Home / ಕವನ / ಕವಿತೆ / ನನ್ನ ನಾಯಿ

ನನ್ನ ನಾಯಿ

ಹೆರರ ನೋವಿಗೆ ಅಯ್ಯೊ ಎಂದು
ಮರುಗಿ ಸುಯ್ಯಲನಿಡಲು ಒಲವೆ?
ಹಿರಿಯ ಸುಖದಿರವೆನ್ನ ದೆನ್ನುವ
ಅರಿವು ಒಲಿದವಗಿರುವುದೆ?

ಜನುಮದೊಂದಿಗೆ ಜೊತೆಯ ಕೂಡಿ
ಕೊನೆಯವರೆಗೂ ಬೆನ್ನ ಬಿಡದ
ಜನುಮದುನ್ನತಿ ಕುಲದ ಹೆಮ್ಮೆಯ.
ಕಟ್ಟ ಕಳೆವುದೆ ಕರುಣೆಯು?

ಕೊಳದ ಕರೆ ಬಳಿ ಅಂದು ಮರುಗಿದೆ
ಸುಳಿದ ನೋವಿನ ಅಳುವ ಕೇಳಿ,
ಬೆಳೆದ ಇರುಳೊಳು ದನಿಯನರಸಿ
ಮನದೊಳಳುಕುತ ನಡೆದೆನು.

ಮುಗಿಲ ಬೆಳ್ಳಿಯ ಪೊರೆಯ ಹೊದೆದು
ಸೊಗಸುಕನಸನು ಕಾಣುವಂದದಿ
ನಗುವ ಚಂದ್ರನ ಬೆಳಕಿನೊಳಗೆ
ಕಂಡೆ ತಬ್ಬಲಿ ಮರಿಯನು.

ತಾಯಿ ಸತ್ತರು ಮೊಲೆಯ ಬಿಡದಾ
ನಾಯ ಮರಿಯ ಗೋಳ ಕಂಡೂ
ಮೈಯ ಮುಟ್ಟಲು ತಡೆದುದಂದು
ಜಾತಿ ಹೆಚ್ಚಿನ ಹೆಮ್ಮೆಯು.

ಕೊರೆವ ಚಳಿಯೊಳು ದಿಕ್ಕುಗಾಣದ
ಮರಿಯ ತೊರೆಯಲು ಮನವು ಬಹುದೇ?
ಕೊರಲೊಳಿಟ್ಟೆನು ಬಳ್ಳಿಕುಣಿಕೆಯ
ಮನೆಗೆ ನಡೆಸಿದೆ ಮೆಲ್ಲನೆ.

ಅಂದು ಮಕ್ಕಳ ಹರುಷ ಮೀರಿತು
ಮುಂದೆ ಕುಣಿದರು ಕೈಯ ತಟ್ಟಿ
ಕಂದನಂದದಿ ಅಂದು ಮೊದಲು
ಮರಿಯ ಸಾಕಿದೆವೆಲ್ಲರು.

ಹಾಲು ಅನ್ನವನುಣಿಸಿ ನಲಿದೆವು
ಮೇಲುತಿಂಡಿಗಳೆಲ್ಲವಿತ್ತೆವು
ಮೈಲಿಗೆಯ ಭಯದಿಂದ ಮೈಯನು
ಮುಟ್ಟಗೊಡಿಸೆವು ಆದರೂ.

ಮರಿಯು ನಮ್ಮ ಬಿಂಕವರಿತು
ಹೊರಗೆ ನಿಲುವುದು ಹೊಸಿಲ ದಾಟದು!
ಹಿರಿಯತನದ ಹೆಮ್ಮೆಗಡಲು
ಹರಿಯತೆಮ್ಮಯ ಮಧ್ಯದಿ.

ಆರು ತಿಂಗಳ ಕಳೆದೆವಿಂತು,
ಊರೆ ಮೆಚ್ಚಿದ ಮರಿಯನೊಂದು
ಇರುಳೊಳೊಯ್ದನು ಕಳ್ಳನದನು
ಮನೆಯ ಮಕ್ಕಳ ಮುದ್ದನು.

ಎದ್ದು ಹುಡುಗರು ನಾಯ ಕಾಣದೆ
ಬಿದ್ದು ಬೀಳುತಲೋಡಿಬಂದು
‘ಕದ್ದರೇನೋ? ಮರಿಯ ಕಾಣೆವು’
ಎಂದು ಕಂಬನಿಗರೆದರು.

ಕೇರಿ ಕೇರಿಗೆ ಜನರನಟ್ಟಿದೆ
ಊರ ಊರನು ತಿರುಗಿ ಕೇಳಿದೆ
ಆರ ಕಂಡರು ‘ಮರಿಯ ಕಾಣಿರ’
ಎಂದು ಹುಚ್ಚನ ತೆರದೊಳು.

ಮೂರುದಿನಗಳು ಹುಡುಕಿ ಕೊನೆಗೆ
ಊರ ಮುಂದಿನ ಮನೆಯ ಹೊರಗೆ
ಏರುಬಿಸಿಲೊಳು ಕುರುಬನೆಡೆಯೊಳು
ಕಂಡೆ ಮಲಗಿದ ಕುನ್ನಿಯ.

ಹರುಷ ಮೀರಿತು ಬಾಲವಾಡಿಸಿ
ಗುರುತ ಹಿಡಿಯುತ ನೆಗೆಯೆ ನಾಯಿ
ಕುರುಬಗೌಡನ ಗದರಿ ಕೇಳಿದೆ
‘ಕದ್ದೆ ಯೇತಕೊ ಮರಿಯನು?’

ನಡುಗಿ ಕೈಗಳ ಮುಗಿದು ನಿಂತು
ನುಡಿದನೀ ಪರಿ ಕುರುಬಗೌಡನು
‘ಒಡೆಯ, ಮರಿಯನು ಕದಿಯಲಿಲ್ಲವು
ಹಿಂದೆ ಬಂದಿತು ಕರೆಯದೆ.

‘ಅಂದು ಊರೊಳಗಿರುಳು ತಂಗಿ
ಮುಂದೆ ಪಯಣವ ಬೆಳೆಸಲೆಂದು
ಮಂದಿ ಮಲಗಿದ ಹೊತ್ತಿನಲ್ಲಿ
ನಿಮ್ಮ ಜಗಲಿಗೆ ಬಂದೆನು.

‘ಮರಿಯು ಬಗುಳುತ ಅಡ್ಡಗಟ್ಟಲು
ತೆರೆದು ಬುತ್ತಿಯ ರೊಟ್ಟಿಯಿಟ್ಟೆನು
ಹರುಷದಿಂದಲಿ ತಲೆಯ ತಟ್ಟಿ
ಮೈಯ ತಡಹಿದೆ ನಾಯಿಯ.

‘ಚಳಿಗೆ ನಡುಗಲು ಮರುಕದಿಂದ
ಕೆಳಗೆ ಕಂಬಳಿಹಾಸಿ ಜೊತೆಯೊಳು
ಚೆಲುವು ಮರಿಗೂ ತಾಣವಿತ್ತೆನು
ಒಲುಮೆ ಬೆಸೆಯಿತು ಇಬ್ಬರ.

‘ಮೂಡ ಬೆಳಗಲು ಹೊರಟೆನಂದು
ಓಡಿ ಹಿಂದೆಯೆ ಬರಲು ಮರಿಯು
ಕೂಡಲಪ್ಪುತ ಮುತ್ತನಿಟ್ಟು
ಕರೆದು ತಂದೆನು ಊರಿಗೆ.

‘ಬಂಧುಬಳಗಗಳಿಲ್ಲವೆನಗೆ
ಕಂದನೀ ಮರಿ-ಕಳೆಯಲಾರೆ’
ಎಂದ. ಗೌಡನ ಕಣ್ಣು ಹನಿತುದು
ಮರಿಯ ಹಗ್ಗವ ಹಿಡಿಯಲು.

ಹಗ್ಗವೆಳೆದೆನು; ಕುನ್ನಿ ಬಾರದು
ಸಗ್ಗದೆನ್ನಯ ಸವಿಯ ನುಡಿಗೆ.
ಹಗ್ಗ ಸಡಿಲಿಸಿ ಬಿಟ್ಟೆನದನು
ಕುರುಬ ತಬ್ಬಿದ ಸೊಣಗನ!

ವರುಷ ನೂರರ ಕರುಣೆ ಬಿಗಿವುದೆ
ಕುರುಬನಿರುಳೊಳು ಬಿಗಿದ ಕಟ್ಟ!
ಮರಿಯ ನಡತೆಗೆ ಕೋಪಗೊಳ್ವುದೆ?
ಕರುಣೆ ಒಲುಮೆಗೆ ಸಾಟಿಯೆ?

ಒಲಿದರಿರವಿನ ಬಗೆಗಳೆರಡೆ?
ಒಲುಮೆಗಡ್ಡಲೆ ಕುಲದ ಹೆಮ್ಮೆ?
ಒಲುಮೆಬೆಸುಗೆಯ ಸುಖದ ಸವಿಯನು
ತಿಳಿಯದೇ ಬಡಜಂತುವು!

ಕಣ್ಣ ನೀರೊಳು ತೊಳೆದೆನಂದು
ಜನ್ಮ ದುನ್ನತಿ ಹೆಮ್ಮೆ ಕೊಳೆಯ-
ನನ್ನ ಒಲುಮೆಗೆ ಅಡ್ಡ ಬಂದ
ಕರುಣೆ ಹಾಯದ ಬಿಂಕವ.
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...