Home / ಕವನ / ಕವಿತೆ / ಈದ್ ಮುಬಾರಕ್

ಈದ್ ಮುಬಾರಕ್

ನೆತ್ತರ ಹೆಪ್ಪುಗಟ್ಟಿಸುವ ಅಮವಾಸ್ಯೆ ಕತ್ತಲು ಕಳೆದು
ಸಣ್ಣ ಗೆರೆಯಂತೆ ಮೂಡಿದ ಈದ್ ಕಾ ಚಾಂದ್
ಮೋಡಗಳಿಲ್ಲದ ಶುಭ್ರ ಅಗಸದಲ್ಲಿ ಕಾಣುತ್ತಿದ್ದಾನೆ ನೋಡು
ರಂಜಾನ್ ಹಬ್ಬದ ಸಣ್ಣ ಗೆರೆಯಂತಹ
ಚಂದ್ರನ ನೋಡಿದ ಮಗಳು ಓಡೋಡಿ ಬಂದು
“ಅಮ್ಮಿ ಈದ್ ಮುಬಾರಕ್” ಹಬ್ಬದ ಚಂದ್ರನ ಕಂಡೆನಮ್ಮಾ
ನಾಳೆ ಬಿರ್ಯಾನಿ, ಶುರಖುರಮಾ ಮಾಡುವೆಯಲ್ಲ?
ಬೆಳಿಗ್ಗೆ ಸೂರ್ಯ ಹುಟ್ಟುವ ಮುನ್ನವೇ
ಝಂ ಝಮ್‌ನಿಂದ ಪವಿತ್ರ ಸ್ನಾನ ಮಾಡುವೆ.
ಮೆಕ್ಕಾದಿಂದ ಬಂದ ಝಂ ಝಮ್ ತೀರ್ಥ ಇಟ್ಟಿರುವೆಯಲ್ಲ
ಎಂದು ಉಲಿದವಳೇ ಎಲ್ಲರಿಗೂ ಮುಬಾರಕ್ ಹೇಳಲು
ಜಿಂಕೆಯಂತೆ ಜಿಗಿಯುತ್ತಾ ಹಾರಿ ಹೋದಳು ಮಗಳು
ಮಗಳ ಸಂಭ್ರಮದ ಕುಣಿದಾಟ ನೋಡಿದ
ಅಮ್ಮಿಯ ಮನದಲ್ಲಿ ಸಂಭ್ರಮ ಮೂಡಿ
ಮರುಕ್ಷಣವೇ ಮಾಯವಾಗಿ ನಿಟ್ಟುಸಿರು ಹೊರಬಿತ್ತು.
ಮಗಳೇ ನಿನ್ನ ಬಾಲ್ಯದ ತುಂಬಾ ಅಮವಾಸ್ಯೆ ಕತ್ತಲು,
ಬೆಳಕಿನ ಬೀಜ ಎಲ್ಲಿಂದ ತರಲಿ ಹೇಳು?
ನಿನ್ನ ಬಾಲ್ಯದ ಹೂ ನಳನಳಿಸಿ ಅರಳುವಾಗಲೇ
ಬೀಡಿ, ಎಲೆ, ಹೊಗೆಸೊಪ್ಪಿನ ಘಾಟು ತಪ್ಪಿಸಲಾಗಲಿಲ್ಲ
ಅಕ್ಷರ ಕಲಿತು ಮನಸು ಅರಳುವ ಸಮಯ
ತುತ್ತಿನ ಚೀಲ ತುಂಬಲು ಎಸಳು ಬೆರಳುಗಳಿಂದ
ಬೀಡಿ ತಂಬಾಕು ತುಂಬಿ ಮಡಚುತ್ತಾ
ಮೊರ ಹಿಡಿದು ಕುಳಿತೆಯಲ್ಲ ನನ್ನೊಂದಿಗೆ
ಬಾಳ ನೊಗಕ್ಕೆ ಹೆಗಲು ನೀಡಿದೆಯಲ್ಲ!

ನನ್ನ ಬಡತನದ ಶಾಪ ನಿನಗೂ ತಟ್ಟಿತೆ ಮಗು
“ಅಬ್ಬಾ”ನ ಅಂತ್ಯವಾಗಿ ಇಂದಿಗೆ ಆರು ವರ್ಷ
ಮುಳ್ಳು ಹಾದಿಯಲ್ಲಿ ಬಾಳ ಪಯಣ ಸಾಗಿತ್ತು.
ಅನಿವಾರ್ಯದ ಬದುಕು ಜಟಕಾ ಬಂಡಿ ನೂಕುತ್ತಾ
ಕರಿಮುಗಿಲ ಮರೆಸುವ ಬುರ್ಖಾಕ್ಕೆ ತೇಪೆ ಹಾಕಿರುವೆ
ಜಿಂಕೆಯಂತೆ ಪುಟಿಯುತ್ತಿದ್ದ ಮಗಳನ್ನು ನೋಡಿ
ಮಗದೊಮ್ಮೆ ಕಿಟಕಿಯಾಚೆಗಿನ ಶೂನ್ಯವನ್ನು ದಿಟ್ಟಿಸಿ
ನಿಟ್ಟುಸಿರಿಟ್ಟ ಅಮ್ಮಿಯ ದೀರ್ಘ ಉಸಿರಿನ ಸದ್ದು
ಮರುಕ್ಷಣವೇ ಕರ್ತವ್ಯ ಜಾಗೃತವಾಯ್ತು
ಪಟಪಟನೆ ಬೀಡಿ ಕಟ್ಟುಗಳ ಹಾಕಿ
ಬೀಡಿ ಕಂಪನಿ ಮಾಲೀಕರಿಗೆ ಮುಟ್ಟಿಸಬೇಕಲ್ಲವೇ?
ಅವನಿಟ್ಟ ಬಿಡಿಕಾಸು ತಂದು ಸಂತೆಗೆ ಹೋದರೆ
ಎಲ್ಲವೂ ದುಬಾರಿ ಒಂದಕ್ಕಾದರೆ ಒಂದಕ್ಕಿಲ್ಲ
ಮಗಳಿಗೆ ಮೆಹಂದಿ ಹೊಸಬಟ್ಟೆ ಎಲ್ಲಿಂದ ತರಲಿ?
ಬಡವರ ರಂಜಾನ್ ಹೀಗೆಯೇ ನೋಡು.
ಯಾವ ಬಾಯಿಯಲ್ಲಿ ಉಲಿಯಲಿ
“ಈದ್ ಮುಬಾರಕ್” ಎಂದು.
*****
ಶುರಖುರಮಾ-ಸೇವಿಗೆ ಪಾಯಸ
ಝಮ್‌-ಮೆಕ್ಕಾದ ಪವಿತ್ರನೀರು

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...