Home / ಕವನ / ಕವಿತೆ / ಬಾಳಿನ ಹಂಬಲು

ಬಾಳಿನ ಹಂಬಲು


ಕೂಸಿಗಂದು ಏನು ಬೇಡ,
ತಿಂಡಿ ಗೊಂಬೆ ಮುದ್ದು ಬೇಡ.
ಏನೊ ಅರಕೆ, ಏನೊ ಬೇನೆ,
ಅತ್ತು ಸೊರಗಿತು :
“ಅಮ್ಮ ಎಲ್ಲಿ ಹೋತು” ಎನುತ
ಅತ್ತು ಸೊರಗಿತು.

ಅಳುವ ಕೇಳಿ ಬಂದ ತಾಯ
ಅಮೃತಸ್ಪರ್‍ಶಕಾರೆ ಗಾಯ,
ತೊಯ್ದ ಕಣ್ಣ ಬಿಚ್ಚಿ, ಸುಳಿಸಿ,
ತೊಂದು ನಗೆಯನು-
“ನಿನ್ನ ನುಳಿಯೆ ಬಾಳು ಶೂನ್ಯ!”
ಎನುವ ನಗೆಯನು.


ಕೂಸು ಬೆಳೆದು ಆದ ರಾಮು,
ಇಂದು ನೆರೆಯ ಮನೆಯ ಶಾಮು
ರಾಮನೊಂದೆ ಬಯಕೆ, ಕನಸು,
ಬಾಳ ಧ್ಯೇಯವು ;
ಆಸೆಗಳಿಗೆ ಕಲ್ಪತರುವು,
ನೋವಿಗಮೃತವು.

ಒಂದೆ ಜೀವದೆರಡು ಕವಲು;
ರಾಮ-ಶಾಮು: ಹಾಡು-ಹೊಳಲು.
ತುಂಬುಗಣ್ಣೊಳವನ ರಾಮು
ಸೆರೆಯಕೊಳುವನು:
“ನಿನ್ನ ನುಳಿಯೆ ಬಾಳು ಬಯಲು”
ಎಂದುಕೊಳುವನು.


ರಾಮುವೀಗ ರಾಮರಾಯ!
ಏನು ಠೀವಿ! ಎಂಥ ಪ್ರಾಯ!
ನಿತ್ಯ ಕನಸುಕಾಂಬ ತೆರದ
ನೋಟದಲೆತವು;
ಒಲುಮೆನೆರೆಗೆ ಸಿಲುಕಿದವನ
ಮನದ ಸೆಳೆತವು!

ಇಂದು ಸರಳೆ ಅವನ ಜಗವ
ತುಂಬಿ, ಬಾಳ ಸೂರೆಗೊಳುವ-
ಳಾತ್ಮವನ್ನೆ ಮೀಸಲಿಟ್ಟು
ರಾಮು ಒಲಿವನು;
“ಸುಳಿದೆ, ಸರಳ, ಬಾಳ ಟೊಳ್ಳು
ತುಂಬಿ”ತೆನುವನು.


ಸರಳೆ ರಾಮರೊಲುಮೆ ಸೂತ್ರ
ಹಸುಳೆ ಕಿಟ್ಟು, ಮೊದಲು – ಚಿತ್ರ!
ರಾಮಗದರ ಬಾಳ ಗುಟ್ಟು
ಅರ್‍ಥವಾಗದು:
“ನಮ್ಮ ಪ್ರೇಮಕಡ್ಡಬಂದ
ಗಂಡವೇನಿದು?”

ಒಂದು ದಿನದಿ ಕೂಸು ತನ್ನ
ಬೆಳಕೆ ದ್ರವಿಸಿ ಹರಿವ ಕಣ್ಣ
ಮೊಗದಿ ನೆಟ್ಟು, ಅವನ ಬೆರಳ
ಬಾಯಿಗೊಯ್ಯಲು,
ರಾಮನೆಂದ, “ತೀರಿತಿಂದು
ಬಾಳ ಹಂಬಲು!”


ರಾಮರಾಯನೆಂಥ ಮನುಜ!
ಸಿರಿಯ ಘೃಣೆಯ ಹಿರಿಯ ಕಣಜ!
ಏನು ಪ್ರತಿಭೆ, ಎಂಥ ವಿನಯ!-
ಯಶದ ಹೊಗಳದು.
ಆತನೊಂದೆ ಬಯಕೆ ಒಲಿದು
ಬರುವ ಮೊಳಗದು.

ಜಸದ ಹೆಣ್ಣು ಒಲಿದು ನಗಲು,
ನಗೆಯು ಮೊಗದಿ ಬಿಂಬಿಸಿರಲು,
ಬಾಳ ಸಂಜೆಯಲ್ಲಿ ಯಶಕೆ
ರಾಮರಾಯರು,
“ಬಂದೆ, ಬಾಳು ಪೂರ್ಣವಾಯ್ತು”
ಎಂದು ನುಡಿದರು.


“ಇಲ್ಲಿ ಹಳ್ಳ, ಅಲ್ಲಿ ತಿಟ್ಟು”
ಎನುತ ಕೋಲ ಹಿಡಿದು ಪುಟ್ಟು
ನಡೆಸುತಿರುವ ಪಲಿತ ಶಿರದ
ತಾತ-ರಾಯರು!
ಕೂಸಿಗಿಂತ ತ್ರಾಣಿಯಲ್ಲ
ಪಾಪ!-ರಾಯರು.

ಒಂದು ದಿನದೊಳಿರುಳಿನಲ್ಲಿ
ಕಿರಣವೊಂದು ಹೊನ್ನ ಚೆಲ್ಲಿ,
ಬಾಳ ಸೆರೆಯ ಬೆಳಗೆ, ತಾತ
ಚಕಿತರಾದರು:
“ಬಂದು ಬಾಳಿಗರ್‍ಥವಿತ್ತೆ,
ಮೃತ್ಯು” ಎಂದರು.
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...