Home / ಕವನ / ಅನುವಾದ / ಬೈಜಾಂಟಿಯಮ್

ಬೈಜಾಂಟಿಯಮ್

ಮೂಲ: ವಿಲಿಯಂ ಬಟ್ಲರ್ ಏಟ್ಸ್

ಸರಿಯುವ ಹಿಂದೆ, ಹಗಲಿನ ಅಶುದ್ಧ ಪ್ರತಿಮೆಗಳು;
ನಿದ್ರಿಸಿದ್ದಾರೆ ಚಕ್ರವರ್‍ತಿಯ ಮತ್ತ ಸೈನಿಕರು;
ಇರುಳ ದನಿಯನುರಣನ ಮೆಲ್ಲಮೆಲ್ಲಗೆ ಅಳಿದು
ದೊಡ್ಡ ಚರ್‍ಚಿನ ಗಂಟೆ ಬಡಿದು, ಗಾಳಿಯಲೀಗ
ರಾತ್ರಿಂಚರರ ಹಾಡು. ಚಿಕ್ಕಯೋ ಚಂದ್ರನೋ
ಹಚ್ಚಿಟ್ಟ ಧವಳಗುಮ್ಮಟ ತಿರಸ್ಕರಿಸುತಿದೆ ಮರ್‍ತ್ಯನ ಸಮಸ್ತವನ್ನೂ,
ಮರ್‍ತ್ಯ ಬಾಳಿನ ಎಲ್ಲ ಸಂಕೀರ್‍ಣತೆಗಳನ್ನು
ಮರ್‍ತ್ಯಧಮನಿಗಳ ರೊಚ್ಚೆ ರೋಷಗಳನ್ನು

ತುಯ್ಯುತಿದೆ ಕಣ್ಣ ಮುಂದೊಂದು ಪ್ರತಿಮೆ, ಮನುಷ್ಯನೋ ನೆರಳೋ,
ನೆರಳೆನ್ನುವುದೆ ಸರಿ, ನೆರಳಿಗಿಂತಲು ಪ್ರತಿಮೆ ಎಂದರಿನ್ನೂ ಸರಿ;
ಮಮ್ಮಿವಸ್ತ್ರದಲಿ ಹುಗಿದಿಟ್ಟ ಅಧೋಲೋಕದ ಆತ್ಮ
ಸುತ್ತಬೇಕಾದ ಪಥವ ಬಿಚ್ಚಬಹುದು;
ಉಸಿರಿರದ ತೇವವಿಲ್ಲದ ಬಾಯಿಯೊಂದು
ಉಸಿರು ಬಿಗಿಹಿಡಿದ ಬಾಯಿಗಳ ತನ್ನಲ್ಲಿಗೆ ಕರೆಸಬಹುದು;
ಅತಿಮಾನುಷಕ್ಕೆ ಉಘೇ ಎನ್ನುವವ ನಾನು;
ಬಾಳಿನಲ್ಲಿನ ಸಾವು, ಸಾವಿನಲ್ಲಿನ ಬಾಳು ಎನ್ನುವೆ ಅದನ್ನು

ಇದು ಪವಾಡವೆ, ಹಕ್ಕಿಯೆ, ಹೊನ್ನಿನಲಿ ಕೊರೆದ ಕುಶಲ ಕೈಕಸುಬೆ?
ಹಕ್ಕಿಗಿಂತ, ಹಸ್ತಕೌಶಲಕ್ಕಿಂತ ಇದು ದಿಟ ಪವಾಡವೆ,
ನಕ್ಷತ್ರದೀಪ್ತ ಚಿನ್ನದ ಕೊಂಬೆಮೇಲೆ ಇದು ನೆಟ್ಟು ನಿಲಿಸಿದ್ದು
ಅಧೋಲೋಕದ ಹುಂಜಗಳ ಹಾಗೆ ಕೊರಳೆತ್ತಿ ಕೂಗಬಲ್ಲದ್ದು.
ಚಂದ್ರಕಾಂತಿಯ ತಿವಿತಕುದ್ದೀಪ್ತವಾಗಿ ಇದು ಮೂದಲಿಸೀತು ಕೂಗಿ
ನಿಜದ ಹಕ್ಕಿಗಳನ್ನು ಹೂವಿನೆಸಳುಗಳನ್ನು
ರಕ್ತದ್ದೊ ರೊಚ್ಚೆಯದೊ ಎಲ್ಲ ಗೋಜಲುಗಳನ್ನು
ಪರಿವರ್‍ತನೆಯೆ ಇರದ ಲೋಹವೈಭವದಲ್ಲಿ ಬೀಗಿ.

ಚಕ್ರವರ್‍ತಿಯ ಮಹಲ ನೃತ್ಯದಂಗಣದಲ್ಲಿ
ಅರಣಿ ಉದ್ದೀಪಿಸದ, ಉಕ್ಕು ಉರಿಹೊತ್ತಿಸದ, ಬಿರುಗಾಳಿ ಬಾಧಿಸದ,
ಜ್ವಾಲೆಯಿಂದಲೆ ಎದ್ದ ಜ್ವಾಲೆ ಜಿಗಿದಾಡುವುವು,
ಅಲ್ಲಿ ಬರುವುವು ರಕ್ತಸಂಜನಿತ ಜೀವಗಳು,
ಕೆರಳು ಮೊಳೆಸಿದ ತೊಡಕುಗಳನ್ನೆಲ್ಲ ನೀಗುವುವು,
ಲಯವಾಗಿ ನೃತ್ಯದಲಿ
ಸಮಾಧಿಯ ಮಧುರ ನೋವಿನಲಿ
ವಸ್ತ್ರದಂಚನ್ನು ಸಹ ಸುಡಲಾರದಂಥ ಜ್ವಾಲೆಯ ವೇದನೆಯಲ್ಲಿ

ಕೆಸರು ನೆತ್ತರ ಮಧ್ಯೆ ಡಾಲ್ಫಿನಿನ ಬೆನ್ನೇರಿ ಜೀವಗಳ ಸಾಲು,
ಸಾಲುಜೀವದ ಧಾರೆಯನ್ನು ಅಲ್ಲಲ್ಲೇ ಛೇದಿಸುವ ಕುಲುಮೆಗಳು,
ಚಕ್ರವರ್‍ತಿಯ ಗೃಹದ ಹೊನ್ನ ಕುಲುಮೆಗಳು!
ಒಡೆಯುತಿವೆ ಕೆರಳು ಮೂಡಿಸಿದ ಗೋಜಲುಗಳನ್ನು
ನೃತ್ಯದಂಗಣದ ಅಮೃತಶಿಲೆಯ ಹಾಸುಗಳು;
ಆ ಪ್ರತಿಮೆಗಳು ಅವುಗಳಿಂದ ಒಡಮೂಡುವ
ಬೇರೆ ಹೊಸ ಪ್ರತಿಮೆಗಳು,
ಆ ಡಾಲ್ಫಿನನ್ನು ಸೀಳಿರುವ, ಆ ಗಂಟೆದನಿ ಪೀಡಿಸುವ ಕಡಲುಗಳು.
*****
(೩೩) ಡಾಲ್ಫಿನ್ನಿನ ಬೆನ್ನೇರಿ: ಸತ್ತವರ ಜೀವಗಳು ಡಾಲ್ಫಿನ್ನಿನ ಬೆನ್ನು ಹತ್ತಿ ಪರಲೋಕಕ್ಕೆ ಬರುತ್ತವೆ ಎಂಬ ನಂಬಿಕೆ.

Tagged:

Leave a Reply

Your email address will not be published. Required fields are marked *

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...