Home / ಕವನ / ಕವಿತೆ / ಏನೆಂದು ಹಾಡಲಿ

ಏನೆಂದು ಹಾಡಲಿ

ಏನೆಂದು ಹಾಡಲೀ ಏನನ್ನು ಹಾಡಲೀ ನಿಮ್ಮ ಮುಂದೆ ನಿಂತು
ಒಡೆದ ಗಂಟಲಿಂದಾ ಬಿರಿದ ಒಣಾ ನಾಲಿಗಿಂದ ||ಪ||

ಕಣ್ಣು ಕಣ್ಣುಗಳ ಚಿಕ್ಕೆ ಕಾಂತಿಗಳು ನಂದಿ ನರಳುತಿರಲು
ಬಾನ ಚಿಕ್ಕೆಗಳ ಬೆಣ್ಣೆ ಚಂದ್ರಮನ ತೋರಿ ಹಾಡಲೇನು
ಮಣ್ಣ ಜೀವಗಳ ಬಳ್ಳಿ ಗಿಡಗಳಿಗೆ ಮುಳ್ಳುಹೋದರು ಮುಚ್ಚಿ
ಚುಚ್ಚುತಿರಲು ಆ ಸಗ್ಗ ನಂದನವ ಕೊಂಡು ಕೊನರಲೇನು ||೧||

ಎಲುಬು ಗೂಡುಗಳ ಹರಿದ ಚಿಂದಿಗಳ ಬಿಟ್ಟು ಸುತ್ತ ಮುತ್ತ
ಗುಲಾಬಿಯ ಕೆನ್ನೆ ತೊಂಡೆಗುಟಿ ಕನ್ಯೆ ಎಂದು ಕನವರಿಸಲೆ
ಕೊಳಚೆ ಕೊಂಪೆಗಳ ಮುರುಕು ಗೂಡುಗಳ ನೋಡೀ ನೋಡದಂತೆ
ಭವ್ಯ ಬಂಗಲೆಯ ದಿವ್ಯ ಗೋಪುರವ ಹಾಡಿ ಹೊಗಳುತಿರಲೆ ||೨||

ತುತ್ತನ್ನಕ್ಕಾಗಿ ಬೇಡಿ ಕಾಡುವ ಪುಟ್ಟ ತಿರುಪ ಕೈಯಿ
ಹೆಜ್ಜೆ ಹೆಜ್ಜೆಗೂ ಕಾಲ ತೊಡರಿರಲು ಹಾಡಲೆಲ್ಲಿ ಬಾಯಿ
ಅಂದದುಡಿಗೆಗಳ ಸೇಬುಗಲ್ಲಗಳ ಮಮ್ಮಿ ಡ್ಯಾಡಿ ಎನುವ
ದುಂಡು ದುಂಡಗಿನ ಧನಿಕ ಮಕ್ಕಳನು ಮೆಚ್ಚಿ ಹಾಡಲೇನು ||೩||

ನೂರು ಸಾವಿರದ ದೇವರುಗಳು ಕಚ್ಚಾಡಿ ಮೆರೆಯುವಿಲ್ಲಿ
ದೇವರುಗಳ ಸೃಷ್ಟಿಸಿದ ಮಾನವನ ಮರೆತ ನರಕದಲ್ಲಿ
ಸುತ್ತ ಜಗಕೆ ಕಿವಿ ಕಣ್ಣು ಮುಚ್ಚಿ ತೇಲ್ಗಣ್ಣ ಭಾವದಲ್ಲಿ
ದೇವ ಭಜನೆಯನು ನಾಮ ಕೀರ್ತನೆಯ ಕಟ್ಟಿ ಹಾಡಲೇನು ||೪||

ದುಡಿದು ದಣಿವ ಮೈ ರಕ್ತ ಬೆವರುಗಳ ಧಾರೆ ಧಾರೆಯಿಂದ
ಭಟ್ಟಿ ಉಳಿದ ಸೆರೆ ತುಂಬಿ ಕುಡಿಯುತಿಹ ದಣಿಯ ಹೊಗಳಲೇನು
ಮರುಳು ಕುರಿಗಳನು ಸವರಿ ನೇಯ್ದ ಕಂಬಳಿಯ ಗದ್ದುಗೆಯಲಿ
ಮೆರೆಯುತಿರುವ ನರಭಕ್ಷಕರನು ನಾ ಹೊಗಳಿ ಹಾಡಲೇನು ||೫||

ಸುತ್ತ ಮುತ್ತಿರಲು ಅಂಧಕಾರತೆಯು ಕತ್ತಲಲ್ಲಿ ಕುಳಿತು
ಎಲ್ಲ ಬೆಳ್ಳಗಿದೆ ಇದೇ ಬೆಳಕು ಎನ್ನುತ್ತ ಹಾಡಲೇನು
ಎಲ್ಲ ತೋಟಗದ್ದೆಗಳ ಚೆಲುವ ಹಲ ಹದ್ದು ಮುಕ್ಕುತಿರಲು
ಎಲ್ಲ ಅಂದ ಸುಂದರವು ಎಂದು ನಾ ಬಣ್ಣಿಸಿ ಹಾಡಲೇನು ||೬||

ಕೋಟೆ ಅರಮನೆಯ ಶಿಲ್ಪ ಸಿರಿಗಳನು ಕಟ್ಟಿದವರ ಮರೆತು
ಲೂಟಿ ಮಾಡಿ ಮೆರೆದಂಥ ರಾಜರುಗಳ ಚರಿತೆ ಹೊಗಳಲೇನು
ಕ್ರೌರ್ಯ ಹಿಂಸೆಗಳ ಬಾಯ್ಗಳಲ್ಲಿ ಜನ ಜೀವ ಮಿಡುಕುತಿರಲು
ದಯೆಯೆ ಧರ್ಮಕ್ಕೆ ಮೂಲವೆಂದು ಒಣ ಶಾಂತಿ ಪಠಿಸಲೇನು ||೭||

ಜಾತಿ ಭಾಷೆ ಕುಲ ಧರ್ಮ ದೈವಗಳ ಛಿದ್ರ ಛಿದ್ರ ನೆಲವ
ಭವ್ಯ ದಿವ್ಯ ಭಾರತವೆ ಎಂದು ಎದೆ ತುಂಬಿ ಹಾಡಲೇನು
ತಲೆತಲಾಂತರದ ಮೌಢ್ಯಬಳುವಳಿಯ ಕೊಳೆತು ನಿಂತ ಕೊಳವ
ಗಂಗೆ ತುಂಗೆಯರ ಪುಣ್ಯರಂಗೆಂದು ಹಾಡಿ ಹರಸಲೇನು ||೮||

ಬೆನ್ನಿಗಂಟಿರುವ ಬರಿಯ ಹೊಟ್ಟೆಗಳು ಬಿಕ್ಕಿ ಬಿಕ್ಕುತಿರಲು
ಬೊಜ್ಜು ಹೊಟ್ಟೆಗಳ ಕಮರು ಡೇಗು ಹಾಡುಗಳ ತೇಗಲೇನು
ಹಳ್ಳಿಪಾಡು ಹಾಡುವಾ ಹಕ್ಕಿ ಕುತ್ತಿಗೆಯ ಹಿಚುಕುತಿರಲು
ಡಿಳ್ಳಿದರಬಾರು ಮೋಡಿ ಮೆರಗುಗಳ ಹಾಡು ಕಿರುಚಲೇನು ||೯||

ಸತ್ಯ ಹೇಳಿದರೆ ಕುತ್ತು ಹೊರಿಸುವರು ಕತ್ತಿಯೊತ್ತಿ ಶಿರಕೆ
ಅದಕೆ ಹೆದರಿ ಬರಿ ಸುಳ್ಳು ಗೊಳ್ಳು ಶಬ್ದಗಳ ಬುರುಗು ಬಿಡಲೆ
ಹೇಳುವುದು ಒಂದು ಮಾಡುವುದು ಒಂದು ನಮ್ಮ ಧರ್ಮ ನೀತಿ
ಎಂದಿನಿಂದಲೋ ಬಂದ ರೀತಿ ಅದರಂತೆ ಬುರುಡೆ ಬಿಡಲೆ ||೧೦||

ಜನತೆ ಗಂಡ ಜನನೀತಿ ಹೆಂಡತಿಯು ಗಂಡನೆದುರೆ ಅವಳ
ಸೀರೆ ಹರಿದು ವ್ಯಭಿಚಾರ ಮಾಡಿದರು ಗಂಡ ಸುಮ್ಮನಿರಲು
ಜನರ ತಾಯಿಯನು ಕಿತ್ತಿತಿನುವ ತಾಯ್ಗಂಡರಾಳುತಿರಲು
ನಮ್ಮದೇಶ ಜನತಂತ್ರದೇಶ ಎನ್ನುತ್ತ ಹಾಡಲೇನು ||೧೧||

ಹಾಡು ಬೇಡ ಹಣ ಹೆಂಡ ತಿಂಡಿಕೊಡು ಓಟು ಹಾಕುತೀವಿ
ಓಟು ಹಾಕಿ ನೆಲ ಗೋರಿ ಗೋರಿ ಮುಲುಗುತ್ತ ಮಲಗುತೀವಿ
ಬಹಳ ಹಳೆಯ ಹುಳಿ ಹೆಂಡ ಧರ್ಮವಿದೆ ನಿಶೆಯಲ್ಲಿ ಬಾಳುತೀವಿ
ನಮ್ಮ ನಡೆಸಲಿಕೆ ಗುರುವು ಮಠವು ದೇವರುಗಳಿರುವರಲ್ಲ ||೧೨||

ಆಗಾಗ ಅವನು ಅವತರಿಸಿ ಬರುವ ನಮಗೇಕೆ ಚಿಂತೆಯೆಲ್ಲ
ಎನುತ ಮಲಗಿ ಸತ್ತಿಲ್ಲದಿರುವ ಈ ಜನರ ಮುಂದೆ ನಾನು
ಏನು ಹಾಡಲೀ ಎಂತು ಹಾಡಲೀ ಒಡೆದ ಗಂಟಲಿಂದ
ಬಿರಿದಾ ಒಣಾ ನಾಲಿಗಿಂದ ||೧೩||
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...