Home / ಕವನ / ಕವಿತೆ / ಚಿಕುಹೂ

ಚಿಕುಹೂ

ಚಿಕುಹೂ ಚಿಕುಹೂ ಚಿಕುಹೂ-
ಸನ್ನೆಯವೊಲು ಮುಹುರ್ಮುುಹು
ಆರೆಚ್ಚರಕೀ ತುತ್ತುರಿ
ಬಾನೊಳು ಮೊಳಗುತ್ತಿದೆ?
ಎನ್ನ ಕಿವಿಯೊಳೀ ಸವಿ ದನಿ
ಸಿಂಪಿಸುತಿದೆ ಸೊದೆಸೀರ್ಪನಿ
ವಿಸ್ಮೃತಿಗೈದಿರುವಾತ್ಮವ-
ನುಜ್ಜೀವಿಪ ತೆರದೆ.

ದಿವಮರೆತಪ್ಸರೆ ಎಚ್ಚರೆ
ಅಗಲುವಳೆಂದಿಳೆ ಬೆಚ್ಚಿರೆ
ಹರಿಕಾರರನಮರಾವತಿ
ದೊರೆಯಟ್ಟಿಹನೆನಲು
ಈ ದನಿ ಬರೆ ಲಾಲಿಸುತದೆ
ಪಯಣಕೆ ಸಡಗರಗೊಳುತಿದೆ
ಮನ್ಮಾನಸ ಸರೋವರದ
ಕರಣಗಳಂಚಿನೊಳು.

ಚಿಕುವೂ ಚಿಕುವೂ ಚಿಕುವೂ-
ಕಂಪೆರಚಿದೆ ಈ ದನಿಹೂ
ರಸ ಸೂಸಿದೆ ಸ್ವಾಹಾ
ಎಂದುಜ್ವಲಿಸಲು ನೆನಹು
ನೋಡುತಲಿದ್ದರು ಕಾಣದು
ಆಲಿಸುತಿದ್ದರು ಕೇಳದು
ಸರ್ವೇಂದ್ರಿಯವಿದಕಾಗಿರೆ
ಪ್ರತ್ಯಕ್ಷವೆ ಮರಹು.

“ಬಂದಿರ ತಂದಿರ ಕೊಡುವಿರ
ಕೊಟ್ಟಿರ ಕೊಳುವಿರ ನಡೆವಿರ”-
ನಿಸ್ಸ್ನೇಹದ ಸಭ್ಯತೆಯೊಳು
ಈ ನಡೆವಳಿಯೆಲ್ಲಾ
ನಡೆಯುತ್ತಿವೆ ಹೊರಬಗೆಯೊಳು,
ಮನೆಯಾಚೆಯ ಗದ್ದಲದೊಲು;
ಯೋಗಕ್ಷೇಮದ ವೇದನೆ
ಇಂದೆನಗಿನಿತಿಲ್ಲ.

ಭವಿ ನಾ ತಾಪಸಿ ನಾನು
ಕವಿ ನಾ ಕಿಂಕರ ನಾನು
ನಾ ನಾ ಇದಕಿತಿಯೇನಿದೆ
ಮಿತಿಯೇನಿದೆ, ದನಿಯೇ,
ಥಟ್ಟನೆರಗಿ ಗರುಡನ ತೆರ
ಅಹಮೆಂಬೀ ನಿಧಿನಾಗರ-
ನೊಯ್ದಿಹೆನೀ ಮುದವಿದ್ಯುತ್-
ಸ್ಪರ್ಶವ ಮನ ಪಡೆಯೆ.

ಚಿಕುವೂ ಕುವ್ವೂ- ಏನ್ ಸವಿ!
ಒಂದೇ ಸರದೊಂದೇ ಛವಿ
ಅಜರಾಮರವಿದು ಅಚ್ಚರಿ
ಪುರಾಣ ನೂತನವು
ಕೋಟಿ ಕೋಟಿ ಕೋಗಿಲೆ ಮೈ
ತರಗೆಲೆಯಂತುದುರಿವೆ ಸೈ
ಇದನು ಹಿಡಿದು ಬಿಡುವಾಟದಿ
ಋತುಋತು ಯುಗಯುಗವೂ.

ಈಯೆಡೆ ಆಯಡೆ ಬೇರಡೆ
ಬಿಡುವಿರುವೆಡೆ ಬಿಡುವಿರದೆಡೆ
ಒಲಿವೆಡೆ ನಲಿವೆಡೆ ಅಳುವೆಡೆ
ದೇಶವಿದೇಶದೊಳು
ಜನ್ಮದಿ ಜನ್ಮದಿ ನಾನಿದ
ಬಗೆಬಗೆಯೊಳು ಕೇಳಿದ ಹದ
ಇಂದೆಂತೆಯೊ ತೆರೆ ತರೆಯುತ
ತೋರಿದೆ ಹೃದಯದೊಳು-

“ಓ ಕೆಳೆಯಾ, ಮನೆ ನೆನೆಯಾ
ಬಿಡುಬಿಡು ಭವದೀ ಕೊನೆಯಾ
ದಿವ್ಯತೆಗೆಯೆ ಕಾಮಂಗೊಂ
ಡೆದೆ ಎರಕೆಯನೆರೆಯಾ”
ಎಂಬರ್ತಿಯ ಆರ್ತಸ್ವರ-
ವಿದು ಬಗೆಗೊಳೆ, ನಾ ಕಾತರ-
ಗೊಂಡೋಗುಟ್ಟುವೆ ನೆನೆನೆನೆ-
ದಾ ದೂರದ ಕರೆಯಾ.

ಚಿಕುವೂ ಕುವು ಕುವು ಟಿಇವೂ-
ಕಾರ ತಂಪು ಮಿಂಚ ಹೊಳಹು
ದಾಳಿಂಬೆಯ ರುಚಿ ಅಗಲಿದ
ಕಾದಲರೆದೆ ಕಾವು,
ಮಗು ತಾಯಿಗೆ, ಕವಿ ಚೆಲುವಿಗೆ,
ನನ್ನಿಗ ನನ್ನಿಗೆ, ಪರಮಗೆ
ಭಕ್ತರು ಹಂಬಲಿಸುವ ಬಗೆ
ಈ ಕೋಗಿಲೆಯುಲಿವು.

ದನಿಹಣ್ಣಿಂದಮೃತದ ರಸ
ತೊಟ್ಟಿಡಲಿಂತೆದೆ ತಾಮಸ-
ವುಳಿದುಜ್ವಲಿಸಿರೆ ಈ ಮಹ-
ದನುಭವಕೇನೆಂಬೆ?
ಈ ಶಾಶ್ವತ ರುತಿಗೊಂದಿದ
ಅಂದಂದಿನ ಸ್ಮೃತಿಯೋಲಿದ
ಪಿಡಿವಾನಂದದೊಳಾನಂ-
ತ್ಯವ ಮುಟ್ಟಿಹೆನೆಂಬೆ.
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...