Home / ಕವನ / ಕವಿತೆ / ಬಾಳಿನ ಹಂಬಲು

ಬಾಳಿನ ಹಂಬಲು


ಕೂಸಿಗಂದು ಏನು ಬೇಡ,
ತಿಂಡಿ ಗೊಂಬೆ ಮುದ್ದು ಬೇಡ.
ಏನೊ ಅರಕೆ, ಏನೊ ಬೇನೆ,
ಅತ್ತು ಸೊರಗಿತು :
“ಅಮ್ಮ ಎಲ್ಲಿ ಹೋತು” ಎನುತ
ಅತ್ತು ಸೊರಗಿತು.

ಅಳುವ ಕೇಳಿ ಬಂದ ತಾಯ
ಅಮೃತಸ್ಪರ್‍ಶಕಾರೆ ಗಾಯ,
ತೊಯ್ದ ಕಣ್ಣ ಬಿಚ್ಚಿ, ಸುಳಿಸಿ,
ತೊಂದು ನಗೆಯನು-
“ನಿನ್ನ ನುಳಿಯೆ ಬಾಳು ಶೂನ್ಯ!”
ಎನುವ ನಗೆಯನು.


ಕೂಸು ಬೆಳೆದು ಆದ ರಾಮು,
ಇಂದು ನೆರೆಯ ಮನೆಯ ಶಾಮು
ರಾಮನೊಂದೆ ಬಯಕೆ, ಕನಸು,
ಬಾಳ ಧ್ಯೇಯವು ;
ಆಸೆಗಳಿಗೆ ಕಲ್ಪತರುವು,
ನೋವಿಗಮೃತವು.

ಒಂದೆ ಜೀವದೆರಡು ಕವಲು;
ರಾಮ-ಶಾಮು: ಹಾಡು-ಹೊಳಲು.
ತುಂಬುಗಣ್ಣೊಳವನ ರಾಮು
ಸೆರೆಯಕೊಳುವನು:
“ನಿನ್ನ ನುಳಿಯೆ ಬಾಳು ಬಯಲು”
ಎಂದುಕೊಳುವನು.


ರಾಮುವೀಗ ರಾಮರಾಯ!
ಏನು ಠೀವಿ! ಎಂಥ ಪ್ರಾಯ!
ನಿತ್ಯ ಕನಸುಕಾಂಬ ತೆರದ
ನೋಟದಲೆತವು;
ಒಲುಮೆನೆರೆಗೆ ಸಿಲುಕಿದವನ
ಮನದ ಸೆಳೆತವು!

ಇಂದು ಸರಳೆ ಅವನ ಜಗವ
ತುಂಬಿ, ಬಾಳ ಸೂರೆಗೊಳುವ-
ಳಾತ್ಮವನ್ನೆ ಮೀಸಲಿಟ್ಟು
ರಾಮು ಒಲಿವನು;
“ಸುಳಿದೆ, ಸರಳ, ಬಾಳ ಟೊಳ್ಳು
ತುಂಬಿ”ತೆನುವನು.


ಸರಳೆ ರಾಮರೊಲುಮೆ ಸೂತ್ರ
ಹಸುಳೆ ಕಿಟ್ಟು, ಮೊದಲು – ಚಿತ್ರ!
ರಾಮಗದರ ಬಾಳ ಗುಟ್ಟು
ಅರ್‍ಥವಾಗದು:
“ನಮ್ಮ ಪ್ರೇಮಕಡ್ಡಬಂದ
ಗಂಡವೇನಿದು?”

ಒಂದು ದಿನದಿ ಕೂಸು ತನ್ನ
ಬೆಳಕೆ ದ್ರವಿಸಿ ಹರಿವ ಕಣ್ಣ
ಮೊಗದಿ ನೆಟ್ಟು, ಅವನ ಬೆರಳ
ಬಾಯಿಗೊಯ್ಯಲು,
ರಾಮನೆಂದ, “ತೀರಿತಿಂದು
ಬಾಳ ಹಂಬಲು!”


ರಾಮರಾಯನೆಂಥ ಮನುಜ!
ಸಿರಿಯ ಘೃಣೆಯ ಹಿರಿಯ ಕಣಜ!
ಏನು ಪ್ರತಿಭೆ, ಎಂಥ ವಿನಯ!-
ಯಶದ ಹೊಗಳದು.
ಆತನೊಂದೆ ಬಯಕೆ ಒಲಿದು
ಬರುವ ಮೊಳಗದು.

ಜಸದ ಹೆಣ್ಣು ಒಲಿದು ನಗಲು,
ನಗೆಯು ಮೊಗದಿ ಬಿಂಬಿಸಿರಲು,
ಬಾಳ ಸಂಜೆಯಲ್ಲಿ ಯಶಕೆ
ರಾಮರಾಯರು,
“ಬಂದೆ, ಬಾಳು ಪೂರ್ಣವಾಯ್ತು”
ಎಂದು ನುಡಿದರು.


“ಇಲ್ಲಿ ಹಳ್ಳ, ಅಲ್ಲಿ ತಿಟ್ಟು”
ಎನುತ ಕೋಲ ಹಿಡಿದು ಪುಟ್ಟು
ನಡೆಸುತಿರುವ ಪಲಿತ ಶಿರದ
ತಾತ-ರಾಯರು!
ಕೂಸಿಗಿಂತ ತ್ರಾಣಿಯಲ್ಲ
ಪಾಪ!-ರಾಯರು.

ಒಂದು ದಿನದೊಳಿರುಳಿನಲ್ಲಿ
ಕಿರಣವೊಂದು ಹೊನ್ನ ಚೆಲ್ಲಿ,
ಬಾಳ ಸೆರೆಯ ಬೆಳಗೆ, ತಾತ
ಚಕಿತರಾದರು:
“ಬಂದು ಬಾಳಿಗರ್‍ಥವಿತ್ತೆ,
ಮೃತ್ಯು” ಎಂದರು.
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...