Home / ಕವನ / ಕವಿತೆ / ಚಿಕುಹೂ

ಚಿಕುಹೂ

ಚಿಕುಹೂ ಚಿಕುಹೂ ಚಿಕುಹೂ-
ಸನ್ನೆಯವೊಲು ಮುಹುರ್ಮುುಹು
ಆರೆಚ್ಚರಕೀ ತುತ್ತುರಿ
ಬಾನೊಳು ಮೊಳಗುತ್ತಿದೆ?
ಎನ್ನ ಕಿವಿಯೊಳೀ ಸವಿ ದನಿ
ಸಿಂಪಿಸುತಿದೆ ಸೊದೆಸೀರ್ಪನಿ
ವಿಸ್ಮೃತಿಗೈದಿರುವಾತ್ಮವ-
ನುಜ್ಜೀವಿಪ ತೆರದೆ.

ದಿವಮರೆತಪ್ಸರೆ ಎಚ್ಚರೆ
ಅಗಲುವಳೆಂದಿಳೆ ಬೆಚ್ಚಿರೆ
ಹರಿಕಾರರನಮರಾವತಿ
ದೊರೆಯಟ್ಟಿಹನೆನಲು
ಈ ದನಿ ಬರೆ ಲಾಲಿಸುತದೆ
ಪಯಣಕೆ ಸಡಗರಗೊಳುತಿದೆ
ಮನ್ಮಾನಸ ಸರೋವರದ
ಕರಣಗಳಂಚಿನೊಳು.

ಚಿಕುವೂ ಚಿಕುವೂ ಚಿಕುವೂ-
ಕಂಪೆರಚಿದೆ ಈ ದನಿಹೂ
ರಸ ಸೂಸಿದೆ ಸ್ವಾಹಾ
ಎಂದುಜ್ವಲಿಸಲು ನೆನಹು
ನೋಡುತಲಿದ್ದರು ಕಾಣದು
ಆಲಿಸುತಿದ್ದರು ಕೇಳದು
ಸರ್ವೇಂದ್ರಿಯವಿದಕಾಗಿರೆ
ಪ್ರತ್ಯಕ್ಷವೆ ಮರಹು.

“ಬಂದಿರ ತಂದಿರ ಕೊಡುವಿರ
ಕೊಟ್ಟಿರ ಕೊಳುವಿರ ನಡೆವಿರ”-
ನಿಸ್ಸ್ನೇಹದ ಸಭ್ಯತೆಯೊಳು
ಈ ನಡೆವಳಿಯೆಲ್ಲಾ
ನಡೆಯುತ್ತಿವೆ ಹೊರಬಗೆಯೊಳು,
ಮನೆಯಾಚೆಯ ಗದ್ದಲದೊಲು;
ಯೋಗಕ್ಷೇಮದ ವೇದನೆ
ಇಂದೆನಗಿನಿತಿಲ್ಲ.

ಭವಿ ನಾ ತಾಪಸಿ ನಾನು
ಕವಿ ನಾ ಕಿಂಕರ ನಾನು
ನಾ ನಾ ಇದಕಿತಿಯೇನಿದೆ
ಮಿತಿಯೇನಿದೆ, ದನಿಯೇ,
ಥಟ್ಟನೆರಗಿ ಗರುಡನ ತೆರ
ಅಹಮೆಂಬೀ ನಿಧಿನಾಗರ-
ನೊಯ್ದಿಹೆನೀ ಮುದವಿದ್ಯುತ್-
ಸ್ಪರ್ಶವ ಮನ ಪಡೆಯೆ.

ಚಿಕುವೂ ಕುವ್ವೂ- ಏನ್ ಸವಿ!
ಒಂದೇ ಸರದೊಂದೇ ಛವಿ
ಅಜರಾಮರವಿದು ಅಚ್ಚರಿ
ಪುರಾಣ ನೂತನವು
ಕೋಟಿ ಕೋಟಿ ಕೋಗಿಲೆ ಮೈ
ತರಗೆಲೆಯಂತುದುರಿವೆ ಸೈ
ಇದನು ಹಿಡಿದು ಬಿಡುವಾಟದಿ
ಋತುಋತು ಯುಗಯುಗವೂ.

ಈಯೆಡೆ ಆಯಡೆ ಬೇರಡೆ
ಬಿಡುವಿರುವೆಡೆ ಬಿಡುವಿರದೆಡೆ
ಒಲಿವೆಡೆ ನಲಿವೆಡೆ ಅಳುವೆಡೆ
ದೇಶವಿದೇಶದೊಳು
ಜನ್ಮದಿ ಜನ್ಮದಿ ನಾನಿದ
ಬಗೆಬಗೆಯೊಳು ಕೇಳಿದ ಹದ
ಇಂದೆಂತೆಯೊ ತೆರೆ ತರೆಯುತ
ತೋರಿದೆ ಹೃದಯದೊಳು-

“ಓ ಕೆಳೆಯಾ, ಮನೆ ನೆನೆಯಾ
ಬಿಡುಬಿಡು ಭವದೀ ಕೊನೆಯಾ
ದಿವ್ಯತೆಗೆಯೆ ಕಾಮಂಗೊಂ
ಡೆದೆ ಎರಕೆಯನೆರೆಯಾ”
ಎಂಬರ್ತಿಯ ಆರ್ತಸ್ವರ-
ವಿದು ಬಗೆಗೊಳೆ, ನಾ ಕಾತರ-
ಗೊಂಡೋಗುಟ್ಟುವೆ ನೆನೆನೆನೆ-
ದಾ ದೂರದ ಕರೆಯಾ.

ಚಿಕುವೂ ಕುವು ಕುವು ಟಿಇವೂ-
ಕಾರ ತಂಪು ಮಿಂಚ ಹೊಳಹು
ದಾಳಿಂಬೆಯ ರುಚಿ ಅಗಲಿದ
ಕಾದಲರೆದೆ ಕಾವು,
ಮಗು ತಾಯಿಗೆ, ಕವಿ ಚೆಲುವಿಗೆ,
ನನ್ನಿಗ ನನ್ನಿಗೆ, ಪರಮಗೆ
ಭಕ್ತರು ಹಂಬಲಿಸುವ ಬಗೆ
ಈ ಕೋಗಿಲೆಯುಲಿವು.

ದನಿಹಣ್ಣಿಂದಮೃತದ ರಸ
ತೊಟ್ಟಿಡಲಿಂತೆದೆ ತಾಮಸ-
ವುಳಿದುಜ್ವಲಿಸಿರೆ ಈ ಮಹ-
ದನುಭವಕೇನೆಂಬೆ?
ಈ ಶಾಶ್ವತ ರುತಿಗೊಂದಿದ
ಅಂದಂದಿನ ಸ್ಮೃತಿಯೋಲಿದ
ಪಿಡಿವಾನಂದದೊಳಾನಂ-
ತ್ಯವ ಮುಟ್ಟಿಹೆನೆಂಬೆ.
*****

Tagged:

Leave a Reply

Your email address will not be published. Required fields are marked *

ಬೆಳಕಿನಿಂದ ಜಗಜಗಿಸುವ ಸಂಜೆ ರಾವು ಬಡಿದಂತೆ ಮಬ್ಬಾಗಿತ್ತು. ಈ ಮಬ್ಬು ಹಿಂದೆಂದೂ ಇದಿಲ್ಲ. ದೇಶದ ಹದಿನೇಳು ವರ್ಷದ ಸ್ವಾತಂತ್ರದಲ್ಲಿ, ಮಧ್ಯಮ ತರಗತಿಯ ಜೀವನ ಕೈ ಬಾಯಿಯಾಗಿದ್ದರೂ ದೂರದ ಆಶಯ ಹೊಂಗಿರಣವೊಂದು ಸದಾ ಹೊಳೆದು ಭಾವೀ ಪೀಳಿಗೆಯ ಮನೋಲ್ಲಾಸ ಮಾಡುತ್ತಿತ್ತು. ಆದರೆ ಈ ಮಬ್ಬುಗತ್ತ...

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...