Home / ಕವನ / ಕವಿತೆ / ಏನೆಂದು ಹಾಡಲಿ

ಏನೆಂದು ಹಾಡಲಿ

ಏನೆಂದು ಹಾಡಲೀ ಏನನ್ನು ಹಾಡಲೀ ನಿಮ್ಮ ಮುಂದೆ ನಿಂತು
ಒಡೆದ ಗಂಟಲಿಂದಾ ಬಿರಿದ ಒಣಾ ನಾಲಿಗಿಂದ ||ಪ||

ಕಣ್ಣು ಕಣ್ಣುಗಳ ಚಿಕ್ಕೆ ಕಾಂತಿಗಳು ನಂದಿ ನರಳುತಿರಲು
ಬಾನ ಚಿಕ್ಕೆಗಳ ಬೆಣ್ಣೆ ಚಂದ್ರಮನ ತೋರಿ ಹಾಡಲೇನು
ಮಣ್ಣ ಜೀವಗಳ ಬಳ್ಳಿ ಗಿಡಗಳಿಗೆ ಮುಳ್ಳುಹೋದರು ಮುಚ್ಚಿ
ಚುಚ್ಚುತಿರಲು ಆ ಸಗ್ಗ ನಂದನವ ಕೊಂಡು ಕೊನರಲೇನು ||೧||

ಎಲುಬು ಗೂಡುಗಳ ಹರಿದ ಚಿಂದಿಗಳ ಬಿಟ್ಟು ಸುತ್ತ ಮುತ್ತ
ಗುಲಾಬಿಯ ಕೆನ್ನೆ ತೊಂಡೆಗುಟಿ ಕನ್ಯೆ ಎಂದು ಕನವರಿಸಲೆ
ಕೊಳಚೆ ಕೊಂಪೆಗಳ ಮುರುಕು ಗೂಡುಗಳ ನೋಡೀ ನೋಡದಂತೆ
ಭವ್ಯ ಬಂಗಲೆಯ ದಿವ್ಯ ಗೋಪುರವ ಹಾಡಿ ಹೊಗಳುತಿರಲೆ ||೨||

ತುತ್ತನ್ನಕ್ಕಾಗಿ ಬೇಡಿ ಕಾಡುವ ಪುಟ್ಟ ತಿರುಪ ಕೈಯಿ
ಹೆಜ್ಜೆ ಹೆಜ್ಜೆಗೂ ಕಾಲ ತೊಡರಿರಲು ಹಾಡಲೆಲ್ಲಿ ಬಾಯಿ
ಅಂದದುಡಿಗೆಗಳ ಸೇಬುಗಲ್ಲಗಳ ಮಮ್ಮಿ ಡ್ಯಾಡಿ ಎನುವ
ದುಂಡು ದುಂಡಗಿನ ಧನಿಕ ಮಕ್ಕಳನು ಮೆಚ್ಚಿ ಹಾಡಲೇನು ||೩||

ನೂರು ಸಾವಿರದ ದೇವರುಗಳು ಕಚ್ಚಾಡಿ ಮೆರೆಯುವಿಲ್ಲಿ
ದೇವರುಗಳ ಸೃಷ್ಟಿಸಿದ ಮಾನವನ ಮರೆತ ನರಕದಲ್ಲಿ
ಸುತ್ತ ಜಗಕೆ ಕಿವಿ ಕಣ್ಣು ಮುಚ್ಚಿ ತೇಲ್ಗಣ್ಣ ಭಾವದಲ್ಲಿ
ದೇವ ಭಜನೆಯನು ನಾಮ ಕೀರ್ತನೆಯ ಕಟ್ಟಿ ಹಾಡಲೇನು ||೪||

ದುಡಿದು ದಣಿವ ಮೈ ರಕ್ತ ಬೆವರುಗಳ ಧಾರೆ ಧಾರೆಯಿಂದ
ಭಟ್ಟಿ ಉಳಿದ ಸೆರೆ ತುಂಬಿ ಕುಡಿಯುತಿಹ ದಣಿಯ ಹೊಗಳಲೇನು
ಮರುಳು ಕುರಿಗಳನು ಸವರಿ ನೇಯ್ದ ಕಂಬಳಿಯ ಗದ್ದುಗೆಯಲಿ
ಮೆರೆಯುತಿರುವ ನರಭಕ್ಷಕರನು ನಾ ಹೊಗಳಿ ಹಾಡಲೇನು ||೫||

ಸುತ್ತ ಮುತ್ತಿರಲು ಅಂಧಕಾರತೆಯು ಕತ್ತಲಲ್ಲಿ ಕುಳಿತು
ಎಲ್ಲ ಬೆಳ್ಳಗಿದೆ ಇದೇ ಬೆಳಕು ಎನ್ನುತ್ತ ಹಾಡಲೇನು
ಎಲ್ಲ ತೋಟಗದ್ದೆಗಳ ಚೆಲುವ ಹಲ ಹದ್ದು ಮುಕ್ಕುತಿರಲು
ಎಲ್ಲ ಅಂದ ಸುಂದರವು ಎಂದು ನಾ ಬಣ್ಣಿಸಿ ಹಾಡಲೇನು ||೬||

ಕೋಟೆ ಅರಮನೆಯ ಶಿಲ್ಪ ಸಿರಿಗಳನು ಕಟ್ಟಿದವರ ಮರೆತು
ಲೂಟಿ ಮಾಡಿ ಮೆರೆದಂಥ ರಾಜರುಗಳ ಚರಿತೆ ಹೊಗಳಲೇನು
ಕ್ರೌರ್ಯ ಹಿಂಸೆಗಳ ಬಾಯ್ಗಳಲ್ಲಿ ಜನ ಜೀವ ಮಿಡುಕುತಿರಲು
ದಯೆಯೆ ಧರ್ಮಕ್ಕೆ ಮೂಲವೆಂದು ಒಣ ಶಾಂತಿ ಪಠಿಸಲೇನು ||೭||

ಜಾತಿ ಭಾಷೆ ಕುಲ ಧರ್ಮ ದೈವಗಳ ಛಿದ್ರ ಛಿದ್ರ ನೆಲವ
ಭವ್ಯ ದಿವ್ಯ ಭಾರತವೆ ಎಂದು ಎದೆ ತುಂಬಿ ಹಾಡಲೇನು
ತಲೆತಲಾಂತರದ ಮೌಢ್ಯಬಳುವಳಿಯ ಕೊಳೆತು ನಿಂತ ಕೊಳವ
ಗಂಗೆ ತುಂಗೆಯರ ಪುಣ್ಯರಂಗೆಂದು ಹಾಡಿ ಹರಸಲೇನು ||೮||

ಬೆನ್ನಿಗಂಟಿರುವ ಬರಿಯ ಹೊಟ್ಟೆಗಳು ಬಿಕ್ಕಿ ಬಿಕ್ಕುತಿರಲು
ಬೊಜ್ಜು ಹೊಟ್ಟೆಗಳ ಕಮರು ಡೇಗು ಹಾಡುಗಳ ತೇಗಲೇನು
ಹಳ್ಳಿಪಾಡು ಹಾಡುವಾ ಹಕ್ಕಿ ಕುತ್ತಿಗೆಯ ಹಿಚುಕುತಿರಲು
ಡಿಳ್ಳಿದರಬಾರು ಮೋಡಿ ಮೆರಗುಗಳ ಹಾಡು ಕಿರುಚಲೇನು ||೯||

ಸತ್ಯ ಹೇಳಿದರೆ ಕುತ್ತು ಹೊರಿಸುವರು ಕತ್ತಿಯೊತ್ತಿ ಶಿರಕೆ
ಅದಕೆ ಹೆದರಿ ಬರಿ ಸುಳ್ಳು ಗೊಳ್ಳು ಶಬ್ದಗಳ ಬುರುಗು ಬಿಡಲೆ
ಹೇಳುವುದು ಒಂದು ಮಾಡುವುದು ಒಂದು ನಮ್ಮ ಧರ್ಮ ನೀತಿ
ಎಂದಿನಿಂದಲೋ ಬಂದ ರೀತಿ ಅದರಂತೆ ಬುರುಡೆ ಬಿಡಲೆ ||೧೦||

ಜನತೆ ಗಂಡ ಜನನೀತಿ ಹೆಂಡತಿಯು ಗಂಡನೆದುರೆ ಅವಳ
ಸೀರೆ ಹರಿದು ವ್ಯಭಿಚಾರ ಮಾಡಿದರು ಗಂಡ ಸುಮ್ಮನಿರಲು
ಜನರ ತಾಯಿಯನು ಕಿತ್ತಿತಿನುವ ತಾಯ್ಗಂಡರಾಳುತಿರಲು
ನಮ್ಮದೇಶ ಜನತಂತ್ರದೇಶ ಎನ್ನುತ್ತ ಹಾಡಲೇನು ||೧೧||

ಹಾಡು ಬೇಡ ಹಣ ಹೆಂಡ ತಿಂಡಿಕೊಡು ಓಟು ಹಾಕುತೀವಿ
ಓಟು ಹಾಕಿ ನೆಲ ಗೋರಿ ಗೋರಿ ಮುಲುಗುತ್ತ ಮಲಗುತೀವಿ
ಬಹಳ ಹಳೆಯ ಹುಳಿ ಹೆಂಡ ಧರ್ಮವಿದೆ ನಿಶೆಯಲ್ಲಿ ಬಾಳುತೀವಿ
ನಮ್ಮ ನಡೆಸಲಿಕೆ ಗುರುವು ಮಠವು ದೇವರುಗಳಿರುವರಲ್ಲ ||೧೨||

ಆಗಾಗ ಅವನು ಅವತರಿಸಿ ಬರುವ ನಮಗೇಕೆ ಚಿಂತೆಯೆಲ್ಲ
ಎನುತ ಮಲಗಿ ಸತ್ತಿಲ್ಲದಿರುವ ಈ ಜನರ ಮುಂದೆ ನಾನು
ಏನು ಹಾಡಲೀ ಎಂತು ಹಾಡಲೀ ಒಡೆದ ಗಂಟಲಿಂದ
ಬಿರಿದಾ ಒಣಾ ನಾಲಿಗಿಂದ ||೧೩||
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...