Home / ಕವನ / ಅನುವಾದ / ಸರ್‍ಕಸ್ ಕಂಪೆನಿ ಮುಚ್ಚಿದ್ದು

ಸರ್‍ಕಸ್ ಕಂಪೆನಿ ಮುಚ್ಚಿದ್ದು

ಮೂಲ: ವಿಲಿಯಂ ಬಟ್ಲರ್ ಏಟ್ಸ್

ಕವನಕ್ಕೆ ವಸ್ತು ಸಿಗಲಿಲ್ಲ, ವ್ಯರ್‍ಥ ಪ್ರಯತ್ನಿಸಿದ್ದೆಲ್ಲ
ಪ್ರತಿದಿನ ಪರದಾಟ, ಆರುವಾರ ಕಳೆದರೂ ಇಲ್ಲ,
ಶಾಂತನಾಗುವುದೆ ಉತ್ತಮ ಮುದುಕ ಅಲ್ಲಿಗೆ;
ವಯಸ್ಸಾಗುವ ಮುಂಚೆ ಪ್ರತಿ ಚಳಿಗಾಲ ಬೇಸಿಗೆ
ಆಟಕ್ಕಿದ್ದವು ನನ್ನ ಸರ್‍ಕಸ್ ಪ್ರಾಣಿಗಳೆಲ್ಲ
ಮೆಟ್ಟುಗಾಲನ್ನು ಕಟ್ಟಿಕೊಂಡ ಆ ಹುಡುಗರು,
ಕಣ್ಣು ಕುಕ್ಕುವ ಹಾಗೆ ಥಳಥಳಿಸುತ್ತಿದ್ದ ರಥ,
ಸಿಂಹಗಳು ಹೆಣ್ಣುಗಳು ಏನೆಲ್ಲ, ಎಲ್ಲ ಆ ದೇವರೇ ಬಲ್ಲ.

ಇನ್ನೇನಿದೆ ಹೊರಡುವುದೆ ಹಳೆವಸ್ತುಗಳ ಸ್ಮರಣೆಗೆ:
ಮೂಗುದಾರಕ್ಕೆ ಸಿಕ್ಕು ಮೂರುಮೋಹಕ ದ್ವೀಪಗಳಲ್ಲಿ
ವ್ಯರ್‍ಥ ಹರ್‍ಷ, ವ್ಯರ್‍ಥಯುದ್ಧ ವ್ಯರ್‍ಥ ಶಾಂತಿಗಳ
ರೂಪಕ ಸ್ವಪ್ನಗಳಲ್ಲಿ ನಡೆದ ಕಡಲ ಸವಾರ
ಉಷೀನ್ ಬರುತ್ತಾನೆ ಎಲ್ಲಕ್ಕೂ ಮೊದಲಲ್ಲಿ
ಕಹಿಯುಂಡ ಹೃದಯ ಆಯ್ದಂಥ ವಸ್ತುಗಳು,
ಗತಯುಗದ ಗೀತಕ್ಕೆ, ಆಸ್ಥಾನದಬ್ಬರಕ್ಕೆ ಹೇಳಿಸಿದ ವಿಷಯಗಳು.
ಅವನನ್ನಲೆಸಿದ ನಾನೇ ಎಷ್ಟು ಬೆಲೆ ಕೊಟ್ಟಿದ್ದೆ ಅವನ ಕಷ್ಟಕ್ಕೆ?
ಅವನ ಕನಸಿನ ಕನ್ನೆಯನ್ನು ನಾನೇ ಬಯಸಿ ಕಂಗಾಲಾಗಿದ್ದೆ.

ಮುಂದೆ ಆಟಕ್ಕಿಳಿದದ್ದು ಅದರ ವಿರೋಧೀ ಸತ್ಯ:
ನಾ ಕೊಟ್ಟ ಹೆಸರು ಕ್ಯಾಥಲೀನಿನ ರಾಣಿ, ಆ ಹೆಣ್ಣ ಚಿತ್ತ
ಮರುಕಕ್ಕೆ ತುತ್ತಾಗಿ, ತೆತ್ತುಕೊಂಡರೆ ತನ್ನಾತ್ಮವನ್ನೇ ಹುಚ್ಚಿಗೆ,
ಇಳಿದು ಬಂದಿತು ಸ್ವರ್‍ಗ ಅವಳನ್ನು ರಕ್ಷಿಸಲು ಪ್ರದರ್‍ಶಿಸುತ ಮೆಚ್ಚಿಗೆ.
ಆತ್ಮನಾಶದ ಕಡೆಗೆ ಸಾಗಿದ್ದಾಳೆ ಪ್ರಿಯ ಎಂದೇ ಅನಿಸಿತ್ತು.
ಮತ ಭ್ರಾಂತಿ ದ್ವೇಷಕ್ಕೆ ಸಿಕ್ಕು ಅವಳಾತ್ಮ ತುತ್ತಾಗಿ ಹೋಗಿತ್ತು.
ಮುಂದೆ ಹೊಸ ಕನಸೊಂದಕ್ಕೆ ಇದೇ ಎಡೆಮಾಡಿತು.
ನನ್ನ ಚಿಂತನೆ ಒಲವು ಅದಕ್ಕೇ ಮುಡಿಪಾಯಿತು.

ಆ ಮೂರ್‍ಖ ಕುರುಡರು ರೊಟ್ಟಿ ಕದ್ದಾಗ
ಅದಮ್ಯ ಸಾಗರದ ಜೊತೆ ಕುಹುಲೇನ್ ಹೋರಾಡಿದ.
ಹೃದಯ ರಹಸ್ಯಗಳೇ ಅಲ್ಲಿ ಎಲ್ಲೆಡೆಗೂ, ಆದರೂ
ಮರುಳುಮಾಡಿದ್ದು ಕನಸೇ ನನ್ನನ್ನು ಕಡೆಗೂ:
ಕೃತಿಯಿಂದ ಮುಕ್ತವಾದಂಥ ಪಾತ್ರಗಳೇ
ಪ್ರಸ್ತುತವನ್ನು ತುಂಬ ಸ್ಮೃತಿಯನ್ನು ಆಳಿದ್ದು.
ಬಣ್ಣದ ವೇದಿಕೆ, ನಟರೇ ನನ್ನೊಲವ ಗಳಿಸಿದ್ದು,
ಆಟ ಸಂಕೇತಿಸಿದ ವಿಷಯವಲ್ಲ.

ಸರ್‍ವ ಸ್ವತಂತ್ರ ಆ ಪರಿಪೂರ್‍ಣ ಪ್ರತಿಮೆಗಳು
ಪರಿಶುದ್ಧ ಮನದಲ್ಲಿ ಬೆಳೆದರೂ ಮೊದಲಲ್ಲಿ ಎಲ್ಲಿಂದ ಮೊಳೆತವು?
ಎಸೆದ ‘ಬಿಸಾಕು’ಗಳ ತಿಪ್ಪೆ, ರಸ್ತೆಯ ಕಸದ ಗುಪ್ಪೆ,
ಹಳೆಸೀಸ, ಹಳೆಕೆಟಲು, ಸುಲಿದ ಬಾಳೆಯ ಸಿಪ್ಪೆ,
ಹಳೆಜಂಕು, ಮೂಳೆ ಕೊಳೆಚಿಂದಿ, ಮುರುಕಲು ಗೊಂಬೆ,
ಅಂಗಡಿಗಲ್ಲಕ್ಕೆ ಕೂತು ಕೂಗುವ ಗಲ್ಲಿಯ ರಂಭೆ,
ಈಗ ಏಣಿಯೆ ಇಲ್ಲ, ಕೆಳಗೆ ಮಲಗುವುದಷ್ಟೆ ಎಲ್ಲ ಏಣಿಗಳು ಶುರುವಾಗುವಲ್ಲಿ
ಚಿಂದಿ, ಮೂಳೆಗಳು ತುಂಬಿರುವ ಹೃದಯದ ಕೊಳೆ ಕಿರಾಣಿಯಂಗಡಿಯಲ್ಲಿ.
*****

Tagged:

Leave a Reply

Your email address will not be published. Required fields are marked *

ಬೆಳಕಿನಿಂದ ಜಗಜಗಿಸುವ ಸಂಜೆ ರಾವು ಬಡಿದಂತೆ ಮಬ್ಬಾಗಿತ್ತು. ಈ ಮಬ್ಬು ಹಿಂದೆಂದೂ ಇದಿಲ್ಲ. ದೇಶದ ಹದಿನೇಳು ವರ್ಷದ ಸ್ವಾತಂತ್ರದಲ್ಲಿ, ಮಧ್ಯಮ ತರಗತಿಯ ಜೀವನ ಕೈ ಬಾಯಿಯಾಗಿದ್ದರೂ ದೂರದ ಆಶಯ ಹೊಂಗಿರಣವೊಂದು ಸದಾ ಹೊಳೆದು ಭಾವೀ ಪೀಳಿಗೆಯ ಮನೋಲ್ಲಾಸ ಮಾಡುತ್ತಿತ್ತು. ಆದರೆ ಈ ಮಬ್ಬುಗತ್ತ...

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...