Home / ಕವನ / ಅನುವಾದ / ಬೈಜಾಂಟಿಯಮ್ಮಿಗೆ ಯಾನ

ಬೈಜಾಂಟಿಯಮ್ಮಿಗೆ ಯಾನ


ಮುದುಕರಿಗೆ ತಕ್ಕ ನಾಡಲ್ಲ ಅದು. ಪ್ರಾಯದ
ಹೆಣ್ಣು ಗಂಡುಗಳೆಲ್ಲ ತೋಳತೆಕ್ಕೆಗಳಲ್ಲಿ,
ಹಕ್ಕಿ ಮರಮರದಲ್ಲಿ – ಸಾವಿರುವ ಸಂತಾನ – ಹಾಡಿನುಬ್ಬರದಲ್ಲಿ,
ಸ್ಯಾಮನ್ ಮೀನುಗಳ ಪಾತ, ಮೆಕರೆಲ್ ಕಿಕ್ಕಿರಿದ ಕಡಲು,
ಗಾಳಿ ನೆಲ ಜಲ ಜೀವಕೋಟಿ ಎಲ್ಲವು ಇಲ್ಲಿ ಗ್ರೀಷ್ಮದುದ್ದಕ್ಕೂ
ಹಾಡಿ ಕೊಂಡಾಡುವುವು ಪಡೆದದ್ದ, ಹಡೆದದ್ದ, ಮಡಿದದ್ದನ್ನೆಲ್ಲ
ವಿಷಯ ಸುಖಗಾನ ಸುಳಿಯಲ್ಲಿ ಕೆಡೆದು ಇವಕ್ಕೆ
ಕಾಲದಂಕೆಗೆ ಸಿಗದ ಧೀಶಕ್ತಿ ಸ್ಮಾರಕಗಳೆಂದರೆ ಉಪೇಕ್ಷೆ.


ದನಿಯೆತ್ತಿ ಆತ್ಮ ಚಪ್ಪಾಳೆಯಕ್ಕಿ
ಮರ್ತ್ಯವಸ್ತ್ರದ ಸುಕ್ಕುಸುಕ್ಕಿಗೂ ಹಾಡುತ್ತ ತಾರಸ್ವರದತ್ತ
ಏರದಿದ್ದರೆ ಅಯ್ಯ, ಮುದಿಮನುಷ್ಯ ಒಂದು ಕಃಪದಾರ್‍ಥ,
ಗೂಟಕ್ಕೆ ಸಿಕ್ಕಿಸಿದ ಹರಕು ಕೋಟು.
ಸ್ವಂತಸ್ಮಾರಕ ಮಂತ್ರಮುಗ್ಧನೆಲ ಅದು, ಅಲ್ಲಿ
ಹಾಡು ಕಲಿಸುವ ಶಾಲೆ ಎಲ್ಲಿ? ಎಂದೇ ಬಂದೆ
ಕಡಲುಗಳ ದಾಟಿ ನಾ ಇಲ್ಲಿಗೆ,
ಬೈಜಾಂಟಿಯಮ್ ಪವಿತ್ರ ನಗರಕ್ಕೆ.


ಚಿನ್ನಮೆಟ್ಟಿದ ಭಿತ್ತಿಚಿತ್ರ ಎನ್ನುವ ಹಾಗೆ
ದಿವ್ಯಾಗ್ನಿಯಲ್ಲಿ ನಿಂತಿರುವ ಓ ಋಷಿಗಳೇ
ಹೊರಬನ್ನಿ ದಿವ್ಯಾಗ್ನಿಯಿಂದ ಡೇಗೆಯ ಹಾಗೆ ಮಂಡಲಾಕಾರ ಚಲಿಸುತ್ತ,
ದಿವ್ಯಗಾಯನ ಕಲಿಸಬನ್ನಿ ಈ ಆತ್ಮಕ್ಕೆ,
ತಿನ್ನಿ ನನ್ನೆದೆಯನ್ನು; ಈ ಮೋಹಪೀಡಿತ ಆತ್ಮ
ಕಟ್ಟುವಡೆದಿದೆ ಒಂದು ಸಾಯುವ ಮೃಗಕ್ಕೆ;
ತಾನೇನು ಎನ್ನುವುದೆ ತಿಳಿಯದದು, ಬನ್ನಿ
ಬಾಚಿಕೊಳ್ಳಿರಿ ನನ್ನ ಶಾಶ್ವತ ಶಿಲ್ಪಸ್ಥಿತಿಗೆ.


ಪ್ರಕೃತಿಯಿಂದೊಂದು ಸಲ ಆಚೆ ಜಿಗಿದೆನೊ ಸಾಕು
ಬೇಕಿಲ್ಲ ಮುಂದೆಂದೂ ನಿಸರ್‍ಗ ನೀಡುವ ದೇಹ,
ಪಡೆವೆ ಗ್ರೀಸಿನ ವಿಶ್ವಕರ್‍ಮಿ ನಿರ್‍ಮಿಸುವಂಥ
ಬಡಿದ ಚಿನ್ನದ ಅಥವ ಚಿನ್ನ ಸವರಿದ ಶಿಲಕಾಯ,
ದರ್‍ಬಾರಿನಲ್ಲಿ ತೂಕಡಿಸುತ್ತಿರುವ ದೊರೆಯನ್ನು
ಎಚ್ಚರಿಸಲೆಂದು ಅಥವಾ ಹೊನ್ನರೆಂಬೆಯಲ್ಲಿ
ಕುಳಿತು ಬೈಜಾಂಟಿಯಮ್ಮಿನ ಕುಲಶ್ರೇಷ್ಠರಿಗೆ
ಭೂತ ವರ್‍ತಮಾನ ಭವಿಷ್ಯತ್ತುಗಳ ಹಾಡಲೆಂದು.
*****
ಮೂಲ: ವಿಲಿಯಂ ಬಟ್ಲರ್ ಏಟ್ಸ್

ಬೈಜಾಂಟಿಯಮ್ ಈಗಿನ ಇಸ್ತಾಂಬುಲ್ ನಗರ. ಅದರ ಪ್ರಾಚೀನ ಕಾಲದ ಸಂಸ್ಕೃತಿ ಏಟ್ಸನಿಗೆ ಬಹಳ ಪ್ರಿಯವಾದದ್ದು. ಒಂದು ಕಾಲದಲ್ಲಿ ಆಧ್ಯಾತ್ಮಿಕ, ಕಲಾತ್ಮಕ ಮತ್ತು ಲೌಕಿಕನೆಲೆಗಳ ಜ್ಞಾನ ವಿವೇಕಗಳು ಜನಜೀವನದಲ್ಲಿ ಒಟ್ಟಾಗಿ ಬೆಸೆದುಕೊಂಡಿದ್ದ ನಗರ ಅದು ಎಂದು ಕವಿ ಮೆಚ್ಚಿದ್ದಾನೆ. ‘ಪ್ರಾಚೀನ ಕಾಲಕ್ಕೆ ಹೋಗಿ ಒಂದು ತಿಂಗಳು ಕಾಲ ಕಳೆಯುವ ಅವಕಾಶ ಸಿಕ್ಕಲ್ಲಿ ನಾನು ಬೈಜಾಂಟಿಯಂ ನಗರಕ್ಕೆ ಹೋಗಲು ಬಯಸುತ್ತೇನೆ’ ಎಂದು ಏಟ್ಸ್ ತನ್ನ ‘ವಿಶನ್’ ಪುಸ್ತಕದಲ್ಲಿ ಹೇಳಿಕೊಂಡಿದ್ದಾನೆ. ಇಂಗ್ಲೆಂಡ್ ಏನಿದ್ದರೂ ಭೋಗನಗರಿ; ಸಾವಿನ ಅರಿವಿಲ್ಲದೆ ಭೋಗದಲ್ಲಿ ಮುಳುಗಿಹೋಗಿರುವಂಥದ್ದು ಅಲ್ಲದ ತನ್ನ ಹಳೆಯ ವೈಭವಗಳ ಕೊಂಡಾಟದಲ್ಲಿ ತಲ್ಲೀನವಾಗಿರುವಂತದ್ದು. ಅದನ್ನು ತೊರೆದು ಆತ್ಮದ ಅಮರತ್ವವನ್ನು ಕಲಿಸಿಕೊಡುವ ಬೈಜಾಂಟಿಯಮ್ಮಿಗೆ ಹೋಗಲು ಬಯಸುತ್ತಾನೆ ಕವಿ.

(೧) ಕವಿ ಈ ಪದ್ಯದಲ್ಲಿ ತನ್ನ ನಾಡನ್ನು (ಐರ್‍‌ಲೆಂಡ್ ಅಥವಾ ಇಂಗ್ಲೆಂಡನ್ನು) ಬಿಟ್ಟು ಪ್ರಾಚೀನ ಬೈಜಾಂಟಿಯಂ ಪಟ್ಟಣಕ್ಕೆ ಬಂದಿದ್ದಾನೆ.
(೧೩) ತನ್ನ ನಾಡು ಭೋಗಭೂಮಿ. ಅದು ಹಾಡಿನಬ್ಬರದಲ್ಲಿ ಮೈಮರೆತು ಬಾಳುತ್ತಿದೆ. ‘ಸಾಲ್ಮನ್’ ಮತ್ತು ‘ಮೆಕರೆಲ್’ ಭಿನ್ನಜಾತಿಯ ಮೀನುಗಳು. ತನ್ನ ನಾಡಿನಲ್ಲಿ ಯುವಕರು(ನೆಲ) ಹಕ್ಕಿಗಳು (ಬಾನು) ಮತ್ತು ಮೀನುಗಳು (ಜಲ) ಎಲ್ಲವೂ ಕಾಮಮೋಹಿತವಾಗಿವೆ ಎಂದು ಕವಿ ಸೂಚಿಸುತ್ತಿದ್ದಾನೆ.
(೧೯) ಮಂಡಲಾಕಾರದ ಚಲನೆ ಏಟ್ಸನ ಜೈ‌ರ್ ಕಲ್ಪನೆಯನ್ನು ಸೂಚಿಸುತ್ತದೆ.
(೨೯) ಏಟ್ಸ್ ಈ ಕವನಕ್ಕೆ ಒಂದು ವಿವರಣೆಯನ್ನು ಕೊಟ್ಟಿದ್ದಾನೆ. ‘ಬೈಜಾಂಟಿಯಂ ದೊರೆಯ ಅರಮನೆಯಲ್ಲಿ ಇತ್ತೆನ್ನಲಾದ ಚಿನ್ನಬೆಳ್ಳಿಗಳ ಮರದ ಮೇಲೆ ಕೃತಕಪಕ್ಷಿಗಳು ಕೂತು ಹಾಡುತ್ತಿದ್ದವು ಎಂದು ಎಲ್ಲೋ ಓದಿದ್ದೆ’ ಎಂದು ಆ ಟಿಪ್ಪಣಿಯಲ್ಲಿ ಏಟ್ಸ್ ಹೇಳುತ್ತಾನೆ.
(೩೧) ಚಿನ್ನದ ಹಕ್ಕಿಯಾಗಿ ಬೈಜಾಂಟಿಯಮ್ಮಿನ ಕುಲಶ್ರೇಷ್ಠರಿಗೆ ತಾನು ಹಾಡಬೇಕೆಂದು ಕವಿ ಹೇಳುತ್ತಾನೆ. ಈ ಪದ್ಯ ಬರೆಯುವ ಹೊತ್ತಿಗೆ ತನ್ನ ನಾಡಿನಲ್ಲಿ ಸಂಭವಿಸಿದ್ದ ಕೆಲವು ಘಟನೆಗಳಿಂದ ಸಾಮಾನ್ಯ ಜನವರ್‍ಗದ ಬಗ್ಗೆ ಅವನ ಮನಸ್ಸು ಕಹಿಯಾಗಿತ್ತು. ಸಾಹಿತ್ಯ ಸಂಸ್ಕೃತಿಗಳ ಬಗ್ಗೆ ಅವರಿಗೆ ಶ್ರೇಷ್ಠ ಅಭಿರುಚಿ ಇರಲಾರದೆಂಬ ಸಂಶಯ ಅವನಲ್ಲಿ ಹೊಕ್ಕಿತ್ತು. ಹಾಗೆಂದೇ ಇಲ್ಲಿ ಕುಲಶ್ರೇಷ್ಠರ ಮಾತು.

Tagged:

Leave a Reply

Your email address will not be published. Required fields are marked *

ಬೆಳಕಿನಿಂದ ಜಗಜಗಿಸುವ ಸಂಜೆ ರಾವು ಬಡಿದಂತೆ ಮಬ್ಬಾಗಿತ್ತು. ಈ ಮಬ್ಬು ಹಿಂದೆಂದೂ ಇದಿಲ್ಲ. ದೇಶದ ಹದಿನೇಳು ವರ್ಷದ ಸ್ವಾತಂತ್ರದಲ್ಲಿ, ಮಧ್ಯಮ ತರಗತಿಯ ಜೀವನ ಕೈ ಬಾಯಿಯಾಗಿದ್ದರೂ ದೂರದ ಆಶಯ ಹೊಂಗಿರಣವೊಂದು ಸದಾ ಹೊಳೆದು ಭಾವೀ ಪೀಳಿಗೆಯ ಮನೋಲ್ಲಾಸ ಮಾಡುತ್ತಿತ್ತು. ಆದರೆ ಈ ಮಬ್ಬುಗತ್ತ...

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...