Home / ಕವನ / ಕವಿತೆ / ಉಷಃಕಾಲದಲ್ಲಿ

ಉಷಃಕಾಲದಲ್ಲಿ

ಉಷೆಯ ಕಾಲ ಸೋಂಕಿನಿಂದ
ಬಾನು ತಳಿತಿದೆ;
ನಿಶೆಯ ಮಡಿಲನುಳಿದು ಜಗವು
ಜೀವಗೊಳುತಿದೆ;
ಕತ್ತಲಂಜುತೋಡುತಿಹುದು,
ಬೆಳಕು ತಿರೆಯ ತುಂಬುತಿಹುದು;
ನಾಡು ಮೇಡು ಕಾಡೊಳೆಲ್ಲು
ಸೊಗವು ಮೂಡಿ ಬರುತಿದೆ.

ತರುಗಳಿನಗೆ ಮಂಜುಹನಿಗ-
ಳರ್‍ಘ್ಯ ಹಿಡಿದಿವೆ;
ಅಲರ ಸುರಿದು ಸ್ವಾಗತವನು
ಬಾಗಿ ಬಯಸಿವೆ;
ಪಿಕದ ತೂರ್‍ಯ ಮೊಳಗುತಿಹುದು,
ಪದ್ಮಗಂಧ ಪಸರಿಸಿಹುದು,
ಖಗಗಳುಲಿವ ವಿವಿಧ ಸ್ವನದ
ಮೇಳ ತೋಪ ತುಂಬಿದೆ.

ಗರಿಯ ತಿದ್ದೆ ಬೆಡಗಿ ಶುಕಿಯು
ಕೊರಲ ಕೊಂಕಿದೆ;
ಇನಿಯಳೊಡನೆ ಪಾರಿವಾಳ
ಬೇಟ ಹೂಡಿದೆ ;
ಮೀಂಗಳೆದ್ದು ನೆಗೆಯುತಿಹುವು,
ತೆರೆಗಳೆದ್ದು ಕುಣಿಯುತಿಹುವು,
ವಿಶ್ವಶಿವದ ಪಥದೊಳಡಿಯ-
ನಿಟ್ಟು ಸೃಷ್ಟಿ ನಗುತಿದೆ.

ಮನುಜ?- ಮನುಜನೇನುಗೈವ-
ನಿಂಥ ಸಮಯದಿ?
ಜಗವು ಜೀವಗೊಳುತಲಿಂತು
ನಲಿವ ಉದಯದಿ?
ಬೆಳಕು ಬಾಳ ಬಿಚ್ಚುತಿರಲು,
ಜೀವ ಕರ್‍ಮಕೇಳುತಿರಲು,
ಆತ್ಮವಂತ, ಕರಣಪಟುವು-
ಏನ ಗೈವನುದಯದಿ?

ಹಕ್ಕಿ ಹೂಗಳಂತೆ ತಾನೂ
ಎದ್ದು ನಲಿವನೊ?
ಮಿಕ್ಕ ಸೃಷ್ಟಿಯಂತೆ ತಾನೂ
ನಲವಿಗೇಳ್ವನೊ?
ವಿಶ್ವಶಿವದ ಮರ್‍ಮವರಿತು,
ಆತ್ಮಕರ್‍ಮ ಧರ್‍ಮವರಿತು,
ಬಾಳ ಬಟ್ಟೆ ಕಂಡು, ದೃಢದಿ
ಹಾದಿ ನಡೆಯಲೇಳ್ವನೊ ?

ಇರುಳಿನತಿಗೆ ಬಳಲಿ ಬೆಳಗ
ಮಲಗಿ ಕಳೆವನೊ?
ಮಾಗದಳಲಿಗೆದ್ದು ಕಣ್ಣ-
ನೀರ ಮಿಡಿವನೊ ?
ಶಿವವ ಜರೆವ ಸ್ವಾರ್‍ಥಗಳನು
ಪಾಪಕೊಯ್ವ, ಮೋದಗಳನು
ಅರಸಿ, ಕರ್‍ಮತುಮುಲದೊಳಗೆ
ಸಿಲುಕಿ, ಅಂಜಿ, ಸುಯ್ವನೊ?

ದೀನ ಮನುಜನೇನು ಬಲ್ಲ
ಕರ್‍ಮ ಧರ್‍ಮವ?
ಕರಣದಾಳು ಬಲ್ಲನೇನು
ಶಿವದ ಮರ್‍ಮವ?
ಸೊಗದ ಹೊನ್ನಿನುದಯದಲ್ಲಿ
ಸೃಷ್ಟಿ ನಲಿವ ವೇಳೆಯಲ್ಲಿ
ಮನುಜಗೊಬ್ಬಗಲ್ತೆ ಶರಣು-
ಹೊಂದಿ ನುತಿಪ ಕಜ್ಜವು!

ವಿಶ್ವದೊಡೆಯ ದುರಿತಗಳನು
ದೂರ ಮಾಡಿಸೈ.
ಆವುದೆಮ್ಮ ಶಿವವೊ, ತಂದೆ,
ಅದನು ಕರುಣಿಸೈ.
ಜ್ಞಾನದೀಪ ಹೊತ್ತಿಸೈ,
ಬಾಳ ಬಟ್ಟೆ ಕಾಣಿಸ್ಯೆ,
ಆತ್ಮಶಿವಕೆ – ನಿನ್ನ ಇಚ್ಛೆ-
ಗೆನ್ನ ಬಾಳ ಹೊಂದಿಸೈ.
*****

Tagged:

Leave a Reply

Your email address will not be published. Required fields are marked *

ಬೆಳಕಿನಿಂದ ಜಗಜಗಿಸುವ ಸಂಜೆ ರಾವು ಬಡಿದಂತೆ ಮಬ್ಬಾಗಿತ್ತು. ಈ ಮಬ್ಬು ಹಿಂದೆಂದೂ ಇದಿಲ್ಲ. ದೇಶದ ಹದಿನೇಳು ವರ್ಷದ ಸ್ವಾತಂತ್ರದಲ್ಲಿ, ಮಧ್ಯಮ ತರಗತಿಯ ಜೀವನ ಕೈ ಬಾಯಿಯಾಗಿದ್ದರೂ ದೂರದ ಆಶಯ ಹೊಂಗಿರಣವೊಂದು ಸದಾ ಹೊಳೆದು ಭಾವೀ ಪೀಳಿಗೆಯ ಮನೋಲ್ಲಾಸ ಮಾಡುತ್ತಿತ್ತು. ಆದರೆ ಈ ಮಬ್ಬುಗತ್ತ...

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...