Home / ಕವನ / ಕವಿತೆ / ಏನೆಂದು ಹಾಡಲಿ

ಏನೆಂದು ಹಾಡಲಿ

ಏನೆಂದು ಹಾಡಲೀ ಏನನ್ನು ಹಾಡಲೀ ನಿಮ್ಮ ಮುಂದೆ ನಿಂತು
ಒಡೆದ ಗಂಟಲಿಂದಾ ಬಿರಿದ ಒಣಾ ನಾಲಿಗಿಂದ ||ಪ||

ಕಣ್ಣು ಕಣ್ಣುಗಳ ಚಿಕ್ಕೆ ಕಾಂತಿಗಳು ನಂದಿ ನರಳುತಿರಲು
ಬಾನ ಚಿಕ್ಕೆಗಳ ಬೆಣ್ಣೆ ಚಂದ್ರಮನ ತೋರಿ ಹಾಡಲೇನು
ಮಣ್ಣ ಜೀವಗಳ ಬಳ್ಳಿ ಗಿಡಗಳಿಗೆ ಮುಳ್ಳುಹೋದರು ಮುಚ್ಚಿ
ಚುಚ್ಚುತಿರಲು ಆ ಸಗ್ಗ ನಂದನವ ಕೊಂಡು ಕೊನರಲೇನು ||೧||

ಎಲುಬು ಗೂಡುಗಳ ಹರಿದ ಚಿಂದಿಗಳ ಬಿಟ್ಟು ಸುತ್ತ ಮುತ್ತ
ಗುಲಾಬಿಯ ಕೆನ್ನೆ ತೊಂಡೆಗುಟಿ ಕನ್ಯೆ ಎಂದು ಕನವರಿಸಲೆ
ಕೊಳಚೆ ಕೊಂಪೆಗಳ ಮುರುಕು ಗೂಡುಗಳ ನೋಡೀ ನೋಡದಂತೆ
ಭವ್ಯ ಬಂಗಲೆಯ ದಿವ್ಯ ಗೋಪುರವ ಹಾಡಿ ಹೊಗಳುತಿರಲೆ ||೨||

ತುತ್ತನ್ನಕ್ಕಾಗಿ ಬೇಡಿ ಕಾಡುವ ಪುಟ್ಟ ತಿರುಪ ಕೈಯಿ
ಹೆಜ್ಜೆ ಹೆಜ್ಜೆಗೂ ಕಾಲ ತೊಡರಿರಲು ಹಾಡಲೆಲ್ಲಿ ಬಾಯಿ
ಅಂದದುಡಿಗೆಗಳ ಸೇಬುಗಲ್ಲಗಳ ಮಮ್ಮಿ ಡ್ಯಾಡಿ ಎನುವ
ದುಂಡು ದುಂಡಗಿನ ಧನಿಕ ಮಕ್ಕಳನು ಮೆಚ್ಚಿ ಹಾಡಲೇನು ||೩||

ನೂರು ಸಾವಿರದ ದೇವರುಗಳು ಕಚ್ಚಾಡಿ ಮೆರೆಯುವಿಲ್ಲಿ
ದೇವರುಗಳ ಸೃಷ್ಟಿಸಿದ ಮಾನವನ ಮರೆತ ನರಕದಲ್ಲಿ
ಸುತ್ತ ಜಗಕೆ ಕಿವಿ ಕಣ್ಣು ಮುಚ್ಚಿ ತೇಲ್ಗಣ್ಣ ಭಾವದಲ್ಲಿ
ದೇವ ಭಜನೆಯನು ನಾಮ ಕೀರ್ತನೆಯ ಕಟ್ಟಿ ಹಾಡಲೇನು ||೪||

ದುಡಿದು ದಣಿವ ಮೈ ರಕ್ತ ಬೆವರುಗಳ ಧಾರೆ ಧಾರೆಯಿಂದ
ಭಟ್ಟಿ ಉಳಿದ ಸೆರೆ ತುಂಬಿ ಕುಡಿಯುತಿಹ ದಣಿಯ ಹೊಗಳಲೇನು
ಮರುಳು ಕುರಿಗಳನು ಸವರಿ ನೇಯ್ದ ಕಂಬಳಿಯ ಗದ್ದುಗೆಯಲಿ
ಮೆರೆಯುತಿರುವ ನರಭಕ್ಷಕರನು ನಾ ಹೊಗಳಿ ಹಾಡಲೇನು ||೫||

ಸುತ್ತ ಮುತ್ತಿರಲು ಅಂಧಕಾರತೆಯು ಕತ್ತಲಲ್ಲಿ ಕುಳಿತು
ಎಲ್ಲ ಬೆಳ್ಳಗಿದೆ ಇದೇ ಬೆಳಕು ಎನ್ನುತ್ತ ಹಾಡಲೇನು
ಎಲ್ಲ ತೋಟಗದ್ದೆಗಳ ಚೆಲುವ ಹಲ ಹದ್ದು ಮುಕ್ಕುತಿರಲು
ಎಲ್ಲ ಅಂದ ಸುಂದರವು ಎಂದು ನಾ ಬಣ್ಣಿಸಿ ಹಾಡಲೇನು ||೬||

ಕೋಟೆ ಅರಮನೆಯ ಶಿಲ್ಪ ಸಿರಿಗಳನು ಕಟ್ಟಿದವರ ಮರೆತು
ಲೂಟಿ ಮಾಡಿ ಮೆರೆದಂಥ ರಾಜರುಗಳ ಚರಿತೆ ಹೊಗಳಲೇನು
ಕ್ರೌರ್ಯ ಹಿಂಸೆಗಳ ಬಾಯ್ಗಳಲ್ಲಿ ಜನ ಜೀವ ಮಿಡುಕುತಿರಲು
ದಯೆಯೆ ಧರ್ಮಕ್ಕೆ ಮೂಲವೆಂದು ಒಣ ಶಾಂತಿ ಪಠಿಸಲೇನು ||೭||

ಜಾತಿ ಭಾಷೆ ಕುಲ ಧರ್ಮ ದೈವಗಳ ಛಿದ್ರ ಛಿದ್ರ ನೆಲವ
ಭವ್ಯ ದಿವ್ಯ ಭಾರತವೆ ಎಂದು ಎದೆ ತುಂಬಿ ಹಾಡಲೇನು
ತಲೆತಲಾಂತರದ ಮೌಢ್ಯಬಳುವಳಿಯ ಕೊಳೆತು ನಿಂತ ಕೊಳವ
ಗಂಗೆ ತುಂಗೆಯರ ಪುಣ್ಯರಂಗೆಂದು ಹಾಡಿ ಹರಸಲೇನು ||೮||

ಬೆನ್ನಿಗಂಟಿರುವ ಬರಿಯ ಹೊಟ್ಟೆಗಳು ಬಿಕ್ಕಿ ಬಿಕ್ಕುತಿರಲು
ಬೊಜ್ಜು ಹೊಟ್ಟೆಗಳ ಕಮರು ಡೇಗು ಹಾಡುಗಳ ತೇಗಲೇನು
ಹಳ್ಳಿಪಾಡು ಹಾಡುವಾ ಹಕ್ಕಿ ಕುತ್ತಿಗೆಯ ಹಿಚುಕುತಿರಲು
ಡಿಳ್ಳಿದರಬಾರು ಮೋಡಿ ಮೆರಗುಗಳ ಹಾಡು ಕಿರುಚಲೇನು ||೯||

ಸತ್ಯ ಹೇಳಿದರೆ ಕುತ್ತು ಹೊರಿಸುವರು ಕತ್ತಿಯೊತ್ತಿ ಶಿರಕೆ
ಅದಕೆ ಹೆದರಿ ಬರಿ ಸುಳ್ಳು ಗೊಳ್ಳು ಶಬ್ದಗಳ ಬುರುಗು ಬಿಡಲೆ
ಹೇಳುವುದು ಒಂದು ಮಾಡುವುದು ಒಂದು ನಮ್ಮ ಧರ್ಮ ನೀತಿ
ಎಂದಿನಿಂದಲೋ ಬಂದ ರೀತಿ ಅದರಂತೆ ಬುರುಡೆ ಬಿಡಲೆ ||೧೦||

ಜನತೆ ಗಂಡ ಜನನೀತಿ ಹೆಂಡತಿಯು ಗಂಡನೆದುರೆ ಅವಳ
ಸೀರೆ ಹರಿದು ವ್ಯಭಿಚಾರ ಮಾಡಿದರು ಗಂಡ ಸುಮ್ಮನಿರಲು
ಜನರ ತಾಯಿಯನು ಕಿತ್ತಿತಿನುವ ತಾಯ್ಗಂಡರಾಳುತಿರಲು
ನಮ್ಮದೇಶ ಜನತಂತ್ರದೇಶ ಎನ್ನುತ್ತ ಹಾಡಲೇನು ||೧೧||

ಹಾಡು ಬೇಡ ಹಣ ಹೆಂಡ ತಿಂಡಿಕೊಡು ಓಟು ಹಾಕುತೀವಿ
ಓಟು ಹಾಕಿ ನೆಲ ಗೋರಿ ಗೋರಿ ಮುಲುಗುತ್ತ ಮಲಗುತೀವಿ
ಬಹಳ ಹಳೆಯ ಹುಳಿ ಹೆಂಡ ಧರ್ಮವಿದೆ ನಿಶೆಯಲ್ಲಿ ಬಾಳುತೀವಿ
ನಮ್ಮ ನಡೆಸಲಿಕೆ ಗುರುವು ಮಠವು ದೇವರುಗಳಿರುವರಲ್ಲ ||೧೨||

ಆಗಾಗ ಅವನು ಅವತರಿಸಿ ಬರುವ ನಮಗೇಕೆ ಚಿಂತೆಯೆಲ್ಲ
ಎನುತ ಮಲಗಿ ಸತ್ತಿಲ್ಲದಿರುವ ಈ ಜನರ ಮುಂದೆ ನಾನು
ಏನು ಹಾಡಲೀ ಎಂತು ಹಾಡಲೀ ಒಡೆದ ಗಂಟಲಿಂದ
ಬಿರಿದಾ ಒಣಾ ನಾಲಿಗಿಂದ ||೧೩||
*****

Tagged:

Leave a Reply

Your email address will not be published. Required fields are marked *

ಬೆಳಕಿನಿಂದ ಜಗಜಗಿಸುವ ಸಂಜೆ ರಾವು ಬಡಿದಂತೆ ಮಬ್ಬಾಗಿತ್ತು. ಈ ಮಬ್ಬು ಹಿಂದೆಂದೂ ಇದಿಲ್ಲ. ದೇಶದ ಹದಿನೇಳು ವರ್ಷದ ಸ್ವಾತಂತ್ರದಲ್ಲಿ, ಮಧ್ಯಮ ತರಗತಿಯ ಜೀವನ ಕೈ ಬಾಯಿಯಾಗಿದ್ದರೂ ದೂರದ ಆಶಯ ಹೊಂಗಿರಣವೊಂದು ಸದಾ ಹೊಳೆದು ಭಾವೀ ಪೀಳಿಗೆಯ ಮನೋಲ್ಲಾಸ ಮಾಡುತ್ತಿತ್ತು. ಆದರೆ ಈ ಮಬ್ಬುಗತ್ತ...

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...