Home / ಕವನ / ಕವಿತೆ / ಚಂದ್ರಚುಂಬಿತ ಯಾಮಿನೀ

ಚಂದ್ರಚುಂಬಿತ ಯಾಮಿನೀ

ಚಂದ್ರಚುಂಬಿತ ಯಾಮಿನೀ
ನವವಿರಹಿ ಚಿತ್ತೋನ್ಮಾದಿನೀ,
ಜಾರುತಿದೆ ಕಲನಾದಿನೀ,
ಅದೊ! ಹಾಡುತಿರುವಳು ಕಾಮಿನೀ.

ತರುಣಿ ವೀಣೆಯ ಮಿಡಿವಳು
ತಚ್ಛ್ರುತಿಗೆ ವಾಣಿಯನೆಳೆವಳು-
ಮಧುರಗೀತದ ನುಡಿಯೊಳು
ತನ್ನೆದೆಯ ಭಾವವ ಮೊಗೆವಳು:

ಒಲುಮೆ ಹೃದಯವ ಹೊಗಲು ಬಯಸಲು
ಆರು ತಡೆಯಲು ಬಲ್ಲರು?
ಎದೆಯ ಬಿಟ್ಟದು ಹಾರ ಬಯಸಲು
ಆರು ತಡೆಯಲು ಬಲ್ಲರು?

ಚೆಲುವೆ, ಯೌವನದೀಪ್ತಳು,
ಮೇಣೊಲುಮೆ ಕನಸೊಳಗಿರುವಳು.
ಒಲುಮೆನಚ್ಚನು ನಂಬಳು,
ಹೊಸ ಭಯಕೆ ತಲ್ಲಣಗೊಂಬಳು.

ಒಲುಮೆ ಹಕ್ಕಿಯು ಸುಳಿಯಲು
ಅದರಂದಕಚ್ಚರಿಗೊಂಡಳು.
‘ಒಲುಮೆ’ ಎಂದವಳರಿಯಳು
ತನ್ನೆದೆಯ ಗೂಡೊಳಗಿಟ್ಟಳು.

ಅಲ್ಲಿ ಹಕ್ಕಿಯು ಹಾಡಿತು;
ಮೇಣೆಂಥ ಚೈತ್ರವ ತಂದಿತು!
ಬಾಳನೆಂತದು ರಮಿಸಿತು!
ಹೊಸ ನಚ್ಚ ಮೋದವ ತೋರಿತು!

ಅದಕೆ ಅವಳಸು ಮೀಸಲು-
ಅದು ಹಾರಿಹೋಗದ ತೆರದೊಳು
ನೇಹಮೋಹದ ಸರಳೊಳು
ತನ್ನೆದೆಗೆ ಪಂಜರ ಬಿಗಿದಳು.

ಹುಚ್ಚಿ, ಒಲುಮೆಗೆ ಬಂಧವೆ?
ಅದ ಸೆರೆಯ ಕೊಳುವುದು ಸುಲಭವೆ?
ಬಯಸಿದೆಡೆಗದು ಪರಿವುದು,
ನರನೆದೆಯ ಪಾಳಂಗೈವುದು.

ಬಾಳ ಸಾರವ ಶೋಷಿಸಿ
ಹೊಸ ಬಯಕೆ ಬವಣೆಯ ತೋರಿಸಿ
ನುಸುಳಿದೊಲುಮೆಗೆ ಶಂಕಿಸಿ
ತಾ ಮಿಡುಕುತಿಹಳಾ ಮಾನಿಸಿ.

ಇಂದುರಂಜಿತ ಯಾಮಿನೀ
ಸುಖಿಜನರ ಚಿತ್ತಾಹ್ಲಾದಿನೀ;
ಗಾನಗೈವಳು ಕಾಮಿನೀ;
ಆ ವಾಣಿ ಹೃದ್ವಿದ್ರಾವಿಣೀ:

ಒಲುಮೆ ದಾಳಿಯನಿಡಲು ಜಗ್ಗದ
ಹೃದಯವುಂಟೇ ಮನುಜಗೆ?
ಒಲವ ಸೆರೆಯನು ಕೊಳುವ ಬಲ್ಮೆಯ
ಹೃದಯವುಂಟೇ ಮನುಜಗೆ?
*****

Tagged:

Leave a Reply

Your email address will not be published. Required fields are marked *

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...

ಬೆಳಿಗ್ಗೆಯಿಂದ ಕತ್ತಲೆಯವರೆಗೂ ಬಸ್ ಸ್ಟಾಂಡಿನಲ್ಲಿ ಬಸ್ಸುಗಳಿಗೆ ಹತ್ತಿ ಇಳಿದುಕೊಂಡು ಎಷ್ಟು ಗೋಗರೆದು ಬಿಕ್ಷೆ ಬೇಡಿದರೂ ಆ ಹುಡುಗನಿಗೆ ಮಧ್ಯಾಹ್ನದ ಊಟ ಮಾಡುವಷ್ಟು ಹಣ ಸಂಗ್ರಹವಾಗುತ್ತಿರಲಿಲ್ಲ. ಮಧ್ಯಾಹ್ನ ಬಿಸ್ಕಿಟು ಮತ್ತು ನಲ್ಲಿ ನೀರು ಕುಡಿದು ಹಸಿವು ತಣಿಸಿದರೂ ರಾತ್ರಿಯ ಊಟಕ್ಕ...