Home / ಕವನ / ಕವಿತೆ / ನನ್ನ ನಾಯಿ

ನನ್ನ ನಾಯಿ

ಹೆರರ ನೋವಿಗೆ ಅಯ್ಯೊ ಎಂದು
ಮರುಗಿ ಸುಯ್ಯಲನಿಡಲು ಒಲವೆ?
ಹಿರಿಯ ಸುಖದಿರವೆನ್ನ ದೆನ್ನುವ
ಅರಿವು ಒಲಿದವಗಿರುವುದೆ?

ಜನುಮದೊಂದಿಗೆ ಜೊತೆಯ ಕೂಡಿ
ಕೊನೆಯವರೆಗೂ ಬೆನ್ನ ಬಿಡದ
ಜನುಮದುನ್ನತಿ ಕುಲದ ಹೆಮ್ಮೆಯ.
ಕಟ್ಟ ಕಳೆವುದೆ ಕರುಣೆಯು?

ಕೊಳದ ಕರೆ ಬಳಿ ಅಂದು ಮರುಗಿದೆ
ಸುಳಿದ ನೋವಿನ ಅಳುವ ಕೇಳಿ,
ಬೆಳೆದ ಇರುಳೊಳು ದನಿಯನರಸಿ
ಮನದೊಳಳುಕುತ ನಡೆದೆನು.

ಮುಗಿಲ ಬೆಳ್ಳಿಯ ಪೊರೆಯ ಹೊದೆದು
ಸೊಗಸುಕನಸನು ಕಾಣುವಂದದಿ
ನಗುವ ಚಂದ್ರನ ಬೆಳಕಿನೊಳಗೆ
ಕಂಡೆ ತಬ್ಬಲಿ ಮರಿಯನು.

ತಾಯಿ ಸತ್ತರು ಮೊಲೆಯ ಬಿಡದಾ
ನಾಯ ಮರಿಯ ಗೋಳ ಕಂಡೂ
ಮೈಯ ಮುಟ್ಟಲು ತಡೆದುದಂದು
ಜಾತಿ ಹೆಚ್ಚಿನ ಹೆಮ್ಮೆಯು.

ಕೊರೆವ ಚಳಿಯೊಳು ದಿಕ್ಕುಗಾಣದ
ಮರಿಯ ತೊರೆಯಲು ಮನವು ಬಹುದೇ?
ಕೊರಲೊಳಿಟ್ಟೆನು ಬಳ್ಳಿಕುಣಿಕೆಯ
ಮನೆಗೆ ನಡೆಸಿದೆ ಮೆಲ್ಲನೆ.

ಅಂದು ಮಕ್ಕಳ ಹರುಷ ಮೀರಿತು
ಮುಂದೆ ಕುಣಿದರು ಕೈಯ ತಟ್ಟಿ
ಕಂದನಂದದಿ ಅಂದು ಮೊದಲು
ಮರಿಯ ಸಾಕಿದೆವೆಲ್ಲರು.

ಹಾಲು ಅನ್ನವನುಣಿಸಿ ನಲಿದೆವು
ಮೇಲುತಿಂಡಿಗಳೆಲ್ಲವಿತ್ತೆವು
ಮೈಲಿಗೆಯ ಭಯದಿಂದ ಮೈಯನು
ಮುಟ್ಟಗೊಡಿಸೆವು ಆದರೂ.

ಮರಿಯು ನಮ್ಮ ಬಿಂಕವರಿತು
ಹೊರಗೆ ನಿಲುವುದು ಹೊಸಿಲ ದಾಟದು!
ಹಿರಿಯತನದ ಹೆಮ್ಮೆಗಡಲು
ಹರಿಯತೆಮ್ಮಯ ಮಧ್ಯದಿ.

ಆರು ತಿಂಗಳ ಕಳೆದೆವಿಂತು,
ಊರೆ ಮೆಚ್ಚಿದ ಮರಿಯನೊಂದು
ಇರುಳೊಳೊಯ್ದನು ಕಳ್ಳನದನು
ಮನೆಯ ಮಕ್ಕಳ ಮುದ್ದನು.

ಎದ್ದು ಹುಡುಗರು ನಾಯ ಕಾಣದೆ
ಬಿದ್ದು ಬೀಳುತಲೋಡಿಬಂದು
‘ಕದ್ದರೇನೋ? ಮರಿಯ ಕಾಣೆವು’
ಎಂದು ಕಂಬನಿಗರೆದರು.

ಕೇರಿ ಕೇರಿಗೆ ಜನರನಟ್ಟಿದೆ
ಊರ ಊರನು ತಿರುಗಿ ಕೇಳಿದೆ
ಆರ ಕಂಡರು ‘ಮರಿಯ ಕಾಣಿರ’
ಎಂದು ಹುಚ್ಚನ ತೆರದೊಳು.

ಮೂರುದಿನಗಳು ಹುಡುಕಿ ಕೊನೆಗೆ
ಊರ ಮುಂದಿನ ಮನೆಯ ಹೊರಗೆ
ಏರುಬಿಸಿಲೊಳು ಕುರುಬನೆಡೆಯೊಳು
ಕಂಡೆ ಮಲಗಿದ ಕುನ್ನಿಯ.

ಹರುಷ ಮೀರಿತು ಬಾಲವಾಡಿಸಿ
ಗುರುತ ಹಿಡಿಯುತ ನೆಗೆಯೆ ನಾಯಿ
ಕುರುಬಗೌಡನ ಗದರಿ ಕೇಳಿದೆ
‘ಕದ್ದೆ ಯೇತಕೊ ಮರಿಯನು?’

ನಡುಗಿ ಕೈಗಳ ಮುಗಿದು ನಿಂತು
ನುಡಿದನೀ ಪರಿ ಕುರುಬಗೌಡನು
‘ಒಡೆಯ, ಮರಿಯನು ಕದಿಯಲಿಲ್ಲವು
ಹಿಂದೆ ಬಂದಿತು ಕರೆಯದೆ.

‘ಅಂದು ಊರೊಳಗಿರುಳು ತಂಗಿ
ಮುಂದೆ ಪಯಣವ ಬೆಳೆಸಲೆಂದು
ಮಂದಿ ಮಲಗಿದ ಹೊತ್ತಿನಲ್ಲಿ
ನಿಮ್ಮ ಜಗಲಿಗೆ ಬಂದೆನು.

‘ಮರಿಯು ಬಗುಳುತ ಅಡ್ಡಗಟ್ಟಲು
ತೆರೆದು ಬುತ್ತಿಯ ರೊಟ್ಟಿಯಿಟ್ಟೆನು
ಹರುಷದಿಂದಲಿ ತಲೆಯ ತಟ್ಟಿ
ಮೈಯ ತಡಹಿದೆ ನಾಯಿಯ.

‘ಚಳಿಗೆ ನಡುಗಲು ಮರುಕದಿಂದ
ಕೆಳಗೆ ಕಂಬಳಿಹಾಸಿ ಜೊತೆಯೊಳು
ಚೆಲುವು ಮರಿಗೂ ತಾಣವಿತ್ತೆನು
ಒಲುಮೆ ಬೆಸೆಯಿತು ಇಬ್ಬರ.

‘ಮೂಡ ಬೆಳಗಲು ಹೊರಟೆನಂದು
ಓಡಿ ಹಿಂದೆಯೆ ಬರಲು ಮರಿಯು
ಕೂಡಲಪ್ಪುತ ಮುತ್ತನಿಟ್ಟು
ಕರೆದು ತಂದೆನು ಊರಿಗೆ.

‘ಬಂಧುಬಳಗಗಳಿಲ್ಲವೆನಗೆ
ಕಂದನೀ ಮರಿ-ಕಳೆಯಲಾರೆ’
ಎಂದ. ಗೌಡನ ಕಣ್ಣು ಹನಿತುದು
ಮರಿಯ ಹಗ್ಗವ ಹಿಡಿಯಲು.

ಹಗ್ಗವೆಳೆದೆನು; ಕುನ್ನಿ ಬಾರದು
ಸಗ್ಗದೆನ್ನಯ ಸವಿಯ ನುಡಿಗೆ.
ಹಗ್ಗ ಸಡಿಲಿಸಿ ಬಿಟ್ಟೆನದನು
ಕುರುಬ ತಬ್ಬಿದ ಸೊಣಗನ!

ವರುಷ ನೂರರ ಕರುಣೆ ಬಿಗಿವುದೆ
ಕುರುಬನಿರುಳೊಳು ಬಿಗಿದ ಕಟ್ಟ!
ಮರಿಯ ನಡತೆಗೆ ಕೋಪಗೊಳ್ವುದೆ?
ಕರುಣೆ ಒಲುಮೆಗೆ ಸಾಟಿಯೆ?

ಒಲಿದರಿರವಿನ ಬಗೆಗಳೆರಡೆ?
ಒಲುಮೆಗಡ್ಡಲೆ ಕುಲದ ಹೆಮ್ಮೆ?
ಒಲುಮೆಬೆಸುಗೆಯ ಸುಖದ ಸವಿಯನು
ತಿಳಿಯದೇ ಬಡಜಂತುವು!

ಕಣ್ಣ ನೀರೊಳು ತೊಳೆದೆನಂದು
ಜನ್ಮ ದುನ್ನತಿ ಹೆಮ್ಮೆ ಕೊಳೆಯ-
ನನ್ನ ಒಲುಮೆಗೆ ಅಡ್ಡ ಬಂದ
ಕರುಣೆ ಹಾಯದ ಬಿಂಕವ.
*****

Tagged:

Leave a Reply

Your email address will not be published. Required fields are marked *

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...

ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಹೊರ ಕೋಣೆಯಲ್ಲಿ ಕಾಲೂರಿ ಕೂತು ಬೀಡಿ ಕಟ್ಟುತ್ತಿದ್ದ ಸುಮಯ್ಯಾಗೆ ಕಣ್ಣು ಮತ್ತು ಕಿವಿಯ ಸುತ್ತಲೇ ಆಗಾಗ ಗುಂಯ್.. ಎನ್ನುತ್ತಾ ನೊಣವೊಂದು ಸರಿಸುಮಾರು ಹದಿನೈದು ನಿಮಿಷಗಳಿಂದ ಹಾರಾಡುತ್ತಾ ಕಿರಿಕಿರಿ ಮಾಡುತ್ತಿತ್ತು. ಹಿಡಿದು ಹೊಸಕಿ ಹಾಕಬೇಕೆಂದರೆ ಕೈಗೆ ಸಿಗದೆ ಮೈ ಪರಚಿಕೊಳ್ಳಬೇಕೆನ್ನ...

ಮೂಲ: ಗಾಯ್ ಡಿ ಮೊಪಾಸಾ ಗಗನಚುಂಬಿತವಾದ ಬೀಚ್‌ ವೃಕ್ಷಗಳೊಳಗಿಂದ ತಪ್ಪಿಸಿಕೊಂಡು ಸೂರ್ಯ ಕಿರಣಗಳು ಹೊಲಗಳ ಮೇಲೆ ಬೆಳಕನ್ನು ಕೆಡುವುವುದು ಬಲು ಅಪರೂಪ. ಬೆಳೆದ ಹುಲ್ಲನ್ನು ಕೊಯ್ದುದರಿಂದಲೂ, ದನಗಳೂ ಕಚ್ಚಿ ಕಚ್ಚಿ ತಿಂದುದರಿಂದಲೂ ನೆಲವು ಅಲ್ಲಲ್ಲಿ ತಗ್ಗು ದಿನ್ನೆಯಾಗಿ ಒಡೆದು ಕಾಣುತ್ತಿ...