Home / ಕಥೆ / ಸಣ್ಣ ಕಥೆ / ಕುಟೀರವಾಣಿ

ಕುಟೀರವಾಣಿ

ಪೀಠಿಕೆ

ನನ್ನ ಬಡಗುಡಿಸಲ ಹೆಸರು “ಆನಂದಕುಟೀರ”.

ಒಂದು ದಿನ ನಡುಮಧ್ಯಾಹ್ನ. ಕುಟೀರದೊಳಗೆ ಮುರುಕು ಕಿಟಿಕಿಯ ಹತ್ತಿರ ಕುಳಿತು, ಹೊರಗಿನ ಪ್ರಸಂಚವನು ನೋಡುತಿದ್ದೆ. ಮನಸು ಬೇಸರದಿಂದ ತುಂಬಿ ಹೋಗಿತ್ತು. ಹೃದಯವು ನಿರಾಶೆಯಿಂದ ಬಿರಿಯುತಿತ್ತು. ಎಷ್ಟು ಆಸೆಗಳು! . . . ಎಷ್ಟು ಉದ್ಯಮ!! ಒಂದೂ ನೆರವೇರಲಿಲ್ಲವಲಾ!- ಎಂಬ ನೋವೊಂದು ಉಳಿದಿತ್ತು.

ಅಸೆಯೋ, ಆಕಾಶವನೇ ಆವರಿಸುವಂತಹುದು!– ಕಡಲನೇ ಹೀರಿ ಕುಡಿಯುವಂತಹುದು!! ಶಕ್ತಿ ಮಾತ್ರ ಇಲ್ಲ! ಇದೆಂತಹ ವಿಚಿತ್ರ! ಇಷ್ಟು ದುರ್ಬಲದ ದೇಹದಲಿ ಅದೆನಿತು ಪ್ರಬಲದಾಸೆಗಳು!

ನಿರಾಶೆ-ಬೇಸರ ಎಲ್ಲ, ಕುಟೀರದ-ಆನಂದಕುಟೀರದ-ಒಳಗೆ. ಕಿಟಕಿಯ ಹೊರಗೆ ಎಷ್ಟು ನೋಡಿದರೂ, ಎಲ್ಲಿ ನೋಡಿದರೂ ಆಸೆ ಭರವಸೆಗಳೇ ಕಣ್ಣನು ಒತ್ತುತಿವೆ! ಕಿವಿಯಲಿಳಿಯುತಿವೆ!

ದೂರದ ಕಡಲತೀರದಿಂದ, ಅಲೆಯ ಫೋಷೆ ಅವಿಚ್ಛಿನ್ನವಾಗಿ ಭರವಸೆಯ ಸಂದೇಶವನು ಬೀರುತಿದೆ.

ಅದೋ ಆ ಮರ, ಈ ಗಿಡ, ಅಲ್ಲಿರುವ ಬಳ್ಳಿ, ಇಲ್ಲಿ ಕಾಣುವ ಪೊದೆ ಪ್ರತಿಯೊಂದರಲೂ ಉಕ್ಕುತಿದೆ ಆಸೆ! ತೋರುತಿದೆ ಚಿಗುರಿ ಹೂಬಿಟ್ಟು ಹಣ್ಣಾಗುವ ಭರವಸೆ!

ಅದೋ ಆ ಹಸುರುಕ್ಕಿ ಹಬ್ಬಿರುವ ಪೊದೆಯಲೊಂದು ಪುಟ್ಟಹಕ್ಕಿ ಕುಳಿತು ಹಾಡುತಿದೆ. ಅದರ ಹೆಸರೇನೋ ನಾನರಿಯೆ. ನನಗೆ ಕಾಣುತಿರುವುದು ಅದರ ಬಣ್ಣ; ನನಗೆ ಕೇಳುತಿರುವುದು ಅದರ ಗಾನ. ಏನು ಸೊಗಸಿನ ಬಣ್ಣ! ಅದೆಷ್ಟು ತೆರನ ರಾಗ! ಒಂದು ಸಲ ಚಿಮ್ಮುವುದು ತಿಳಿನೀರ ಚಿಲುಮೆಯಂತೆ! ಒಂದು ಸಲ ಉರುಳುರುಳಿ ಹೊಮ್ಮುವುದು ಕಿರುಝರಿಯಂತೆ!! ಬಣ್ಣದ ಪುತ್ಥಳಿಯಲಿ ಗಾನದಮೃತ! ಅದರ ಕೋಮಲವಾದ ಕಂಠದಲಿ ಹುಟ್ಟಿ ಹರಿಯುತಿದೆ ಭರವಸೆ! ಆಹಾ! ಯಾರಿಗಾಗಿ ಈ ಗಾನಮಧು….?

ನಿರಾಶೆ ನಿರ್‍ನಾಮವಾಗಿ ಶಾಂತಿ ಮೊಳೆಯತೊಡಗಿತು.

“ಪಕ್ಷೀ, ನಿನ್ನ ಹೆಸರೇನು?” ಎಂದು ಕೇಳಿದೆ.

“ನಾನರಿಯೆ” ಎಂದು ಹಾಡಿತು ಹಕ್ಕಿ.

ಆಹಾ! ಹೆಸರಿಲ್ಲದ ಪಕ್ಷಿ! ಆದರೇನು? ಕಾಗೆಗೆ ಹೆಸರಿದೆ! ಗೂಗೆಗೆ ಹೆಸರಿದೆ! ನನಗೂ ಹೆಸರಿದೆ!- ಬಂತೆ ಭಾಗ್ಯ? ಖ್ಯಾತನಾಮರೆನಿತು ಜನ ನಿರ್‍ನಾಮರಾಗಿಲ್ಲ! ಹೆಸರಿಲ್ಲದಿರೇನು? ತರತರದ ರಾಗ ರುಚಿಯಿರೆ!-ಗಾನದಿಂಪಿರೆ!

“ಓ! ಹೆಸರಿಲ್ಲದ ಪಕ್ಷಿಯೇ, ಇಲ್ಲಿ ಬಾ” ಎಂದೆ.

ಪಕ್ಷಿಯು ಹಾರಿಬಂದು ಕಿಟಕಿಯಲ್ಲಿ ಕುಳಿತು,-

“ಕರೆದುದೇಕೆ?” ಎಂದಿತು,

“ಅನಾಮಿಕ, ಯಾರಿಗಾಗಿ-ನಿನ್ನ ಗಾನ?” ಎಂದು ಕೇಳಿದೆ.

“ಯಾರು ಮನವಿಟ್ಟು, ಕಿವಿಗೊಟ್ಟು ಎದೆತೆರೆದು ಆಲಿಸುವರೋ ಅವರಿಗೆ”.

“ಆಹಾ! ಇದೊ-ಇದೋ ನನ್ನ ಕಿವಿ, ನನ್ನ ಮನ, ನನ್ನ ಹೃದಯ ನಿನ್ನವು. ನನಗೆ ಗಾನ ಮಾಡುವೆಯಾ?”

“ಓಹೊ! ಮಾಡುವೆ”.

“ದಿನದಿನವೂ ಹಾಡುವೆಯಾ?”

“ದಿನದಿನವೂ ಹಾಡುವೆ. ದಿನದಿನವೂ ಹಾಡುತಿರುವೆ!”

“ಆಹಾ? ಇದೆ ಮೊದಲು ನಾ ಕೇಳಿದುದು!”

“ಅದು ನನ್ನ ತಪ್ಪೆ? ನಿನ್ನೆಡೆಯಲಾಸೆಗೆಡೆಗೊಟ್ಟೆ! ಕಡಲ ಹೀರಿ ಅಂಬರವನಪ್ಪುವ ಆಸೆ! ನಿನ್ನ ಮನ ಮುದುರಿ ಕಿವಿ ಮುಚ್ಚಿತು! ಇಂತಿರಲು ಹೆಸರಿಲ್ಲದ ಬಡಪಾಯಿಯ ಗಾನವ ಕೇಳಲು ಸಮಯವೆಲ್ಲಿ?”

“ಇಲ್ಲ, ಇಲ್ಲ! ಹಾಗೆನ್ನದಿರು ಕಾಯ ತಳೆದ ಕಾಮನ ಬಿಲ್ಲೇ! ಈಗ ಎಲ್ಲ ಆಸೆಗಳೂ ಕರಗಿ, ಆರಿ ಗುರುತಿಲ್ಲದಾದುವು. ಹೊಸತೊಂದು ಆಸೆ ಮೂಡುತಿದೆ ಎದೆಯಲಿ!”

“ಏನದು?”

“ನಿನ್ನ ಗಾನದಮೃತದಲಿ ತೋಯಚಬೇಕೆಂದು-ತಣಿಯ ಬೇಕೆಂದು!”

“ನಿನ್ನಾಸೆ ಫಲಿಸಿತೆಂದು ತಿಳಿ! ಬಯಕೆ ತೋರಲು, ಇಲ್ಲಿ ಬಂದು ಕುಳಿತು ಒಂದು ಸಲ ನೆನೆ ನನ್ನ; ತೋಯಿಸುವೆನು-ತಣಿಸುವೆನು ನಿನ್ನ!”

“ಸುಖಿಯಾದೆ!….. ಇರಲ್ಲಿ ನಿನ್ನ ಗಾನಕೇನ ಕೊಡಲಿ?”

“ನಿನ್ನ ಕಿವಿ, ನಿನ್ನ ಮನ, ನಿನ್ನ ಎದೆ!”
* * *

ನಾನಂದಿನಿಂದಾ ಪಕ್ಷಿಯ ಗೆಳೆಯನಾದೆ!

ಯಾವ ದಿನವಾದರೂ ಸರಿಯೆ, ಯಾವ ಹೊತ್ತಾದರೂ ಸರಿಯೆ, ಮುರುಕು ಕಿಟಿಕಿಯ ಬಳಿ ನಾ ಕುಳಿತು ಗೆಳೆಯನನೊಮ್ಮೆ ನೆನೆಯೆ ಅವನು ಎಲ್ಲಿಂದಲೋ ಮೂಡಿ ಬರುತಾನೆ! -ಹಾಡಿಕೊಂಡೇ ಬರುತಾನೆ! ಎನಿತು ದಿನ ಕೇಳಿರುವೆನೋ! ಏನೇನು ಕೇಳಿರುವೆನೋ! ಎಣಿಕೆಯುಂಟೆ? ಎಂತಹ ಗಾನರಸಲಹರಿ! ಅದರಲೇನು ರಾಗದೂರ್‍ಮಿ ಮಾಲೆ! ಒಂದೊಂದು ಗಾನವೂ ಒಂದೊಂದು ಕಥೆ! ಆ ಗಾನ ಕಥೆಗಳ ಸುಖವೋ ದುಃಖವೋ!-ಧೈರ್‍ಯವೋ ದೈನ್ಯವೊ!- ಪ್ರಣಯವೋ ಪ್ರೇಮವೋ!- ಚೆಲುವೋ ಒಲವೊ!

ಇದೋ, ಇವು ನನಗೆ ಆ ಪುಟ್ಟ ಅನಾಮಿಕ ಅಂಬರವಿಹಾರಿಯು ಹಾಡಿದ ಅಮರಗಾನಗಳಲಿ ಕೆಲವು. ಅದರ ಕಂಠಸಿರಿಯನೀ ಬಡ ನುಡಿಗಳಲಿ ವರ್‍ಣಿಸಲೆತ್ಲಿಸಿರುವೆನು.

ರಸಿಕರೂ ಸಹೃದಯರೂ ಆದ ಶ್ರೋತೃಗಳಿರಾ, ಮನವಿಟ್ಟು, ಕಿವಿಗೊಟ್ಟು ಕೇಳಿ-ಎದೆದೆರೆದು. ತುಂಬಿಕೊಳಿ. ನೀವು ಮೆಚ್ಚಿ ತಲೆ ದೂಗಿದರೆ, ನಾನು ಕಿಟಿಕಿಯ ಬಳಿ ಕುಳಿತುದು ಸಾರ್‍ಥಕವಾಯ್ತು- ಪಕ್ಷಿಯು ಹಾಡಿದುದೂ ಸಾರ್‍ಥಕವಾಯ್ತು.

ಇಂತು-

ಕುಟೀರವಾಸಿ
ಆನಂದ.
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...