Home / ಕಥೆ / ಸಣ್ಣ ಕಥೆ / ಕುಟೀರವಾಣಿ

ಕುಟೀರವಾಣಿ

ಪೀಠಿಕೆ

ನನ್ನ ಬಡಗುಡಿಸಲ ಹೆಸರು “ಆನಂದಕುಟೀರ”.

ಒಂದು ದಿನ ನಡುಮಧ್ಯಾಹ್ನ. ಕುಟೀರದೊಳಗೆ ಮುರುಕು ಕಿಟಿಕಿಯ ಹತ್ತಿರ ಕುಳಿತು, ಹೊರಗಿನ ಪ್ರಸಂಚವನು ನೋಡುತಿದ್ದೆ. ಮನಸು ಬೇಸರದಿಂದ ತುಂಬಿ ಹೋಗಿತ್ತು. ಹೃದಯವು ನಿರಾಶೆಯಿಂದ ಬಿರಿಯುತಿತ್ತು. ಎಷ್ಟು ಆಸೆಗಳು! . . . ಎಷ್ಟು ಉದ್ಯಮ!! ಒಂದೂ ನೆರವೇರಲಿಲ್ಲವಲಾ!- ಎಂಬ ನೋವೊಂದು ಉಳಿದಿತ್ತು.

ಅಸೆಯೋ, ಆಕಾಶವನೇ ಆವರಿಸುವಂತಹುದು!– ಕಡಲನೇ ಹೀರಿ ಕುಡಿಯುವಂತಹುದು!! ಶಕ್ತಿ ಮಾತ್ರ ಇಲ್ಲ! ಇದೆಂತಹ ವಿಚಿತ್ರ! ಇಷ್ಟು ದುರ್ಬಲದ ದೇಹದಲಿ ಅದೆನಿತು ಪ್ರಬಲದಾಸೆಗಳು!

ನಿರಾಶೆ-ಬೇಸರ ಎಲ್ಲ, ಕುಟೀರದ-ಆನಂದಕುಟೀರದ-ಒಳಗೆ. ಕಿಟಕಿಯ ಹೊರಗೆ ಎಷ್ಟು ನೋಡಿದರೂ, ಎಲ್ಲಿ ನೋಡಿದರೂ ಆಸೆ ಭರವಸೆಗಳೇ ಕಣ್ಣನು ಒತ್ತುತಿವೆ! ಕಿವಿಯಲಿಳಿಯುತಿವೆ!

ದೂರದ ಕಡಲತೀರದಿಂದ, ಅಲೆಯ ಫೋಷೆ ಅವಿಚ್ಛಿನ್ನವಾಗಿ ಭರವಸೆಯ ಸಂದೇಶವನು ಬೀರುತಿದೆ.

ಅದೋ ಆ ಮರ, ಈ ಗಿಡ, ಅಲ್ಲಿರುವ ಬಳ್ಳಿ, ಇಲ್ಲಿ ಕಾಣುವ ಪೊದೆ ಪ್ರತಿಯೊಂದರಲೂ ಉಕ್ಕುತಿದೆ ಆಸೆ! ತೋರುತಿದೆ ಚಿಗುರಿ ಹೂಬಿಟ್ಟು ಹಣ್ಣಾಗುವ ಭರವಸೆ!

ಅದೋ ಆ ಹಸುರುಕ್ಕಿ ಹಬ್ಬಿರುವ ಪೊದೆಯಲೊಂದು ಪುಟ್ಟಹಕ್ಕಿ ಕುಳಿತು ಹಾಡುತಿದೆ. ಅದರ ಹೆಸರೇನೋ ನಾನರಿಯೆ. ನನಗೆ ಕಾಣುತಿರುವುದು ಅದರ ಬಣ್ಣ; ನನಗೆ ಕೇಳುತಿರುವುದು ಅದರ ಗಾನ. ಏನು ಸೊಗಸಿನ ಬಣ್ಣ! ಅದೆಷ್ಟು ತೆರನ ರಾಗ! ಒಂದು ಸಲ ಚಿಮ್ಮುವುದು ತಿಳಿನೀರ ಚಿಲುಮೆಯಂತೆ! ಒಂದು ಸಲ ಉರುಳುರುಳಿ ಹೊಮ್ಮುವುದು ಕಿರುಝರಿಯಂತೆ!! ಬಣ್ಣದ ಪುತ್ಥಳಿಯಲಿ ಗಾನದಮೃತ! ಅದರ ಕೋಮಲವಾದ ಕಂಠದಲಿ ಹುಟ್ಟಿ ಹರಿಯುತಿದೆ ಭರವಸೆ! ಆಹಾ! ಯಾರಿಗಾಗಿ ಈ ಗಾನಮಧು….?

ನಿರಾಶೆ ನಿರ್‍ನಾಮವಾಗಿ ಶಾಂತಿ ಮೊಳೆಯತೊಡಗಿತು.

“ಪಕ್ಷೀ, ನಿನ್ನ ಹೆಸರೇನು?” ಎಂದು ಕೇಳಿದೆ.

“ನಾನರಿಯೆ” ಎಂದು ಹಾಡಿತು ಹಕ್ಕಿ.

ಆಹಾ! ಹೆಸರಿಲ್ಲದ ಪಕ್ಷಿ! ಆದರೇನು? ಕಾಗೆಗೆ ಹೆಸರಿದೆ! ಗೂಗೆಗೆ ಹೆಸರಿದೆ! ನನಗೂ ಹೆಸರಿದೆ!- ಬಂತೆ ಭಾಗ್ಯ? ಖ್ಯಾತನಾಮರೆನಿತು ಜನ ನಿರ್‍ನಾಮರಾಗಿಲ್ಲ! ಹೆಸರಿಲ್ಲದಿರೇನು? ತರತರದ ರಾಗ ರುಚಿಯಿರೆ!-ಗಾನದಿಂಪಿರೆ!

“ಓ! ಹೆಸರಿಲ್ಲದ ಪಕ್ಷಿಯೇ, ಇಲ್ಲಿ ಬಾ” ಎಂದೆ.

ಪಕ್ಷಿಯು ಹಾರಿಬಂದು ಕಿಟಕಿಯಲ್ಲಿ ಕುಳಿತು,-

“ಕರೆದುದೇಕೆ?” ಎಂದಿತು,

“ಅನಾಮಿಕ, ಯಾರಿಗಾಗಿ-ನಿನ್ನ ಗಾನ?” ಎಂದು ಕೇಳಿದೆ.

“ಯಾರು ಮನವಿಟ್ಟು, ಕಿವಿಗೊಟ್ಟು ಎದೆತೆರೆದು ಆಲಿಸುವರೋ ಅವರಿಗೆ”.

“ಆಹಾ! ಇದೊ-ಇದೋ ನನ್ನ ಕಿವಿ, ನನ್ನ ಮನ, ನನ್ನ ಹೃದಯ ನಿನ್ನವು. ನನಗೆ ಗಾನ ಮಾಡುವೆಯಾ?”

“ಓಹೊ! ಮಾಡುವೆ”.

“ದಿನದಿನವೂ ಹಾಡುವೆಯಾ?”

“ದಿನದಿನವೂ ಹಾಡುವೆ. ದಿನದಿನವೂ ಹಾಡುತಿರುವೆ!”

“ಆಹಾ? ಇದೆ ಮೊದಲು ನಾ ಕೇಳಿದುದು!”

“ಅದು ನನ್ನ ತಪ್ಪೆ? ನಿನ್ನೆಡೆಯಲಾಸೆಗೆಡೆಗೊಟ್ಟೆ! ಕಡಲ ಹೀರಿ ಅಂಬರವನಪ್ಪುವ ಆಸೆ! ನಿನ್ನ ಮನ ಮುದುರಿ ಕಿವಿ ಮುಚ್ಚಿತು! ಇಂತಿರಲು ಹೆಸರಿಲ್ಲದ ಬಡಪಾಯಿಯ ಗಾನವ ಕೇಳಲು ಸಮಯವೆಲ್ಲಿ?”

“ಇಲ್ಲ, ಇಲ್ಲ! ಹಾಗೆನ್ನದಿರು ಕಾಯ ತಳೆದ ಕಾಮನ ಬಿಲ್ಲೇ! ಈಗ ಎಲ್ಲ ಆಸೆಗಳೂ ಕರಗಿ, ಆರಿ ಗುರುತಿಲ್ಲದಾದುವು. ಹೊಸತೊಂದು ಆಸೆ ಮೂಡುತಿದೆ ಎದೆಯಲಿ!”

“ಏನದು?”

“ನಿನ್ನ ಗಾನದಮೃತದಲಿ ತೋಯಚಬೇಕೆಂದು-ತಣಿಯ ಬೇಕೆಂದು!”

“ನಿನ್ನಾಸೆ ಫಲಿಸಿತೆಂದು ತಿಳಿ! ಬಯಕೆ ತೋರಲು, ಇಲ್ಲಿ ಬಂದು ಕುಳಿತು ಒಂದು ಸಲ ನೆನೆ ನನ್ನ; ತೋಯಿಸುವೆನು-ತಣಿಸುವೆನು ನಿನ್ನ!”

“ಸುಖಿಯಾದೆ!….. ಇರಲ್ಲಿ ನಿನ್ನ ಗಾನಕೇನ ಕೊಡಲಿ?”

“ನಿನ್ನ ಕಿವಿ, ನಿನ್ನ ಮನ, ನಿನ್ನ ಎದೆ!”
* * *

ನಾನಂದಿನಿಂದಾ ಪಕ್ಷಿಯ ಗೆಳೆಯನಾದೆ!

ಯಾವ ದಿನವಾದರೂ ಸರಿಯೆ, ಯಾವ ಹೊತ್ತಾದರೂ ಸರಿಯೆ, ಮುರುಕು ಕಿಟಿಕಿಯ ಬಳಿ ನಾ ಕುಳಿತು ಗೆಳೆಯನನೊಮ್ಮೆ ನೆನೆಯೆ ಅವನು ಎಲ್ಲಿಂದಲೋ ಮೂಡಿ ಬರುತಾನೆ! -ಹಾಡಿಕೊಂಡೇ ಬರುತಾನೆ! ಎನಿತು ದಿನ ಕೇಳಿರುವೆನೋ! ಏನೇನು ಕೇಳಿರುವೆನೋ! ಎಣಿಕೆಯುಂಟೆ? ಎಂತಹ ಗಾನರಸಲಹರಿ! ಅದರಲೇನು ರಾಗದೂರ್‍ಮಿ ಮಾಲೆ! ಒಂದೊಂದು ಗಾನವೂ ಒಂದೊಂದು ಕಥೆ! ಆ ಗಾನ ಕಥೆಗಳ ಸುಖವೋ ದುಃಖವೋ!-ಧೈರ್‍ಯವೋ ದೈನ್ಯವೊ!- ಪ್ರಣಯವೋ ಪ್ರೇಮವೋ!- ಚೆಲುವೋ ಒಲವೊ!

ಇದೋ, ಇವು ನನಗೆ ಆ ಪುಟ್ಟ ಅನಾಮಿಕ ಅಂಬರವಿಹಾರಿಯು ಹಾಡಿದ ಅಮರಗಾನಗಳಲಿ ಕೆಲವು. ಅದರ ಕಂಠಸಿರಿಯನೀ ಬಡ ನುಡಿಗಳಲಿ ವರ್‍ಣಿಸಲೆತ್ಲಿಸಿರುವೆನು.

ರಸಿಕರೂ ಸಹೃದಯರೂ ಆದ ಶ್ರೋತೃಗಳಿರಾ, ಮನವಿಟ್ಟು, ಕಿವಿಗೊಟ್ಟು ಕೇಳಿ-ಎದೆದೆರೆದು. ತುಂಬಿಕೊಳಿ. ನೀವು ಮೆಚ್ಚಿ ತಲೆ ದೂಗಿದರೆ, ನಾನು ಕಿಟಿಕಿಯ ಬಳಿ ಕುಳಿತುದು ಸಾರ್‍ಥಕವಾಯ್ತು- ಪಕ್ಷಿಯು ಹಾಡಿದುದೂ ಸಾರ್‍ಥಕವಾಯ್ತು.

ಇಂತು-

ಕುಟೀರವಾಸಿ
ಆನಂದ.
*****

Tagged:

Leave a Reply

Your email address will not be published. Required fields are marked *

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...

ಬೆಳಿಗ್ಗೆಯಿಂದ ಕತ್ತಲೆಯವರೆಗೂ ಬಸ್ ಸ್ಟಾಂಡಿನಲ್ಲಿ ಬಸ್ಸುಗಳಿಗೆ ಹತ್ತಿ ಇಳಿದುಕೊಂಡು ಎಷ್ಟು ಗೋಗರೆದು ಬಿಕ್ಷೆ ಬೇಡಿದರೂ ಆ ಹುಡುಗನಿಗೆ ಮಧ್ಯಾಹ್ನದ ಊಟ ಮಾಡುವಷ್ಟು ಹಣ ಸಂಗ್ರಹವಾಗುತ್ತಿರಲಿಲ್ಲ. ಮಧ್ಯಾಹ್ನ ಬಿಸ್ಕಿಟು ಮತ್ತು ನಲ್ಲಿ ನೀರು ಕುಡಿದು ಹಸಿವು ತಣಿಸಿದರೂ ರಾತ್ರಿಯ ಊಟಕ್ಕ...