Home / ಕವನ / ಕವಿತೆ / ಪ್ರಾರ್ಥನೆ

ಪ್ರಾರ್ಥನೆ

ಜಾಳು ಬೀಳಾಗಿ ಹಳೆನಾತ ಹೊಡೆಯುವೀ ಅಷಡ್ಡಾಳ ಬಟ್ಟೆಗಳ
ಕಿತ್ತೊಗೆದು ಮೈಗೊಪ್ಪವಾಗೊಪ್ಪುವಂಗಿಗಳ ತೊಡಿಸೋ
ಮರಗಟ್ಟದ ತೊಗಲುಗಳಲ್ಲಿ ಸಂವೇದನೆಯ ಮೊಳೆಸಿ
ರೋಮಾಂಚನವ ಚಿಗುರಿಸಿ
ರಂದ್ರರಂದ್ರವ ಬಯಲಗಾಳಿಗೆ ತೆರೆಸೋ
ನೀಲಿಗಟ್ಟಿರುವೀ ಧಮನಿಗಳಲ್ಲಿ
ಕೆಚ್ಚು ರೊಚ್ಚಿನ ಕೆಂಪು ಹರಿಸೋ
ಒಣಗಿ ಬೆಂಡಾಗಿ ಕಳಚಿ ಕುಸಿಯಲನುವಾಗಿರುವಸ್ಥಿ ಪಂಜರದ
ಮೂಲೆ ಮೂಳೆಗಳನ್ನುಕ್ಕುಗೊಳಿಸಿ ಸ್ಥಿರಗೊಳಿಸೋ
ಅಷ್ಟಾವಕ್ರವಾಗಿ ಅಂಕು ಡೊಂಕಾಗಿ ತುಂಡು ತುಂಡಾಗಿ
ಮಬ್ಬು ಮುಚ್ಚಿದೀ ನೋಟಗಳ
ರವಿಕಿರಣದಂತೆ ಸಹಜ ನೇರಗೊಳಿಸಿ ತೇಜಗೊಳಿಸೋ
ಓರೆ ಕೋರೆಗಳನೊಳವೊಗುವಂತೆ ಚೂಪುಗೊಳಿಸೋ
ಜಡತೆ ಜಿದ್ದು ಪಾಚಿಗಟ್ಟಿ
ಕೂಪಸ್ಥ ಬಂಡೆಯಾದ ಈ ಮಂಡೆಗೊಳಗಳ
ತಿಳಿಗೊಳಿಸೂ ಅರಳಿಸೂ ಸಹಸ್ರದಳದರವಿಂದದಂತೆ
ಭಾವದೊರತೆ ಬತ್ತಿ ಬರಡಾದೀ ಹಳ್ಳಗಳಲಿ
ದೇವರಸ ಗಂಗೆಯನುಕ್ಕಿಸಿ
ನಂದನವನವನರಳಿಸಿ ಹಿಗ್ಗಿಸೋ
ಹೊಂಡ ಹೊಂಡಗಳಲ್ಲಿ ಬಿದ್ದು
ತುಂಡು ತುಂಡು ತಿಂಡಿಗೂ ಭಂಟಾಡವಾಡುವೀ
ಕಪ್ಪೆ ಮೀನುಗಳನೆತ್ತೆತ್ತಿ
ವಿಶಾಲಸಾಗರದಲಿಳಿಸಿ ಬಾಳಿಸೊ
ಬೆದರು ಗೊಂಬೆಗಳೀ ಕಿವುಚು ಮೊಗವಾಡಗಳ ಕಳಚಿ
ಸೂರ್ಯ ಬಿಂಬಗಳ ನೈಜ ನಗೆಯ ತುಳುಕಿಸೋ
ಹರಿ ಹರಿದು ಕಚ್ಚಾಡಿ ಹೋರುವೀ ನಾಯಿಹದ್ದುಗಳ
ಉಗುರು ಹಲ್ಲುಗಳ ಕಿತ್ತು
ಸಹಜೀವನಕೆ ಸಾಧುಗೊಳಿಸೋ
ಕೊಳೆತು ನಾರುವೀ ತಿಪ್ಪೆ ಮನಗಳ
ಗುಡಿಸಿ ಸಾರಿಸೀ ಹಸನುಗೊಳಿಸೋ
ತಿಂದು ಮಲಗಿ ಓಡಾಡುವೀ ಬೆಂತರಗಳಲಿ
ಚೇತನದುಸಿರಾಡಿಸೋ
ನೂತನ ಹಸಿರು ಹೂ ಹಣ್ಣು ಕೊಡುವ
ಚಿರಂತನ ಸಿರಿ ಮೂಡಿಸೋ
ಬಿದ್ದವರ ಮಲಗಿರುವವರ
ಮತ್ತೆ ಮತ್ತೆ ಮರೆವಿಗೆ ಸಂದು ಸುಂದಾಗುವವರ
ಕತ್ತಲು ಒತ್ತೆಗೊಂಡವರ ಮಿತ್ತು ತುತ್ತುಗೊಳ್ಳುವವರ
ಎಬ್ಬಿಸೋ ತಂದೆ ಮೇಲೆಬ್ಬಿಸೋ
*****

Tagged:

Leave a Reply

Your email address will not be published. Required fields are marked *

ಬೆಳಕಿನಿಂದ ಜಗಜಗಿಸುವ ಸಂಜೆ ರಾವು ಬಡಿದಂತೆ ಮಬ್ಬಾಗಿತ್ತು. ಈ ಮಬ್ಬು ಹಿಂದೆಂದೂ ಇದಿಲ್ಲ. ದೇಶದ ಹದಿನೇಳು ವರ್ಷದ ಸ್ವಾತಂತ್ರದಲ್ಲಿ, ಮಧ್ಯಮ ತರಗತಿಯ ಜೀವನ ಕೈ ಬಾಯಿಯಾಗಿದ್ದರೂ ದೂರದ ಆಶಯ ಹೊಂಗಿರಣವೊಂದು ಸದಾ ಹೊಳೆದು ಭಾವೀ ಪೀಳಿಗೆಯ ಮನೋಲ್ಲಾಸ ಮಾಡುತ್ತಿತ್ತು. ಆದರೆ ಈ ಮಬ್ಬುಗತ್ತ...

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...