Home / ಕವನ / ಕವಿತೆ / ಉಷಃಕಾಲದಲ್ಲಿ

ಉಷಃಕಾಲದಲ್ಲಿ

ಉಷೆಯ ಕಾಲ ಸೋಂಕಿನಿಂದ
ಬಾನು ತಳಿತಿದೆ;
ನಿಶೆಯ ಮಡಿಲನುಳಿದು ಜಗವು
ಜೀವಗೊಳುತಿದೆ;
ಕತ್ತಲಂಜುತೋಡುತಿಹುದು,
ಬೆಳಕು ತಿರೆಯ ತುಂಬುತಿಹುದು;
ನಾಡು ಮೇಡು ಕಾಡೊಳೆಲ್ಲು
ಸೊಗವು ಮೂಡಿ ಬರುತಿದೆ.

ತರುಗಳಿನಗೆ ಮಂಜುಹನಿಗ-
ಳರ್‍ಘ್ಯ ಹಿಡಿದಿವೆ;
ಅಲರ ಸುರಿದು ಸ್ವಾಗತವನು
ಬಾಗಿ ಬಯಸಿವೆ;
ಪಿಕದ ತೂರ್‍ಯ ಮೊಳಗುತಿಹುದು,
ಪದ್ಮಗಂಧ ಪಸರಿಸಿಹುದು,
ಖಗಗಳುಲಿವ ವಿವಿಧ ಸ್ವನದ
ಮೇಳ ತೋಪ ತುಂಬಿದೆ.

ಗರಿಯ ತಿದ್ದೆ ಬೆಡಗಿ ಶುಕಿಯು
ಕೊರಲ ಕೊಂಕಿದೆ;
ಇನಿಯಳೊಡನೆ ಪಾರಿವಾಳ
ಬೇಟ ಹೂಡಿದೆ ;
ಮೀಂಗಳೆದ್ದು ನೆಗೆಯುತಿಹುವು,
ತೆರೆಗಳೆದ್ದು ಕುಣಿಯುತಿಹುವು,
ವಿಶ್ವಶಿವದ ಪಥದೊಳಡಿಯ-
ನಿಟ್ಟು ಸೃಷ್ಟಿ ನಗುತಿದೆ.

ಮನುಜ?- ಮನುಜನೇನುಗೈವ-
ನಿಂಥ ಸಮಯದಿ?
ಜಗವು ಜೀವಗೊಳುತಲಿಂತು
ನಲಿವ ಉದಯದಿ?
ಬೆಳಕು ಬಾಳ ಬಿಚ್ಚುತಿರಲು,
ಜೀವ ಕರ್‍ಮಕೇಳುತಿರಲು,
ಆತ್ಮವಂತ, ಕರಣಪಟುವು-
ಏನ ಗೈವನುದಯದಿ?

ಹಕ್ಕಿ ಹೂಗಳಂತೆ ತಾನೂ
ಎದ್ದು ನಲಿವನೊ?
ಮಿಕ್ಕ ಸೃಷ್ಟಿಯಂತೆ ತಾನೂ
ನಲವಿಗೇಳ್ವನೊ?
ವಿಶ್ವಶಿವದ ಮರ್‍ಮವರಿತು,
ಆತ್ಮಕರ್‍ಮ ಧರ್‍ಮವರಿತು,
ಬಾಳ ಬಟ್ಟೆ ಕಂಡು, ದೃಢದಿ
ಹಾದಿ ನಡೆಯಲೇಳ್ವನೊ ?

ಇರುಳಿನತಿಗೆ ಬಳಲಿ ಬೆಳಗ
ಮಲಗಿ ಕಳೆವನೊ?
ಮಾಗದಳಲಿಗೆದ್ದು ಕಣ್ಣ-
ನೀರ ಮಿಡಿವನೊ ?
ಶಿವವ ಜರೆವ ಸ್ವಾರ್‍ಥಗಳನು
ಪಾಪಕೊಯ್ವ, ಮೋದಗಳನು
ಅರಸಿ, ಕರ್‍ಮತುಮುಲದೊಳಗೆ
ಸಿಲುಕಿ, ಅಂಜಿ, ಸುಯ್ವನೊ?

ದೀನ ಮನುಜನೇನು ಬಲ್ಲ
ಕರ್‍ಮ ಧರ್‍ಮವ?
ಕರಣದಾಳು ಬಲ್ಲನೇನು
ಶಿವದ ಮರ್‍ಮವ?
ಸೊಗದ ಹೊನ್ನಿನುದಯದಲ್ಲಿ
ಸೃಷ್ಟಿ ನಲಿವ ವೇಳೆಯಲ್ಲಿ
ಮನುಜಗೊಬ್ಬಗಲ್ತೆ ಶರಣು-
ಹೊಂದಿ ನುತಿಪ ಕಜ್ಜವು!

ವಿಶ್ವದೊಡೆಯ ದುರಿತಗಳನು
ದೂರ ಮಾಡಿಸೈ.
ಆವುದೆಮ್ಮ ಶಿವವೊ, ತಂದೆ,
ಅದನು ಕರುಣಿಸೈ.
ಜ್ಞಾನದೀಪ ಹೊತ್ತಿಸೈ,
ಬಾಳ ಬಟ್ಟೆ ಕಾಣಿಸ್ಯೆ,
ಆತ್ಮಶಿವಕೆ – ನಿನ್ನ ಇಚ್ಛೆ-
ಗೆನ್ನ ಬಾಳ ಹೊಂದಿಸೈ.
*****

Tagged:

Leave a Reply

Your email address will not be published. Required fields are marked *

ಹೆರಿಗೆ ನೋವಿನಿಂದ ಸಂಕಟಪಡುತ್ತಿದ್ದ ಹೆಂಡತಿ ಗಂಗಾಳನ್ನು ಆಸ್ಪತ್ರೆಗೆ ಚಿಕ್ಕಣ್ಣ ಕರೆದುಕೊಂಡು ಬಂದಾಗ ಔಟ್ ಪೇಶಂಟ್ ವಿಭಾಗ ಗಿಜಿಗುಟ್ಟುತ್ತಿತ್ತು. ಗುಂಪುಕಟ್ಟಿ ನಿಂತಿದ್ದ ಮಹಿಳೆಯರ ಸಾಲನ್ನು ಛೇಧಿಸಿಕೊಂಡು ವೈದ್ಯರ ಮೇಜಿನ ಬಳಿ ಬಂದು ನಿಂತ ಅವನ ತೋಳುಗಳಲ್ಲಿ ಎರಡೂವರೆ ವರ್ಷದ ಮಗುವ...

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...