ಹೇಮಾವತಿಯ ತೀರದಲ್ಲಿ

ಹಗಲ ಕಣ್ಣನು ಮಂಕು ಕವಿಯಿತು,
ಮುಗಿಲ ಬಾಣದ ಬಿರುಸು ಹೆಚ್ಚಿತು,
ನೆಗೆದು ನೊರೆಯನು ಕೀಳುತೋಡಿತು
ಮಲೆಯನಾಡಿನ ಹೇಮೆಯು.

ಕರೆಯ ಮಂಟಪದೊಳಗೆ ಕುಳಿತು,
ಬೆರಗುಮಾಡುವ ಪ್ರಕೃತಿಯಂದಿನ
ಇರವ ನೋಡುತ ಮೂಕರಾದೆವು
ನಾನು ರಾಮ ಇಬ್ಬರೂ.

ಮುಗಿಲಿನಾರ್‍ಭಟ, ಗಾಳಿಯುಲುಹು,
ಹಗಲ ಕಂಬನಿಯಂತೆ ಸೋನೆಯು,
ನೆಗೆದು ಮೊರೆಯುವ ಹೇಮೆಯಬ್ಬರ-
ಏನು ಭೀಕರ ಪ್ರಕೃತಿಯು!

ಬಾನ ನೀಲವನಲೆಯೊಳಿಟ್ಟು,
ತಾನದೊಂದಿಗೆ ಹಾಡಿ ತೂಗಿದ
ಮಾನವತಿ ಮೃದುಗಮನೆ ಹೇಮೆಯೆ
ಕನಲಿ ಮೊರೆವೀ ಹೇಮೆಯು!

ಹಗಲಿನಂದಿನ ರೂಪು ತಂದಿತು
ಬಗೆಗೆ ಸಾವಿನ ಚಿಂತೆಗಳನು,
ನಗೆಯನಣಕಿಸಿ ಸೊಗವ ಜರೆಯುತ
ಬವಣೆಗೊಳ್ಳುವ ಭಾವವ.

ಏನು ಸೋಜಿಗ ಇಂಥ ದಿನದೊಳು
ಸ್ನಾನಮಾಡಲು ಪುಣ್ಯ ಕೆಳಸಿ
ಸಾನುರಾಗದಿ ಬಂದ ಬಾಲೆಯ-
ರಸುವ ನುಂಗಲು ಹೇಮೆಯು!

ಇರಲಿ ರೂಪವು, ಇರಲಿ ಬೆಡಗು,
ಸುರರ ಕನ್ಯೆಯ ಜರೆವ ಕೊರಲು,
ಇರಲಿ ಸ್ವರ್ಗದ ಮೌಗ್ಧ್ಯ-ಕನ್ನೆಯು
ಹೊನಲ ಮುನಿಸನು ತಡೆವಳೆ?

“ಇರುಳನೆಲ್ಲಾ ಹಾಡಿ ದಣಿದು
ಕೊರಲು ಕಟ್ಟಿದೆ, ಮೊಗವು ಸೊರಗಿದೆ.
ಬರಿಯ ಛಲವೇಕಿಂದು ಮೀವರೆ,
ಸೋನೆ ಹಗಲೊಳು, ಹೊಳೆಯೊಳು?”

ಕೆಳದಿಯರ ಜೊತೆ ಕೂಡಿ ಸರಸದಿ
ಹೊಳೆಯೊಳಲೆಯುತ ನಲಿವ ಕೌತುಕ-
ಕೆಳಸಿ, ತುಡಿಯುವ ಬಾಲೆ ಕೇಳ್ವಳೆ
ತಾಯಿ ನುಡಿದಾ ಹಿತವನು?

“ಬಾರೆ ಕಮಲೆ, ಬಾರೆ ಗೌರಿ,
ಬಾರೆ ಶಾರದೆ, ಪುಣ್ಯದಿನದೊಳು
ಕಾರ ಮುಗಿಲಿನ ಮೊಳಗಿಗಂಜುತ
ಹೊಳೆಗೆ ಹೋಗದೆ ನಿಲ್ವರೆ?”

ಏನು ಸಡಗರ! ಏನು ನಗೆಯು!
ಏನು ಉಲ್ಲಸವವರಿಗಂದು!
ಹೊನಲೊಳಡಗಿದ ಜವನ ಮೊಗದೊಳು
ನಗೆಯ ಹರಡುವ ಸರಸವು!

ಅವರ ಮೋದಕೆ, ಆದೊಡಯ್ಯೋ,
ಬುವಿಯೊಳಂದೇ ಚರಮದಿನವು.
ಅವರ ಜೀವದ ಹಣತೆ ಕ್ಷಣದೊಳು
ನಂದಿಹೋಯಿತು ಹೊನಲೊಳು.

ಹೊಳೆಯ ಮಂಟಪದೊಳಗೆ ಕುಳಿತು
ಹಳೆಯ ನೆನಪನು ಮನಕೆ ತಂದೆನು:
ಹಳುವ ತುಂಬಿದ ಗೋಳ ಹೊಳಲನು,
ಹರಿದ ಕಂಬನಿಕಾಲ್ವೆಯ;

ಆರ ಗಾನದ ಲಹರಿ ಹೃದಯಕೆ
ತೂರಿ ತೋರಿದ ಆತ್ಮದರಕೆಯ-
ನಾರ ಪ್ರೇಮವೆ ಪೂರ್‍ಣಮಾಡಿತೊ,
ಅಂಥ ತಂಗಿಯ ಸಾವನು.

ತಿಳಿವು ಮರಳಿತು, ಮನದ ದುಗುಡವ-
ನಳೆದು ಮರುಕವನೆರೆವ ತೆರದೊಳು
ತಲೆಯ ತಡಹುತ ರಾಮುವಿದ್ದನು-
ನುಡಿದೇನೀಪರಿ ಕೆಳೆಯಗೆ:

“ಏನು ದಿನವಿದು, ಕೆಳೆಯ, ಹೇಮೆಗೆ
ಏನಿದಬ್ಬರ!- ಇಂಥ ಹಗಲೊಳು
ಹೊನಳೊಳಳಿದಳು ತಂಗಿ ಜಾನಕಿ;
ತೋರಬಲ್ಲೆಯ ಮಸಣವ?”

ಎನ್ನ ಮಾತಿಗೆ, ರಾಮು ಸುಯ್ಯುತ,
“ಚಿನ್ನ, ನೆರೆಯೊಳು ಕಾಣದೆ”ಂದನು-
ಎನ್ನ ಕಂಬನಿಕೋಡಿ ಬೆರೆಯಿತು
ಮೊರೆವ ಹೇಮೆಯ ತೆರೆಯೊಳು.

ಸಾವು ಸೋಕುವುದೆಲ್ಲರನು, ದಿಟ-
ಸಾವಿಗಂಜುತ ಗೋಳ ಕರೆವುದು
ಸಾವು ಒಯ್ಯುವ ಜೀವಕಲ್ಲವು-
ಹಿಂದೆ ಉಳಿಸುವ ಅರಕೆಗೆ!
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ರನ್ನದುಡುಗುಣಿ
Next post ನೆಕ್‌ಲೆಸ್

ಸಣ್ಣ ಕತೆ

  • ಸ್ವಯಂಪ್ರಕಾಶ

    ಇಸ್ತ್ರೀ ಇಲ್ಲದ ಸೀರೆ, ಬಾಚದ ತಲೆ... ಕೈಯಲ್ಲಿ ಚೀಲದ ತುಂಬ ತರ್ಕಾರಿಗಳೊಂದಿಗೆ ಮಾರುಕಟ್ಟೆಯಿಂದ ಹೊರಗೆ ಬರುವುದು ಭ್ರಮರೆ’ಯೇ... ಕಂಡು ತುಂಬಾ ಆಶ್ಚರ್ಯವಾಯಿತು. ರೋಡಿನ ಈ ಕಡೆ ಕಾರು… Read more…

  • ವರ್ಗಿನೋರು

    ಆಗ್ಲೇ ವಾಟು ವಾಲಿತ್ತು. ಯೆಷ್ಟು ವಾಟು ವಾಲ್ದ್ರೇನು? ಬಳ್ಳಾರಿ ಬಿಸ್ಲೆಂದ್ರೆ ಕೇಳ್ಬೇಕೇ? ನಡೆವ... ದಾರ್ಗೆ ಕೆಂಡ ಸುರ್ದಂಗೆ. ನೆಲಂಭೋ ನೆಲಾ... ಝಣ ಝಣ. ‘ಅಲ್ಗೆ’ ಕಾದಂಗೆ. ಕಾಲಿಟ್ರೆ… Read more…

  • ಉರಿವ ಮಹಡಿಯ ಒಳಗೆ

    ಸಹ ಉದ್ಯೋಗಿಗಳ ಓಡಾಟ, ಗ್ರಾಹಕರೊಂದಿಗಿನ ಮೊಬೈಲ್ ಹಾಗೂ ದೂರವಾಣಿ ಸಂಭಾಷಣೆಗಳು, ಲ್ಯಾಪ್‌ಟಾಪಿನ ಶಬ್ದಗಳು ಎಲ್ಲಾ ಸ್ತಬ್ದವಾದಾಗಲೇ ಮಧುಕರನಿಗೆ ಕಚೇರಿಯ ಸಮಯ ಮೀರಿದ್ದು ಅರಿವಾಯಿತು. ಕುಳಿತಲ್ಲಿಂದಲೇ ತನ್ನ ಕುತ್ತಿಗೆಯನ್ನು… Read more…

  • ಅಹಮ್ ಬ್ರಹ್ಮಾಸ್ಮಿ

    ಬಹುಶಃ ಮೊದಲ ಬಾರಿ ನಾನು ಅವನನ್ನು ನೋಡುತ್ತಿರಬೇಕು. ಅವನು ಅಕಸ್ಮತ್ತಾಗಿ ನನ್ನ ಕಣ್ಣಿಗೆ ಬಿದ್ದನೋ, ಅಲ್ಲಾ ಅವನೇ ನಾನು ಕಾಣುವ ಹಾಗೆ ಎದುರಿಗೆ ಬಂದನೋ ಎಂಬ ವಿಷಯದಲ್ಲಿ… Read more…

  • ಎರಡು ಮದುವೆಗಳು

    ಮುಂಗಾರು ಮಳೆಗಳು ಸರಿಯಾಗಿ ಬಾರದೇ ಭುವನೇಶ್ವರದ ಹಳ್ಳಿಯ ಜನರಲ್ಲಿ ಒಂದು ರೀತಿಯ ಕಳವಳವಾಗಿತ್ತು. ಮಳೆ ಬಂದರೆ ಬೆಳೆ, ಬೆಳೆ ಆದರೆ ಬಾಳು ಎಂದು ಬದುಕುತ್ತಿದ್ದ ಅವರಿಗೆ ಏನು… Read more…