Home / ಕವನ / ಅನುವಾದ / ಸರ್‍ಕಸ್ ಕಂಪೆನಿ ಮುಚ್ಚಿದ್ದು

ಸರ್‍ಕಸ್ ಕಂಪೆನಿ ಮುಚ್ಚಿದ್ದು

ಮೂಲ: ವಿಲಿಯಂ ಬಟ್ಲರ್ ಏಟ್ಸ್

ಕವನಕ್ಕೆ ವಸ್ತು ಸಿಗಲಿಲ್ಲ, ವ್ಯರ್‍ಥ ಪ್ರಯತ್ನಿಸಿದ್ದೆಲ್ಲ
ಪ್ರತಿದಿನ ಪರದಾಟ, ಆರುವಾರ ಕಳೆದರೂ ಇಲ್ಲ,
ಶಾಂತನಾಗುವುದೆ ಉತ್ತಮ ಮುದುಕ ಅಲ್ಲಿಗೆ;
ವಯಸ್ಸಾಗುವ ಮುಂಚೆ ಪ್ರತಿ ಚಳಿಗಾಲ ಬೇಸಿಗೆ
ಆಟಕ್ಕಿದ್ದವು ನನ್ನ ಸರ್‍ಕಸ್ ಪ್ರಾಣಿಗಳೆಲ್ಲ
ಮೆಟ್ಟುಗಾಲನ್ನು ಕಟ್ಟಿಕೊಂಡ ಆ ಹುಡುಗರು,
ಕಣ್ಣು ಕುಕ್ಕುವ ಹಾಗೆ ಥಳಥಳಿಸುತ್ತಿದ್ದ ರಥ,
ಸಿಂಹಗಳು ಹೆಣ್ಣುಗಳು ಏನೆಲ್ಲ, ಎಲ್ಲ ಆ ದೇವರೇ ಬಲ್ಲ.

ಇನ್ನೇನಿದೆ ಹೊರಡುವುದೆ ಹಳೆವಸ್ತುಗಳ ಸ್ಮರಣೆಗೆ:
ಮೂಗುದಾರಕ್ಕೆ ಸಿಕ್ಕು ಮೂರುಮೋಹಕ ದ್ವೀಪಗಳಲ್ಲಿ
ವ್ಯರ್‍ಥ ಹರ್‍ಷ, ವ್ಯರ್‍ಥಯುದ್ಧ ವ್ಯರ್‍ಥ ಶಾಂತಿಗಳ
ರೂಪಕ ಸ್ವಪ್ನಗಳಲ್ಲಿ ನಡೆದ ಕಡಲ ಸವಾರ
ಉಷೀನ್ ಬರುತ್ತಾನೆ ಎಲ್ಲಕ್ಕೂ ಮೊದಲಲ್ಲಿ
ಕಹಿಯುಂಡ ಹೃದಯ ಆಯ್ದಂಥ ವಸ್ತುಗಳು,
ಗತಯುಗದ ಗೀತಕ್ಕೆ, ಆಸ್ಥಾನದಬ್ಬರಕ್ಕೆ ಹೇಳಿಸಿದ ವಿಷಯಗಳು.
ಅವನನ್ನಲೆಸಿದ ನಾನೇ ಎಷ್ಟು ಬೆಲೆ ಕೊಟ್ಟಿದ್ದೆ ಅವನ ಕಷ್ಟಕ್ಕೆ?
ಅವನ ಕನಸಿನ ಕನ್ನೆಯನ್ನು ನಾನೇ ಬಯಸಿ ಕಂಗಾಲಾಗಿದ್ದೆ.

ಮುಂದೆ ಆಟಕ್ಕಿಳಿದದ್ದು ಅದರ ವಿರೋಧೀ ಸತ್ಯ:
ನಾ ಕೊಟ್ಟ ಹೆಸರು ಕ್ಯಾಥಲೀನಿನ ರಾಣಿ, ಆ ಹೆಣ್ಣ ಚಿತ್ತ
ಮರುಕಕ್ಕೆ ತುತ್ತಾಗಿ, ತೆತ್ತುಕೊಂಡರೆ ತನ್ನಾತ್ಮವನ್ನೇ ಹುಚ್ಚಿಗೆ,
ಇಳಿದು ಬಂದಿತು ಸ್ವರ್‍ಗ ಅವಳನ್ನು ರಕ್ಷಿಸಲು ಪ್ರದರ್‍ಶಿಸುತ ಮೆಚ್ಚಿಗೆ.
ಆತ್ಮನಾಶದ ಕಡೆಗೆ ಸಾಗಿದ್ದಾಳೆ ಪ್ರಿಯ ಎಂದೇ ಅನಿಸಿತ್ತು.
ಮತ ಭ್ರಾಂತಿ ದ್ವೇಷಕ್ಕೆ ಸಿಕ್ಕು ಅವಳಾತ್ಮ ತುತ್ತಾಗಿ ಹೋಗಿತ್ತು.
ಮುಂದೆ ಹೊಸ ಕನಸೊಂದಕ್ಕೆ ಇದೇ ಎಡೆಮಾಡಿತು.
ನನ್ನ ಚಿಂತನೆ ಒಲವು ಅದಕ್ಕೇ ಮುಡಿಪಾಯಿತು.

ಆ ಮೂರ್‍ಖ ಕುರುಡರು ರೊಟ್ಟಿ ಕದ್ದಾಗ
ಅದಮ್ಯ ಸಾಗರದ ಜೊತೆ ಕುಹುಲೇನ್ ಹೋರಾಡಿದ.
ಹೃದಯ ರಹಸ್ಯಗಳೇ ಅಲ್ಲಿ ಎಲ್ಲೆಡೆಗೂ, ಆದರೂ
ಮರುಳುಮಾಡಿದ್ದು ಕನಸೇ ನನ್ನನ್ನು ಕಡೆಗೂ:
ಕೃತಿಯಿಂದ ಮುಕ್ತವಾದಂಥ ಪಾತ್ರಗಳೇ
ಪ್ರಸ್ತುತವನ್ನು ತುಂಬ ಸ್ಮೃತಿಯನ್ನು ಆಳಿದ್ದು.
ಬಣ್ಣದ ವೇದಿಕೆ, ನಟರೇ ನನ್ನೊಲವ ಗಳಿಸಿದ್ದು,
ಆಟ ಸಂಕೇತಿಸಿದ ವಿಷಯವಲ್ಲ.

ಸರ್‍ವ ಸ್ವತಂತ್ರ ಆ ಪರಿಪೂರ್‍ಣ ಪ್ರತಿಮೆಗಳು
ಪರಿಶುದ್ಧ ಮನದಲ್ಲಿ ಬೆಳೆದರೂ ಮೊದಲಲ್ಲಿ ಎಲ್ಲಿಂದ ಮೊಳೆತವು?
ಎಸೆದ ‘ಬಿಸಾಕು’ಗಳ ತಿಪ್ಪೆ, ರಸ್ತೆಯ ಕಸದ ಗುಪ್ಪೆ,
ಹಳೆಸೀಸ, ಹಳೆಕೆಟಲು, ಸುಲಿದ ಬಾಳೆಯ ಸಿಪ್ಪೆ,
ಹಳೆಜಂಕು, ಮೂಳೆ ಕೊಳೆಚಿಂದಿ, ಮುರುಕಲು ಗೊಂಬೆ,
ಅಂಗಡಿಗಲ್ಲಕ್ಕೆ ಕೂತು ಕೂಗುವ ಗಲ್ಲಿಯ ರಂಭೆ,
ಈಗ ಏಣಿಯೆ ಇಲ್ಲ, ಕೆಳಗೆ ಮಲಗುವುದಷ್ಟೆ ಎಲ್ಲ ಏಣಿಗಳು ಶುರುವಾಗುವಲ್ಲಿ
ಚಿಂದಿ, ಮೂಳೆಗಳು ತುಂಬಿರುವ ಹೃದಯದ ಕೊಳೆ ಕಿರಾಣಿಯಂಗಡಿಯಲ್ಲಿ.
*****

Tagged:

Leave a Reply

Your email address will not be published. Required fields are marked *

ಹೆರಿಗೆ ನೋವಿನಿಂದ ಸಂಕಟಪಡುತ್ತಿದ್ದ ಹೆಂಡತಿ ಗಂಗಾಳನ್ನು ಆಸ್ಪತ್ರೆಗೆ ಚಿಕ್ಕಣ್ಣ ಕರೆದುಕೊಂಡು ಬಂದಾಗ ಔಟ್ ಪೇಶಂಟ್ ವಿಭಾಗ ಗಿಜಿಗುಟ್ಟುತ್ತಿತ್ತು. ಗುಂಪುಕಟ್ಟಿ ನಿಂತಿದ್ದ ಮಹಿಳೆಯರ ಸಾಲನ್ನು ಛೇಧಿಸಿಕೊಂಡು ವೈದ್ಯರ ಮೇಜಿನ ಬಳಿ ಬಂದು ನಿಂತ ಅವನ ತೋಳುಗಳಲ್ಲಿ ಎರಡೂವರೆ ವರ್ಷದ ಮಗುವ...

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...