Home / ಕವನ / ಕವಿತೆ / ಕನ್ನಡಿಗರ ತಾಯಿ

ಕನ್ನಡಿಗರ ತಾಯಿ

ತಾಯೆ ಬಾರ, ಮೊಗವ ತೋರ, ಕನ್ನಡಿಗರ ಮಾತೆಯೆ!
ಹರಸು ತಾಯೆ, ಸುತರ ಕಾಯೆ, ನಮ್ಮ ಜನ್ಮದಾತೆಯೆ!
ನಮ್ಮ ತಪ್ಪನೆನಿತೊ ತಾಳ್ವೆ,
ಅಕ್ಕರೆಯಿಂದೆಮ್ಮನಾಳ್ವೆ;
ನೀನೆ ಕಣಾ ನಮ್ಮ ಬಾಳ್ವೆ,
ನಿನ್ನ ಮರೆಯಲನೆಮ್ಮೆವು-
ತನು ಕನ್ನಡ, ಮನ ಕನ್ನಡ, ನುಡಿ ಕನ್ನಡವೆಮ್ಮವು. ೭

ಹಣ್ಣನೀವ ಕಾಯನೀವ ಪರಿಪರಿಯ ಮರಂಗಳೊ,
ಪತ್ರಮೀವ ಪುಷ್ಪಮೀವ ಲತೆಯ ತರತರಂಗಳೊ,
ತೆನೆಯ ಕೆನೆಯ ಗಾಳಿಯೊ,
ಖಗಮೃಗೋರಗಾಳಿಯೊ,
ನದಿನಗರನಗಾಳಿಯೊ!
ಇಲ್ಲಿಲ್ಲದುದುಳಿದುದೆ?
ಜೇನು ಸುರಿವ ಹಾಲು ಹರಿವ ದಿವಂ ಭೂಮಿಗಿಳಿದುದೆ? ೧೪

ಬುಗರಿಯೀಯೆ ಶಬರಿ ಕಾಯೆ ರಾಮನಿಲ್ಲಿ ಬಂದನೆ?
ಕನ್ನಡ ದಳ ಕೂಡಿಸಿ ಖಳ ದಶಾಸ್ಯನಂ ಕೊಂದನೆ?
೧ಪಾಂಡವರಜ್ಞಾತಮಿದ್ದ,
ವಲಲಂ ಕೀಚಕನ ಗೆದ್ದ,
೨ಕುರುಕುಲ ಮುಂಗದನಮೆದ್ದ
ನಾಡು ನೋಡಿದಲ್ಲವೇ?
ನಂದನಂದನನಿಲ್ಲಿಂದ ಸಂದಿಗಯ್ದನಲ್ಲವೇ? ೨೧

ಶಕವಿಜೇತನಮರ ೩ಶಾತವಾಹನಾಖ್ಯನೀ ಶಕಂ
ನಿನ್ನೊಳಂದು ತೊಡಗಿ ಸಂದುದರ್ಧ ಭರತದೇಶಕಂ!
ಚಳುಕ್ಯ ರಾಷ್ಟ್ರಕೂಟರೆಲ್ಲಿ,
ಗಂಗರಾ ಕದಂಬರೆಲ್ಲಿ,
ಹೊಯ್ಸಳ ಕಳಚುರ್ಯರೆಲ್ಲಿ,
ವಿಜಯನಗರ ಭೂಪರು
ಆಳ್ದರಿಲ್ಲಿಯಲ್ಲದೆಲ್ಲಿ ತಾಯೆ ಮೇಣಲೂಪರು? ೨೮

ಜೈನರಾದ ಪೂಜ್ಯಪಾದ ಹೊಂಡಕುಂದ ವರ್ಯರ,
ಮದ್ವಯತಿಯೆ ಬಸವಪತಿಯೆ ಮುಖ್ಯ ಮತಾಚಾರ್ಯರ,
೪ಶರ್ವ ಪಂಪ ರನ್ನರ,
ಲಕ್ಷ್ಮೀಪತಿ ಜನ್ನರ,
ಷಡಕರಿ ಮುದಣ್ಣರ,
ಪುರಂದರ ವರೇಣ್ಯರ,
ತಾಯೆ, ನಿನ್ನ ಬಸಿರೆ ಹೊನ್ನ ಗನಿ ವಿದ್ಯಾರಣ್ಯರ! ೩೫

ಹಳೆಯ ಬೀಡ ೫ಬೇಲನಾಡ ಮಾಡಮೆನಿತೊ ಸುಂದರಂ!
೬ಬಿಳಿಯ ಕೊಳದ ಕಾರಕಳದ ೭ನಿಡುಕರೆನಿತೊ ಬಂಧುರಂ!
ಇಲ್ಲಿಲ್ಲದ ಶಿಲ್ಪಮಿಲ್ಲ;
ನಿನ್ನ ಕಲ್ಲೆ ನುಡಿವುದಲ್ಲ!
ಹಿಂಗತೆಯಿನಿವಾಲ ಸೊಲ್ಲ
ನೆಮ್ಮ ತೃಷೆಗೆ ದಕ್ಕಿಸು-
ಹೊಸತು ಕಿನ್ನರಿಯಲಿ ನಿನ್ನ ಹಳೆಯ ಹಾಡನುಕ್ಕಿಸು! ೪೨

ಆರ್ಯರಿಲ್ಲಿ ಬಾರದಲ್ಲಿ ಬಾಸೆ ಎಲ್ಲಿ ಸಕ್ಕದಂ?
ನಿನ್ನ ನುಡಿಯಿನಚ್ಚುಪಡಿಯನಾಂತರೆನಿತೊ ತಕ್ಕುದಂ!
ಎನಿತೊ ಹಳೆಯ ಕಾಲದಿಂದ
ಬರ್ದಿಲಮೀ ಬಾಸೆಯಿಂದ
ಕಾಲನ ಮೂದಲಿಸಿ ನಿಂದ
ನಿನಗೆ ಮರವೆ ಹೊದೆವುದೆ?
ನಿನ್ನ ನುಡಿಗೆ ನಿನ್ನ ನಡೆಗೆ ಮುದುಪುಮೆಂದುಮೊದವುದೆ? ೪೯

ತನ್ನ ಮರೆಯ ಕಂಪನರಿಯದದನೆ ಹೊರಗೆ ಹುಡುಕುವ
ಮೃಗದ ಸೇಡು ನಮ್ಮ ಪಾಡು ಪರರ ನುಡಿಗೆ ಮಿಡುಕುವ!
ಕನ್ನಡ ಕಸ್ತೂರಿಯನ್ನ
ಹೊಸತುಸಿರಿಂ ತೀಡದನ್ನ
ಸುರಭಿ ಎಲ್ಲಿ? ನೀನದನ್ನ
ನವಶಕ್ತಿಯಿನೆಬ್ಬಿಸು-
ಹೊಸ ಸುಗಂದದೊಸಗೆಯಿಂದ ಜಗದಿ ಹೆಸರ ಹಬ್ಬಿಸು! ೫೬

ನಿನ್ನ ಪಡೆಯ ಕತೆಯ ಕಡೆಯ ನುಡಿಯೆ ತಾಳಿಕೋಟೆಯು?
ಕಡಲಿನೊರತೆಗೊಳವೆ ಕೊರತೆ? ಬತ್ತದು ನಿನ್ನೂಟೆಯು!
ಸೋಲ ಗೆಲ್ಲವಾರಿಗಿಲ್ಲ?
ಸೋತು ನೀನೆ ಗೆದ್ದೆಯಲ್ಲ?
ನಿನ್ನನಳಿವು ತಟ್ಟಲೊಲ್ಲ!-
ತಾಳಿಕೋಟೆ ಸಾಸಿರಂ
ಬಾಹುಬಲದಿ ಮುನೋಬಲದಿ ತಾಯೆ ಗೆಲುನೆ ಭಾಸುರಂ! ೬೩

ಕುಗ್ಗದಂತೆ ಹಿಗ್ಗಿಪಂತೆ ನಿನ್ನ ಹೆಸರ ಟೆಕ್ಕೆಯಂ,
ನೀಗದಂತೆ ಸಾಗಿಪಂತೆ ನಿನ್ನ ನುಡಿಯ ಢಕ್ಕೆಯಂ,
ನಮ್ಮೆದೆಯಂ ತಾಯೆ ಬಲಿಸು,
ಎಲ್ಲರ ಬಾಯಲ್ಲಿ ನೆಲಸು,
ನಮ್ಮ ಮನಮನೊಂದೆ ಕಲಸು!
ಇದನೊಂದನೆ ಕೋರುವೆ-
ನಿನ್ನ ಮೂರ್ತಿ ಜಗತ್ಕೀರ್ತಿ ಎಂದಿಗೆಮಗೆ ತೋರುವೆ? ೭೦
*****
೧ ಧಾರವಾಡ ಜಿಲ್ಲೆಯ ‘ಹಾನಗಲ್ಲು’ ವಿರಾಟನ ರಾಜಧಾನಿ ಎಂದು ಪ್ರಖ್ಯಾತವಿದೆ.
೨ ಗೋಗ್ರಹಣದ ಯುದ್ಧ
೩ ಶಾಲಿವಾಹನ
೪ ಶರ್ವನೆಂದು ನೃಪತುಂಗನ ಹೆಸರು.
೫ ಬೇಲೂರು
೬ ಶ್ರವಣಬೆಳ್ಗೊಳ
೭ ನಿಡುನಿಂದಿರುವ ಗೊಮ್ಮಟ ಮೂರ್ತಿಗಳು

Tagged:

Leave a Reply

Your email address will not be published. Required fields are marked *

ಹೆರಿಗೆ ನೋವಿನಿಂದ ಸಂಕಟಪಡುತ್ತಿದ್ದ ಹೆಂಡತಿ ಗಂಗಾಳನ್ನು ಆಸ್ಪತ್ರೆಗೆ ಚಿಕ್ಕಣ್ಣ ಕರೆದುಕೊಂಡು ಬಂದಾಗ ಔಟ್ ಪೇಶಂಟ್ ವಿಭಾಗ ಗಿಜಿಗುಟ್ಟುತ್ತಿತ್ತು. ಗುಂಪುಕಟ್ಟಿ ನಿಂತಿದ್ದ ಮಹಿಳೆಯರ ಸಾಲನ್ನು ಛೇಧಿಸಿಕೊಂಡು ವೈದ್ಯರ ಮೇಜಿನ ಬಳಿ ಬಂದು ನಿಂತ ಅವನ ತೋಳುಗಳಲ್ಲಿ ಎರಡೂವರೆ ವರ್ಷದ ಮಗುವ...

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...