Home / ಕವನ / ಕವಿತೆ / ಉಷಃಕಾಲದಲ್ಲಿ

ಉಷಃಕಾಲದಲ್ಲಿ

ಉಷೆಯ ಕಾಲ ಸೋಂಕಿನಿಂದ
ಬಾನು ತಳಿತಿದೆ;
ನಿಶೆಯ ಮಡಿಲನುಳಿದು ಜಗವು
ಜೀವಗೊಳುತಿದೆ;
ಕತ್ತಲಂಜುತೋಡುತಿಹುದು,
ಬೆಳಕು ತಿರೆಯ ತುಂಬುತಿಹುದು;
ನಾಡು ಮೇಡು ಕಾಡೊಳೆಲ್ಲು
ಸೊಗವು ಮೂಡಿ ಬರುತಿದೆ.

ತರುಗಳಿನಗೆ ಮಂಜುಹನಿಗ-
ಳರ್‍ಘ್ಯ ಹಿಡಿದಿವೆ;
ಅಲರ ಸುರಿದು ಸ್ವಾಗತವನು
ಬಾಗಿ ಬಯಸಿವೆ;
ಪಿಕದ ತೂರ್‍ಯ ಮೊಳಗುತಿಹುದು,
ಪದ್ಮಗಂಧ ಪಸರಿಸಿಹುದು,
ಖಗಗಳುಲಿವ ವಿವಿಧ ಸ್ವನದ
ಮೇಳ ತೋಪ ತುಂಬಿದೆ.

ಗರಿಯ ತಿದ್ದೆ ಬೆಡಗಿ ಶುಕಿಯು
ಕೊರಲ ಕೊಂಕಿದೆ;
ಇನಿಯಳೊಡನೆ ಪಾರಿವಾಳ
ಬೇಟ ಹೂಡಿದೆ ;
ಮೀಂಗಳೆದ್ದು ನೆಗೆಯುತಿಹುವು,
ತೆರೆಗಳೆದ್ದು ಕುಣಿಯುತಿಹುವು,
ವಿಶ್ವಶಿವದ ಪಥದೊಳಡಿಯ-
ನಿಟ್ಟು ಸೃಷ್ಟಿ ನಗುತಿದೆ.

ಮನುಜ?- ಮನುಜನೇನುಗೈವ-
ನಿಂಥ ಸಮಯದಿ?
ಜಗವು ಜೀವಗೊಳುತಲಿಂತು
ನಲಿವ ಉದಯದಿ?
ಬೆಳಕು ಬಾಳ ಬಿಚ್ಚುತಿರಲು,
ಜೀವ ಕರ್‍ಮಕೇಳುತಿರಲು,
ಆತ್ಮವಂತ, ಕರಣಪಟುವು-
ಏನ ಗೈವನುದಯದಿ?

ಹಕ್ಕಿ ಹೂಗಳಂತೆ ತಾನೂ
ಎದ್ದು ನಲಿವನೊ?
ಮಿಕ್ಕ ಸೃಷ್ಟಿಯಂತೆ ತಾನೂ
ನಲವಿಗೇಳ್ವನೊ?
ವಿಶ್ವಶಿವದ ಮರ್‍ಮವರಿತು,
ಆತ್ಮಕರ್‍ಮ ಧರ್‍ಮವರಿತು,
ಬಾಳ ಬಟ್ಟೆ ಕಂಡು, ದೃಢದಿ
ಹಾದಿ ನಡೆಯಲೇಳ್ವನೊ ?

ಇರುಳಿನತಿಗೆ ಬಳಲಿ ಬೆಳಗ
ಮಲಗಿ ಕಳೆವನೊ?
ಮಾಗದಳಲಿಗೆದ್ದು ಕಣ್ಣ-
ನೀರ ಮಿಡಿವನೊ ?
ಶಿವವ ಜರೆವ ಸ್ವಾರ್‍ಥಗಳನು
ಪಾಪಕೊಯ್ವ, ಮೋದಗಳನು
ಅರಸಿ, ಕರ್‍ಮತುಮುಲದೊಳಗೆ
ಸಿಲುಕಿ, ಅಂಜಿ, ಸುಯ್ವನೊ?

ದೀನ ಮನುಜನೇನು ಬಲ್ಲ
ಕರ್‍ಮ ಧರ್‍ಮವ?
ಕರಣದಾಳು ಬಲ್ಲನೇನು
ಶಿವದ ಮರ್‍ಮವ?
ಸೊಗದ ಹೊನ್ನಿನುದಯದಲ್ಲಿ
ಸೃಷ್ಟಿ ನಲಿವ ವೇಳೆಯಲ್ಲಿ
ಮನುಜಗೊಬ್ಬಗಲ್ತೆ ಶರಣು-
ಹೊಂದಿ ನುತಿಪ ಕಜ್ಜವು!

ವಿಶ್ವದೊಡೆಯ ದುರಿತಗಳನು
ದೂರ ಮಾಡಿಸೈ.
ಆವುದೆಮ್ಮ ಶಿವವೊ, ತಂದೆ,
ಅದನು ಕರುಣಿಸೈ.
ಜ್ಞಾನದೀಪ ಹೊತ್ತಿಸೈ,
ಬಾಳ ಬಟ್ಟೆ ಕಾಣಿಸ್ಯೆ,
ಆತ್ಮಶಿವಕೆ – ನಿನ್ನ ಇಚ್ಛೆ-
ಗೆನ್ನ ಬಾಳ ಹೊಂದಿಸೈ.
*****

Tagged:

Leave a Reply

Your email address will not be published. Required fields are marked *

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...

ಬೆಳಿಗ್ಗೆಯಿಂದ ಕತ್ತಲೆಯವರೆಗೂ ಬಸ್ ಸ್ಟಾಂಡಿನಲ್ಲಿ ಬಸ್ಸುಗಳಿಗೆ ಹತ್ತಿ ಇಳಿದುಕೊಂಡು ಎಷ್ಟು ಗೋಗರೆದು ಬಿಕ್ಷೆ ಬೇಡಿದರೂ ಆ ಹುಡುಗನಿಗೆ ಮಧ್ಯಾಹ್ನದ ಊಟ ಮಾಡುವಷ್ಟು ಹಣ ಸಂಗ್ರಹವಾಗುತ್ತಿರಲಿಲ್ಲ. ಮಧ್ಯಾಹ್ನ ಬಿಸ್ಕಿಟು ಮತ್ತು ನಲ್ಲಿ ನೀರು ಕುಡಿದು ಹಸಿವು ತಣಿಸಿದರೂ ರಾತ್ರಿಯ ಊಟಕ್ಕ...

ಮಧುಮಾಸದ ಮೊದಲ ದಿನಗಳು. ಎಲ್ಲಿ ನೋಡಿದರೂ ತಾಯಿಯ ವಿವಿಧ ವಿಲಾಸ……. ಪುಷ್ಪಶೃಂಗಾರ!! ವರ್‍ಣವೈಖರಿ!! ಮಧುಪಾನದಿಂದ ಮೈಮರೆತು ಮೊರೆಯುತಿಹೆ ಉನ್ಮತ್ತ ಭೃಂಗ ಸಂಕುಲದ ಎಣೆಯಿಲ್ಲದ ಪ್ರಣಯ ಕೇಳಿ! ಸಹಸ್ರಸಹಸ್ರ ಖಗಕಂಠಗಳಿಂದೆ ದಿಕ್ಕುದಿಕ್ಕಿಗೆ ಪಸರಿಸುತಿಹ ಸುಮಧುರ ಗಾನ ತರಂಗ...

ಈ ಮಾಹಾತ್ಮ್ಯೆ ಯಾವ ಪುರಾಣದಲ್ಲಿದೆ? ಎಲ್ಲಿ ಯಾರು ಹೇಳಿದ್ದು? ಯಾರು ಕೇಳಿದ್ದು? ಯಾವ ಇಷ್ಟಾರ್ಥಸಿದ್ದಿಗಾಗಿ? ಎಂದೆಲ್ಲ ಪ್ರಶ್ನೆಗಳನ್ನು ನೀವು ಕೇಳಬಹುದು. ಉತ್ತರ ಹೇಳುತ್ತಾ ಹೋದರೆ ಪೀಠಿಕಾ ಪ್ರಕರಣವೇ ಉದ್ದ ಬೆಳೆದು ಮಹಾತ್ಮ್ಯೆಯನ್ನು ಕೇಳುವಷ್ಟರಲ್ಲಿ ನಿಮಗೆ ಹಾಕಳಿಗೆ ತೊಡಗಿ ತೂಕಡ...