Home / ಕವನ / ಅನುವಾದ / ಆದಮನ ಶಾಪ

ಆದಮನ ಶಾಪ

ಬೇಸಿಗೆ ಕೊನೆಯ ಒಂದು ಸಂಜೆ ಹೊತ್ತು :
ನಿನ್ನಾಪ್ತ ಗೆಳತಿ, ಆ ಚೆಲುವೆ ಕೋಮಲೆ, ನಾನು ನೀನು ಕೂತು
ಮಾತಾಡಿದೆವು ಕವಿತೆಯನ್ನು ಕುರಿತು
ನಾನೆಂದೆ : “ಕವಿತ ಸಾಲೊಂದನ್ನು ಸಾಧಿಸಲು
ಗಂಟೆಗಟ್ಟಲೆ ನಾವು ಹೆಣಗಬೇಕು;
ಆದರೂ ಆ ಸಾಲು ಅಲ್ಲೆ, ಆ ಗಳಿಗೆಯೇ
ಚಿಮ್ಮಿ ಬಂದದ್ದೆಂದು ಅನ್ನಿಸದೆ ಇದ್ದಲ್ಲಿ
ಹೊಲಿದು ಬಿಟ್ಟಿದ್ದೆಲ್ಲ ಪೂರ ವ್ಯರ್‍ಥ.
ಬೆನ್ನು ಬಗ್ಗಿಸಿ ಮಂಡಿಯೂರಿ ಕೊಳೆಯಡಿಗೆ ಮನೆ ನೆಲವನ್ನುಜ್ಜುವುದೊ,
ಕಡು ಭಿಕಾರಿಯ ಹಾಗೆ ಬಿಸಿಲು ಚಳಿ ಎನ್ನದೆ ಕಲ್ಲನ್ನೊಡೆಯುವುದೊ
ಇದಕ್ಕಿಂತ ಉತ್ತಮ
ಮಧುರ ನಾದಗಳ ಹದವಾಗಿ ಹೆಣೆಯುವ ಕೆಲಸ
ಎಲ್ಲಕ್ಕೂ ಕಷ್ಟ ಅಷ್ಟೆಲ್ಲ ಮಾಡಿಯೂ ಕೂಡ
ಶಾಲೆ ಮತ ಬ್ಯಾಂಕುಗಳ ಗೊಂದಲದ ಮಂದಿಗೆ
ನಾವು ಕವಿಗಳು ಶುದ್ಧ ಕೆಲಸಗೇಡಿಗಳು”

ನಿನ್ನ ಪ್ರಿಯಗೆಳತಿ ಆ ಚೆಲುವೆ – ಎಂಥ ಪ್ರಶಾಂತೆ,
ಏನು ಸವಿ ಅವಳದನಿ, ಎಷ್ಟು ಮಿದು, ಅದಕಾಗಿ
ಏನೆಲ್ಲ ಹೃದಯವ್ಯಥೆ ಸಹಿಸಲೂ ಸಿದ್ದರು ಎಂಥೆಂಥ ಜನರೂ –
ಹೇಳಿದಳು : “ಕಲಿಸದಿದ್ದರು ಕೂಡ ಯಾವ ಸ್ಕೂಲೂ ಎಲ್ಲೂ,
ಹೆಣ್ಣು ಜೀವಕ್ಕೆಲ್ಲ ಗೊತ್ತಿರುವ ಗುಟ್ಟು ಇದು, ಚೆಲುವೆಯಾಗಿರಲು
ಶ್ರಮಿಸಬೇಕು ಸದಾ”. ನಾನಂದೆ : “ಹೌದು, ನಿಜ
ಆದಮನ ಪತನವಾದಂದಿನಿಂದ
ಕಷ್ಟಪಡದೇ ಗಳಿಸಬಲ್ಲ ಸುಂದರವಸ್ತು ಏನೊಂದೂ ಇಲ್ಲ.
ಪ್ರೇಮವೆಂದರೆ ತೀರ ಸೂಕ್ಷ್ಮ ಸೌಜನ್ಯಗಳ
ಪರಿಪಾಕವೆಂದೆ ಗ್ರಹಿಸಿದ್ದ ಪ್ರೇಮಿಗಳು ಇದ್ದರೆಷ್ಟೋ.
ನಿಟ್ಟುಸಿರ ಚೆಲ್ಲುತ್ತ, ಜ್ಞಾನ ತುಂಬಿದ ದೃಷ್ಟಿ ಹರಿಸಿ ಉದ್ಗರಿಸುತ್ತ.
ಪ್ರಾಚೀನ ಸುಂದರ ಕೃತಿಗಳಿಂದಾಯ್ದ ಸಂಗತಿಯ ಉದ್ದರಿಸುತ್ತ
ತೋಡಿಕೊಳ್ಳುತ್ತಿದ್ದರವರ ಅನುರಾಗ,
ವ್ಯರ್‍ಥವೆನಿಸುತ್ತದೆ ಅಂಥ ಉದ್ಯಮ ಈಗ.”

ಪ್ರೇಮವೆಂದದ್ದೆ ತಡ, ಮೌನ ನೆಲೆಸಿತು ಸುತ್ತ
ಹಗಲ ಬೆಳಕಿನ ಕಡೆಯ ಕಿಡಿಗಳೂ ಆರುತ್ತ
ಪಚ್ಚಿನೀಲಿಗಳು ಕಂಪಿಸುವ ನಭದೆದೆಯಲ್ಲಿ ಕಂಡ ಚಿತ್ರ :
ಅಲೆಯೆದ್ದು ಬಿದ್ದು ಸಾಗುತ್ತಿರುವ ಕಾಲಜಲ
ದಿನ ವತ್ಸರಗಳಾಗಿ ಒಡೆಯುತ್ತ, ಕಡೆಯುತ್ತ,
ಚಿಕ್ಕೆಗಳ ನಡುವೆ ತಳದಲ್ಲೆಲ್ಲೊ ತೊಳೆಯುತ್ತ
ಸವೆದಿದ್ದ ಚಿಪ್ಪಿನಂತಿದ್ದ ಚಂದ್ರ.
ನಿನ್ನ ಕಿವಿಯೊಳಗಷ್ಟೆ ಉಸಿರಬಹುದಾದೊಂದು ವಿಚಾರ ಬಂತು
ನೀ ಚೆಲುವೆಯಾಗಿದ್ದೆ,
ಹಿಂದಿನವರು ಪ್ರೇಮದ ಉಚ್ಚ ನೆಲೆಯಲ್ಲಿ
ನಿನ್ನನ್ನೊಲಿಸಲು ನಾನು ಹೆಣಗಿದ್ದೆ, ಆಗೆಲ್ಲ
ಸುಖವಾಗಿಯೇ ಇತ್ತು. ಆದರೆ ಈಗ
ಅನಿಸುವುದು ನಮ್ಮ ಎದೆ ಬಳಲಿದಂತೆ
ಸಮೆದು ತೆಳುವಾದ ಆ ಚಂದ್ರನಂತೆ.
*****
ಮೂಲ: ವಿಲಿಯಂ ಬಟ್ಲರ್ ಏಟ್ಸ್

ಏಟ್ಸನ ಆವರೆಗಿನ ಕವನಗಳಲ್ಲೆಲ್ಲ ಮುಖ್ಯವಾದದ್ದು ಎಲಿಯಟ್ ಇದನ್ನು ಮೆಚ್ಚಿ ಮಾತಾಡಿದ್ದಾನೆ.

ದೇವರು ತನ್ನ ಅಪ್ಪಣೆಗೆ ವಿರುದ್ಧವಾಗಿ ನಡೆದ ಆದಮನನ್ನು ಈಡನ್ ತೋಟದಿಂದ ಹೊರಕಳಿಸಿದ. ಮುಂದೆ ಶ್ರಮದ ದುಡಿಮೆಯಿಂದ ಜೀವಿಸುವಂತೆ ಶಾಪವಿತ್ತ.

ಕವನದಲ್ಲಿ ಕವಿಯ ಜೊತೆ ಮಾತಿಗೆ ಕುಳಿತಿರುವವರು ಮಾಡಗಾನ್ ಮತ್ತು ಅವಳ ತಂಗಿ ಕ್ಯಾಥಲೀನ್.

Tagged:

Leave a Reply

Your email address will not be published. Required fields are marked *

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...

ಬೆಳಿಗ್ಗೆಯಿಂದ ಕತ್ತಲೆಯವರೆಗೂ ಬಸ್ ಸ್ಟಾಂಡಿನಲ್ಲಿ ಬಸ್ಸುಗಳಿಗೆ ಹತ್ತಿ ಇಳಿದುಕೊಂಡು ಎಷ್ಟು ಗೋಗರೆದು ಬಿಕ್ಷೆ ಬೇಡಿದರೂ ಆ ಹುಡುಗನಿಗೆ ಮಧ್ಯಾಹ್ನದ ಊಟ ಮಾಡುವಷ್ಟು ಹಣ ಸಂಗ್ರಹವಾಗುತ್ತಿರಲಿಲ್ಲ. ಮಧ್ಯಾಹ್ನ ಬಿಸ್ಕಿಟು ಮತ್ತು ನಲ್ಲಿ ನೀರು ಕುಡಿದು ಹಸಿವು ತಣಿಸಿದರೂ ರಾತ್ರಿಯ ಊಟಕ್ಕ...