Home / ಲೇಖನ / ಇತರೆ / ಮನಃಸಾಕ್ಷಿ- ಹೃದಯದ ಮಾತು

ಮನಃಸಾಕ್ಷಿ- ಹೃದಯದ ಮಾತು

ನಾವು ಕೈಗೊಳ್ಳುವ ಯಾವುದೇ ನಿರ್‍ಧಾರಗಳು ಅಥವಾ ಮಾಡುವ ಯಾವುದೇ ಕೆಲಸಗಳು ಸಮಾಧಾನ, ತೃಪ್ತಿ ನೀಡಬೇಕಾದರೆ ಅವು ಮನಸ್ಸಿಗೆ ವಿರುದ್ಧವಾಗಿ ಕಿರಿಕಿರಿ ಭಾವನೆಗಳಿಗೆ ಆಸ್ಪದ ಕೊಡುವಂತಹದ್ದಾಗಿರಬಾರದು. ಹೃದಯಕ್ಕೆ ಒಪ್ಪುವಂತಿರಬೇಕು. ಮುಖ್ಯವಾದ ನಿರ್‍ಧಾರ ತೆಗೆದುಕೊಳ್ಳುವಾಗ ಅಥವಾ ಮುಖ್ಯವಾದ ಕೆಲಸ ಹೃದಯದ ಒಳಗಿನಿಂದ ಏಳುವ ದನಿಗೆ ಮಾಡುವಾಗ ಕಿವಿಕೊಡಬೇಕು ಎನ್ನುವ ಒಂದು ಮಾತಿದೆ. ಯಾವುದೇ ಕೆಲಸ ಮಾಡುವಾಗ ಇದು ಸರಿಯಲ್ಲ ಎನ್ನುವ ಭಾವನೆಯನ್ನು ಒಂದು ಕ್ಷಣಕ್ಕಾದರೂ ಹೃದಯ ಮೂಡಿಸಿದರೆ ಆ ಕೆಲಸವನ್ನು ಮಾಡದಿರುವುದೇ ಒಳಿತು. ಇದು ಸರಿ ಎನ್ನುವ ನಿರಾಳತೆಯನ್ನು ಹೃದಯ ಮನಸ್ಸು ಎರಡೂ ತೋರಿದಾಗ ಮಾಡುವ ನಿರ್‍ಧಾರಗಳು, ಕೆಲಸಗಳು ಆ ಕ್ಷಣಕ್ಕೆ ಹೊರಗಿನ ಪರಿಸರಕ್ಕೆ ವಿರುದ್ಧವಾಗಿ ಕಷ್ಟವೆನಿಸಿದರೂ ಕಾಲಕ್ರಮೇಣದಲ್ಲಿ ಮನಸ್ಸಿಗೆ ತೃಪ್ತಿ ನೀಡುತ್ತವೆ. ಮುಂದೆ ಎದುರಾಗುವ ಸಮಸ್ಯೆಗಳನ್ನು ತಪ್ಪಿಸುತ್ತವೆ. ಇದನ್ನೇ ಮನಃಸಾಕ್ಷಿ ಪ್ರಜ್ಞೆ ಅನ್ನುವುದು.

ದೈನಂದಿನದ ವ್ಯವಹಾರಗಳನ್ನು ಹೊರತುಪಡಿಸಿ ಬೇರೆ ‘ಯಾವುದಾದರೂ ಮುಖ್ಯವಾದ ನಿರ್‍ಧಾರಗಳನ್ನು ತೆಗೆದುಕೊಳ್ಳುವಾಗ, ಕೆಲಸಗಳನ್ನು ಮಾಡುವಾಗ ಹೃದಯದ ಒಳಗಿನಿಂದ ಏಳುವ ದನಿ ಮುಖ್ಯವಾಗುತ್ತದೆ. ಈ ದನಿ ನಮ್ಮಲ್ಲಿ ತೀವ್ರವಾದ ತುಡಿತವನ್ನು ಹುಟ್ಟಿಸುತ್ತದೆ. ಇಂತಹ ತೀವ್ರವಾದ ತುಡಿತಗಳು ಎದ್ದಾಗ ಮಾತ್ರ ನಾವು ಮಾಡುವ ಕೆಲಸದಲ್ಲಿ, ನಿರ್‍ಧಾರದಲ್ಲಿ ತಾದಾತ್ಮವನ್ನು ಅನುಭವಿಸುತ್ತೇವೆ. ಹೊರ ಜಗತ್ತನ್ನು ಮರೆಯುತ್ತೇವೆ.

ಉದಾಹರಣೆಗೆ ಒಬ್ಬ ಕಲಾವಿದನಲ್ಲಿ ಚಿತ್ರ ಬಿಡಿಸುವ ಜಾಣ್ಮೆ ಇರಬಹುದು. ಆದರೆ ಯಾವಾಗ ಚಿತ್ರ ಬಿಡಿಸಲೇ ಬೇಕು ಎನ್ನುವ ತೀವ್ರವಾದ ತುಡಿತ ಉಂಟಾಗುವುದೋ ಆಗ ಅವನ ಕುಂಚದಿಂದ ಒಂದು ಉತ್ತಮ ಕಲಾಕೃತಿ ಮೂಡಿಬರುವುದು ಸಾಧ್ಯ. ಇಂತಹ ಸಂದರ್‍ಭಗಳಲ್ಲಿ ಮಾಡಿದ ಚಿತ್ರಗಳಲ್ಲಿ ಆಳ ಇರುತ್ತದೆ, ವೈಶಾಲ್ಯ ಇರುತ್ತದೆ. ಸೌಂದರ್‍ಯ ಇರುತ್ತದೆ, ಹೇಳಬೇಕಾದುದನ್ನು ಅದು ತನ್ನದೇ ಭಾಷೆಯಲ್ಲಿ ಹೇಳುತ್ತದೆ. ಯಾರೋ ಹೇಳಿದರೆಂದು ಚಿತ್ರ ಬಿಡಿಸಿದರೆ ಆ ಚಿತ್ರ ಬಣ್ಣದ ಓಕುಳಿಯನ್ನು ಚೆಲ್ಲಬಹುದು. ಆದರೆ, ಏನೂ ಹೇಳಲಾಗದೆ ಸೋಲುವ ಪ್ರಮೇಯವೇ ಹೆಚ್ಚು. ಜೀವನ ಒಂದು ವಿಶಾಲವಾದ ಕ್ಯಾನ್‌ವಾಸ್, ನಾವೆಲ್ಲರೂ ಕಲಾವಿದರು. ನಾವು ಮಾಡುವ ಕೆಲಸಗಳು ತೆಗೆದುಕೊಳ್ಳುವ ನಿರ್‍ಧಾರಗಳು ಬಣ್ಣಗಳು, ಒಳ್ಳೆಯ ಚಿತ್ರಕ್ಕೆ ಒಳ್ಳೆಯ ಬಣ್ಣಗಳು ಬೇಕು. ಜೀವನದ ಕ್ಯಾನ್‌ವಾಸಿನಲ್ಲಿ ಮೂಡುವ ಚಿತ್ತಾರಗಳ ಸೌಂದರ್‍ಯ ನಮ್ಮ ಕೆಲಸ ಹಾಗೂ ನಿರ್‍ಧಾರಗಳ ಮೇಲೆ ಅವಲಂಬಿತವಾಗಿರುತ್ತವೆ.

ತುಂಬಾ ಸಲ ನಾವು ಹೊರಗಿನ ಒತ್ತಡಗಳಿಗೆ ಮಣಿದು ಕೆಲವು ನಿರ್‍ಧಾರಗಳನ್ನು ತೆಗೆದುಕೊಳ್ಳುತ್ತೇವೆ, ಕೆಲವು ಕೆಲಸಗಳನ್ನು ಮಾಡುತ್ತೇವೆ, ಮಾಡಬೇಕಲ್ಲ ಎಂದು ಮನಸ್ಸಿಲ್ಲದಿದ್ದರೂ ಮಾಡುತ್ತೇವೆ. ನಮ್ಮ ಒಳ ಮನಸ್ಸು ಬೇಡವೆಂದರೂ ಯಾರೋ ಹೇಳಿದರೆಂದು, ಒತ್ತಾಯಿಸಿದರೆಂದು ಮಾಡುತ್ತೇವೆ. ಆಗುವುದಿಲ್ಲ ಅಂದರೆ ಅವರಿಗೆ ನೋವಾಗುವುದೇನೋ ಎಂದು ಮಾಡುತ್ತೇವೆ. ಆದರೆ ಇದರಿಂದ ಮುಂದೆ ನಮಗೇ ನೋವಾಗುವುದು ಎನ್ನುವುದನ್ನು ಮರೆಯುತ್ತೇವೆ. ಆಮೇಲೆ ಯಾಕೆ ಮಾಡಿದೆವು ಎನ್ನುವ ತಪ್ಪಿತಸ್ಥ ಭಾವನೆಯಿಂದ ನರಳುತ್ತೇವೆ. ಒತ್ತಾಯಕ್ಕೆ ಮಾಡಿದ ನಿರ್‍ಧಾರಗಳು ಅಥವಾ ಕೆಲಸಗಳು ಯಾವತ್ತೂ ತೃಪ್ತಿದಾಯಕವಾಗಿರುವುದಿಲ್ಲ. ಮನಸ್ಸಿಗೆ ಕಿರಿಕಿರಿ ಉಂಟು ಮಾಡುತ್ತಲೇ ಇರುತ್ತವೆ. ಇದು ನಮಗೆ ನಾವೇ ಮಾಡಿಕೊಳ್ಳುವ ಮೋಸ. ಇದರಿಂದ ಜೀವನದ ಕ್ಯಾನ್‌ವಾಸ್‌ನ ಮೇಲೆ ಮೂಡುವ ಚಿತ್ರಗಳು ಬಣ್ಣ ಕೆಡುತ್ತವೆ.

ಗಾಂಧೀಜಿ ಹೇಳಿದಂತೆ, ನಿನ್ನ ಯೋಚನೆಗಳು ಸಕಾರಾತ್ಮಕವಾಗಿರಲಿ. ಯಾಕೆಂದರೆ ನಿನ್ನ ಯೋಚನೆಗಳೇ ನಿನ್ನ ಮಾತುಗಳಾಗುತ್ತವೆ; ನಿನ್ನ ಮಾತುಗಳು ಸಕಾರಾತ್ಮಕವಾಗಿರಲಿ ಯಾಕೆಂದರೆ ನಿನ್ನ ಮಾತುಗಳೇ ನಿನ್ನ ನಡತೆಗಳಾಗುತ್ತದೆ; ನಿನ್ನ ನಡತೆಗಳು ಸಕಾರಾತ್ಮಕವಾಗಿರಲಿ ಯಾಕೆಂದರೆ ನಿನ್ನ ನಡತೆಗಳೇ ನಿನ್ನ ಅಭ್ಯಾಸಗಳಾಗುತ್ತವೆ; ನಿನ್ನ ಅಭ್ಯಾಸಗಳು ಸಕಾರಾತ್ಮಕವಾಗಿರಲಿ ಯಾಕೆಂದರೆ ನಿನ್ನ ಅಭ್ಯಾಸಗಳೇ ನಿನ್ನ ಮೌಲ್ಯಗಳಾಗುತ್ತವೆ; ನಿನ್ನ ಮೌಲ್ಯಗಳು ಸಕಾರಾತ್ಮಕವಾಗಿರಲಿ ಯಾಕೆಂದರೆ ನಿನ್ನ ಮೌಲ್ಯಗಳೇ ನಿನ್ನ ಅದೃಷ್ಟವಾಗುತ್ತವೆ.’

ಏನನ್ನಾದರೂ ಮಾಡುವಾಗ ನಾವು ತಪ್ಪು ಮಾಡುತ್ತಿದ್ದೇವೆ ಎನ್ನುವ ತಪ್ಪಿತಸ್ಥ ಭಾವನೆ ನಮಗೆ ನಮ್ಮ ಹೃದಯ, ನಮ್ಮ ಮನಃಸಾಕ್ಷಿ ಕೊಡುವ ಮೊದಲ ಎಚ್ಚರಿಕೆಯ ಘಂಟೆ. ಈ ಎಚ್ಚರಿಕೆಯ ಘಂಟೆಯ ಸದ್ದನ್ನು ಆಲಿಸಲು ಶಕ್ತನಾದವನು ಯಾವತ್ತೂ ತಪ್ಪು ಕೆಲಸ ಮಾಡುವುದಿಲ್ಲ. ಹೃದಯದ ದನಿ ಮತ್ತು ಮನಃಸಾಕ್ಷಿಗಿಂತ ಮಿಗಿಲಾದ ಮಾರ್‍ಗದರ್‍ಶಕನಿಲ್ಲ. ಇದನ್ನು ನಿರ್‍ಲಕ್ಷಿಸಿದರೆ ಹಲವಾರು ತೊಂದರೆಗಳಿಗೆ ಸಿಕ್ಕಿಹಾಕಿಕೊಳ್ಳುವ ಪರಿಸ್ಥಿತಿ ಉಂಟಾಗುತ್ತದೆ. ಒಮ್ಮೆ ತೊಂದರೆಗಳಿಗೆ ಸಿಕ್ಕಿಕೊಂಡರೆ ಅವುಗಳಿಂದ ಹೊರ ಬರುವುದು ಬಹಳ ಕಷ್ಟ. ತೊಂದರೆಗಳಿಗೆ ಸಿಕ್ಕಿ ಹಾಕಿಕೊಂಡು ಅದರಿಂದ ಹೊರಬರುವುದಕ್ಕೆ ಒದ್ದಾಡುವುದಕ್ಕಿಂತ ನಮ್ಮದೇ ಆದ ಹೃದಯದ ದನಿಗೆ, ಮನಃಸಾಕ್ಷಿಯ ಎಚ್ಚರಿಕೆಗೆ ಗಮನಕೊಟ್ಟು ತೊಂದರೆಗಳಿಂದ ನಮ್ಮನ್ನು ರಕ್ಷಿಸಿಕೊಳ್ಳುವುದು ಜಾಣತನವಲ್ಲವೆ?
*****

Tagged:

Leave a Reply

Your email address will not be published. Required fields are marked *

ಬೆಳಕಿನಿಂದ ಜಗಜಗಿಸುವ ಸಂಜೆ ರಾವು ಬಡಿದಂತೆ ಮಬ್ಬಾಗಿತ್ತು. ಈ ಮಬ್ಬು ಹಿಂದೆಂದೂ ಇದಿಲ್ಲ. ದೇಶದ ಹದಿನೇಳು ವರ್ಷದ ಸ್ವಾತಂತ್ರದಲ್ಲಿ, ಮಧ್ಯಮ ತರಗತಿಯ ಜೀವನ ಕೈ ಬಾಯಿಯಾಗಿದ್ದರೂ ದೂರದ ಆಶಯ ಹೊಂಗಿರಣವೊಂದು ಸದಾ ಹೊಳೆದು ಭಾವೀ ಪೀಳಿಗೆಯ ಮನೋಲ್ಲಾಸ ಮಾಡುತ್ತಿತ್ತು. ಆದರೆ ಈ ಮಬ್ಬುಗತ್ತ...

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...