
ಭಾಯಿ, ವಲ್ಲಭಭಾಯಿ, ಭಾರತದ ಕಣ್ಮಣಿ,
ನಿನ್ನನೂ ಕಬಳಿಸಿದಳೇ ಮೃತ್ಯರಾಣಿ ?
*****

Tagged:

Leave a Reply

Your email address will not be published. Required fields are marked *

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...