Home / ಕವನ / ಅನುವಾದ / ಬೈಜಾಂಟಿಯಮ್

ಬೈಜಾಂಟಿಯಮ್

ಮೂಲ: ವಿಲಿಯಂ ಬಟ್ಲರ್ ಏಟ್ಸ್

ಸರಿಯುವ ಹಿಂದೆ, ಹಗಲಿನ ಅಶುದ್ಧ ಪ್ರತಿಮೆಗಳು;
ನಿದ್ರಿಸಿದ್ದಾರೆ ಚಕ್ರವರ್‍ತಿಯ ಮತ್ತ ಸೈನಿಕರು;
ಇರುಳ ದನಿಯನುರಣನ ಮೆಲ್ಲಮೆಲ್ಲಗೆ ಅಳಿದು
ದೊಡ್ಡ ಚರ್‍ಚಿನ ಗಂಟೆ ಬಡಿದು, ಗಾಳಿಯಲೀಗ
ರಾತ್ರಿಂಚರರ ಹಾಡು. ಚಿಕ್ಕಯೋ ಚಂದ್ರನೋ
ಹಚ್ಚಿಟ್ಟ ಧವಳಗುಮ್ಮಟ ತಿರಸ್ಕರಿಸುತಿದೆ ಮರ್‍ತ್ಯನ ಸಮಸ್ತವನ್ನೂ,
ಮರ್‍ತ್ಯ ಬಾಳಿನ ಎಲ್ಲ ಸಂಕೀರ್‍ಣತೆಗಳನ್ನು
ಮರ್‍ತ್ಯಧಮನಿಗಳ ರೊಚ್ಚೆ ರೋಷಗಳನ್ನು

ತುಯ್ಯುತಿದೆ ಕಣ್ಣ ಮುಂದೊಂದು ಪ್ರತಿಮೆ, ಮನುಷ್ಯನೋ ನೆರಳೋ,
ನೆರಳೆನ್ನುವುದೆ ಸರಿ, ನೆರಳಿಗಿಂತಲು ಪ್ರತಿಮೆ ಎಂದರಿನ್ನೂ ಸರಿ;
ಮಮ್ಮಿವಸ್ತ್ರದಲಿ ಹುಗಿದಿಟ್ಟ ಅಧೋಲೋಕದ ಆತ್ಮ
ಸುತ್ತಬೇಕಾದ ಪಥವ ಬಿಚ್ಚಬಹುದು;
ಉಸಿರಿರದ ತೇವವಿಲ್ಲದ ಬಾಯಿಯೊಂದು
ಉಸಿರು ಬಿಗಿಹಿಡಿದ ಬಾಯಿಗಳ ತನ್ನಲ್ಲಿಗೆ ಕರೆಸಬಹುದು;
ಅತಿಮಾನುಷಕ್ಕೆ ಉಘೇ ಎನ್ನುವವ ನಾನು;
ಬಾಳಿನಲ್ಲಿನ ಸಾವು, ಸಾವಿನಲ್ಲಿನ ಬಾಳು ಎನ್ನುವೆ ಅದನ್ನು

ಇದು ಪವಾಡವೆ, ಹಕ್ಕಿಯೆ, ಹೊನ್ನಿನಲಿ ಕೊರೆದ ಕುಶಲ ಕೈಕಸುಬೆ?
ಹಕ್ಕಿಗಿಂತ, ಹಸ್ತಕೌಶಲಕ್ಕಿಂತ ಇದು ದಿಟ ಪವಾಡವೆ,
ನಕ್ಷತ್ರದೀಪ್ತ ಚಿನ್ನದ ಕೊಂಬೆಮೇಲೆ ಇದು ನೆಟ್ಟು ನಿಲಿಸಿದ್ದು
ಅಧೋಲೋಕದ ಹುಂಜಗಳ ಹಾಗೆ ಕೊರಳೆತ್ತಿ ಕೂಗಬಲ್ಲದ್ದು.
ಚಂದ್ರಕಾಂತಿಯ ತಿವಿತಕುದ್ದೀಪ್ತವಾಗಿ ಇದು ಮೂದಲಿಸೀತು ಕೂಗಿ
ನಿಜದ ಹಕ್ಕಿಗಳನ್ನು ಹೂವಿನೆಸಳುಗಳನ್ನು
ರಕ್ತದ್ದೊ ರೊಚ್ಚೆಯದೊ ಎಲ್ಲ ಗೋಜಲುಗಳನ್ನು
ಪರಿವರ್‍ತನೆಯೆ ಇರದ ಲೋಹವೈಭವದಲ್ಲಿ ಬೀಗಿ.

ಚಕ್ರವರ್‍ತಿಯ ಮಹಲ ನೃತ್ಯದಂಗಣದಲ್ಲಿ
ಅರಣಿ ಉದ್ದೀಪಿಸದ, ಉಕ್ಕು ಉರಿಹೊತ್ತಿಸದ, ಬಿರುಗಾಳಿ ಬಾಧಿಸದ,
ಜ್ವಾಲೆಯಿಂದಲೆ ಎದ್ದ ಜ್ವಾಲೆ ಜಿಗಿದಾಡುವುವು,
ಅಲ್ಲಿ ಬರುವುವು ರಕ್ತಸಂಜನಿತ ಜೀವಗಳು,
ಕೆರಳು ಮೊಳೆಸಿದ ತೊಡಕುಗಳನ್ನೆಲ್ಲ ನೀಗುವುವು,
ಲಯವಾಗಿ ನೃತ್ಯದಲಿ
ಸಮಾಧಿಯ ಮಧುರ ನೋವಿನಲಿ
ವಸ್ತ್ರದಂಚನ್ನು ಸಹ ಸುಡಲಾರದಂಥ ಜ್ವಾಲೆಯ ವೇದನೆಯಲ್ಲಿ

ಕೆಸರು ನೆತ್ತರ ಮಧ್ಯೆ ಡಾಲ್ಫಿನಿನ ಬೆನ್ನೇರಿ ಜೀವಗಳ ಸಾಲು,
ಸಾಲುಜೀವದ ಧಾರೆಯನ್ನು ಅಲ್ಲಲ್ಲೇ ಛೇದಿಸುವ ಕುಲುಮೆಗಳು,
ಚಕ್ರವರ್‍ತಿಯ ಗೃಹದ ಹೊನ್ನ ಕುಲುಮೆಗಳು!
ಒಡೆಯುತಿವೆ ಕೆರಳು ಮೂಡಿಸಿದ ಗೋಜಲುಗಳನ್ನು
ನೃತ್ಯದಂಗಣದ ಅಮೃತಶಿಲೆಯ ಹಾಸುಗಳು;
ಆ ಪ್ರತಿಮೆಗಳು ಅವುಗಳಿಂದ ಒಡಮೂಡುವ
ಬೇರೆ ಹೊಸ ಪ್ರತಿಮೆಗಳು,
ಆ ಡಾಲ್ಫಿನನ್ನು ಸೀಳಿರುವ, ಆ ಗಂಟೆದನಿ ಪೀಡಿಸುವ ಕಡಲುಗಳು.
*****
(೩೩) ಡಾಲ್ಫಿನ್ನಿನ ಬೆನ್ನೇರಿ: ಸತ್ತವರ ಜೀವಗಳು ಡಾಲ್ಫಿನ್ನಿನ ಬೆನ್ನು ಹತ್ತಿ ಪರಲೋಕಕ್ಕೆ ಬರುತ್ತವೆ ಎಂಬ ನಂಬಿಕೆ.

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...