ಹರೆಯ

ಹುಟ್ಟಿನಿಂದ ಆ ಚಟ್ಟ ಮಟ್ಟ ಈ ಬಟ್ಟ ಬಯಲಿನಾಟ
ಜಗದ ಸೊಗದ ಬೇರಾದ ಬಂಧವಿದು ಸೃಷ್ಟಿಕರ್ತನಾಟ

ಹೆಣ್ಣು: ಕಾಯಿ ಬೆಳೆದು ದೊರೆಗಾಯಿಯಾಗುತಿರುವಾಗ ಬೇರೆ ಬಣ್ಣ
ಯಾರ ಕಣ್ಣು ತಾಕೀತು ಎಂದು ಅಡಗುವಾ ನಡುವು ಸಣ್ಣ

ಅಂಗ ಅಂಗದಲಿ ಆ ಅನಂಗನಾಡುವನು ಮಂಗನಾಟ
ಉಬ್ಬು ತಗ್ಗುಗಳ ಹೊಳಪು ಮಿಂಚುಗಳ ಎಂಥ ಮಾಯ ಮಾಟ

ಅಂಕು ಡೊಂಕುಗಳ ರಂಟೆ ಹೊಡೆವ ಕಾಮಣ್ಣ ರೈತನಂತೆ
ಹರೆಯ ಬಂದು ಹರಗುವುದು ನೆಲವ ಅರಳುವದು ಹೂವಿನಂತೆ

ಕುಂಟು ಕುರುಡು ಕಪ್ಪೆಂಬ ಕರಿಕೆ ಕಳೆದಿಡುವ ಕಾಲವಣ್ಣ
ಕತ್ತೆ ಕೂಡ ಸೆಳೆಯುವುದು ಕೆಳೆಯ ಮೈತುಂಬಿ ಮೋಡಿ ಬಣ್ಣ

ಕಾಯುತಿಹುದು ಹಗಲಿರುಳು ನೆಲವು ಕಾಮನೆಯ ಬೇಸಗೆಯಲಿ
ಕಾಯುತಿಹಳು ತಾ ಕೆಂಪು ಕರಿಯ ಹೊಲಪಟ್ಟೆ ಹಾಸುಗೆಯಲಿ

ರವ ಸಿಂಚಿಸುವ ಸೊಗದ ಮಿಂಚಿಸುವ ಧಾರೆಧಾರೆ ಸುರಿಸಿ
ಎನುತ ತೆರೆದು ಎದೆಬಟ್ಟಲನ್ನು ರಾತ್ರಿ ದೀಪವುರಿಸಿ

ಕತ್ತಲಿನ ಮೋಡ ಹಿತ್ತಲಲ್ಲಿ ಮಿಂಚಿನಲಿ ಕಣ್ಣು ಹೊಡೆದು
ಗಾಳಿಯಲಿ ಸುದ್ದಿ ಕಳಿಸುವನು ರಾಯ ಗುಡುಗಿಂದ ಕದವ ಬಡಿದು

ಗಂಡು: ಬಲಿತಂಥ ಬೀಜ ಹೊರ ಬರುವ ತವಕ ಜಿಗಿಯುತಿಹುದು
ಆ ನೆಲವು ಹಸನು ಈ ಮಣ್ಣು ಬಣ್ಣ ಮಣ್ಣಾಗೆ ಅವಸರಿಹುದು

ಈ ಹೂವು ಚೆಂದ ಆ ಹೂವು ಗಂಧ ಮುತ್ತಿಡಲು ಹಾರುತಿಹುದು
ಈ ಹಣ್ಣು ಸವಿಯು ಆ ಹಣ್ಣು ಜೇನು ರಸಗಡಲಲೀಜುತಿಹುದು

ಕಾಯಿಯಲಿ ಒಗರು ಬಾಯಿಯಲಿ ನೀರು ನನ್ನನ್ನು ಮುಟ್ಟಬೇಡ
ದೋರೆಯಲಿ ಹುಳಿಯು ಬಾಯಿಯಲಿ ನೀರು ಚಪ್ಪರಿಸಿ ನೋಡಬೇಡ

ಮಾಗಿ ಮಲೆತು ಗಮಗಮಿಸಿ ಕರೆಯೆ ಓಗೊಡದ ರಸಿಕನಾರು
ಹಣ್ಣು ಬಂದು ಕಣ್ಣಿನಲಿ ಕುಣಿಯೆ ಬಾಯ್ತೆರೆಯದವನು ಯಾರು

ಹುಚ್ಚು ಹಸಿವು ಇದು ಹಚ್ಚ ಹಸಿರು ಹುಚ್ಚಾಗಿ ಬಿಡುವುದಾಗ
ಬಯಕೆಯಲ್ಲೆ ಕಚ್ಚಾಡಿ ಮೆಚ್ಚಿ ಅದು ದಾರಿ ಬಿಡುವುದಾಗ

ಹಸಿರು ಹಸಿರು ಆಯೆಂದು ನೂರು ಕಡೆ ಹರಿಯುತಿಹುದು ಹರೆಯ
ದಾರಿ ತಪ್ಪಿ ಅಡವಿಯಲಿ ಅಲೆದು ತಾ ಮರೆಯುತಿಹುದು ಪರಿಯ

ಒಂದೆ ಹಣ್ಣು ಹಸಿವಿಂಗಿಸಲಿಕೆ ಸಾಕಾದರೇನು ಬಾಯಿ
ಬಣ್ಣ ಬಣ್ಣ ನೂರಾರ ಕಂಡು ಸುರಿಸಿಹುದು ಜೊಲ್ಲು ನಾಯಿ

ದುಂಬಿಯಾಗಿ ಹೂ ಹೂವ ತಿರುಗಿ ಮೂಸೇನು ಗಂಧಗಾಳಿ
ಚೆಂದ ನೋಡಿ ಮರುಳಾಗಿ ಮತ್ತಿನಲಿ ಮುತ್ತೇನು ಹೊರಳಿ ಹೊರಳಿ

ಹೂವಿನೊಡಲ ನಾ ಸೇರಿ ಜೇನ ಹೀರೇನು ಪ್ರೇಮದಿಂದ
ಕಾವಿನಲ್ಲಿ ಕಳೆಗೂಡಿ ಹೂವು ಹುಡಿ ಮೈಗೆ ಬಳಿಯುವಂದ

ಹಳದಿ ಕೆಂಪು ನೇರಳೆಯು ಕಿತ್ತಿಳೆಯು ನೀಲಿ ಚೆಂಗುಲಾಬಿ
ಬಣ್ಣದೋಕುಳಿಯು ಕಣ್ಣ ತುಂಬುತಿರೆ ತೋಟದಲ್ಲಿ ಹರವಿ
****

ನೀರ ಬಂದು ತಬ್ಬುವನು ನೀರೆಯನು ಸೃಷ್ಟಿಗಾಯ್ತು ನಾಂದಿ
ಕಾದ ಒಡಲು ತಾ ತಣ್ಣಗಾಗಿ ರಸ ಜೇನಿನೂಟ ಹೊಂದಿ

ಆಗೀಗ ಮಳೆಯ ಋತು ಸ್ಪರ್ಶದಿಂದ ಮಾಗಿತ್ತು ಮಾಂಸ ಮೈಯಿ
ಪ್ರಿಯತಮನು ಬರಲು ಒಂದೊಂದು ಬಾಗಿಲನು ತೆರೆದು ನಿಂತ ಮೈಯಿ

ಒಡಲಿನೊಡೆಯ ಬರುತಾನೆ ಬಂದು ಬೀಜವನು ಬಿತ್ತುತಾನೆ
ಹದಬೆದೆಯ ನೋಡಿ ಹೃದಯವನೆ ತೋಡಿ ಮುಖವನ್ನು ಮುತ್ತುತಾನೆ

ಹೆಣ್ಣು ಗಂಡು ಹಣ್ಣಾಗುತಾವೆ ತಿನುತಾವೆ ಯಾವೊ ಬಾಯಿ
ಮಣ್ಣಿನೊಡೆಯ ಕಣ್ಣಾಗುತಾನೆ ಕುಣದಾವೆ ಮನಸು ಮೈಯಿ
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ನಗೆ ಡಂಗುರ – ೫೮
Next post ಹಿಂದೆ ಹೇಗೆ ಚಿಮ್ಮುತ್ತಿತ್ತು!!

ಸಣ್ಣ ಕತೆ

  • ಮೋಟರ ಮಹಮ್ಮದ

    ನಮ್ಮಂತಹ ಈಗಿನ ಜನಗಳಿಗೆ ಹೊಲ, ಮನೆ, ಪೂರ್ವಾರ್ಜಿತ ಆಸ್ತಿ ಪಾಸ್ತಿಗಳಲ್ಲಿ ಹೆಚ್ಚು ಆದರವಿಲ್ಲೆಂದು ನಮ್ಮ ಹಿರಿಯರು ಮೇಲಿಂದ ಮೇಲೆ ಏನನ್ನೋ ಒಟಗುಟ್ಟುತ್ತಿರುತ್ತಾರೆ. ನಾವಾದರೋ ಹಳ್ಳಿಯನ್ನು ಕಾಣದೆ ಎಷ್ಟೋ… Read more…

  • ವರ್ಗಿನೋರು

    ಆಗ್ಲೇ ವಾಟು ವಾಲಿತ್ತು. ಯೆಷ್ಟು ವಾಟು ವಾಲ್ದ್ರೇನು? ಬಳ್ಳಾರಿ ಬಿಸ್ಲೆಂದ್ರೆ ಕೇಳ್ಬೇಕೇ? ನಡೆವ... ದಾರ್ಗೆ ಕೆಂಡ ಸುರ್ದಂಗೆ. ನೆಲಂಭೋ ನೆಲಾ... ಝಣ ಝಣ. ‘ಅಲ್ಗೆ’ ಕಾದಂಗೆ. ಕಾಲಿಟ್ರೆ… Read more…

  • ಹೃದಯದ ತೀರ್ಪು

    ಬೆಳಿಗ್ಗೆ ಏಳು ಗಂಟೆಯ ಹೊತ್ತಿಗೆ ತಿಂಡಿ ಕೂಡ ಮಾಡದೆ ಹೊರ ಹೋಗುತ್ತಿದ್ದ ಯೂಸುಫ್, ಮಧ್ಯಾಹ್ನ ಮಾತ್ರ ಮನೆಯಲ್ಲಿ ಉಣ್ಣುತ್ತಿದ್ದ. ರಾತ್ರಿಯ ಊಟ ಅವನ ತಾಯಿಯ ಮನೆಯಲ್ಲಿ. ತಾಯಿಯ… Read more…

  • ಕರಾಚಿ ಕಾರಣೋರು

    ಮಳೆಗಾಲ ಆರಂಭವಾಯಿತೆಂದರೆ ಕುಂಞಿಕಣ್ಣ ಕುರುಪ್ಪನ ಏಣೆಲು ಗದ್ದೆಗೆ ನೇಜಿ ಕೆಲಸಕ್ಕೆ ಹೋಗಲು ಕಪಿಲಳ್ಳಿಯ ಹೆಂಗಸರು, ಗಂಡಸರು ತುದಿಗಾಲಲ್ಲಿ ಕಾಯುತ್ತಿರುತ್ತಾರೆ. ವರ್ಷವಿಡೀ ವಿಪ್ರರ ಮತ್ತು ವಿಪ್ರಾತಿವಿಪ್ರರ ಆಡಿಕೆ ತೋಟಗಳಲ್ಲಿ… Read more…

  • ಉರಿವ ಮಹಡಿಯ ಒಳಗೆ

    ಸಹ ಉದ್ಯೋಗಿಗಳ ಓಡಾಟ, ಗ್ರಾಹಕರೊಂದಿಗಿನ ಮೊಬೈಲ್ ಹಾಗೂ ದೂರವಾಣಿ ಸಂಭಾಷಣೆಗಳು, ಲ್ಯಾಪ್‌ಟಾಪಿನ ಶಬ್ದಗಳು ಎಲ್ಲಾ ಸ್ತಬ್ದವಾದಾಗಲೇ ಮಧುಕರನಿಗೆ ಕಚೇರಿಯ ಸಮಯ ಮೀರಿದ್ದು ಅರಿವಾಯಿತು. ಕುಳಿತಲ್ಲಿಂದಲೇ ತನ್ನ ಕುತ್ತಿಗೆಯನ್ನು… Read more…